Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...