ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಗಣನೀಯ ಪ್ರಮಾಣದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವುದು ಬಹಿರಗವಾಗಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿಗಳು) ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರ ಹಿಂದುಳಿದ ವರ್ಗಗಳ ಸಮುದಾಯಗಳ ಸುಮಾರು 13,626 ವಿದ್ಯಾರ್ಥಿಗಳು ಕಳೆದ 5 ವರ್ಷಗಳಲ್ಲಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಹೇಳಿದ್ದಾರೆ.
ಶಿಕ್ಷಣ ಸಂಸ್ಥೆಗಳಲ್ಲಿ ಡ್ರಾಪ್ಔಟ್ ದರಗಳ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳಲು ಸರ್ಕಾರವು ಯಾವುದೇ ಅಧ್ಯಯನಗಳನ್ನು ನಡೆಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಭಾಸ್ ಸರ್ಕಾರ್, ಉನ್ನತ ಶಿಕ್ಷಣ ವಲಯದಲ್ಲಿ ವಿದ್ಯಾರ್ಥಿಗಳು ಅನೇಕ ಆಯ್ಕೆಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಹೊರಗುಳಿದ ವಿದ್ಯಾರ್ಥಿಗಳ ವಿವರ ನೀಡಿದ ಸಚಿವರು ಕಳೆದ 5 ವರ್ಷಗಳಲ್ಲಿ ಸುಮಾರು 4,596 OBC ಅಭ್ಯರ್ಥಿಗಳು, 2,424 SC ಮತ್ತು 2,622 ST ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯಗಳಿಂದ ಡ್ರಾಪ್ಔಟ್ ಮಾಡಿದ್ದಾರೆ. ಅದೇ ಅವಧಿಯಲ್ಲಿ 2,066 ಒಬಿಸಿ ಅಭ್ಯರ್ಥಿಗಳು, 1,068 ಎಸ್ಸಿ ಮತ್ತು 408 ಎಸ್ಟಿ ವಿದ್ಯಾರ್ಥಿಗಳು ಐಐಟಿಯಿಂದ ಡ್ರಾಪ್ಔಟ್ ಮಾಡಿದ್ದಾರೆ ಮತ್ತು 163 ಒಬಿಸಿ, 188 ಎಸ್ಸಿ ಮತ್ತು 91 ಎಸ್ಟಿ ಅಭ್ಯರ್ಥಿಗಳು ಐಐಎಂಗಳಿಂದ ಶಿಕ್ಷಣವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಸುಭಾಸ್ ಅವರು ಹೇಳಿದ್ದಾರೆ.
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಯಾವುದೇ ಸಮಸ್ಯೆಗಳನ್ನು ಪೂರ್ವಭಾವಿಯಾಗಿ ಪರಿಹರಿಸಲು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಘಟಕ, ಸಮಾನ ಅವಕಾಶ ಘಟಕ, ವಿದ್ಯಾರ್ಥಿ ಕುಂದುಕೊರತೆ ನಿವಾರಣೆ ಘಟಕ, ವಿದ್ಯಾರ್ಥಿಗಳ ಸಾಮಾಜಿಕ ಕ್ಲಬ್ ಮುಂತಾದವುಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಕಾಲಕಾಲಕ್ಕೆ ವಿದ್ಯಾರ್ಥಿಗಳ ನಡುವೆ ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಸೂಚನೆಗಳನ್ನು ನೀಡಿದೆ ಎಂದು ಸಚಿವರು ಹೇಳಿದ್ದಾರೆ.
ಸರ್ಕಾರವು ಶುಲ್ಕ ಕಡಿತ, ಹೆಚ್ಚಿನ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಈ ಸಮುದಾಯಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡುವುದು ಮತ್ತು ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆದ್ಯತೆ ನೀಡಿದೆ ಎಂದು ಸರ್ಕಾರ್ ಹೇಳಿದ್ದಾರೆ.
ವಿವಿಧ ಐಐಟಿ ಮತ್ತು ಐಐಎಂ ಕ್ಯಾಂಪಸ್ಗಳಲ್ಲಿ 33ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಿಕ್ಷಣ ಸಚಿವಾಲಯ ಈ ವರ್ಷದ ಆರಂಭದಲ್ಲಿ ಸಂಸತ್ತಿಗೆ ಮಾಹಿತಿ ನೀಡಿತ್ತು. 2014 ಮತ್ತು 2021ರ ನಡುವೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರವು 2014ರಲ್ಲಿ ಸಂಸತ್ತಿಗೆ ತಿಳಿಸಿತ್ತು. ಆತ್ಮಹತ್ಯೆ ಮಾಡಿಕೊಂಡ 122 ವಿದ್ಯಾರ್ಥಿಗಳಲ್ಲಿ 24 ಎಸ್ಸಿ ಸಮುದಾಯಕ್ಕೆ ಸೇರಿದವರು, ಮೂವರು ಎಸ್ಟಿಗಳು ಮತ್ತು 41 ಒಬಿಸಿಗಳು ವಿದ್ಯಾರ್ಥಿಗಳು ಸೇರಿದ್ದಾರೆ.
ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ