Homeಮುಖಪುಟಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ 'ದೇಶದ್ರೋಹ' ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ...

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ ‘ದೇಶದ್ರೋಹ’ ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ ಕೇಸ್‌ಗಳು ರದ್ದು?

- Advertisement -
- Advertisement -

2015ರ ಪಾಟಿದಾರ್ ಮೀಸಲಾತಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಮತ್ತು ಇತರ ನಾಲ್ವರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಅಹಮದಾಬಾದ್ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುಜರಾತ್ ಸರ್ಕಾರಕ್ಕೆ ಅನುಮತಿ ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಧೀರ್ ಬ್ರಹ್ಮಭಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೀಶ್ ಪುರೋಹಿತ್ ಶನಿವಾರ (ಮಾ.1) ಈ ಸಂಬಂಧ ಎರಡು ಆದೇಶಗಳನ್ನು ಹೊರಡಿಸಿದ್ದಾರೆ.

“ಕಾನೂನುಬದ್ಧವಾಗಿ ಮತ್ತು ಸಾಮಾಜಿಕವಾಗಿ ಸಾಧ್ಯವಿಲ್ಲ” ಎಂದು ತಿಳಿದಿದ್ದರೂ ಸಹ, ಹಾರ್ದಿಕ್ ಪಟೇಲ್, ದಿನೇಶ್ ಬಂಭಾನಿಯಾ, ಚಿರಾಗ್ ಪಟೇಲ್, ಕೇತನ್ ಪಟೇಲ್ ಮತ್ತು ಅಲ್ಪೇಶ್ ಕಥೇರಿಯಾ ಪಾಟಿದಾರ್ ಅಥವಾ ಪಟೇಲ್ ಸಮುದಾಯದ ಸದಸ್ಯರನ್ನು ಒಬಿಸಿ ಪಟ್ಟಿಗೆ ಸೇರಿಸಲು ಆಂದೋಲನ ನಡೆಸುವಂತೆ 2015ರಲ್ಲಿ ಪ್ರಚೋದಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 121 (ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು ಅಥವಾ ಯುದ್ಧ ಮಾಡಲು ಪ್ರಯತ್ನಿಸುವುದು ಅಥವಾ ಯುದ್ಧ ಮಾಡಲು ಪ್ರೇರೇಪಿಸುವುದು), 121ಎ (ಸೆಕ್ಷನ್ 121 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ಮಾಡಲು ಸಂಚು ರೂಪಿಸುವುದು), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯದ ವಿರುದ್ದ ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 153ಬಿ (ಆಪಾದನೆ, ರಾಷ್ಟ್ರೀಯ ಏಕೀಕರಣದ ವಿರುದ್ದ ಪೂರ್ವಾಗ್ರಹ ಪೀಡಿತ ಹೇಳಿಕೆಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಕಳೆದ ತಿಂಗಳು ಬಿಜೆಪಿ ಸರ್ಕಾರ ಹಿಂಪಡೆಯುವುದಾಗಿ ಘೋಷಿಸಿದ ಒಂಬತ್ತು ಪಾಟೀದಾರ್ ಕೋಟಾ ಆಂದೋಲನ ಪ್ರಕರಣಗಳಲ್ಲಿ ಇದೂ ಒಂದು. 2015 ರ ಪಾಟೀದಾರ್ ಆಂದೋಲನಕ್ಕೆ ಸಂಬಂಧಿಸಿದಂತೆ ಸುಮಾರು 300 ಪ್ರಕರಣಗಳು ದಾಖಲಾಗಿವೆ.

ಶೆಹ್ಲಾ ರಶೀದ್ ವಿರುದ್ದದ ದೇಶದ್ರೋಹ ಪ್ರಕರಣ ವಾಪಸ್!

2019ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧದ ಮೊಕದ್ದಮೆಯನ್ನು ಹಿಂಪಡೆಯಲು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ (ಫೆ.27) ಸ್ವೀಕರಿಸಿದೆ.

ಸೆಪ್ಟೆಂಬರ್ 2019ರಲ್ಲಿ, ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ರಶೀದ್ ವಿರುದ್ಧ ದೇಶದ್ರೋಹ ಮತ್ತು ಇತರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿತ್ತು.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು), 504 (ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನಿಡಿದ್ದ 370ನೇ ವಿಧಿಯನ್ನು ಆಗಸ್ಟ್ 18, 2019ರಂದು ರದ್ದುಗೊಳಿಸಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕಣಿವೆಯಲ್ಲಿ ಮಕ್ಕಳು ಮತ್ತು ಯುವಕರ ಮೇಲೆ ಸಶಸ್ತ್ರ ಪಡೆಗಳು ದೌರ್ಜನ್ಯವೆಸಗಿವೆ ಎಂದು ರಶೀದ್ ಆರೋಪಿಸಿದ್ದರು.

ಜೈಲಿನಲ್ಲಿ ಕೊಳೆಯುತ್ತಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ 

ಬಿಜೆಪಿ ಬೆಂಬಲಿಸಿದವರ ವಿರುದ್ದದ ದೇಶದ್ರೋಹಗಳಂತಹ ಗಂಭೀರ ಪ್ರಕರಣಗಳು ರದ್ದಾಗುತ್ತಿದೆ. ಆದರೆ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ನಂತವರು ಕಳೆದ 4-5 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

2020ರ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ. ಇದೇ ರೀತಿ ಸಿಎಎ ವಿರುದ್ದದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ದವೂ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಇವರಿಬ್ಬರ ಜಾಮೀನು ಅರ್ಜಿಗಳನ್ನು ಅನೇಕ ಬಾರಿ ತಿರಸ್ಕರಿಸಲಾಗಿದೆ. ವಿಶೇಷವೆಂದರೆ, ವಿಚಾರಣೆಯೇ ಪ್ರಾರಂಭಿಸದೆ, ಆರೋಪ ಸಾಬೀತಾಗದೆ ಜೈಲಿನಲ್ಲಿಡಲಾಗಿದೆ.

ಒಂದು ಕಡೆಗೆ ಬದಲಾಗಿ ಎಲ್ಲವೂ ಒಳ್ಳೆಯದಾಗುತ್ತದೆ : ರಾಜ್‌ದೀಪ್ ಸರ್ದೇಸಾಯಿ 

“ಶೆಹ್ಲಾ ರಶೀದ್ ವಿರುದ್ಧದ 2019ರ ದೇಶದ್ರೋಹ ಪ್ರಕರಣವನ್ನು ದೆಹಲಿ ಪೊಲೀಸರು ಹಿಂತೆಗೆದುಕೊಂಡಿದ್ದಾರೆ; ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಗುಜರಾತ್ ಸರ್ಕಾರಕ್ಕೆ ಅಹಮದಾಬಾದ್ ನ್ಯಾಯಾಲಯ ಅನುಮತಿ ನೀಡಿದೆ. ಉಮರ್ ಖಾಲಿದ್‌ನಂತೆ ಬಾಗಲು ನಿರಾಕರಿಸಿದವರು ಇನ್ನೂ 5 ವರ್ಷಗಳಿಂದ ಜಾಮೀನು ಸಹ ಇಲ್ಲದೆ ಜೈಲಿನಲ್ಲಿದ್ದಾರೆ. ಕಾನೂನು ತನ್ನದೇ ಆದ ಹಾದಿ ಹಿಡಿಯುತ್ತಿದೆಯೇ ಅಥವಾ ‘ವಾಷಿಂಗ್ ಮೆಷಿನ್’ ಪಾತ್ರವನ್ನು ನಿರ್ವಹಿಸುತ್ತಿರುವ ರಾಜಕೀಯವೇ? ಸಂದೇಶವು ಸ್ಪಷ್ಟವಾಗಿದೆ: ಬದಿಗಳನ್ನು ಬದಲಾಯಿಸಿ ಎಲ್ಲವೂ ಒಳ್ಳೆಯದಾಗುತ್ತದೆ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

 

“ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ”

“ಶೆಹ್ಲಾ ರಶೀದ್ ಮತ್ತು ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಸಂದೇಶ ಸ್ಪಷ್ಟವಾಗಿದೆ. ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ” ಎಂದು ಹೋರಾಟಗಾರ ತರುಣ್ ಗೌತಮ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ಹಿನ್ನೆಲೆ 

ಹಾರ್ದಿಕ್ ಪಟೇಲ್ : ಗುಜರಾತ್‌ನ ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಯುವಜನರನ್ನು ಒಟ್ಟುಗೂಡಿಸಿ ಧೀರ್ಘ ಕಾಲ ಪ್ರತಿಭಟಿಸಿದ ಹಾರ್ದಿಕ್ ಪಟೇಲ್, ಅಲ್ಲಿನ ಯುವನಾಯಕನಾಗಿ ಬೆಳೆದಿದ್ದರು. ಕಳೆದ 20 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಸಮುದಾಯಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದರು. ಅವರ ಪ್ರತಿಭಟನೆಗೆ ಭರಪೂರ ಬೆಂಬಲ ವ್ಯಕ್ತವಾಗಿತ್ತು. 2017ರಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಹೋರಾಟ ಮುಂದುವರೆಸಿದ್ದರು. ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಎಂಬ ಮೂವರು ಯುವಜನರು ಬಿಜೆಪಿಯ ಎದೆ ನಡುಗಿಸಿದ್ದರು. ಆ ಚುನಾವಣೆಯಲ್ಲಿ ಸೋಲಿನ ದವಡೆಗೆ ಸಿಲುಕಿದ್ದ ಬಿಜೆಪಿ ಅಲ್ಪದರಲ್ಲೇ ಸರಳ ಬಹುಮತ ಪಡೆದು ಪಾರಾಗಿತ್ತು. ಆನಂತರ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಮೇಲೆ ಬಿಜೆಪಿ ದೇಶದ್ರೋಹ ಸೇರಿ ಇತರ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ಕೊಟ್ಟಿತ್ತು. ಅವರಿಬ್ಬರೂ ಬಿಜೆಪಿ ಸೇರಿ ಆರೋಪ ಮುಕ್ತರಾದರು. ಅವರ ಮೇಲಿನ ಪ್ರಕರಣ ಹಿಂಪಡೆಯಲಾಗಿದೆ. ಜಿಗ್ನೇಶ್ ಮೇಲೆ ಹಲವು ಪ್ರಕರಣಗಳಿದ್ದು ತನಿಖೆ ಎದುರಿಸುತ್ತಿದ್ದಾರೆ.

ಶೆಹ್ಲಾ ರಶೀದ್  : ಕಾಶ್ಮೀರದ ಈ ಯುವತಿ ಜೆಎನ್‌ಯೂನಲ್ಲಿ ಓದುತ್ತಿದ್ದಾಗ ಬಿಜೆಪಿಯ ಕಡು ವಿರೋಧಿಯಾಗಿದ್ದರು. 2018ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಯ್ಯ, ಜಿಗ್ನೇಶ್, ಉಮರ್ ಖಾಲಿದ್ ಮತ್ತು ಪ್ರಕಾಶ್ ರಾಜ್‌ರವರ ಜೊತೆ ಫೋಟೊ ತೆಗೆಸಿಕೊಂಡಿದ್ದರು. ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ಅನ್ನುವ ಪಕ್ಷ/ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2019ರಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ, ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಭಾರತೀಯ ಸೇನೆಯು ಜನರನ್ನು ಕರೆದೊಯ್ದು ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದರು. ಆ ಕಾರಣಕ್ಕೆ ಅವರ ಮೇಲೆ ಉದ್ದೇಶಪೂರ್ವಕ ಹಿಂಸೆಗೆ ಪ್ರಚೋದನೆ ಮತ್ತು ಸೇನೆಗೆ ಕೆಟ್ಟ ಹೆಸರು ತರುತ್ತಿದ್ದಾರೆಂದು ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಆನಂತರ, ನಿಧಾನಕ್ಕೆ ಶೆಹ್ಲಾ ರಶೀದ್ ಬದಲಾದರು. ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು, ಬಿಜೆಪಿ ಪರ ಟ್ವೀಟ್ ಮಾಡಿದರು. ಈಗ ಅವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ.

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...