ದಿವಂಗತ ಮಾಜಿ ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಣ ರಂಗೇರುತ್ತಿದ್ದು, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರು ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ಧಾರೆ.
ಇಂದು ನಡೆದ ಜೆಡಿಎಸ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆ ಬಳಿಕ ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರೇ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಅಭ್ಯರ್ಥಿ ಆಯ್ಕೆಯಲ್ಲಿ ಎರಡು ಮಾತಿಲ್ಲ, ಗೊಂದಲ ಇಲ್ಲ ಎಂದು ದೇವೇಗೌಡರು ತಿಳಿಸಿದರು.
ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ
ಅಮ್ಮಾಜಮ್ಮಗೆ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಆಸಕ್ತಿ ಇಲ್ಲ ಎಂಬ ಕಲ್ಪನೆ ಬೇಡ. ಅವರ ಸ್ಪರ್ಧೆಗೆ ಅವರ ಮಗ ಮತ್ತು ಪಕ್ಷದ ಕಾರ್ಯಕರ್ತರು ಎಲ್ಲರೂ ಒಪ್ಪಿದ್ದಾರೆ ಎಂದರು. ಕಳೆದ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಸತ್ಯನಾರಾಯಣ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಕೆಲ ತಿಂಗಳ ಹಿಂದೆ ಅವರ ನಿಧನವಾದ್ದರಿಂದ ಶಿರಾ ಕ್ಷೇತ್ರ ತೆರವಾಗಿತ್ತು.
ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡರು ಕಾಂಗ್ರೆಸ್, ಬಿಜೆಪಿಗೆ ಸೇರ್ಪಡೆಯಾದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ, ನಮ್ಮ ಪಕ್ಷದವರನ್ನ ಕಾಂಗ್ರೆಸ್ ಮತ್ತು ಬಿಜೆಪಿಯವರು ಕರೆದುಕೊಂಡಿದ್ದಾರೆ. ಆ ಬಗ್ಗೆ ಈಗ ನಾನು ಮಾತನಾಡುವುದಿಲ್ಲ. ಜೆಡಿಎಸ್ ಬಗ್ಗೆ ಯಾರಿಗೂ ಅನುಕಂಪ ಬೇಡ. ಆ ಪಕ್ಷದವರು ಗೆಲ್ಲೋಕೆ ಏನು ಬೇಕೋ ಅದನ್ನ ಮಾಡುತ್ತಿದ್ಧಾರೆ. ನಾವು ನಮ್ಮ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದರು.
ಆರ್. ಆರ್. ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಮೂವರು ಯುವಕರ ಹೆಸರು ಚಾಲನೆಯಲ್ಲಿವೆ. ಅಕ್ಟೋಬರ್ 8ಕ್ಕೆ ಸಭೆ ಸೇರಿ ನಿರ್ಧಾರ ಮಾಡುತ್ತೇವೆ. ಸೋಲು ಗೆಲುವು ಬೇರೆ. ಆದರೆ, ಅಭ್ಯರ್ಥಿಯನ್ನಂತೂ ನಿಲ್ಲಿಸುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಬಿಜೆಪಿ ಇನ್ನು ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ.