HomeUncategorizedಹರೀಶ್ ಪೂಂಜಾ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ ಸ್ಪೀಕರ್

ಹರೀಶ್ ಪೂಂಜಾ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ ಸ್ಪೀಕರ್

- Advertisement -
- Advertisement -

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಮಂಡಿಸಿದ ಹಕ್ಕುಚ್ಯುತಿ ಪ್ರಸ್ತಾಪವನ್ನು ವಿಧಾನಮಂಡಲದ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಬೆಳ್ತಂಗಡಿಯ ಅರಣ್ಯಾಧಿಕಾರಿಗಳಿಂದ ನನಗೆ ಹಕ್ಕು ಚ್ಯುತಿಯಾಗಿದೆ ಎಂದು ಆರೋಪಿಸಿದ ಶಾಸಕ ಹರೀಶ್ ಪೂಂಜಾ, ಮಂಗಳವಾರ ವಿಧಾನಸಭೆ ಕಲಾಪದ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಂಡಿಸಲು ಅವಕಾಶ ಕೋರಿದರು. ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸಿದರು.

ಬೆಳ್ತಂಗಡಿ ಅರಣ್ಯಾಧಿಕಾರಿಗಳು ಶಾಸಕ ಹರೀಶ್ ಪೂಂಜಾ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಅರಣ್ಯಾಧಿಕಾರಿಗಳನ್ನು ಅಮಾನತು ಮಾಡಬೇಕು. ಶಾಸಕರ ರಕ್ಷಣೆ ನಿಮ್ಮ ಜವಾಬ್ದಾರಿ. ಶಾಸಕರಿಂದ ಹಕ್ಕುಚ್ಯುತಿ ಪಡೆದುಕೊಂಡು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್‌ಗೆ ಆಗ್ರಹಿಸಿದರು.

ಬಿಜೆಪಿ ಶಾಸಕರ ಒತ್ತಾಯಕ್ಕೆ ಮಣಿದ ಸ್ಪೀಕರ್ ಖಾದರ್, ಹಕ್ಕುಚ್ಯುತಿ ಮಂಡನೆಗೆ ಹರೀಶ್ ಪೂಂಜಾ ಅವರಿಗೆ ಅನುಮತಿ ನೀಡಿದರು. ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯ ಮೂವರು ಅರಣ್ಯಾಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

ಹಕ್ಕುಚ್ಯುತಿ ಮಂಡನೆಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮೀಸಲು ಅರಣ್ಯವನ್ನು ಅತಿಕ್ರಮಿಸಿ ಕೃಷಿ ಮಾಡಿದ್ದಕ್ಕೆ ದೂರು ದಾಖಲಾಗಿದೆ. ಅತಿಕ್ರಮಣ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾದಾಗ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ನಾನು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದಾಗ ಅತಿಕ್ರಮಣದ ಬಗ್ಗೆ ತಿಳಿಸಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ತರಿಸುವವರೆಗೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದ್ದೆ. ನನ್ನ ಕಾಲ್ ರೆಕಾರ್ಡ್‌ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದೀರಿ. ಇದು ಸರಿಯಾದ ಕ್ರಮವಲ್ಲ ಎಂದರು.

ಈಶ್ವರ್ ಖಂಡ್ರೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಸುನೀಲ್ ಕುಮಾರ್, ಹಕ್ಕುಚ್ಯುತಿ ಬಗ್ಗೆ ಸಚಿವರು ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದರು. ಈ ವೇಳೆ ಸಚಿವ ಖಂಡ್ರೆ ಬೆಂಬಲಕ್ಕೆ ಬಂದ ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವರು ಪ್ರಕರಣದ ಬಗ್ಗೆ ಸದನಕ್ಕೆ ಮಾಹಿತಿ ನೀಡುತ್ತಿದ್ದಾರೆ ಎಂದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಪ್ರಕರಣದ ಹಿನ್ನೆಲೆ :

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಅವರು ಮೀಸಲು ಅರಣ್ಯದ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅ.6 ರಂದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ್ದ ಅಡಿಪಾಯ ತೆರವುಗೊಳಿಸಿದ್ದರು.

ಈ ವಿಚಾರ ತಿಳಿದು ಶಾಸಕ ಹರೀಶ್ ಪೂಂಜಾ ಅ.7ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಕುರಿತ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಅರಣ್ಯ ಇಲಾಖೆ ಜಾಗವನ್ನು ಒತ್ತುವರಿ ನಡೆಸಿದವರು ಹಾಗೂ ಅದಕ್ಕೆ ಸಹಕರಿಸಿದ 11 ಜನರ ವಿರುದ್ಧ ಅ. 7ರಂದು ಧರ್ಮಸ್ಥಳ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ದೂರು ದಾಖಲಿಸಿದ್ದರು.

ಅ. 9 ರಂದು ಮತ್ತೆ ಮೇಲಧಿಕಾರಿಗಳ ಆದೇಶದಂತೆ ಎಸಿಎಫ್ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ.ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಲೋಲಾಕ್ಷ ಅವರ ಮನೆಯ ಶೆಡ್ ತೆರವಿಗೆ ಮುಂದಾಗಿದ್ದರು. ಈ ವೇಳೆ ಹರೀಶ್ ಪೂಂಜಾ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ತೆರಳಿ ಲೋಲಾಕ್ಷ ಅವರ ಮನೆ ತೆರವು ಮಾಡದಂತೆ ನೋಡಿಕೊಂಡಿದ್ದರು.

ಈ ವೇಳೆ ಅರಣ್ಯಾಧಿಕಾರಿ ಮತ್ತು ಹರೀಶ್ ಪೂಂಜಾ ನಡುವೆ ವಾಗ್ವಾದ ನಡೆದು, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಹರೀಶ್ ಪೂಂಜಾ ಅಸಂಸದೀಯ ಪದ ಬಳಸಿ ಬೈದಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಬಿಜೆಪಿ-ಕಾಂಗ್ರೆಸ್‌ ನಡುವೆ ಕಿತ್ತಾಟಕ್ಕೆ ಕಾರಣವಾಗಿತ್ತು. ಈ ಸಂಬಂಧ ಅರಣ್ಯಾಧಿಕಾರಿ ಅ.13ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ : ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಾಲ್ಕು ನೂರು ಗೆಲ್ಲಲು ಇಷ್ಟು ಸುಳ್ಳುಗಳು ಸಾಕಾಗುವುದಿಲ್ಲವೇ!?

ಚುನಾವಣೆಯ ಸಮಯದಲ್ಲಿ ವಿವಿಧ ಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗುವುದು, ಕೆಲವೊಮ್ಮೆ ಮಾತಿನ ಭರದಲ್ಲಿ ಗೆರೆ ದಾಟುವುದು- ಇವೆಲ್ಲಾ ಸಾಮಾನ್ಯ. ಇಂಥದನ್ನು ಹದ್ದುಬಸ್ತಿನಲ್ಲಿ ಇಡಲೆಂದೇ ಚುನಾವಣಾ ಆಯೋಗ ಹಲವು ನೀತಿಸಂಹಿತೆಗಳನ್ನು ಸೃಷ್ಟಿಸಿ ಹದ್ದಿನ ಕಣ್ಣಿಟ್ಟು ಕಾಯಬೇಕಿದೆ;...