Homeನ್ಯಾಯ ಪಥಆ ಸಮಾಜಮುಖೀ ಬದುಕಿನ ಹೆಸರು 'ಶೌಕತ್ ಕೈಫಿ' : ಡಿ.ಉಮಾಪತಿಯವರು ಬರೆದ ಪ್ರೇಮಕಥೆ

ಆ ಸಮಾಜಮುಖೀ ಬದುಕಿನ ಹೆಸರು ‘ಶೌಕತ್ ಕೈಫಿ’ : ಡಿ.ಉಮಾಪತಿಯವರು ಬರೆದ ಪ್ರೇಮಕಥೆ

ಅರಸೊತ್ತಿಗೆ ಮತ್ತು ಅನ್ಯಾಯದ ಮೇಲೆ ದಾಳಿ ನಡೆಸಿದ್ದ 'ತಾಜ್' (ಮುಕುಟ) ಎಂಬ ಮತ್ತೊಂದು ಶಕ್ತಿಶಾಲಿ ಕವಿತೆಯನ್ನು ಕೈಫಿ ವಾಚಿಸಿದ್ದರು. ನಿಜಾಮ್ ಆಳ್ವಿಕೆಯ ನಗರದಲ್ಲಿ ಈ ಕವಿತೆ ಓದಲು ಎಂಟೆದೆ ಬೇಕಿತ್ತು ಎಂಬ ಸಂಗತಿಯೇ ಶೌಕತ್ ಅವರನ್ನು ಬಹುವಾಗಿ ಪ್ರಭಾವಿಸಿತ್ತು.

- Advertisement -
- Advertisement -

ಕಳೆದ ವಾರ ಮುಂಬಯಿಯಲ್ಲಿ ನಿಧನರಾದ ಶೌಕತ್ ಕೈಫಿ ಹೈದರಾಬಾದಿನ ಸಂಪ್ರದಾಯವಾದಿ ಮುಸ್ಲಿಂ ಕುಟುಂಬವೊಂದರ ಹುಡುಗಿ. ಪ್ರೇಮಕ್ಕಾಗಿ, ಮೌಲ್ಯಗಳಿಗಾಗಿ, ಸಿದ್ಧಾಂತಗಳಿಗಾಗಿ ಹೂಡಿದ ಬಂಡಾಯ, ಮಾಡಿದ ತ್ಯಾಗ, ತುಳಿದ ಹೊಸ ದಾರಿಯ ಸಂಘರ್ಷದ ಬದುಕು ಅವರದು..

ಪ್ರಗತಿಪರ ರಂಗಭೂಮಿ ಚಳವಳಿಯ ಜೊತೆಜೊತೆಗೆ ಬೆಸಗೊಂಡಿದ್ದವರು.. ಪ್ರೇಮಿಯಾಗಿ ಪತಿಯಾದ ನಂತರವೂ ಪ್ರೇಮಿಯಾಗಿ, ಕಡೆತನಕ ಆತ್ಮೀಯ ಸಖನಾಗಿ ಉಳಿದ ಜನಪರ ಕವಿ ಕೈಫಿ ಆಜ್ಮಿ ಬಗೆಗಿನ ಅವರ ಪ್ರೀತಿಯ ಒರತೆ ತಾವು 93ರ ವಯಸ್ಸಿನಲ್ಲಿ ಕಡೆಯ ಉಸಿರೆಳೆವತನಕ ಬತ್ತಲಿಲ್ಲ.

1947ರ ಫೆಬ್ರವರಿಯಲ್ಲಿ ಹೈದರಾಬಾದಿನಲ್ಲಿ ನಡೆದ ಅಖಿಲ ಭಾರತ ಉರ್ದು ಪ್ರಗತಿಪರ ಬರೆಹಗಾರರ ಸಮ್ಮೇಳನದಲ್ಲಿ ಭಾಗವಹಿಸಲು ಜನಪರ ಕವಿಗಳನೇಕರು ಅಲ್ಲಿ ಸೇರಿದ್ದಾಗ ಶುರುವಾಗಿತ್ತು ಶೌಕತ್ ಪ್ರೇಮಗಾಥೆ. ಹಲವು ಕವಿಗಳನ್ನು ಶೌಕತ್ ಅವರ ಸಮೀಪ ಬಂಧುವಿನ ಮನೆಯಲ್ಲಿ ಉಳಿಸಲಾಗಿತ್ತು. ಈ ಕವಿಗಳ ವಿನಮ್ರತೆ ಎಳೆಹರೆಯದ ಶೌಕತ್ ಅವರನ್ನು ಮಂತ್ರಮುಗ್ಧಗೊಳಿಸಿತ್ತು.

ಯಾದ್ ಕೀ ರೆಹಗುಝಾರ್ ಎಂಬುದು ಅವರ ಆತ್ಮಚರಿತ್ರೆಯ ಹೊತ್ತಿಗೆ. ಅದರ ಇಂಗ್ಲಿಷ್ ಅನುವಾದಿತ ಅವತರಣಿಕೆ ’Kaifi and I’. ಈ ಪುಸ್ತಕದಲ್ಲಿ ತಮ್ಮ ಜೀವನ ಪಯಣದ ವಿವರಗಳನ್ನು ಅವರು ದಾಖಲಿಸಿದ್ದಾರೆ.

ಕೈಫಿ ಅಂದು ಸಂಜೆ ಓದಿದ ಕವಿತೆ ಔರತ್ (ಹೆಣ್ಣು). ಗಂಡಾಳಿಕೆಯನ್ನು ಪ್ರಶ್ನಿಸಿದ್ದ ಕವಿತೆ.

ನಾ ದಹಿಸುವ ಅದೇ ಬೆಂಕಿಯಲ್ಲಿ ಉರಿಯಬೇಕಿದೆ ನಿನಗೆ,
ಎದ್ದೇಳು ಜೀವದರಸಿಯೇ ನನ್ನ ಹೆಜ್ಜೆಯಲ್ಲೇ ಹೆಜ್ಜೆ ಇಡಬೇಕಿದೆ ನಿನಗೆ
(ಜಿಸ್ ಮೇಂ ಜಲ್ತಾ ಹೂಂ ಉಸೀ ಆಗ್ ಮೇ ಜಲ್ನಾ ಹೈ ತುಝೇ
ಉಠ್ ಮೇರೀ ಜಾಂ ಮೇರೇ ಸಾಥ್ ಹೀ ಚಲ್ನಾ ಹೈ ತುಝೇ)

ತನ್ನನ್ನೇ ಕುರಿತು ಕೈಫಿ ಬರೆದಿದ್ದ ಕವಿತೆಯಿದು ಎನ್ನಿಸಿಬಿಟ್ಟಿತ್ತು ಶೌಕತ್‍ಗೆ. ಮಹಿಳೆಯನ್ನು ಗೌರವಿಸುವ ಪುರುಷನೇ ತನಗೆ ಸೂಕ್ತ ಆತ್ಮಸಂಗಾತಿ ಎಂದು ಆ ಎಳೆ ಯುವತಿ ಭಾವಿಸಿದ್ದರು. ಮೊದಲ ನೋಟದಲ್ಲೇ ಅಂಕುರಿಸಿದ ಪ್ರೇಮ ಅದು. ಮುಷಯಿರಾದ ನಂತರ ಕವಿಗಳ ಹಸ್ತಾಕ್ಷರಗಳಿಗಾಗಿ ಬೇಟೆ ನಡೆದಿತ್ತು. ಕೈಫಿ ಆಜ್ಮಿಯ ಮುತ್ತಿದ್ದ ದೊಡ್ಡ ಗುಂಪು ಕರಗಲೆಂದು ಕಾದ ಶೌಕತ್, ಮತ್ತೊಬ್ಬ ಗಣ್ಯ ಕವಿ ಅಲಿ ಸರ್ದಾರ್ ಜಾಫ್ರಿ ಬಳಿ ನಡೆದರು. ಆ ದಿನಗಳಲ್ಲಿ ಜಾಫ್ರಿ ಅವರ ವರ್ಚಸ್ಸು ಯಾವುದೇ ಕ್ರಾಂತಿಕಾರಿಗಿಂತ ಕಡಿಮೆ ಇರಲಿಲ್ಲ. ಶೌಕತ್ ನಡೆಯನ್ನು ಕೈಫಿ ಕಣ್ಣಂಚು ಗಮನಿಸಿತ್ತು.

ಕಡೆಗೂ ತಮ್ಮೆಡೆ ಸಾರಿ ಬಂದ ಶೌಕತ್ ಕೈಯಲ್ಲಿನ ಡೈರಿಯಲ್ಲಿ ಕಳಪೆ ಕವಿತೆಯ ಎರಡು ಪಂಕ್ತಿಗಳನ್ನು ಗೀಚಿದರು ಕೈಫಿ. ಈ ಸಪ್ಪೆ ಸಾಲುಗಳ ಯಾಕೆ ಬರೆದಿರಿ ಎಂದು ಮುಖ ಊದಿಸಿ ಕೇಳಿದ ಶೌಕತ್ ಅವರೆಡೆಗೆ ತುಂಟ ನಗು ಚಿಮ್ಮಿಸಿದರು ಕೈಫಿ. ಮೊದಲೇ ತನ್ನ ಬಳಿಗೆ ಬಾರದೆ ಸರ್ದಾರ್ ಜಾಫ್ರಿ ಕಡೆ ಹೋದೆಯಲ್ಲ ಅದಕ್ಕೆ ಎಂದರು.

ಅರಸೊತ್ತಿಗೆ ಮತ್ತು ಅನ್ಯಾಯದ ಮೇಲೆ ದಾಳಿ ನಡೆಸಿದ್ದ ‘ತಾಜ್’ (ಮುಕುಟ) ಎಂಬ ಮತ್ತೊಂದು ಶಕ್ತಿಶಾಲಿ ಕವಿತೆಯನ್ನು ಕೈಫಿ ವಾಚಿಸಿದ್ದರು. ನಿಜಾಮ್ ಆಳ್ವಿಕೆಯ ನಗರದಲ್ಲಿ ಈ ಕವಿತೆ ಓದಲು ಎಂಟೆದೆ ಬೇಕಿತ್ತು ಎಂಬ ಸಂಗತಿಯೇ ಶೌಕತ್ ಅವರನ್ನು ಬಹುವಾಗಿ ಪ್ರಭಾವಿಸಿತ್ತು.

ಮದುವೆ ಈಗಾಗಲೆ ಗೊತ್ತಾಗಿರುವ ಶೌಕತ್‍ಗೆ ಅಭಿನಂದನೆ ಹೇಳುವಂತೆ ಶೌಕತ್ ಅಕ್ಕ ಕೈಫಿ ಕಾಲೆಳೆದಿದ್ದರು. ಕವಿಯ ಮುಖ ಬಿಳುಚಿಕೊಂಡಿತು. ಕೈಫಿ ವಿವಾಹವೂ ಸಮೀಪಿಸಿತ್ತು. ಮದುವೆಯ ನಂತರ ನನ್ನನ್ನು ಮರೆತುಬಿಡುವಿ ಎಂದು ತಮಾಷೆ ಮಾಡಿದ ಕೈಫಿ ಮುಖ ಒಡನೆಯೇ ಗಂಭೀರವಾಯಿತು. ತಾನೂ ಮದುವೆಯಾಗುವುದಿಲ್ಲ ಎಂದು ಸಾರಿದರು. ಅಂದು ರಾತ್ರಿ ಇಬ್ಬರೂ ನಿದ್ರಿಸಲಿಲ್ಲ.

ಮರುದಿನ ಆಕೆಗೊಂದು ಭಾವತೀವ್ರ ಕವಿತೆ ಬರೆದು ಕಳಿಸಿದರು ಕೈಫಿ. ಅನುಮಾನ ಬಂದ ಶೌಕತ್ ತಾಯಿ ಇಬ್ಬರೂ ಕಲೆಯದಂತೆ ಕಣ್ಣಿಟ್ಟರು. ಭಾರ ಹೃದಯದಿಂದ ಮರುದಿನವೇ ಮುಂಬಯಿಗೆ ತೆರಳಿದರು ಕೈಫಿ. ದುಃಖದಿಂದ ಹುಚ್ಚಳಂತಾದರು ಶೌಕತ್. ಕೂಡಲೇ ಪತ್ರವೊಂದನ್ನು ಬರೆದರು- “ಕೈಫಿ, ಹೋಲಿಸಲಾಗದಷ್ಟು ಪ್ರೀತಿಸುತ್ತೇನೆ ನಿನ್ನನ್ನು. ಆಕಾಶ, ಪರ್ವತಗಳು, ನದಿಗಳು, ಜನರು, ದೇವದೂತರು ಕಡೆಗೆ ಪರಮೇಶ್ವರ ಸೇರಿದಂತೆ ಯಾರೆಂದರೆ ಯಾರೂ ಇದನ್ನು ಬದಲಾಯಿಸಲಾರರು… ನಿಮ್ಮವಳು ಮತ್ತು ಕೇವಲ ನಿಮ್ಮವಳಾದ ಶೌಕತ್”. ಕೈಫಿಯಿಂದ ಮಾರೋಲೆ ಬಂದಿತ್ತು. ತಮ್ಮ ರಕ್ತದಿಂದ ಬರೆದಿದ್ದರು.

ಈ ಉರ್ದು ಕವಿಗಳನ್ನು ನಂಬಬೇಡ ಕಣಮ್ಮ… ಕುರಿ ರಕ್ತದಿಂದಲೂ ಬರೆದಿರಬಹುದು ಎಂದು ಮಗಳ ಮನಸು ಬದಲಾಯಿಸಲು ನೋಡಿದ್ದರು ಶೌಕತ್ ತಂದೆ. ಆದರೆ ಮಗಳು ಜಗ್ಗಲಿಲ್ಲ. ಕಡೆಗೆ ಸೋತ ತಂದೆಯೇ ಯಾರಿಗೂ ಹೇಳದೆ ಮಗಳನ್ನು ಮುಂಬಯಿಗೆ ಕರೆದೊಯ್ದರು.

ಅಲ್ಲಿ ಕಾದಿತ್ತು ತೆರೆದ ತೋಳುಗಳ ಸ್ವಾಗತ. ತಡವಿಲ್ಲದೆ ನಡೆದಿತ್ತು ಮದುವೆ. ಭಾರತೀಯ ಕಮ್ಯುನಿಸ್ಟ್ ಪಾರ್ಟಿಯ (ಸಿಪಿಐ) ವತಿಯಿಂದ ಅದರ ನಾಯಕ ಬಿ.ಟಿ.ರಣದಿವೆ ಅವರು ನೂರು ರೂಪಾಯಿ ಉಡುಗೊರೆ ನೀಡಿದ್ದರು. ಈ ಲೈಲಾ ಮಜ್ನೂ ಜೋಡಿಯ ನಾಟಕ ಆರು ತಿಂಗಳೊಳಗೆ ಕೊನೆಯಾಗಿ ಪಕ್ಷಕ್ಕೆ ನೂರು ರುಪಾಯಿ ನಷ್ಟವಾಗುವಂತೆ ಆಗಕೂಡದು ಎಂಬ ಷರತ್ತನ್ನೂ ಅವರು ವಿಧಿಸಿದ್ದರು.

ಕೈಫಿ ಶಿಯಾ ಮತ್ತು ಶೌಕತ್ ಸುನ್ನಿ ಒಳಪಂಗಡಗಳಿಗೆ ಸೇರಿದ್ದರು. ಮದುವೆಗೆ ಎರಡೂ ಕಡೆಯ ಕಾಜಿಗಳ ಅಗತ್ಯವಿತ್ತು. ಆದರೆ ಇಬ್ಬರಿಗೆ ಕೊಡುವಷ್ಟು ಹಣವಿರಲಿಲ್ಲ. ಕೈಫಿ ತಾನೂ ಸುನ್ನಿ ಎಂದು ಸಾರಿದರು. ಒಬ್ಬ ಕಾಜಿಯೇ ಸಾಕಾಯಿತು. ಹಸಿದವರು, ತುಳಿಸಿಕೊಂಡವರಿಗಾಗಿ ಮಾನವೀಯ ತುಡಿತಗಳ ಹೊಸ ಸಮಾಜವನ್ನು ನಿರ್ಮಿಸಲು ಹೊರಟಿದ್ದ ಮುಂಬಯಿಯ ಅಂದಿನ ಎಲ್ಲ ಪ್ರಗತಿಪರರೂ ಈ ಮದುವೆಗೆ ಸಾಕ್ಷಿಗಳಾದರು.

ಮುರಿದ ಮಂಚ, ಪುಸ್ತಕಗಳು- ಪತ್ರಿಕೆಗಳ ಹರಡಿದ್ದ ಪುಟ್ಟ ಕೋಣೆಯಲ್ಲಿ ಮೊದಲ ರಾತ್ರಿ ಕಳೆಯಿತು. ಸಿಪಿಐ ಪೂರ್ಣಾವಧಿ ಕಾರ್ಯಕರ್ತರಾಗಿದ್ದ ಕೈಫಿಗೆ ತಿಂಗಳಿಗೆ ಸಿಗುತ್ತಿದ್ದ ಖರ್ಚಿನ ಹಣ ನಲವತ್ತೈದು ರೂಪಾಯಿ. ಮೂವತ್ತು ಅವರ ಊಟಕ್ಕೆ, ಹತ್ತು ಅವರ ಓಡಾಟಕ್ಕೆ.

ನಟನೆಯಲ್ಲಿ ತರಬೇತಿ ಇಲ್ಲದ ಶೌಕತ್ ಅವರನ್ನು ಹುರಿದುಂಬಿಸಿ ಪೃಥ್ವೀ ಥಿಯೇಟರ್ ಕಡೆಗೆ ಕಳಿಸಿದವರು ಸಿಪಿಐ ಪ್ರಧಾನಕಾರ್ಯದರ್ಶಿ ಪಿ.ಸಿ.ಜೋಶಿ. ಹಕೀಕತ್, ಉಮ್ರಾವ್ ಜಾನ್, ಬಾಝಾರ್, ಗರಂ ಹವಾ, ಸಲಾಂ ಬಾಂಬೆ ಮುಂತಾದ ಚಿತ್ರಗಳಲ್ಲಿ ಅವರ ಅಭಿನಯ ಜೀವಂತವಾಗಿ ಮೂಡಿತ್ತು.

ಅವರು ಅಭಿನಯಿಸಿದ ಮೊದಲ ನಾಟಕ ಇಸ್ಮತ್ ಚುಗ್ತಾಯಿ ಅವರ ಧಾನಿ ಬಾಂಕೇ. ಹೊಸತಾಗಿ ಜನಿಸಿದ್ದ ಸ್ವತಂತ್ರ ದೇಶದ ಸಾಮಾಜಿಕ ನೇಯ್ಗೆಯನ್ನು ಛಿದ್ರಗೊಳಿಸತೊಡಗಿದ್ದ ಹಿಂದೂ-ಮುಸ್ಲಿಂ ದಂಗೆಗಳು ಅದರ ವಸ್ತು ವಿಷಯ. ಭೀಷ್ಮಸಹಾನಿ, ಪೃಥ್ವೀರಾಜ ಕಪೂರ್, ಉಜ್ರಾ ಭಟ್, ಜೊಹ್ರಾ ಸೆಹಗಲ್ ಮುಂತಾದ ಮಹಾರಥಿಗಳಿದ್ದ IPTA ಆಂದೋಲನದ ಭಾಗವಾದರು.

ರಂಗಭೂಮಿಯ ಹೊಸ ಪರಿಭಾಷೆ ಮತ್ತು ಸೌಂದರ್ಯಪ್ರಜ್ಞೆಯ ಶೋಧನೆಯಲ್ಲಿ ತೊಡಗಿದ್ದ ಪ್ರತಿಬದ್ಧ ಯುವನಟರನ್ನು ಬೆನ್ನಿಗಿರಿಸಿಕೊಂಡು ದೇಶಸಂಚಾರ ಮಾಡಿದರು. ಜಾತಿಧರ್ಮ ಪಂಗಡಗಳ ಮಿತಿಗಳನ್ನು ಮೀರಿದ ಕಲೆಯ ಪ್ರತಿಪಾದಕರಾದರು. ನಾಲ್ಕೂ ನಿಟ್ಟಿನ ಬದಲಾವಣೆಗಳನ್ನು ಗ್ರಹಿಸಿ ಅಳವಡಿಸಿಕೊಂಡರು. ಸಿರಿವಂತ ತೌರನ್ನು ತೊರೆದು ಬಡ ಕಮ್ಯುನಿಸ್ಟ್ ಕವಿಯ ಕೈ ಹಿಡಿದರು. ಧನ ದೌಲತ್ತುಗಳಿಗೆ ಬೆನ್ನು ತೋರಿಸಿ, ಸ್ತ್ರೀಪುರುಷರು ಸಮಾನ ಸಖರೆಂದು ತಿಳಿದು ಸಮಾಜಕ್ಕಾಗಿ ಬದುಕುವ ಹೊಸ ಜಗತ್ತನ್ನು ಪ್ರವೇಶಿಸಿದರು. ಅಭಾವ, ಬಡತನದ ನಡುವೆ ಒಲೆ ಉರಿಸುತ್ತ ಮಕ್ಕಳ ಬೆಳೆಸುತ್ತ ಕವಿತೆ, ಸಾಹಿತ್ಯ, ಕ್ರಾಂತಿಯ ಕುರಿತ ಚರ್ಚೆಗೆ ತೆರೆದುಕೊಂಡರು. ಒಂದು ಪೀಳಿಗೆಯ ಹೆಣ್ಣುಮಕ್ಕಳಿಗೆ ದಾರಿ ತೋರಿದ ಬದುಕನ್ನು ಜೀವಿಸಿದರು.

ಅಂದಹಾಗೆ ಸಮಾಜಮುಖೀ ನಟಿ ಶಬಾನಾ ಆಜ್ಮಿ ಮತ್ತು ಆಕೆಯ ಅಣ್ಣ ಚಲನಚಿತ್ರ ಛಾಯಾಗ್ರಾಹಕ ಬಾಬಾ ಆಜ್ಮಿ ಅವರು ಶೌಕತ್ ಮತ್ತು ಕೈಫಿಯವರ ಮಕ್ಕಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...