ಆಧಾರ್ ಕಾರ್ಡ್ಗೆ ಲಿಂಕ್ ಮಾಡದ ನೆಪವೊಡ್ಡಿ ಕೇಂದ್ರ ಸರ್ಕಾರವು ಸುಮಾರು ಮೂರು ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಿರುವುದು ತುಂಬಾ ಗಂಭೀರ ವಿಚಾರ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ಬುಧವಾರ ನೋಟಿಸ್ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಒಳಗೊಂಡ ನ್ಯಾಯಪೀಠ, ಈ ವಿಷಯವನ್ನು ತುಂಬಾ ಗಂಭೀರವಾದ ವಿಷಯ ಎಂದು ಪರಿಗಣಿಸಿ ಸುಮ್ಮನಾಗಬಾರದು ಎಂದು ಅಭಿಪ್ರಾಯಪಟ್ಟಿದೆ.
ಅರ್ಜಿದಾರರಾದ ಕೊಯಿಲಿ ದೇವಿ ಪರ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, ಅರ್ಜಿಯು ಬಹುಮುಖ್ಯವಾದ ವಿಷಯದ ಬಗ್ಗೆ ತಿಳಿಸುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ: ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ
ಮೂರು ಕೋಟಿ ಪಡಿತರ ಚೀಟಿಗಳನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿರುವುದರಿಂದ ಇದು ಒಂದು ಪ್ರಮುಖ ವಿಷಯವಾಗಿದೆ. ತೊಂದರೆಗೆ ಒಳಗಾಗಿರುವ ಬಹಳಷ್ಟು ಜನರ ಪರವಾಗಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಪಡಿತರ ಚೀಟಿ ರದ್ದತಿ ಹಾಗೂ ಹಸಿವಿನಿಂದ ಸಾವು ಸಂಭವಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಹೇಳಿದರು.
ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೆಖಿ, ಕೇಂದ್ರ ಸರ್ಕಾರ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ತಪ್ಪು ಹೇಳಿಕೆ ನೀಡುತ್ತಿದ್ದಾರೆ ಎಂದರು.
“ಆಧಾರ್ ಸಮಸ್ಯೆಯಿಂದಾಗಿ ಪ್ರತಿಕ್ರಿಯಿಸಲು ನಾವು ಕೇಂದ್ರ ಸರ್ಕಾರವನ್ನು ಕೇಳುತ್ತಿದ್ದೇವೆ. ಇದು ವಿರೋಧಿ ಮೊಕದ್ದಮೆ ಅಲ್ಲ. ನಾವು ಈ ವಿಚಾರವನ್ನು ಅಂತಿಮವಾಗಿ ವಿಚಾರಣೆ ನಡೆಸುತ್ತೇವೆ. ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಲು ನೋಟಿಸ್ ನೀಡಿ” ಎಂದು ನ್ಯಾಯಪೀಠ ಹೇಳಿದೆ. ಈ ವಿಷಯದಲ್ಲಿ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೆಖಿ ತಿಳಿಸಿದ್ದಾರೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, 2013 ರ ಸೆಕ್ಷನ್ 14, 15 ಮತ್ತು 16 ರಲ್ಲಿರುವ ಕುಂದುಕೊರತೆಗಳ ಪರಿಹಾರ ಕಾರ್ಯವಿಧಾನವನ್ನು ಅನುಷ್ಠಾನಗೊಳಿಸಲು ಕೈಗೊಂಡ ಕ್ರಮಗಳನ್ನು ತಿಳಿಸುವಂತೆ ರಾಜ್ಯಗಳಿಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಲು ನೋಟಿಸ್ ನೀಡಿ ಎಂದು ನ್ಯಾಯಪೀಠ ಹೇಳಿದೆ.
ಇದನ್ನೂ ಓದಿ: ಶಾಲಾ ಮಕ್ಕಳಿಗೆ ಪಡಿತರ ಹಾಗೂ ಹಣ ವರ್ಗಾಯಿಸುವಂತೆ ಬಿಹಾರ ಸರ್ಕಾರದ ಆದೇಶ!