Homeಮುಖಪುಟಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಇದನ್ನು ಕಾಡುಗೊಲ್ಲ ಸಮುದಾಯ ಸ್ವಾಗತಿಸಿದೆ.

- Advertisement -
- Advertisement -

ಶಿರಾ ಉಪಚುನಾವಣೆ ಘೋಷಣೆಯಾಗಿದ್ದು ಮೂರು ಪಕ್ಷಗಳ ಪ್ರಚಾರ ಭರಾಟೆ ಜೋರಾಗಿ ಸದ್ದುಮಾಡುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮೊದಲೇ ಘೋಷಣೆ ಮಾಡಿದ್ದರೆ, ನಂತರ ಜೆಡಿಎಸ್ ಘೋಷಿಸಿದೆ. ಬಿಜೆಪಿ ಇನ್ನೂ ಲೆಕ್ಕಾಚಾರದಲ್ಲಿದೆ. ಆಡಳಿತಾರೂಢ ಬಿಜೆಪಿ ಪ್ರಚಾರದಲ್ಲಿ ಮುಂದಿದ್ದರೆ, ಉಳಿದ ಎರಡು ಪಕ್ಷಗಳಲ್ಲಿ ಅಬ್ಬರ ಕಂಡುಬರುತ್ತಿಲ್ಲ. ಬಿಜೆಪಿ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಹರಸಾಹಸಪಡುತ್ತಿದೆ. ಹಳೆಯ ದಾಳಗಳನ್ನೇ ಉರುಳಿಬಿಡುತ್ತಿದೆ. ಭಾವನಾತ್ಮಕ ವಿಷಯಗಳನ್ನು ಹರಿಯಬಿಟ್ಟರೆ ಗೆಲುವು ಖಚಿತ ಎಂಬ ಭ್ರಮೆಯಲ್ಲಿ ಮುಂದೆ ಸಾಗುತ್ತಿದೆ.

ಬಿಜೆಪಿ ನಾಯಕರಿಗೆ ಜಿಲ್ಲೆಯಲ್ಲಿ ಇದುವರೆಗೂ ಇಲ್ಲದಿದ್ದ ‘ಹಿಂದೂಗಳ ಬಗೆಗಿನ ಪ್ರೀತಿ’ ಇದೇ ಮೊದಲ ಬಾರಿಗೆ ಉಕ್ಕಿ ಹರಿದಂತೆ ಕಾಣುತ್ತಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬ ಹೇಳಿಕೆ ನೀಡಿದರೆ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಹಿಂದೂಗಳ ಸಂರಕ್ಷಣೆ ಕುರಿತು ಮಾತನಾಡಿ ಹೋಗಿದ್ದಾರೆ.

ಕಳೆದ ನಾಲ್ಕು ತಿಂಗಳ ಹಿಂದೆ ಶಿರಾ ಯುವಕ ಅಜಯ್ ಕುಮಾರ್ ಗಾಲಿ ‘ಪಾಕಿಸ್ತಾನ ಮತ್ತು ಚೈನಾದ ಪರ ಜೈಕಾರ ಹಾಕಿ ಭಾರತೀಯ ಸೇನೆಯ ಬಗ್ಗೆ ನಿಕೃಷ್ಟವಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ’ ಎಂಬ ವಿಷಯ ಜೋರಾಗಿ ಸದ್ದು ಮಾಡಿತ್ತು. ಹಿಂದೂ ಸಂಘಟನೆಯೊಂದು ಅಜಯ್ ವಿರುದ್ದ ದೂರು ದಾಖಲಿಸಿತು. ಕೂಡಲೇ ಪೊಲೀಸರು ತನಿಖೆಯನ್ನೂ ನಡೆಸದೆ ಅಜಯ್ ಕುಮಾರ್ ಗಾಲಿ ವಿರುದ್ದ 124ಎ ದೇಶದ್ರೋಹ ಪ್ರಕರಣ ದಾಖಲಿಸಿದರು.

ಸತ್ಯಸಂಗತಿ ಎಂದರೆ ಅಜಯ್ ಫೇಸ್‌ಬುಕ್‌ನಲ್ಲಿ ಪಾಕ್, ಚೀನ ಪರ ಜೈಕಾರ ಹಾಕಿದ ಪೋಸ್ಟ್ ಅಪ್‌ಲೋಡ್ ಆಗಿದ್ದ ಸಮಯದಲ್ಲಿ ಬುಕ್ಕಾಪಟ್ನ ಹೊನ್ನೇನಹಳ್ಳಿಯ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಮೊಬೈಲ್ ನೆಟ್‌ವರ್ಕ್ ಕೂಡ ಸಿಗುವುದಿಲ್ಲ. ಆದರೂ ಸೇನೆಯ ವಿರುದ್ದದ ಒಂದು ಪೋಸ್ಟ್ ಅಪ್‌ಲೋಡ್ ಆಗಿತ್ತು. ಈ ಬಗ್ಗೆ ಅಜಯ್‌ಗೆ ಮಾಹಿತಿ ಇರಲಿಲ್ಲ. ವಾಟ್ಸಪ್‌ನಲ್ಲಿ ಈ ಬಗ್ಗೆ ಅಜಯ್ ವಿರುದ್ದ ಟೀಕೆ, ನಿಂದನೆ ಹರಿದಾಡತೊಡಗಿದಾಗ ಸ್ನೇಹಿತರು ಅಜಯ್‌ಗೆ ಮಾಹಿತಿ ನೀಡುತ್ತಾರೆ. ಕೂಡಲೇ ಟವರ್ ಸಿಗುವ ಕಡೆ ಬಂದು ನೋಡಿದರೆ ಅಜಯ್‌ಗೆ ಶಾಕ್ ಆಗುತ್ತದೆ.

ಪೊಲೀಸರು ವಿಚಾರಣೆಗೆಂದು ಕರೆಸಿ ಅಜಯ್ ಅವರನ್ನು ಬಂಧಿಸುತ್ತಾರೆ. 20 ದಿನಗಳ ಜೈಲುವಾಸವನ್ನು ಅನುಭವಿಸಬೇಕಾಗುತ್ತದೆ. ಮಾಜಿ ಸಚಿವ ಟಿ.ಬಿ.ಜಯಚಂದ್ರ ಕೂಡಲೇ ಎಸ್‌ಪಿ ಅವರನ್ನು ಭೇಟಿ ಮಾಡಿ ಈ ಸಂಬಂಧ ಚರ್ಚಿಸುತ್ತಾರೆ. ನಂತರದ ವಿದ್ಯಮಾನದಲ್ಲಿ ಅಜಯ್ ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ದೊರೆತು ಬಿಡುಗಡೆ ಹೊಂದುತ್ತಾರೆ. ಇದರ ಬಗ್ಗೆ ವಿಚಾರಣೆಯಾಗಿ ಅಜಯ್ ಅವರ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಯಿತೇ ಎಂಬುದರ ಬಗ್ಗೆ ತನಿಖೆ ಮಾಡಬೇಕಿದೆ.

ಅಜಯ್ ಬಿಜೆಪಿಯ ಕಟ್ಟಾ ವಿರೋಧಿ. ರೈತನಾದ ಈತ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಶಿರಾ ಘಟಕದ ಸಂಚಾಲಕ. ಸಹಜವಾಗಿಯೇ ಬಿಜೆಪಿ ಅದರಲ್ಲೂ ಪ್ರಧಾನಿ ಮೋದಿ ವಿರುದ್ಧ ತನ್ನ ಫೇಸ್‌ಬುಕ್‌ನಲ್ಲಿ ಸಾಕಷ್ಟು ಟೀಕೆಗಳನ್ನು ಮಾಡಿ ಪೋಸ್ಟ್ ಮಾಡಿದ್ದಾರೆ. ಕೋಮುವಾದದ ವಿರುದ್ದ ದನಿ ಎತ್ತಿದ್ದಾರೆ. ಈ ಕಾರಣಕ್ಕೆ ಅವರ ಮೇಲೆ ವೆಬ್‌ನಲ್ಲಿ ದಾಳಿಯಾಗಿರುವುದು ಮೇಲ್ನೋಟಕ್ಕೆ ಗೋಚರಿಸುತ್ತದೆ.

ಶಿರಾದಲ್ಲಿ ಹಿಂದೂ-ಮುಸ್ಲಿಮರು ಶಾಂತಿ-ಸಹಬಾಳ್ವೆ ಸೌಹಾರ್ದತೆಯಿಂದ ಪರಸ್ಪರ ಕೂಡಿಯೇ ಜೀವನ ನಡೆಸುತ್ತಿದ್ದಾರೆ. 1992ರಲ್ಲಿ ಬಾಬ್ರಿ ಮಸೀದಿ ಕೆಡವಿದಾಗ ಗಲಭೆ ಆಗಿದ್ದು ಬಿಟ್ಟರೆ ಮತ್ತೆಂದೂ ಅಲ್ಲಿ ಹಿಂದೂ-ಮುಸ್ಲಿಮರ ನಡುವೆ ಗಲಭೆ ನಡೆದಿಲ್ಲ. ಅಂಥಾದ್ದರಲ್ಲಿ ಬಿಜೆಪಿ ನಾಯಕರು ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹೇಳುತ್ತಲೇ ತಮ್ಮನ್ನು ಟೀಕೆ ಮಾಡಿದ ಹಿಂದೂ ಯುವಕನನ್ನೇ ಜೈಲಿಗೆ ಅಟ್ಟುವಂತಹ ಕೆಲಸ ಮಾಡಿರುವುದು ಜನರ ಕಣ್ಣ ಮುಂದೆ ಇದೆ.

ಬಿಜೆಪಿ ಜಿಲ್ಲಾ ಮುಖಂಡರು ಶಿರಾದ ಮದಲೂರು ಕೆರೆಗೆ ನೀರು ಹರಿಸುವ ವಿಚಾರವನ್ನೂ ತೇಲಿಬಿಟ್ಟರು. ಹಿಂದೆ 2010ರಲ್ಲಿ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಲು ಮುಂದಾದಾಗ ಬಿಜೆಪಿಯ ಬಿ.ಸುರೇಶ್ ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ ಮೊದಲಾದವರು ಇದಕ್ಕೆ ತಗಾದೆ ತೆಗೆದಿದ್ದರು. ಇದು ಶಿರಾ ಜನರ ಮನಸ್ಸಿನಿಂದ ಅಳಿಸಿಹೋಗಿಲ್ಲ.

ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಇದನ್ನು ಕಾಡುಗೊಲ್ಲ ಸಮುದಾಯ ಸ್ವಾಗತಿಸಿದೆ. ಆದರೆ ಅಭಿವೃದ್ಧಿ ನಿಗಮಕ್ಕೆ ನಯಾ ಪೈಸೆಯನ್ನೂ ನೀಡದಿರುವುದು ಕಾಡುಗೊಲ್ಲರಲ್ಲಿ ಅಸಮಾಧಾನ ಮೂಡಿಸಿದೆ. ಬಿಜೆಪಿ ಬೆಂಬಲಿಗ ಕಾಡುಗೊಲ್ಲರು ಸಂಭ್ರಮ ಆಚರಿಸಿದ್ದರೆ ಉಳಿದವರು ಇದು ಚುನಾವಣೆ ಗಿಮಿಕ್ ಎಂದು ಮೌನವಹಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿತ್ತು. ಮನೆಯೊಂದು ಮೂರು ಬಾಗಿಲು ಎಂಬಂತಹ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಸಚಿವ ಟಿ.ಬಿ.ಜಯಚಂದ್ರ, ಡಾ.ಜಿ.ಪರಮೇಶ್ವರ್ ಮತ್ತು ಕೆ.ಎನ್. ರಾಜಣ್ಣ ಅವರ ನಡುವೆ ಭಿನ್ನಾಭಿಪ್ರಾಯಗಳು ಇದ್ದುದ್ದರಿಂದ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಿಲ್ಲೆಯ ಮುಖಂಡರನ್ನು ಕರೆಸಿ ಮಾತನಾಡಿದ ಮೇಲೆ ಒಗ್ಗಟ್ಟು ಮೂಡಿದೆ ಎನ್ನಲಾಗುತ್ತಿದೆ. ಈ ಮೂವರು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಒಬ್ಬರ ಪಕ್ಕ ಒಬ್ಬರು ಕೂತು ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವಂತೆ ಕಾಣುತ್ತಿದೆ.

ಕಾಂಗ್ರೆಸ್‌ನಿಂದ ಟಿ.ಬಿ ಜಯಚಂದ್ರ

ಮಾಜಿ ಸಚಿವ ಜಯಚಂದ್ರ ವಿರುದ್ಧ ಮುನಿಸಿಕೊಂಡಿದ್ದ ಕಾಡುಗೊಲ್ಲರ ಮುಖಂಡ ಸಾಸಲು ಸತೀಶ್ ಅವರನ್ನು ಡಿಸಿಸಿ (ಜಿಲ್ಲಾ ಕಾಂಗ್ರೆಸ್ ಸಮಿತಿ) ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಶಿರಾ ಉಪಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದು ಜಯಚಂದ್ರ ಅವರಿಗೆ ಪೂರಕವಾಗಬಹುದು. ಇದೇ ವೇಳೆ ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಟಿ.ಬಿ.ಜಯಚಂದ್ರ “ನನ್ನನ್ನು ಚುನಾವಣೆಯಲ್ಲಿ ಗೆಲ್ಲಿಸಿದರೆ ಮದಲೂರು ಕೆರೆಗೆ ಹೇಮಾವತಿ ನೀರನ್ನು ಹರಿಸುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮತಗಳು ಹೆಚ್ಚಾಗಿವೆ. ಒಕ್ಕಲಿಗರ ಮತಗಳು 49 ಸಾವಿರ, ಕಾಡುಗೊಲ್ಲರ ಮತಗಳು 26 ಸಾವಿರ, ಮುಸ್ಲಿಂ ಸಮುದಾಯದ ಮತಗಳು 22 ಸಾವಿರ, ಕುರುಬ ಸಮುದಾಯದ ಮತಗಳು 13 ಸಾವಿರ, ನಾಯಕ ಸಮುದಾಯದ ಮತಗಳು 13 ಸಾವಿರ, ಬಲಿಜ ಜನಾಂಗದ ಮತಗಳು 7 ಸಾವಿರ. ಹೀಗೆ ಬಹುಸಂಖ್ಯಾತರು ಈ ಸಮುದಾಯಗಳೇ ಆಗಿವೆ. ಈ ಸಮುದಾಯದ ಮತಗಳು ಮೂರು ಪಕ್ಷಗಳಲ್ಲೂ ಹಂಚಿ ಹೋಗಲಿವೆ. ಹಂಚಿಕೆಯಲ್ಲಿ ಏರುಪೇರು ಸ್ಪಷ್ಟವಾಗಿದೆ.

ಒಳಮೀಸಲಾತಿಯ ಕುರಿತು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ಪರ-ವಿರೋಧ ಪ್ರತಿಭಟನೆಗಳು ನಡೆಯುತ್ತಿದ್ದು ಇದು ಕೂಡ ಉಪಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ. ಬಿಜೆಪಿ ಮೇಲ್ಜಾತಿಗಳ ಪರ ಮತ್ತು ದಲಿತರಲ್ಲಿ ಸ್ಪೃಶ್ಯ ಜಾತಿಗಳ ಪರವಾಗಿರುವುದರಿಂದ ಆ ಮತಗಳು ಬಿಜೆಪಿ ಅಭ್ಯರ್ಥಿಗೆ ಬೀಳುವ ನಿರೀಕ್ಷೆ ಇದೆ. ಕಾಡುಗೊಲ್ಲರು ಮತ್ತು ಪರಿಶಿಷ್ಟರ ಮತಗಳು ಸಾಲಿಡ್ ಆಗಿ ಯಾವುದೇ ಒಂದು ಪಕ್ಷಕ್ಕೆ ವರ್ಗಾವಣೆಗೊಳ್ಳುವುದಿಲ್ಲ ಎಂಬ ವಿಶ್ಲೇಷಣೆಗಳೂ ನಡೆಯುತ್ತಿದೆ. ಹಾಗಾಗಿ ಪರಿಶಿಷ್ಟರ ಮತಗಳು ಮೂರೂ ಪಕ್ಷಗಳ ಪಾಲಾಗಲಿವೆ. ಹನಿಹನಿ ಕೂಡಿ ಹಳ್ಳ ಹರಿದು ಯಾವ ಸಮುದ್ರವನ್ನು ಸೇರಲಿದೆ ಎಂಬುದು ನಿಗೂಢವಾಗಿಯೇ ಇದೆ.

ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ನಡುವೆ ಪೈಪೋಟಿ ಇಲ್ಲ. ಜಯಚಂದ್ರ ಒಬ್ಬರೇ ಅಭ್ಯರ್ಥಿ. ಟಿಕೆಟ್‌ಗಾಗಿ ಪೈಪೋಟಿ ಇದ್ದರೆ ಅದು ಸಮಸ್ಯೆ ಆಗುತ್ತಿತ್ತು. ಆದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಹೆಚ್ಚಿದ್ದರಿಂದ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿವೆ. ಬಿಜೆಪಿಯಿಂದ ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ರಾಜೇಶ್ ಗೌಡ ಅವರ ಹೆಸರು ಚಾಲ್ತಿಯಲ್ಲಿದ್ದರೆ, ಜೆಡಿಎಸ್ ಸತ್ಯನಾರಾಯಣ್ ಕುಟುಂಬಕ್ಕೆ ಮಣೆ ಹಾಕಿದೆ. ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ. ಅದು ಅನುಕಂಪದ ಓಟುಗಳನ್ನು ನೆಚ್ಚಿಕೊಂಡಿದೆ. ಸ್ಥಳೀಯ ಮುಖಂಡರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಅದಕ್ಕೆ ಹೊಡೆತ ಬೀಳಲಿದೆ ಎನ್ನಲಾಗುತ್ತಿದೆ.

ಬಿಜೆಪಿ ಸಂಭಾವ್ಯ ಅಭ್ಯರ್ಥಿ ರಾಜೇಶ್ ಗೌಡ

ಹೊರಗಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಮತ ಬೀಳುವುದಿಲ್ಲ ಎಂಬ ಸಂದೇಶವನ್ನು ಶಿರಾ ಕ್ಷೇತ್ರದ ಜನ ರವಾನಿಸಿ ಆಗಿದೆ. ಹಾಗಾಗಿ ಜೆಡಿಎಸ್ ಮತ್ತು ಬಿಜೆಪಿ ಹೊರಗಿನಿಂದ ಅಭ್ಯರ್ಥಿಗಳನ್ನು ಕರೆತಂದು ಕಣಕ್ಕೆ ಇಳಿಸಿದರೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬುದನ್ನು ಮನಗಂಡಿರುವ ಉಭಯ ಪಕ್ಷಗಳು ಶಿರಾ ಕ್ಷೇತ್ರದವರನ್ನೇ ಸ್ಪರ್ಧೆಗೆ ಇಳಿಸಿವೆ. ಮೂರು ಪಕ್ಷಗಳು ಕುಂಚಿಟಿಗರನ್ನೇ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿರುವುದು ಕುಂಚಿಟಿಗರ ಮತಗಳು ಹರಿದು ಹಂಚಿಹೋಗಲಿವೆ. ಈ ನಡುವೆ ಸಿಪಿಐ ಪಕ್ಷವೂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ. ಕಾಡುಗೊಲ್ಲರು ಕೂಡ ಅಸ್ಮಿತೆಗಾಗಿ, ಸ್ವಾಭಿಮಾನಕ್ಕಾಗಿ ಅಭ್ಯರ್ಥಿಯನ್ನು ಹಾಕುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಜೆಡಿಎಸ್‌ನಿಂದ ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮ

ಜೆಡಿಎಸ್‌ನಲ್ಲಿ ದಿವಂಗತ ಶಾಸಕ ಬಿ.ಸತ್ಯನಾರಾಯಣ್ ಅವರ ಕುಟುಂಬದವರಿಗೆ ಟಿಕೆಟ್ ನೀಡಿರುವುದು ಸ್ಥಳೀಯ ಮುಖಂಡರ ತೀವ್ರ ವಿರೋಧಕ್ಕೆ ಕಾರಣವಾಗಿದ್ದು ಹಲವರು ಪಕ್ಷವನ್ನು ತೊರೆದಿದ್ದಾರೆ. ನಾಲ್ಕೈದು ಮಂದಿ ಆಕಾಂಕ್ಷಿಗಳು ಇದ್ದರೂ ಅಂತಿಮವಾಗಿ ಸತ್ಯನಾರಾಯಣ ಕುಟುಂಬಕ್ಕೆ ಜೆಡಿಎಸ್ ವರಿಷ್ಠರು ಮಣೆ ಹಾಕಿದ್ದು ಇದು ಮತದಾನದ ಮೇಲೆ ಪರಿಣಾಮ ಬೀರಲಿದೆ.

ಕ್ಷೇತ್ರದ ಜನರಂತೂ ಸದ್ಯಕ್ಕೆ ತಮ್ಮ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಮೂರೂ ಪಕ್ಷಗಳಲ್ಲಿ ಯಾರು ಸಮರ್ಥರು, ಯಾರಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯ? ಕಷ್ಟ ಕಾಲದಲ್ಲಿ ಕೈಹಿಡಿಯುವವರು ಯಾರು? ಎಂಬ ಬಗ್ಗೆ ಜನರ ನಡುವೆ ಮಾತುಕತೆ ನಡೆಯುತ್ತಿದೆ. ಉಪಚುನಾವಣೆಯಲ್ಲಿ ಹಸ್ತವೇ ಚಾಚುವುದೇ? ತೆನೆಹೊತ್ತ ಮಹಿಳೆ ನಗೆ ಬೀರುವಳೆ, ಕಮಲ ಅರಳವುದೇ? ನೋಡಬೇಕು. ರಾಜಕೀಯ ಪಕ್ಷಗಳು ಅಬ್ಬರಿಸುತ್ತಿವೆ. ಮತದಾರ ಮೌನಕ್ಕೆ ಜಾರಿದ್ದು ತನ್ನ ನಡೆಯೇನು ಎಂಬುದನ್ನು ಬಿಟ್ಟುಕೊಡುತ್ತಿಲ್ಲ.

  • ಕೆ.ಈ ಸಿದ್ಧಯ್ಯ

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....