ನಿಗದಿತ ಅವಧಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆ, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ.
ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಅ.7) ವಿಡಿಯೋ ಕಾನ್ಷರೆನ್ಸ್ ನಡೆಸಿ ಚರ್ಚಿಸಿದರು.
ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಎಂ, ಸೆಪ್ಟೆಂಬರ್ 22ರಿಂದ ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇಂದು (ಅ.7) ಮುಗಿಯಬೇಕಿತ್ತು. ಆದರೆ, ಕೆಲ ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಶೇಕಡ 97ರಷ್ಟು ಸಮೀಕ್ಷೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡ 67ರಷ್ಟು ಮಾತ್ರ ಪೂರ್ಣಗೊಂಡಿದೆ. ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗದವರು ಪರಸ್ಪರ ಚರ್ಚೆ ನಡೆಸಿದ್ದಾರೆ. 1 ಲಕ್ಷದ 20 ಸಾವಿರ ಶಿಕ್ಷಕರು ಸೇರಿ 1 ಲಕ್ಷದ 60 ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘದವರು ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರವರೆಗೆ (8 ಕೆಲಸದ ದಿನಗಳು) ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಿಸಿದ್ದೇವೆ ಎಂದು ಹೇಳಿದರು.
ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ಶುರುವಾಗಲಿದೆ. ಹಾಗಾಗಿ, ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯಿತಿ ನೀಡಲಾಗಿದೆ ಎಂದು ಸಿಎಂ ಹೇಳಿದರು.
ಬೆಂಗಳೂರು ನಗರದಲ್ಲಿ 6,700 ಮಂದಿ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದರು.
ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿದೆ. ಆದ್ದರಿಂದ ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ ಹರಿಪ್ರಸಾದ್


