Homeಮುಖಪುಟಎಸ್‌ಪಿ ವರಿಷ್ಠ, ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ

ಎಸ್‌ಪಿ ವರಿಷ್ಠ, ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ

- Advertisement -
- Advertisement -

ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ಸೋಮವಾರ ನಿಧನರಾಗಿದ್ದಾರೆ. ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು.

ಮುಲಾಯಂ ಅವರಿಗೆ ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆಯು ಶುಕ್ರವಾರ ತನ್ನ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಿತ್ತು.

ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, “ಎಲ್ಲರ ನಾಯಕರಾಗಿದ್ದ ನನ್ನ ಗೌರವಾನ್ವಿತ ತಂದೆ ಇನ್ನಿಲ್ಲ” ಎಂದು ತಿಳಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ನವೆಂಬರ್ 22, 1939ರಂದು ಜನಿಸಿದರು. ಭಾರತದ ಹಿರಿಯ ರಾಜಕಾರಣಿಯಾಗಿದ್ದ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥರಾಗಿದ್ದರು. ಅವರು ಉತ್ತರ ಪ್ರದೇಶದ ಅಜಂಗಢ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾಗಿದ್ದರು. ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕರಾಗಿದ್ದ ಅವರು, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಸೇವೆ ಸಲ್ಲಿಸಿದ್ದರು. ಮುಲಾಯಂ ಸಿಂಗ್ ಯಾದವ್ ಅವರು 1970ರ ನಂತರದ ಸಾಮಾಜಿಕ, ರಾಜಕೀಯ ಪರಿಸ್ಥಿತಿಯಲ್ಲಿ ಉತ್ತರ ಪ್ರದೇಶದ ರಾಜಕಾರಣದಲ್ಲಿ ಮುಂಚೂಣಿಗೆ ಬಂದರು.

ಸಮಾಜವಾದಿ ನಾಯಕರಾಗಿ ಹೊರಹೊಮ್ಮಿದ ಮುಲಾಯಂ ಅವರು ನಂತರದಲ್ಲಿ ಒಬಿಸಿ ನಾಯಕರಾಗಿ ಗುರುತಿಸಿಕೊಂಡರು. ಕಾಂಗ್ರೆಸ್‌ನಿಂದ ತೆರವಾದ ರಾಜಕೀಯ ಜಾಗವನ್ನು ವಶಪಡಿಸಿಕೊಂಡರು. 1989 ರಲ್ಲಿ ಯುಪಿಯ 15 ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, “ಮುಲಾಯಂ ಸಿಂಗ್ ಯಾದವ್ ಅವರು ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ತಳಮಟ್ಟದ ನಾಯಕರಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟರು. ಅವರು ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದರು. ಲೋಕನಾಯಕ್ ಜೆಪಿ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು” ಎಂದು ಸ್ಮರಿಸಿದ್ದಾರೆ.

“ಯಾದವ್ ಅವರು ಯುಪಿ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಗಮನ ಸೆಳೆದರು. ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು. ರಕ್ಷಣಾ ಸಚಿವರಾಗಿ, ಅವರು ಬಲಿಷ್ಠ ಭಾರತಕ್ಕಾಗಿ ಕೆಲಸ ಮಾಡಿದ್ದಾರೆ. ಅವರ ಸಂಸದೀಯ ಚರ್ಚೆಗಳು ಒಳನೋಟ ನೀಡಿವೆ. ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಒತ್ತು ನೀಡಿವೆ” ಎಂದಿದ್ದಾರೆ.

“ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಪರಿಸರದಿಂದ ಬಂದ ಮುಲಾಯಂ ಸಿಂಗ್ ಯಾದವ್ ಅವರ ಸಾಧನೆಗಳು ಅಸಾಧಾರಣವಾಗಿವೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.

ಮೂರು ದಿನ ಶೋಕಾಚರಣೆ

ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಉತ್ತರ ಪ್ರದೇಶದಲ್ಲಿ ಮೂರು ದಿನಗಳ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಮುಲಾಯಂ ಸಿಂಗ್ ಅವರ ಪುತ್ರ ಅಖಿಲೇಶ್ ಯಾದವ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಅವರೊಂದಿಗೆ ಮಾತನಾಡಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ.

“‘ಮುಲಾಯಂ ಸಿಂಗ್ ಯಾದವ್ ಅವರ ಸಾವು ಅತ್ಯಂತ ದುಃಖಕರವಾಗಿದೆ. ಅವರು ಸಮಾಜವಾದದ ಆಧಾರಸ್ತಂಭವಾಗಿದ್ದರು” ಎಂದು ಬಣ್ಣಿಸಿದ್ದಾರೆ.

ಸಾಮಾಜಿಕ ನ್ಯಾಯದ ಹೋರಾಟ ಕಟ್ಟಿದವರಲ್ಲಿ ಮುಲಾಯಂ ಪ್ರಮುಖರು: ಸಿದ್ದರಾಮಯ್ಯ

ಮುಲಾಯಂ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. “ಉತ್ತರ ಪ್ರದೇಶದ ಮಾಜಿಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಸಾವು ದೇಶದ ಜಾತ್ಯತೀತ ರಾಜಕೀಯ ಹೋರಾಟಕ್ಕೆ ತುಂಬಲಾರದ ನಷ್ಟ.‘ ರಾಮಮನೋಹರ ಲೋಹಿಯಾ ಅವರ ಅನುಯಾಯಿಯಾಗಿ ರಾಜಕೀಯ ಪ್ರವೇಶ ಮಾಡಿದ್ದ ಮುಲಾಯಂ ಸಿಂಗ್, ಜೆಪಿ ಚಳುವಳಿಯಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡವರು. ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಿದ ಮಂಡಲ್ ವರದಿಯ ಅನುಷ್ಠಾನಕ್ಕಾಗಿ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಬೆಂಬಲಕ್ಕೆ ನಿಂತಿದ್ದ ಮುಲಾಯಂ ಸಿಂಗ್, ದೇಶದಲ್ಲಿ ಸಾಮಾಜಿಕ ನ್ಯಾಯದ ಹೋರಾಟವನ್ನು ಕಟ್ಟಿದವರಲ್ಲಿ ಪ್ರಮುಖರು” ಎಂದಿದ್ದಾರೆ.

“ಬಾಬರಿ ಮಸೀದಿ ಧ್ವಂಸದ ಪೂರ್ವ ಮತ್ತು ನಂತರದ ಕೋಮುವಾದಿ ರಾಜಕೀಯಕ್ಕೆ ಉತ್ತರಪ್ರದೇಶದಲ್ಲಿ ಪ್ರಬಲ ಪ್ರತಿರೋಧ ಒಡ್ಡಿದ್ದ ಮುಲಾಯಂ ಸಿಂಗ್ ಬಿಜೆಪಿ ಜೊತೆ ರಾಜಿ ಮಾಡಿಕೊಂಡವರಲ್ಲ. ರಾಜ್ಯದಲ್ಲಿ ‘ನೇತಾಜಿ’ ಎಂದೇ ಖ್ಯಾತರಾಗಿದ್ದ ಮುಲಾಯಂ ಸಿಂಗ್, ಮೂರು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಆ ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಪರವಾದ ಆಡಳಿತ ನೀಡಿದವರು. ದೇಶಾದ್ಯಂತ ಇಂದು ಕೋಮುವಾದಿ ಶಕ್ತಿಗಳು ವಿಜೃಂಭಿಸುತ್ತಿರುವಾಗ ಅದರ ವಿರುದ್ಧದ ಹೋರಾಟಕ್ಕೆ ಮುಲಾಯಂ ಸಿಂಗ್ ಅವರ ನಾಯಕತ್ವ ಮತ್ತು ಮಾರ್ಗದರ್ಶನ ಹಿಂದಿಗಿಂತಲೂ ಈಗ ಹೆಚ್ಚು ಅಗತ್ಯ ಇತ್ತು. ಮಾಜಿ ಮುಖ್ಯಮಂತ್ರಿ ಮತ್ತು ಮಗ ಅಖಿಲೇಶ್ ಯಾದವ್ ಅವರು ಅಪ್ಪನ ಸಾಮಾಜಿಕ ನ್ಯಾಯದ ಹೋರಾಟವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುತ್ತಾರೆ ಎಂಬ ಭರವಸೆ ನನಗಿದೆ. ಮುಲಾಯಂ ಸಿಂಗ್ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...