Homeಬಹುಜನ ಭಾರತಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

ಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

- Advertisement -
- Advertisement -

ಆತ್ಮನಿರ್ಭರ ಭಾರತದ ಹೃದಯ ಹಿಂಡುವ ಚಿತ್ರಗಳು ನಾಗರಿಕ ಸಮಾಜದ ಮುಖಕ್ಕೆ ರಾಚುತ್ತಿವೆ. ಭಕ್ತಭಾರತದ ಆತ್ಮಸಾಕ್ಷಿ ಕಡೆಯುಸಿರು ಎಳೆದು ವರ್ಷಗಳೇ ಉರುಳಿವೆ. ದಿನಗಟ್ಟಲೆ ಟ್ರೇನಿನಲ್ಲಿ ಅನ್ನ ನೀರಿಲ್ಲದೆ ಪ್ರಯಾಣ ಮಾಡಿ ಸತ್ತ ತನ್ನ ತಾಯಿಯ ಹೊದಿಕೆಯನ್ನು ಹಿಡಿದೆಳೆದು ಎಚ್ಚರಿಸಲು ಅಮಾಯಕ ಹಸುಳೆ ಪ್ರಯತ್ನಿಸುವ ದೃಶ್ಯಾವಳಿ ಭಕ್ತ ಭಾರತದ ಕಲ್ಲು ಮನಸ್ಸನ್ನು ಕರಗಿಸಲಾರದು. ಅರ್ಥಾತ್ ದೇಶ- ಸಮಾಜ ತೀವ್ರ ಅಪಾಯಕರ ಸ್ಥಿತಿಯಲ್ಲಿವೆ. ಮನಸ್ಸಾಕ್ಷಿಗಳಿಗೆ ಲಕ್ವ ಹೊಡೆದಿದೆ. ಹನ್ನೊಂದರ ಪ್ರಾಯದ ಎಳೆಯ ತನ್ನ ಕುರುಡು ತಾಯಿ ಮತ್ತು ಕುಂಟ ತಂದೆಯನ್ನು ತ್ರಿಚಕ್ರ ಸೈಕಲ್‍ನಲ್ಲಿ ಕೂರಿಸಿ ವಾರಣಾಸಿಯಿಂದ ಬಿಹಾರಕ್ಕೆ ಒಯ್ಯುವ ದೃಶ್ಯವಾಗಲಿ, ಹೆದ್ದಾರಿಯಲ್ಲಿ ಹಸಿದ ವ್ಯಕ್ತಿಯೊಬ್ಬ ವಾಹನಗಳ ಚಕ್ರಗಳಡಿ ಸಿಕ್ಕಿ ನಜ್ಜುಗುಜ್ಜಾಗಿದ್ದ ನಾಯಿಯ ಕಳೇಬರದಿಂದ ಮಾಂಸವನ್ನು ಕಿತ್ತು ತಿನ್ನುವ ನೋಟವಾಗಲಿ, ನಡೆ ನಡೆದು ಎಳೆಯ ಮಕ್ಕಳ ಅಂಗಾಲುಗಳು ಬೊಕ್ಕೆಗಳಾಗಿ ಕಂಗೆಟ್ಟು ಕಣ್ಣುಗಳಲ್ಲಿ ನೀರು ತುಂಬಿಕೊಂಡ ನೋವಾಗಲೀ ಭಕ್ತ ಭಾರತದ ಕಣ್ಣಿಗೆ ಕಾಣುವುದೇ ಇಲ್ಲ. ತನ್ನ ವಿಶ್ವರೂಪವನ್ನು ಕಾಣಲು ಶ್ರೀಕೃಷ್ಣನು ಅರ್ಜುನನಿಗೆ ವಿಶೇಷ ದೃಷ್ಟಿಯನ್ನು ಪ್ರಸಾದಿಸಿದಂತೆ ಭಕ್ತ ಭಾರತಕ್ಕೂ ವಿಶೇಷ ಕಣ್ಣುಗಳನ್ನೂ, ಚಲಿಸುವ ಮನಸ್ಸನ್ನೂ ನೀಡಬೇಕಿದೆ. ಆ ಕಾಲ ಬರುವುದೆಂದೋ ಸದ್ಯಕ್ಕೆ ತಿಳಿಯದು.

ಈ ನಡುವೆ ವಿಶೇಷವೊಂದು ಜರುಗಿದೆ. ವಲಸೆ ಕಾರ್ಮಿಕ ಕೋಟಿಯ ಕಷ್ಟ ಪರಂಪರೆಯನ್ನು ಕಡೆಗಣಿಸಿದ್ದ ಸುಪ್ರೀಮ್ ಕೋರ್ಟಿಗೆ ಬಿಸಿ ಮುಟ್ಟಿಸುವ ಪತ್ರವೊಂದನ್ನು ದೇಶದ ಹಿರಿಯ ನ್ಯಾಯವಾದಿಗಳು ಬರೆದಿದ್ದಾರೆ. ಅದನ್ನೊಮ್ಮೆ ಓದಿಕೊಳ್ಳೋಣ.

ಪ್ರಿಯ ನ್ಯಾಯಮೂರ್ತಿಗಳೇ,

ಭಾರತೀಯ ನಾಗರಿಕರಾಗಿ ಮತ್ತು ಹಿರಿಯ ನ್ಯಾಯವಾದಿಗಳಾಗಿ ಅತೀವ ವ್ಯಥೆ ಮತ್ತು ದಿಗಿಲಿನಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇವೆ.

ಈ ದೇಶದ ನಾಗರಿಕರ ಅದರಲ್ಲೂ ವಿಶೇಷವಾಗಿ ಬಡತನದ ರೇಖೆಯ ಮತ್ತು ಅದರ ಕೆಳಗೆ ಕನಿಷ್ಠ ಕೂಲಿ ಪಡೆದು ಹೊಟ್ಟೆ ಹೊರೆಯುವ ಮತ್ತು ಹೀಗೆ ಹೊಟ್ಟೆ ಹೊರೆಯುವುದೂ ಕಷ್ಟಕರವಾಗಿ ಪರಿಣಮಿಸಿರುವ ಅಸಂಖ್ಯಾತ ಜನಸಮೂಹಗಳ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪಾತ್ರ ಅತ್ಯಂತ ಪ್ರಮುಖ.

ಸರ್ಕಾರಿ ಆದೇಶದ ಮೇರೆಗೆ ಕಳೆದ ಮಾರ್ಚ್ 24ರಿಂದ ಇಡೀ ದೇಶ ಮತ್ತು ಅದರ ಆರ್ಥಿಕ ವ್ಯವಸ್ಥೆಗೆ ಬೀಗ ಬಿದ್ದಿರುವ ಇಂದಿನ ಬಿಕ್ಕಟ್ಟಿನ ಸ್ಥಿತಿಯಲ್ಲಿ ಸುಪ್ರೀಂಕೋರ್ಟ್ ಪಾತ್ರ ಮತ್ತು ಕರ್ತವ್ಯ ಅಪಾರ ಪ್ರಾಮುಖ್ಯತೆ ಗಳಿಸಿಕೊಳ್ಳುತ್ತದೆ. ದೇಶದ ಶೇ.75ಕ್ಕೂ ಹೆಚ್ಚು ಶ್ರಮಜೀವಿಗಳು ಅಸಂಘಟಿತ ವಲಯದಲ್ಲಿರುವವರು. ಆರ್ಥಿಕ ಚಟುವಟಿಕೆಯ ಸ್ಥಗಿತವು ಅವರ ಹೊಟ್ಟೆಪಾಡುಗಳ ಮೇಲೆ ತಕ್ಷಣದ ಪರಿಣಾಮ ಬೀರುತ್ತದೆ.

ಕೋಟಿಗಳ ಸಂಖ್ಯೆಗಳಲ್ಲಿರುವ ಈ ಶ್ರಮಿಕ ವರ್ಗ ಮುಖ್ಯವಾಗಿ ವಲಸೆ ಕಾರ್ಮಿಕ ಸ್ವರೂಪದ್ದು. ಮಾರ್ಚ್ 24ರಂದು ಲಾಕ್‍ಡೌನ್ ಘೋಷಿಸಿದಾಗ ಇವರ ಪಡಿಪಾಟಲನ್ನು ಲೆಕ್ಕಕ್ಕೇ ಇಟ್ಟುಕೊಳ್ಳಲಿಲ್ಲ. ಕೇವಲ ನಾಲ್ಕು ತಾಸುಗಳ ಕಾಲಾವಧಿಯಲ್ಲಿ ಲಾಕ್‍ಡೌನ್ ಸಾರಲಾಯಿತು. ಈ ಕೋಟ್ಯಂತರ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳುವ ಅವಕಾಶವನ್ನೇ ನೀಡಲಿಲ್ಲ. ಬೇರೆ ದಾರಿಯೇ ಇಲ್ಲದೆ ಹಸಿವು ಹತಾಶೆಗಳಿಂದ ನಡೆಯತೊಡಗಿದ ಇವರನ್ನು ಸರ್ಕಾರಗಳು ತಡೆಯುವ ಪ್ರಯತ್ನ ಮಾಡಿದವು.

ಕಳೆದ ಮಾರ್ಚ್ ತಿಂಗಳಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ವಿಫಲವಾದ ಕಾರಣ ಲಕ್ಷೋಪಲಕ್ಷ ಕಾರ್ಮಿಕರು ತಮ್ಮ ಸಣ್ಣಪುಟ್ಟ ಇಕ್ಕಟ್ಟಿನ ಖೋಲಿಗಳಲ್ಲೋ, ರಸ್ತೆಬದಿಯ ಕಾಲುದಾರಿಗಳಲ್ಲೋ ಉದ್ಯೋಗವಿಲ್ಲದೆ, ಒಪ್ಪೊತ್ತಿನ ಊಟಕ್ಕೂ ದಾರಿಯಲ್ಲದೆ ದಿನ ದೂಡುವಂತಾಯಿತು. ಆಗ ಕೋವಿಡ್ ಕೇಸುಗಳ ಸಂಖ್ಯೆ ಕೆಲವೇ ನೂರರಷ್ಟಿತ್ತು. ಅವರನ್ನು ಮರಳಲು ಬಿಡದೆ ಕಟ್ಟಿ ಹಾಕಿದ ಈ ಬಲಾತ್ಕಾರವು ಈ ಬಡಪಾಯಿಗಳನ್ನು ಕೋವಿಡ್ ಮಹಾಮಾರಿಯ ಸೋಂಕಿನ ಅಪಾಯಕ್ಕೆ ನೇರವಾಗಿ ನೂಕಿದಂತಾಗಿತ್ತು.

ಸರ್ಕಾರದ ಹೇಳಿಕೆಯು ವಾಸ್ತವ ಸ್ಥಿತಿಗತಿಗಳಿಗೆ ವ್ಯತಿರಿಕ್ತವಾಗಿತ್ತು. ಶೇ.90ರಷ್ಟು ವಲಸೆ ಕೆಲಸಗಾರರಿಗೆ ಸರ್ಕಾರಿ ಪಡಿತರ ಸಿಗಲಿಲ್ಲವೆಂದೂ, ಆಹಾರದ ತೀವ್ರ ಕೊರತೆಗೆ ತುತ್ತಾಗಿದ್ದಾರೆಂದೂ ಹಲವು ವರದಿಗಳು ಹೇಳಿದವು.

ಮಾರ್ಚ್ ತಿಂಗಳಿನಲ್ಲಿ ಸುಪ್ರೀಂಕೋರ್ಟು ಮಧ್ಯಪ್ರವೇಶಿಸಲು ವಿಫಲವಾದ ನಂತರ ಲಕ್ಷೋಪಲಕ್ಷ ಕಾರ್ಮಿಕರ ಮಹಾವಲಸೆ ಮೊದಲಾಯಿತು. ಆ ಹೊತ್ತಿಗೆ ಕೋವಿಡ್ ಸೋಂಕಿತರ ಸಂಖ್ಯೆ 50 ಸಾವಿರ ದಾಟಿತ್ತು. ಈ ಕಾರ್ಮಿಕರೂ ಸೋಂಕಿಗೆ ತುತ್ತಾದರು. ಈ ಹಂತದಲ್ಲೂ ಇವರ ಸಂಚಾರವನ್ನು ಸರ್ಕಾರ ಪ್ರತಿಬಂಧಿಸಿತ್ತು. ನಡೆದು ಹೋಗುವ ಬಡಪಾಯಿಗಳನ್ನೂ ತಡೆದು ಥಳಿಸಿದವು ಪೊಲೀಸರ ಲಾಠಿಗಳು. ಬೀದಿಗೆ ಬಿದ್ದಿದ್ದವರನ್ನು ಬಗೆ ಬಗೆಯಾಗಿ ಅವಮಾನಿಸಲಾಯಿತು. ತರುವಾಯ ಬಸ್ಸುಗಳು ಮತ್ತು ಟ್ರೇನುಗಳಲ್ಲಿ ಅವರ ಸಂಚಾರಕ್ಕೆ ಅನುಮತಿ ನೀಡಲಾಯಿತು. ವೈದ್ಯಕೀಯ ಪ್ರಮಾಣಪತ್ರ ತರಬೇಕೆಂಬ ಅಸಾಧ್ಯ ಷರತ್ತನ್ನು ಈ ಬಡಪಾಯಿಗಳಿಗೆ ವಿಧಿಸಲಾಯಿತು. ರಸ್ತೆ ಮಾರ್ಗವಾಗಿ ಸಾಗಾಟದ ಏರ್ಪಾಡು ಮಾಡಿದಾಗಲೂ ಅವರವರ ರಾಜ್ಯಗಳ ಸರಹದ್ದುಗಳಲ್ಲೇ ಅವರನ್ನು ಇಳಿಸಲಾಯಿತು. ರಾಜ್ಯ ಸರ್ಕಾರಗಳು ಇವರನ್ನು ಬರಮಾಡಿಕೊಳ್ಳಲು ತಯಾರಿರಲಿಲ್ಲ. ಈ ಬಡಪಾಯಿಗಳ ಹಕ್ಕುಗಳಿಗೆ ಅರ್ಥವೇ ಇಲ್ಲವಾಯಿತು.

ಲಾಕ್‍ಡೌನ್- 2ರಲ್ಲೂ ಈ ಲಕ್ಷ ಲಕ್ಷ ನಿರ್ಗತಿಕರ ಇರವನ್ನೇ ಗುರುತಿಸಲಿಲ್ಲ ಕೇಂದ್ರ ಸರ್ಕಾರ. ಇನ್ನು ಅವರ ಬವಣೆಯನ್ನು ನಿವಾರಿಸುವುದು ದೂರವೇ ಉಳಿಯಿತು.

ವಲಸೆ ಕಾರ್ಮಿಕರ ಕಣ್ಣೀರು ಒರೆಸುವ ಅವಕಾಶವನ್ನು 2020ರ ಮೇ 15ರಂದು ಇನ್ನೊಮ್ಮೆ ಕಳೆದುಕೊಂಡಿತು. ಹೆದ್ದಾರಿಗಳು, ರೈಲುದಾರಿಗಳಲ್ಲಿ ಸಾವಿರಾರು ಕಿ.ಮೀ. ಉದ್ದಕ್ಕೆ ದುಃಖ ಹಸಿವು ವ್ಯಥೆ ವಿಷಾದ ಹಾಗೂ ತಬ್ಬಲಿ ಭಾವಗಳ ನದಿಗಳಂತೆ ಹರಿಯತೊಡಗಿದ್ದರು ವಲಸೆ ಕಾರ್ಮಿಕರು. ಅವರನ್ನು ಗುರುತಿಸಿ ಅನ್ನ- ನೀರು-ನೆರಳು ಹಾಗೂ ಉಚಿತ ಪಯಣವನ್ನು ಏರ್ಪಡಿಸುವಂತೆ ದೇಶದ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕೆಂಬ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತು. ಅರ್ಜಿಯ ಗುಣಗಳನ್ನು ಪರಿಗಣಿಸಲೂ ಇಲ್ಲ.

ಸರ್ಕಾರದ ಪರವಾಗಿ ಮಂಡಿಸಲಾಗುವ ಹೇಳಿಕೆಗಳಿಗೆ ನ್ಯಾಯಾಲಯ ನೀಡುತ್ತಿರುವ ಸಾಂಸ್ಥಿಕ ಗೌರವ- ಮಾನ್ಯತೆ-ಮನ್ನಣೆ ಮತ್ತು ಈ ಅಗಾಧ ಮಾನವೀಯ ಬಿಕ್ಕಟ್ಟಿನ ಕುರಿತು ನ್ಯಾಯಾಲಯ ತೋರಿರುವ ನಿರ್ಲಕ್ಷ್ಯವನ್ನು ತಕ್ಷಣವೇ ಸರಿಪಡಿಸಬೇಕು. ಇಲ್ಲದೆ ಹೋದರೆ ಲಕ್ಷೋಪಲಕ್ಷ ಹಸಿದ ನಿರ್ಗತಿಕ ವಲಸಿಗರ ಸಂಬಂಧ ತಾನು ವಹಿಸಬೇಕಿರುವ ಸಾಂವಿಧಾನಿಕ ಪಾತ್ರ ಮತ್ತು ಕರ್ತವ್ಯಗಳಿಂದ ನ್ಯಾಯಾಲಯ ಕೈ ತೊಳೆದುಕೊಂಡಂತೆಯೇ ಸರಿ.

ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಪ್ರಸಕ್ತ ಸನ್ನಿವೇಶದಲ್ಲಿ ಭಾರತೀಯ ಜನತಂತ್ರದ ಉಳಿವು ಮತ್ತು ಕಾನೂನಿನ ಪಾರಮ್ಯವು ಸುಪ್ರೀಂಕೋರ್ಟನ್ನೇ ಅವಲಂಬಿಸಿದೆ. ಪ್ರಭುತ್ವದ ಕ್ರಿಯೆಯ ನಾಗರಿಕರ ಮೂಲಭೂತ ಹಕ್ಕುಗಳನ್ನು ಆಪೋಶನ ತೆಗೆದುಕೊಳ್ಳದಂತೆ ಕಾವಲು ನಿಲ್ಲುವ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಅದು ಸಕ್ರಿಯವಾಗಿ ನಿಭಾಯಿಸಬೇಕಿದೆ.

ಇಂದಿಗೂ ಈ ಹೊತ್ತಿಗೂ ವಲಸೆ ಕಾರ್ಮಿಕರ ಸಂಕಟ ಮುಂದುವರೆದಿದೆ. ಲಕ್ಷಾಂತರ ಜನ ರೇಲ್ವೆ ನಿಲ್ದಾಣಗಳು ಮತ್ತು ರಾಜ್ಯಗಳ ಸರಹದ್ದುಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಇವರಿಗೆ ಅನ್ನ ನೀರು ನೆರಳು ಹಾಗೂ ಪ್ರಯಾಣ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ನಾವು ಸುಪ್ರೀಂಕೋರ್ಟನ್ನು ಆಗ್ರಹಪಡಿಸುತ್ತೇವೆ. ಅನ್ಯಾಯ ಎಲ್ಲಿಯೇ ಜರುಗಿದರೂ ಅದು ನ್ಯಾಯಕ್ಕೆ ಎಲ್ಲೆಡೆಯೂ ಗಂಡಾಂತರವೇ ಎಂಬ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ ಅವರ ಮಾತನ್ನು ಇಲ್ಲಿ ನೆನಪಿಸಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...