Homeಮುಖಪುಟಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ 'ದೇಶದ್ರೋಹ' ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ...

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ ‘ದೇಶದ್ರೋಹ’ ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ ಕೇಸ್‌ಗಳು ರದ್ದು?

- Advertisement -
- Advertisement -

2015ರ ಪಾಟಿದಾರ್ ಮೀಸಲಾತಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಮತ್ತು ಇತರ ನಾಲ್ವರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಅಹಮದಾಬಾದ್ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುಜರಾತ್ ಸರ್ಕಾರಕ್ಕೆ ಅನುಮತಿ ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಧೀರ್ ಬ್ರಹ್ಮಭಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೀಶ್ ಪುರೋಹಿತ್ ಶನಿವಾರ (ಮಾ.1) ಈ ಸಂಬಂಧ ಎರಡು ಆದೇಶಗಳನ್ನು ಹೊರಡಿಸಿದ್ದಾರೆ.

“ಕಾನೂನುಬದ್ಧವಾಗಿ ಮತ್ತು ಸಾಮಾಜಿಕವಾಗಿ ಸಾಧ್ಯವಿಲ್ಲ” ಎಂದು ತಿಳಿದಿದ್ದರೂ ಸಹ, ಹಾರ್ದಿಕ್ ಪಟೇಲ್, ದಿನೇಶ್ ಬಂಭಾನಿಯಾ, ಚಿರಾಗ್ ಪಟೇಲ್, ಕೇತನ್ ಪಟೇಲ್ ಮತ್ತು ಅಲ್ಪೇಶ್ ಕಥೇರಿಯಾ ಪಾಟಿದಾರ್ ಅಥವಾ ಪಟೇಲ್ ಸಮುದಾಯದ ಸದಸ್ಯರನ್ನು ಒಬಿಸಿ ಪಟ್ಟಿಗೆ ಸೇರಿಸಲು ಆಂದೋಲನ ನಡೆಸುವಂತೆ 2015ರಲ್ಲಿ ಪ್ರಚೋದಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 121 (ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು ಅಥವಾ ಯುದ್ಧ ಮಾಡಲು ಪ್ರಯತ್ನಿಸುವುದು ಅಥವಾ ಯುದ್ಧ ಮಾಡಲು ಪ್ರೇರೇಪಿಸುವುದು), 121ಎ (ಸೆಕ್ಷನ್ 121 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ಮಾಡಲು ಸಂಚು ರೂಪಿಸುವುದು), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯದ ವಿರುದ್ದ ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 153ಬಿ (ಆಪಾದನೆ, ರಾಷ್ಟ್ರೀಯ ಏಕೀಕರಣದ ವಿರುದ್ದ ಪೂರ್ವಾಗ್ರಹ ಪೀಡಿತ ಹೇಳಿಕೆಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಕಳೆದ ತಿಂಗಳು ಬಿಜೆಪಿ ಸರ್ಕಾರ ಹಿಂಪಡೆಯುವುದಾಗಿ ಘೋಷಿಸಿದ ಒಂಬತ್ತು ಪಾಟೀದಾರ್ ಕೋಟಾ ಆಂದೋಲನ ಪ್ರಕರಣಗಳಲ್ಲಿ ಇದೂ ಒಂದು. 2015 ರ ಪಾಟೀದಾರ್ ಆಂದೋಲನಕ್ಕೆ ಸಂಬಂಧಿಸಿದಂತೆ ಸುಮಾರು 300 ಪ್ರಕರಣಗಳು ದಾಖಲಾಗಿವೆ.

ಶೆಹ್ಲಾ ರಶೀದ್ ವಿರುದ್ದದ ದೇಶದ್ರೋಹ ಪ್ರಕರಣ ವಾಪಸ್!

2019ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧದ ಮೊಕದ್ದಮೆಯನ್ನು ಹಿಂಪಡೆಯಲು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ (ಫೆ.27) ಸ್ವೀಕರಿಸಿದೆ.

ಸೆಪ್ಟೆಂಬರ್ 2019ರಲ್ಲಿ, ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ರಶೀದ್ ವಿರುದ್ಧ ದೇಶದ್ರೋಹ ಮತ್ತು ಇತರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿತ್ತು.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು), 504 (ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನಿಡಿದ್ದ 370ನೇ ವಿಧಿಯನ್ನು ಆಗಸ್ಟ್ 18, 2019ರಂದು ರದ್ದುಗೊಳಿಸಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕಣಿವೆಯಲ್ಲಿ ಮಕ್ಕಳು ಮತ್ತು ಯುವಕರ ಮೇಲೆ ಸಶಸ್ತ್ರ ಪಡೆಗಳು ದೌರ್ಜನ್ಯವೆಸಗಿವೆ ಎಂದು ರಶೀದ್ ಆರೋಪಿಸಿದ್ದರು.

ಜೈಲಿನಲ್ಲಿ ಕೊಳೆಯುತ್ತಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ 

ಬಿಜೆಪಿ ಬೆಂಬಲಿಸಿದವರ ವಿರುದ್ದದ ದೇಶದ್ರೋಹಗಳಂತಹ ಗಂಭೀರ ಪ್ರಕರಣಗಳು ರದ್ದಾಗುತ್ತಿದೆ. ಆದರೆ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ನಂತವರು ಕಳೆದ 4-5 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

2020ರ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ. ಇದೇ ರೀತಿ ಸಿಎಎ ವಿರುದ್ದದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ದವೂ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಇವರಿಬ್ಬರ ಜಾಮೀನು ಅರ್ಜಿಗಳನ್ನು ಅನೇಕ ಬಾರಿ ತಿರಸ್ಕರಿಸಲಾಗಿದೆ. ವಿಶೇಷವೆಂದರೆ, ವಿಚಾರಣೆಯೇ ಪ್ರಾರಂಭಿಸದೆ, ಆರೋಪ ಸಾಬೀತಾಗದೆ ಜೈಲಿನಲ್ಲಿಡಲಾಗಿದೆ.

ಒಂದು ಕಡೆಗೆ ಬದಲಾಗಿ ಎಲ್ಲವೂ ಒಳ್ಳೆಯದಾಗುತ್ತದೆ : ರಾಜ್‌ದೀಪ್ ಸರ್ದೇಸಾಯಿ 

“ಶೆಹ್ಲಾ ರಶೀದ್ ವಿರುದ್ಧದ 2019ರ ದೇಶದ್ರೋಹ ಪ್ರಕರಣವನ್ನು ದೆಹಲಿ ಪೊಲೀಸರು ಹಿಂತೆಗೆದುಕೊಂಡಿದ್ದಾರೆ; ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಗುಜರಾತ್ ಸರ್ಕಾರಕ್ಕೆ ಅಹಮದಾಬಾದ್ ನ್ಯಾಯಾಲಯ ಅನುಮತಿ ನೀಡಿದೆ. ಉಮರ್ ಖಾಲಿದ್‌ನಂತೆ ಬಾಗಲು ನಿರಾಕರಿಸಿದವರು ಇನ್ನೂ 5 ವರ್ಷಗಳಿಂದ ಜಾಮೀನು ಸಹ ಇಲ್ಲದೆ ಜೈಲಿನಲ್ಲಿದ್ದಾರೆ. ಕಾನೂನು ತನ್ನದೇ ಆದ ಹಾದಿ ಹಿಡಿಯುತ್ತಿದೆಯೇ ಅಥವಾ ‘ವಾಷಿಂಗ್ ಮೆಷಿನ್’ ಪಾತ್ರವನ್ನು ನಿರ್ವಹಿಸುತ್ತಿರುವ ರಾಜಕೀಯವೇ? ಸಂದೇಶವು ಸ್ಪಷ್ಟವಾಗಿದೆ: ಬದಿಗಳನ್ನು ಬದಲಾಯಿಸಿ ಎಲ್ಲವೂ ಒಳ್ಳೆಯದಾಗುತ್ತದೆ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

 

“ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ”

“ಶೆಹ್ಲಾ ರಶೀದ್ ಮತ್ತು ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಸಂದೇಶ ಸ್ಪಷ್ಟವಾಗಿದೆ. ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ” ಎಂದು ಹೋರಾಟಗಾರ ತರುಣ್ ಗೌತಮ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ಹಿನ್ನೆಲೆ 

ಹಾರ್ದಿಕ್ ಪಟೇಲ್ : ಗುಜರಾತ್‌ನ ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಯುವಜನರನ್ನು ಒಟ್ಟುಗೂಡಿಸಿ ಧೀರ್ಘ ಕಾಲ ಪ್ರತಿಭಟಿಸಿದ ಹಾರ್ದಿಕ್ ಪಟೇಲ್, ಅಲ್ಲಿನ ಯುವನಾಯಕನಾಗಿ ಬೆಳೆದಿದ್ದರು. ಕಳೆದ 20 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಸಮುದಾಯಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದರು. ಅವರ ಪ್ರತಿಭಟನೆಗೆ ಭರಪೂರ ಬೆಂಬಲ ವ್ಯಕ್ತವಾಗಿತ್ತು. 2017ರಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಹೋರಾಟ ಮುಂದುವರೆಸಿದ್ದರು. ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಎಂಬ ಮೂವರು ಯುವಜನರು ಬಿಜೆಪಿಯ ಎದೆ ನಡುಗಿಸಿದ್ದರು. ಆ ಚುನಾವಣೆಯಲ್ಲಿ ಸೋಲಿನ ದವಡೆಗೆ ಸಿಲುಕಿದ್ದ ಬಿಜೆಪಿ ಅಲ್ಪದರಲ್ಲೇ ಸರಳ ಬಹುಮತ ಪಡೆದು ಪಾರಾಗಿತ್ತು. ಆನಂತರ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಮೇಲೆ ಬಿಜೆಪಿ ದೇಶದ್ರೋಹ ಸೇರಿ ಇತರ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ಕೊಟ್ಟಿತ್ತು. ಅವರಿಬ್ಬರೂ ಬಿಜೆಪಿ ಸೇರಿ ಆರೋಪ ಮುಕ್ತರಾದರು. ಅವರ ಮೇಲಿನ ಪ್ರಕರಣ ಹಿಂಪಡೆಯಲಾಗಿದೆ. ಜಿಗ್ನೇಶ್ ಮೇಲೆ ಹಲವು ಪ್ರಕರಣಗಳಿದ್ದು ತನಿಖೆ ಎದುರಿಸುತ್ತಿದ್ದಾರೆ.

ಶೆಹ್ಲಾ ರಶೀದ್  : ಕಾಶ್ಮೀರದ ಈ ಯುವತಿ ಜೆಎನ್‌ಯೂನಲ್ಲಿ ಓದುತ್ತಿದ್ದಾಗ ಬಿಜೆಪಿಯ ಕಡು ವಿರೋಧಿಯಾಗಿದ್ದರು. 2018ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಯ್ಯ, ಜಿಗ್ನೇಶ್, ಉಮರ್ ಖಾಲಿದ್ ಮತ್ತು ಪ್ರಕಾಶ್ ರಾಜ್‌ರವರ ಜೊತೆ ಫೋಟೊ ತೆಗೆಸಿಕೊಂಡಿದ್ದರು. ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ಅನ್ನುವ ಪಕ್ಷ/ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2019ರಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ, ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಭಾರತೀಯ ಸೇನೆಯು ಜನರನ್ನು ಕರೆದೊಯ್ದು ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದರು. ಆ ಕಾರಣಕ್ಕೆ ಅವರ ಮೇಲೆ ಉದ್ದೇಶಪೂರ್ವಕ ಹಿಂಸೆಗೆ ಪ್ರಚೋದನೆ ಮತ್ತು ಸೇನೆಗೆ ಕೆಟ್ಟ ಹೆಸರು ತರುತ್ತಿದ್ದಾರೆಂದು ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಆನಂತರ, ನಿಧಾನಕ್ಕೆ ಶೆಹ್ಲಾ ರಶೀದ್ ಬದಲಾದರು. ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು, ಬಿಜೆಪಿ ಪರ ಟ್ವೀಟ್ ಮಾಡಿದರು. ಈಗ ಅವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ.

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...