ಯುಎಪಿಎಯಡಿ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಜೆಎನ್ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ನೊಟೀಸ್ ನೀಡಿದೆ.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ(ಯುಎಪಿಎ) ವಿವಿಧ ನಿಬಂಧನೆಗಳಡಿ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಉಮರ್ ಖಾಲಿದ್ ಸಲ್ಲಿಸಿರುವ ಮನವಿಯ ಕುರಿತು ಸುಪ್ರೀಂಕೋರ್ಟ್ ಮಂಗಳವಾರ ಕೇಂದ್ರ ಸರಕಾರಕ್ಕೆ ನೊಟೀಸ್ ನೀಡಿ ಪ್ರತಿಕ್ರಿಯೆ ಕೇಳಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಈ ಕುರಿತ ಅರ್ಜಿಗಳನ್ನು ನ.22ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಫೆ.2020ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ಜಾಮೀನು ಕೋರಿ ಖಾಲಿದ್ ಸಲ್ಲಿಸಿದ ಮನವಿಯನ್ನು ಕೂಡ ಅದೇ ದಿನಾಂಕದಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಖಾಲಿದ್, ಶರ್ಜೀಲ್ ಇಮಾಮ್ ಮತ್ತು ಇತರ ಹಲವರ ವಿರುದ್ಧ ಫೆಬ್ರವರಿ 2020ರ ಗಲಭೆಯ ಮಾಸ್ಟರ್ಮೈಂಡ್ಗಳು ಎಂದು ಆರೋಪಿಸಿ ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಫೆಬ್ರವರಿ 2020ರ ದೆಹಲಿ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಸೆ.2020ರಲ್ಲಿ ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟ ಖಾಲಿದ್ ಅವರು, ಹಿಂಸಾಚಾರದಲ್ಲಿ ಯಾವುದೇ ಪಾತ್ರವನ್ನು ಹೊಂದಿಲ್ಲ ಅಥವಾ ಪ್ರಕರಣದ ಇತರ ಯಾವುದೇ ಆರೋಪಿಗಳೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಹೇಳಿ ಕೋರ್ಟ್ನಲ್ಲಿ ಜಾಮೀನು ಕೋರಿದ್ದರು.
ಇದನ್ನು ಓದಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪೊಲೀಸ್ ಅಧಿಕಾರಿಯ ಹತ್ಯೆ