ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳ ನಿವಾರಣೆ, ದೂರು ಸಲ್ಲಿಕೆ ಹಾಗೂ ಸ್ಪಷ್ಟೀಕರಣಕ್ಕಾಗಿ ಹೆಲ್ಪ್ ಡೆಸ್ಕ್ ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ.
ಎಸ್ಐಆರ್(SIR) ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಮತದಾರರಿಗೆ ಗೊಂದಗಳು ಉಂಟಾಗುವುದು ಸಾಮಾನ್ಯ ಇಂತಹ ಸಂದರ್ಭದಲ್ಲಿ , ಸಾರ್ವಜನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ, ಅವರ ಗೊಂದಲಗಳಿಗೆ ಪರಿಹಾರಕಂಡುಕೊಳ್ಳಲು ಸರ್ಕಾರ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು 7 ದಿನಗಳ ಒಳಗಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಕೌಂಟರ್ಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದೆ. ಜಿಲ್ಲಾ ಪಂಚಾಯ್ತಿ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳು ಹೆಲ್ಪ್ ಡೆಸ್ಕ್ಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.
ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಯ ವಾರ್ಡ್ ಕಚೇರಿಯಲ್ಲಿ ಕಂಪ್ಯೂಟರ್, ಇಂಟರ್ನೆಟ್, ಮುದ್ರಣ, ಸ್ಕ್ಯಾನಿಂಗ್ ಮತ್ತು ಅಗತ್ಯ ಮೂಲಸೌಕರ್ಯಗಳೊಂದಿಗೆ ಸಹಾಯ ಮತ್ತು ಸೌಲಭ್ಯ ಕೌಂಟರ್ ಸ್ಥಾಪಿಸಬೇಕು. ಅಟಲ್ ಜನಸ್ನೇಹಿ ಕೇಂದ್ರಗಳು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, CSC ಗಳು ಮತ್ತು ಇತರೆ ಅಧಿಕೃತ ಕೇಂದ್ರಗಳು ಅರ್ಜಿಗಳನ್ನು ಪ್ರಕ್ರಿಯೆಗೊಳಿಸುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಗ್ರಾಮಪಂಚಾಯಿತಿಗಳಲ್ಲಿ ವಾಸಸ್ಥಳ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಅಟಲ್ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಗಳ ಮೂಲಕ ಇಷ್ಟು ದಿನ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಪಡೆಯಬಹುದಿತ್ತು. ತಹಸೀಲ್ದಾರ್ ಈ ಪ್ರಮಾಣಪತ್ರವನ್ನು ನೀಡುವ ಅಧಿಕಾರವನ್ನು ಹೊಂದಿದ್ದರು. ಇದೀಗ ಕರ್ನಾಟಕ ಸರ್ಕಾರದ ಹೊಸ ಆದೇಶದಂತೆ ಗ್ರಾಮಪಂಚಾಯಿತಿಗಳಲ್ಲೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವಂತೆ ಆದೇಶ ಹೊರಡಿಸಿದೆ. ತಹಸೀಲ್ದಾರ್ ಹಾಗೂ ಉಪ ತಹಸೀಲ್ದಾರ್ ಈ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ವ್ಯಕ್ತಿಗಳಿಗೆ ಪ್ರಮಾಣ ಪತ್ರವನ್ನು ನೀಡಲು ಅವಕಾಶ ನೀಡಲಾಗಿದೆ. ಇದರ ಮೂಲಕ ಕರ್ನಾಟಕದ ಯಾವುದೇ ಒಬ್ಬ ವ್ಯಕ್ತ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಕ್ಕಣೆ ಪಡೆಯಲು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬಹುದು.
ಇಂದಿನಿಂದ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯಾದ್ಯಂತ ಬಿಎಲ್ಒಗಳು ಮನೆ ಬಾಗಿಲಿಗೆ ಬಂದು ಎನ್ಯುಮರೇಷನ್ ಫಾರ್ಮ್ ಕೊಡಲಿದ್ದಾರೆ. ಮತದಾರರ ಗುರುತಿನ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಈ ಫಾರ್ಮ್ಗಳನ್ನು ತುಂಬಬೇಕು. ಆ ನಂತರ, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆ ಪಟ್ಟಿಯಲ್ಲಿ ಎನ್ಯುಮರೇಷನ್ ಫಾರ್ಮ್ ಸಲ್ಲಿಸಿದ್ದ ಪ್ರತಿಯೊಬ್ಬರ ಹೆಸರುಗಳು ಇರುತ್ತವೆ. ಆದರೆ, ಲಕ್ಷಾಂತರ ಮಂದಿಗೆ ತಮ್ಮ ಅರ್ಹತೆಯನ್ನು ಸಾಬೀತು ಪಡಿಸುವಂತೆ ಚುನಾವಣಾ ಆಯೋಗ ನೋಟಿಸ್ ಕೊಡುತ್ತದೆ. ಅಕ್ಷರಸ್ಥರು ತಮ್ಮ ಎಸ್ಎಸ್ಎಲ್ಸಿ ಅಂಕಪಟ್ಟಿ, ಪಾಸ್ಪೋರ್ಟ್ ಸೌಲಭ್ಯ ಹೊಂದಿರುವರರು ಪಾಸ್ಪೋರ್ಟ್ಗಳನ್ನು ಒದಗಿಸಬಹುದು. ಆದರೆ, ಅನಕ್ಷರಸ್ಥರು ಮತ್ತು ಬಡ-ಹಿಂದುಳಿದ ದಾಖಲೆ ರಹಿತರು ಸಮಸ್ಯೆಗೆ ಸಿಲುಕಲಿದ್ದಾರೆ.
ಅಂತಹ ದಾಖಲೆ ರಹಿತರ ಮತದಾನ ಹಕ್ಕನ್ನು ರಕ್ಷಿಸಲು ಜಾತಿ ಪ್ರಮಾಣಪತ್ರ ಮತ್ತು ಶಾಶ್ವತ ನಿವಾಸ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ಒದಗಿಸಬಹುದು, ಆ ಮೂಲಕ ತನ್ನ ನಾಗರಿಕರನ್ನು ರಕ್ಷಿಸಿಕೊಳ್ಳಬಹುದು. ಈ ಹಿಂದೆ, ಕೇರಳ ಸರ್ಕಾರವೂ ಇಂತಹ ಕ್ರಮವನ್ನು ಕೈಗೊಂಡಿತ್ತು. ಬಹುಸಂಖ್ಯಾತರು ಮತಪಟ್ಟಿಯಿಂದ ಹೊರಗುಳಿಯದಂತೆ ರಕ್ಷಿಸಿತು. ಇದೀಗ, ಕರ್ನಾಟಕ ಸರ್ಕಾರವು ಅಂತಹ ಮಹತ್ವದ ಹೆಜ್ಜೆ ಇಟ್ಟಿದೆ.


