ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಅರ್ಜಿ ವಿಚಾರಣೆ ನಡೆಯುತ್ತಿದೆ.
ಪಶ್ಚಿಮ ಬಂಗಾಳದಲ್ಲಿ ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆಯ ವಿರುದ್ದ ಜನವರಿ 28ರಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಎಸ್ಐಆರ್ ಚುನಾವಣಾ ಆಯೋಗದ ಅಪಾರದರ್ಶಕ, ಆತುರದ, ಅಸಂವಿಧಾನಿಕ ಮತ್ತು ಕಾನೂನುಬಾಹಿರ ಕ್ರಮ ಎಂದು ಅವರು ವಾದಿಸಿದ್ದು, ಲಕ್ಷಾಂತರ ಜನರ ಹಕ್ಕು ಕಸಿದುಕೊಳ್ಳಲಿದೆ ಎಂದು ಹೇಳಿದ್ದಾರೆ.
‘ತಾರ್ಕಿಕ ವ್ಯತ್ಯಾಸ’ (Logical Discrepancy-LD)ವರ್ಗದ ಅಡಿಯಲ್ಲಿ ವ್ಯಕ್ತಿಗಳ ವರ್ಗೀಕರಣದಲ್ಲಿ ಗಂಭೀರ ಅಕ್ರಮಗಳಿವೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳ ಹೊರತಾಗಿಯೂ ಅಂತಹ ವ್ಯಕ್ತಿಗಳ ಪಟ್ಟಿಯನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಅಧಿಕೃತ ಪೋರ್ಟಲ್ನಲ್ಲಿ ಎಲ್ಡಿ ಪಟ್ಟಿಯನ್ನು ಪ್ರಕಟಿಸದಿರುವುದು ಪಾರದರ್ಶಕತೆಯ ಕೊರತೆಗೆ ಕಾರಣವಾಗಿದೆ. ಈ ಪಟ್ಟಿಯನ್ನು ಸಾರ್ವಜನಿಕಗೊಳಿಸದ ಕಾರಣ, ಇದರಿಂದ ಬಾಧಿತರಾಗುವ ವ್ಯಕ್ತಿಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸಲು ಅಥವಾ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಸಿಗದಂತಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯ ಮೇಲೆ ನನಗೆ ನಂಬಿಕೆ ಇಲ್ಲ. ಈ ಹೊಸ ಪ್ರಕ್ರಿಯೆಯ ಬದಲಾಗಿ ಕಳೆದ ವರ್ಷ ಸಿದ್ಧಪಡಿಸಲಾದ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯ ಆಧಾರದ ಮೇಲೆಯೇ ಚುನಾವಣೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.


