Homeಬಹುಜನ ಭಾರತಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

ಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

- Advertisement -
- Advertisement -

ಆತ್ಮನಿರ್ಭರ ಭಾರತದ ಹೃದಯ ಹಿಂಡುವ ಚಿತ್ರಗಳು ನಾಗರಿಕ ಸಮಾಜದ ಮುಖಕ್ಕೆ ರಾಚುತ್ತಿವೆ. ಭಕ್ತಭಾರತದ ಆತ್ಮಸಾಕ್ಷಿ ಕಡೆಯುಸಿರು ಎಳೆದು ವರ್ಷಗಳೇ ಉರುಳಿವೆ. ದಿನಗಟ್ಟಲೆ ಟ್ರೇನಿನಲ್ಲಿ ಅನ್ನ ನೀರಿಲ್ಲದೆ ಪ್ರಯಾಣ ಮಾಡಿ ಸತ್ತ ತನ್ನ ತಾಯಿಯ ಹೊದಿಕೆಯನ್ನು ಹಿಡಿದೆಳೆದು ಎಚ್ಚರಿಸಲು ಅಮಾಯಕ ಹಸುಳೆ ಪ್ರಯತ್ನಿಸುವ ದೃಶ್ಯಾವಳಿ ಭಕ್ತ ಭಾರತದ ಕಲ್ಲು ಮನಸ್ಸನ್ನು ಕರಗಿಸಲಾರದು. ಅರ್ಥಾತ್ ದೇಶ- ಸಮಾಜ ತೀವ್ರ ಅಪಾಯಕರ ಸ್ಥಿತಿಯಲ್ಲಿವೆ. ಮನಸ್ಸಾಕ್ಷಿಗಳಿಗೆ ಲಕ್ವ ಹೊಡೆದಿದೆ. ಹನ್ನೊಂದರ ಪ್ರಾಯದ ಎಳೆಯ ತನ್ನ ಕುರುಡು ತಾಯಿ ಮತ್ತು ಕುಂಟ ತಂದೆಯನ್ನು ತ್ರಿಚಕ್ರ ಸೈಕಲ್‍ನಲ್ಲಿ ಕೂರಿಸಿ ವಾರಣಾಸಿಯಿಂದ ಬಿಹಾರಕ್ಕೆ ಒಯ್ಯುವ ದೃಶ್ಯವಾಗಲಿ, ಹೆದ್ದಾರಿಯಲ್ಲಿ ಹಸಿದ ವ್ಯಕ್ತಿಯೊಬ್ಬ ವಾಹನಗಳ ಚಕ್ರಗಳಡಿ ಸಿಕ್ಕಿ ನಜ್ಜುಗುಜ್ಜಾಗಿದ್ದ ನಾಯಿಯ ಕಳೇಬರದಿಂದ ಮಾಂಸವನ್ನು ಕಿತ್ತು ತಿನ್ನುವ ನೋಟವಾಗಲಿ, ನಡೆ ನಡೆದು ಎಳೆಯ ಮಕ್ಕಳ ಅಂಗಾಲುಗಳು ಬೊಕ್ಕೆಗಳಾಗಿ ಕಂಗೆಟ್ಟು ಕಣ್ಣುಗಳಲ್ಲಿ ನೀರು ತುಂಬಿಕೊಂಡ ನೋವಾಗಲೀ ಭಕ್ತ ಭಾರತದ ಕಣ್ಣಿಗೆ ಕಾಣುವುದೇ ಇಲ್ಲ. ತನ್ನ ವಿಶ್ವರೂಪವನ್ನು ಕಾಣಲು ಶ್ರೀಕೃಷ್ಣನು ಅರ್ಜುನನಿಗೆ ವಿಶೇಷ ದೃಷ್ಟಿಯನ್ನು ಪ್ರಸಾದಿಸಿದಂತೆ ಭಕ್ತ ಭಾರತಕ್ಕೂ ವಿಶೇಷ ಕಣ್ಣುಗಳನ್ನೂ, ಚಲಿಸುವ ಮನಸ್ಸನ್ನೂ ನೀಡಬೇಕಿದೆ. ಆ ಕಾಲ ಬರುವುದೆಂದೋ ಸದ್ಯಕ್ಕೆ ತಿಳಿಯದು.

ಈ ನಡುವೆ ವಿಶೇಷವೊಂದು ಜರುಗಿದೆ. ವಲಸೆ ಕಾರ್ಮಿಕ ಕೋಟಿಯ ಕಷ್ಟ ಪರಂಪರೆಯನ್ನು ಕಡೆಗಣಿಸಿದ್ದ ಸುಪ್ರೀಮ್ ಕೋರ್ಟಿಗೆ ಬಿಸಿ ಮುಟ್ಟಿಸುವ ಪತ್ರವೊಂದನ್ನು ದೇಶದ ಹಿರಿಯ ನ್ಯಾಯವಾದಿಗಳು ಬರೆದಿದ್ದಾರೆ. ಅದನ್ನೊಮ್ಮೆ ಓದಿಕೊಳ್ಳೋಣ.

ಪ್ರಿಯ ನ್ಯಾಯಮೂರ್ತಿಗಳೇ,

ಭಾರತೀಯ ನಾಗರಿಕರಾಗಿ ಮತ್ತು ಹಿರಿಯ ನ್ಯಾಯವಾದಿಗಳಾಗಿ ಅತೀವ ವ್ಯಥೆ ಮತ್ತು ದಿಗಿಲಿನಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇವೆ.

ಈ ದೇಶದ ನಾಗರಿಕರ ಅದರಲ್ಲೂ ವಿಶೇಷವಾಗಿ ಬಡತನದ ರೇಖೆಯ ಮತ್ತು ಅದರ ಕೆಳಗೆ ಕನಿಷ್ಠ ಕೂಲಿ ಪಡೆದು ಹೊಟ್ಟೆ ಹೊರೆಯುವ ಮತ್ತು ಹೀಗೆ ಹೊಟ್ಟೆ ಹೊರೆಯುವುದೂ ಕಷ್ಟಕರವಾಗಿ ಪರಿಣಮಿಸಿರುವ ಅಸಂಖ್ಯಾತ ಜನಸಮೂಹಗಳ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪಾತ್ರ ಅತ್ಯಂತ ಪ್ರಮುಖ.

ಸರ್ಕಾರಿ ಆದೇಶದ ಮೇರೆಗೆ ಕಳೆದ ಮಾರ್ಚ್ 24ರಿಂದ ಇಡೀ ದೇಶ ಮತ್ತು ಅದರ ಆರ್ಥಿಕ ವ್ಯವಸ್ಥೆಗೆ ಬೀಗ ಬಿದ್ದಿರುವ ಇಂದಿನ ಬಿಕ್ಕಟ್ಟಿನ ಸ್ಥಿತಿಯಲ್ಲಿ ಸುಪ್ರೀಂಕೋರ್ಟ್ ಪಾತ್ರ ಮತ್ತು ಕರ್ತವ್ಯ ಅಪಾರ ಪ್ರಾಮುಖ್ಯತೆ ಗಳಿಸಿಕೊಳ್ಳುತ್ತದೆ. ದೇಶದ ಶೇ.75ಕ್ಕೂ ಹೆಚ್ಚು ಶ್ರಮಜೀವಿಗಳು ಅಸಂಘಟಿತ ವಲಯದಲ್ಲಿರುವವರು. ಆರ್ಥಿಕ ಚಟುವಟಿಕೆಯ ಸ್ಥಗಿತವು ಅವರ ಹೊಟ್ಟೆಪಾಡುಗಳ ಮೇಲೆ ತಕ್ಷಣದ ಪರಿಣಾಮ ಬೀರುತ್ತದೆ.

ಕೋಟಿಗಳ ಸಂಖ್ಯೆಗಳಲ್ಲಿರುವ ಈ ಶ್ರಮಿಕ ವರ್ಗ ಮುಖ್ಯವಾಗಿ ವಲಸೆ ಕಾರ್ಮಿಕ ಸ್ವರೂಪದ್ದು. ಮಾರ್ಚ್ 24ರಂದು ಲಾಕ್‍ಡೌನ್ ಘೋಷಿಸಿದಾಗ ಇವರ ಪಡಿಪಾಟಲನ್ನು ಲೆಕ್ಕಕ್ಕೇ ಇಟ್ಟುಕೊಳ್ಳಲಿಲ್ಲ. ಕೇವಲ ನಾಲ್ಕು ತಾಸುಗಳ ಕಾಲಾವಧಿಯಲ್ಲಿ ಲಾಕ್‍ಡೌನ್ ಸಾರಲಾಯಿತು. ಈ ಕೋಟ್ಯಂತರ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳುವ ಅವಕಾಶವನ್ನೇ ನೀಡಲಿಲ್ಲ. ಬೇರೆ ದಾರಿಯೇ ಇಲ್ಲದೆ ಹಸಿವು ಹತಾಶೆಗಳಿಂದ ನಡೆಯತೊಡಗಿದ ಇವರನ್ನು ಸರ್ಕಾರಗಳು ತಡೆಯುವ ಪ್ರಯತ್ನ ಮಾಡಿದವು.

ಕಳೆದ ಮಾರ್ಚ್ ತಿಂಗಳಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ವಿಫಲವಾದ ಕಾರಣ ಲಕ್ಷೋಪಲಕ್ಷ ಕಾರ್ಮಿಕರು ತಮ್ಮ ಸಣ್ಣಪುಟ್ಟ ಇಕ್ಕಟ್ಟಿನ ಖೋಲಿಗಳಲ್ಲೋ, ರಸ್ತೆಬದಿಯ ಕಾಲುದಾರಿಗಳಲ್ಲೋ ಉದ್ಯೋಗವಿಲ್ಲದೆ, ಒಪ್ಪೊತ್ತಿನ ಊಟಕ್ಕೂ ದಾರಿಯಲ್ಲದೆ ದಿನ ದೂಡುವಂತಾಯಿತು. ಆಗ ಕೋವಿಡ್ ಕೇಸುಗಳ ಸಂಖ್ಯೆ ಕೆಲವೇ ನೂರರಷ್ಟಿತ್ತು. ಅವರನ್ನು ಮರಳಲು ಬಿಡದೆ ಕಟ್ಟಿ ಹಾಕಿದ ಈ ಬಲಾತ್ಕಾರವು ಈ ಬಡಪಾಯಿಗಳನ್ನು ಕೋವಿಡ್ ಮಹಾಮಾರಿಯ ಸೋಂಕಿನ ಅಪಾಯಕ್ಕೆ ನೇರವಾಗಿ ನೂಕಿದಂತಾಗಿತ್ತು.

ಸರ್ಕಾರದ ಹೇಳಿಕೆಯು ವಾಸ್ತವ ಸ್ಥಿತಿಗತಿಗಳಿಗೆ ವ್ಯತಿರಿಕ್ತವಾಗಿತ್ತು. ಶೇ.90ರಷ್ಟು ವಲಸೆ ಕೆಲಸಗಾರರಿಗೆ ಸರ್ಕಾರಿ ಪಡಿತರ ಸಿಗಲಿಲ್ಲವೆಂದೂ, ಆಹಾರದ ತೀವ್ರ ಕೊರತೆಗೆ ತುತ್ತಾಗಿದ್ದಾರೆಂದೂ ಹಲವು ವರದಿಗಳು ಹೇಳಿದವು.

ಮಾರ್ಚ್ ತಿಂಗಳಿನಲ್ಲಿ ಸುಪ್ರೀಂಕೋರ್ಟು ಮಧ್ಯಪ್ರವೇಶಿಸಲು ವಿಫಲವಾದ ನಂತರ ಲಕ್ಷೋಪಲಕ್ಷ ಕಾರ್ಮಿಕರ ಮಹಾವಲಸೆ ಮೊದಲಾಯಿತು. ಆ ಹೊತ್ತಿಗೆ ಕೋವಿಡ್ ಸೋಂಕಿತರ ಸಂಖ್ಯೆ 50 ಸಾವಿರ ದಾಟಿತ್ತು. ಈ ಕಾರ್ಮಿಕರೂ ಸೋಂಕಿಗೆ ತುತ್ತಾದರು. ಈ ಹಂತದಲ್ಲೂ ಇವರ ಸಂಚಾರವನ್ನು ಸರ್ಕಾರ ಪ್ರತಿಬಂಧಿಸಿತ್ತು. ನಡೆದು ಹೋಗುವ ಬಡಪಾಯಿಗಳನ್ನೂ ತಡೆದು ಥಳಿಸಿದವು ಪೊಲೀಸರ ಲಾಠಿಗಳು. ಬೀದಿಗೆ ಬಿದ್ದಿದ್ದವರನ್ನು ಬಗೆ ಬಗೆಯಾಗಿ ಅವಮಾನಿಸಲಾಯಿತು. ತರುವಾಯ ಬಸ್ಸುಗಳು ಮತ್ತು ಟ್ರೇನುಗಳಲ್ಲಿ ಅವರ ಸಂಚಾರಕ್ಕೆ ಅನುಮತಿ ನೀಡಲಾಯಿತು. ವೈದ್ಯಕೀಯ ಪ್ರಮಾಣಪತ್ರ ತರಬೇಕೆಂಬ ಅಸಾಧ್ಯ ಷರತ್ತನ್ನು ಈ ಬಡಪಾಯಿಗಳಿಗೆ ವಿಧಿಸಲಾಯಿತು. ರಸ್ತೆ ಮಾರ್ಗವಾಗಿ ಸಾಗಾಟದ ಏರ್ಪಾಡು ಮಾಡಿದಾಗಲೂ ಅವರವರ ರಾಜ್ಯಗಳ ಸರಹದ್ದುಗಳಲ್ಲೇ ಅವರನ್ನು ಇಳಿಸಲಾಯಿತು. ರಾಜ್ಯ ಸರ್ಕಾರಗಳು ಇವರನ್ನು ಬರಮಾಡಿಕೊಳ್ಳಲು ತಯಾರಿರಲಿಲ್ಲ. ಈ ಬಡಪಾಯಿಗಳ ಹಕ್ಕುಗಳಿಗೆ ಅರ್ಥವೇ ಇಲ್ಲವಾಯಿತು.

ಲಾಕ್‍ಡೌನ್- 2ರಲ್ಲೂ ಈ ಲಕ್ಷ ಲಕ್ಷ ನಿರ್ಗತಿಕರ ಇರವನ್ನೇ ಗುರುತಿಸಲಿಲ್ಲ ಕೇಂದ್ರ ಸರ್ಕಾರ. ಇನ್ನು ಅವರ ಬವಣೆಯನ್ನು ನಿವಾರಿಸುವುದು ದೂರವೇ ಉಳಿಯಿತು.

ವಲಸೆ ಕಾರ್ಮಿಕರ ಕಣ್ಣೀರು ಒರೆಸುವ ಅವಕಾಶವನ್ನು 2020ರ ಮೇ 15ರಂದು ಇನ್ನೊಮ್ಮೆ ಕಳೆದುಕೊಂಡಿತು. ಹೆದ್ದಾರಿಗಳು, ರೈಲುದಾರಿಗಳಲ್ಲಿ ಸಾವಿರಾರು ಕಿ.ಮೀ. ಉದ್ದಕ್ಕೆ ದುಃಖ ಹಸಿವು ವ್ಯಥೆ ವಿಷಾದ ಹಾಗೂ ತಬ್ಬಲಿ ಭಾವಗಳ ನದಿಗಳಂತೆ ಹರಿಯತೊಡಗಿದ್ದರು ವಲಸೆ ಕಾರ್ಮಿಕರು. ಅವರನ್ನು ಗುರುತಿಸಿ ಅನ್ನ- ನೀರು-ನೆರಳು ಹಾಗೂ ಉಚಿತ ಪಯಣವನ್ನು ಏರ್ಪಡಿಸುವಂತೆ ದೇಶದ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕೆಂಬ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತು. ಅರ್ಜಿಯ ಗುಣಗಳನ್ನು ಪರಿಗಣಿಸಲೂ ಇಲ್ಲ.

ಸರ್ಕಾರದ ಪರವಾಗಿ ಮಂಡಿಸಲಾಗುವ ಹೇಳಿಕೆಗಳಿಗೆ ನ್ಯಾಯಾಲಯ ನೀಡುತ್ತಿರುವ ಸಾಂಸ್ಥಿಕ ಗೌರವ- ಮಾನ್ಯತೆ-ಮನ್ನಣೆ ಮತ್ತು ಈ ಅಗಾಧ ಮಾನವೀಯ ಬಿಕ್ಕಟ್ಟಿನ ಕುರಿತು ನ್ಯಾಯಾಲಯ ತೋರಿರುವ ನಿರ್ಲಕ್ಷ್ಯವನ್ನು ತಕ್ಷಣವೇ ಸರಿಪಡಿಸಬೇಕು. ಇಲ್ಲದೆ ಹೋದರೆ ಲಕ್ಷೋಪಲಕ್ಷ ಹಸಿದ ನಿರ್ಗತಿಕ ವಲಸಿಗರ ಸಂಬಂಧ ತಾನು ವಹಿಸಬೇಕಿರುವ ಸಾಂವಿಧಾನಿಕ ಪಾತ್ರ ಮತ್ತು ಕರ್ತವ್ಯಗಳಿಂದ ನ್ಯಾಯಾಲಯ ಕೈ ತೊಳೆದುಕೊಂಡಂತೆಯೇ ಸರಿ.

ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಪ್ರಸಕ್ತ ಸನ್ನಿವೇಶದಲ್ಲಿ ಭಾರತೀಯ ಜನತಂತ್ರದ ಉಳಿವು ಮತ್ತು ಕಾನೂನಿನ ಪಾರಮ್ಯವು ಸುಪ್ರೀಂಕೋರ್ಟನ್ನೇ ಅವಲಂಬಿಸಿದೆ. ಪ್ರಭುತ್ವದ ಕ್ರಿಯೆಯ ನಾಗರಿಕರ ಮೂಲಭೂತ ಹಕ್ಕುಗಳನ್ನು ಆಪೋಶನ ತೆಗೆದುಕೊಳ್ಳದಂತೆ ಕಾವಲು ನಿಲ್ಲುವ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಅದು ಸಕ್ರಿಯವಾಗಿ ನಿಭಾಯಿಸಬೇಕಿದೆ.

ಇಂದಿಗೂ ಈ ಹೊತ್ತಿಗೂ ವಲಸೆ ಕಾರ್ಮಿಕರ ಸಂಕಟ ಮುಂದುವರೆದಿದೆ. ಲಕ್ಷಾಂತರ ಜನ ರೇಲ್ವೆ ನಿಲ್ದಾಣಗಳು ಮತ್ತು ರಾಜ್ಯಗಳ ಸರಹದ್ದುಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಇವರಿಗೆ ಅನ್ನ ನೀರು ನೆರಳು ಹಾಗೂ ಪ್ರಯಾಣ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ನಾವು ಸುಪ್ರೀಂಕೋರ್ಟನ್ನು ಆಗ್ರಹಪಡಿಸುತ್ತೇವೆ. ಅನ್ಯಾಯ ಎಲ್ಲಿಯೇ ಜರುಗಿದರೂ ಅದು ನ್ಯಾಯಕ್ಕೆ ಎಲ್ಲೆಡೆಯೂ ಗಂಡಾಂತರವೇ ಎಂಬ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ ಅವರ ಮಾತನ್ನು ಇಲ್ಲಿ ನೆನಪಿಸಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...