ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಅಂಕಿ ಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ ಇದೆ ಎಂಬುದರ ಇದರಿಂದ ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬುಧವಾರ (ಅ.1) ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ. ಅವರ ಆರೋಗ್ಯ ಉತ್ತಮವಾಗಿದೆ ಎಂದರು. ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಸಿಎಂ, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.
ಉತ್ತರಕರ್ನಾಟಕದಲ್ಲಿ ಹೆಚ್ಚು ಪ್ರವಾಹ
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95ರಷ್ಟು ಪ್ರವಾಹ ಉಂಟಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು, ಹುಬ್ಬಳ್ಳಿ-ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ ಎಂದು ಸಿಎಂ ಮಾಹಿತಿ ನೀಡಿದರು.
ಕೇಂದ್ರದ ಪ್ರವಾಹ ಪರಿಹಾರ ಕೊಡಿಸಲಿ
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಕೇಂದ್ರದಿಂದ ಪ್ರವಾಹ ಪರಿಹಾರ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ, 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರದವರು ಬರ ಪರಿಹಾರ ನೀಡದೇ, ಸುಪ್ರೀಂಕೋರ್ಟ್ ಬಳಿ ಹೋಗಿ ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಸಲ್ಲಿಸಲಿದೆ ಎಂದರು.
ಕೇಂದ್ರಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ
ಜಾತಿ ಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಯವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಇದು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಿ ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.
ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ


