ಸಂಸತ್ ಭದ್ರತಾ ಲೋಪ ಪ್ರಕರಣದ ಮೂಲಕ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮಗನನ್ನು ಗೆಲ್ಲಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಶನಿವಾರ ಗಂಭೀರ ಆರೋಪಿಸಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಗ್, ‘ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಮೈಸೂರು-ಕೊಡಗು ಸಂಸದ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಈ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದು, ಅವರ (ಸಿಎಂ ಸಿದ್ದರಾಮಯ್ಯ) ಪುತ್ರನ ಗೆಲುವನ್ನು ಖಚಿತಪಡಿಸಿಕೊಳ್ಳಲು ಯೋಜಿತ ರೀತಿಯಲ್ಲಿ ಷಡ್ಯಂತ್ರ ರೂಪಿಸಲಾಗಿದೆ’ ಎಂದು ಅವರು ಹೇಳಿದರು.
ಭಾರತ್ ಜೋಡೋ ಯಾತ್ರೆಯಲ್ಲಿ ‘ನಗರ ನಕ್ಸಲರು’ ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯ ನಗರ ನಕ್ಸಲರ ಬೆಳವಣಿಗೆಯನ್ನು ಖಾತ್ರಿಪಡಿಸುತ್ತಿದ್ದಾರೆ. ಸಂಸತ್ತಿನಲ್ಲಿ ನಡೆದ ಹೊಗೆ ದಾಳಿ ಕೇವಲ 15 ನಿಮಿಷಗಳ ನಂತರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಇದು ಪ್ರತಾಪ್ ಸಿಂಹ ವಿರುದ್ಧದ ಷಡ್ಯಂತ್ರವನ್ನು ಸ್ಪಷ್ಟವಾಗಿ ತೋರಿಸುತ್ತದೆ’ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಹೊಗೆ ದಾಳಿ ಪ್ರಕರಣದ ಇಬ್ಬರು ಆರೋಪಿಗಳಿಗೆ ಕಲಾಪಕ್ಕೆ ಹಾಜರಾಗಲು ಪಾಸ್ ನೀಡಿರುವ ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಆರೋಪಿ ಮನೋರಂಜನ್ ಡಿ ಜೊತೆ ಪ್ರತಾಪ್ ಸಿಂಹ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ.
ಪ್ರತಾಪ್ ಸಿಂಹ ಅವರ ಕಚೇರಿಯನ್ನು ಜಪ್ತಿ ಮಾಡಿ, ಅವರನ್ನು ಸಂಸದ ಸ್ಥಾನದಿಂದ ಅಮಾನತುಗೊಳಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಕರ್ನಾಟಕ ಕಾಂಗ್ರೆಸ್ ಕೂಡ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಈ ವಿಷಯದಲ್ಲಿ ಅವರ ನಿಷ್ಕ್ರಿಯತೆಯನ್ನು ಆಕ್ಷೇಪಿಸಿದೆ. ಆದರೆ, ಈವರೆಗೆ ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮಾಧ್ಯಮಗಳ ಮುಂದೆ ಬಂದು ಸ್ಪಷ್ಟನೆ ನೀಡಿಲ್ಲ. ತಮ್ಮ ಜಾಲತಾಣ ಖಾತೆಗಳಲ್ಲಿಯೂ ಕೂಡ ಪ್ರಕರಣದ ಕುರಿತು ಪೋಸ್ಟ್ ಮಾಡಿಲ್ಲ.
ಇದನ್ನೂ ಓದಿ; ಬೆಂಕಿ ಹಚ್ಚಿಕೊಳ್ಳಲು ಯೋಚಿಸಿದ್ದರಾ ಲೋಕಸಭೆ ಭದ್ರತೆ ಉಲ್ಲಂಘಿಸಿದ ಆರೋಪಿಗಳು?