Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...