ಶಕ್ತಿ ಯೋಜನೆ ನಿಲ್ಲುವ ಊಹಾಪೋಹ ವಿಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು, ಮುಂದಿನ 10 ವರ್ಷವೂ ಶಕ್ತಿ ಯೋಜನೆ ಮುಂದುವರಿಯಲಿದೆ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಕಾಂಗ್ರೆಸ್ ಪಕ್ಷ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುತ್ತಿದೆ. ಶಕ್ತಿ ಯೋಜನೆಯನ್ನು ಜೂನ್ 11ರಂದು ಜಾರಿಗೆ ತರಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC), ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.
ಈ ಯೋಜನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಆಗಸ್ಟ್ 15ರಿಂದ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಉಚಿತ ಪ್ರಯಾಣವನ್ನು ಕರ್ನಾಟಕ ಹೈ ಕೋರ್ಟ್ ತೀರ್ಪು ನೀಡಿದೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್ ವೈರಲ್ ಆಗಿತ್ತು.
ಈ ಬಗ್ಗೆ ಮಂಡ್ಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ ಅವರು, ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎನ್ನುವುದು ಸುದ್ದಿ ಸುಳ್ಳು, ಮುಂದಿನ 10 ವರ್ಷವೂ ಶಕ್ತಿ ಯೋಜನೆ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.
”ಒಂದು ಪಕ್ಷದಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಈ ಶಕ್ತಿ ಯೋಜನೆ ನಿಲ್ಲಲ್ಲ. ಮಹಿಳೆಯರು ಪಾಸ್ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.