ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ನಡೆದ ಹಿಂಸಾಚಾರಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈಶ್ವರಪ್ಪ ಬೇಕಂತಲೇ ಕುಮ್ಮಕ್ಕು ನೀಡಿದ್ದು, ಈ ಕುರಿತು ನ್ಯಾಯಾಂಗ ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ, ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ ಅವರೇ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರೀಕ ಸರ್ಕಾರವ? ಸಚಿವರೇ ಪಾಲಿಸದ ನಿಯಮ ಜನರು ಪಾಲಿಸುತ್ತಾರ?
ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಈಶ್ವರಪ್ಪ ಅವರೇ ನೇರ ಹೊಣೆ. 4/11#LawAndOrder— Siddaramaiah (@siddaramaiah) February 22, 2022
ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿದ್ದಾರೆ. ಅವರು ಮೊದಲು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು, ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ. ದೇಶದ ಸಂವಿಧಾನ, ರಾಷ್ಟ್ರ ಧ್ವಜ, ಸಂಸದೀಯ ವ್ಯವಸ್ಥೆಯ ಬಗ್ಗೆ ಗೌರವವೇ ಇಲ್ಲದಿರುವ ಈಶ್ವರಪ್ಪ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಈಶ್ವರಪ್ಪ ಅವರೇ ನೇರ ಹೊಣೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕೊಲೆ ಪ್ರಕರಣದ ತನಿಖೆಯ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ತನಿಖೆಯಾಗಬೇಕು. ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಇತರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ಮಾಡಲಿ, ಅದಕ್ಕೆ ನಮ್ಮ ತಕರಾರಿಲ್ಲ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗುವಂತೆ ಕಟ್ಟುನಿಟ್ಟಾಗಿ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? ಹಾಗಾಗಿ ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಮೂಲಕ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ದೇಶದ್ರೋಹಿ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ