ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯ ಜಂತರ್ಮಂತರ್ನಲ್ಲಿ ನಡೆಸುತ್ತಿರುವ ಧರಣಿಯಲ್ಲಿ ಹೋರಾಟಗಾರ ಸೋನಮ್ ವಾಂಗ್ಚುಕ್ ಭಾಗಿಯಾಗಿದ್ದಾರೆ. ಇಂದಿನಿಂದಲೇ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ಮಂತರ್ನಲ್ಲಿ ಸಿಜೆಪಿ ಜೂನ್ 20ರಿಂದ ಧರಣಿ ನಡೆಸುತ್ತಿದೆ. ಉಪವಾಸ ಸತ್ಯಾಗ್ರಹ ಆರಂಭಿಸುವ ಮುನ್ನ ಸೋನಮ್ ವಾಂಗ್ಚುಕ್ ಮತ್ತು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮಾ ಗಾಂಧೀಜಿಯವರಿಗೆ ಗೌರವ ಸಲ್ಲಿಸಿದರು.
ನಂತರ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಮರುಪರೀಕ್ಷೆಯ ಒತ್ತಡದಿಂದಾಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಜಂತರ್ಮಂತರ್ನಲ್ಲಿ ಎರಡು ನಿಮಿಷಗಳ ಮೌನಾಚರಣೆ ಸಲ್ಲಿಸುವ ಮೂಲಕ ಸೋನಮ್ ಉಪವಾಸ ಆರಂಭಿಸಿದ್ದಾರೆ.
ಇನ್ನು ಸೋನಮ್ ವಾಂಗ್ಚುಕ್ ಉಪವಾಸ ಆರಂಭಿಸುತ್ತಿದ್ದಂತೆ ನೂರಾರು ಪ್ರತಿಭಟನಾಕಾರರು, ಹೆಚ್ಚಾಗಿ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದಾರೆ. ಹಲವಾರು ರೈತ ನಾಯಕರು ಸಹ ಪ್ರತಿಭಟನೆ ಬೆಂಬಲ ನೀಡಿ ಭಾಗವಹಿಸುತ್ತಿದ್ದಾರೆ.
ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ನ ಹಲವಾರು ರೈತ ನಾಯಕರನ್ನು ಜಂತರ್ ಮಂತರ್ ತಲುಪದಂತೆ ತಡೆಯಲು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಭಾನುವಾರ ಬೆಳಿಗ್ಗೆ ದೀಪ್ಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.


