ಉತ್ತರ ಪ್ರದೇಶದ ಘೋಸಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಹಿನ್ನೆಲೆ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಯಾದವ್ ಮತದಾರರಿಗೆ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜೊತೆಗೆ 10 ಮಂದಿ ಶಾಸಕರ ನಿಯೋಗ ಐಜಿಪಿ ಅಖಿಲೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಮತದಾರರಿಗೆ ಬೆದರಿಕೆ ಹಾಕಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದಲ್ಲದೆ ಘೋಸಿ ಉಪಚುನಾವಣೆಗೆ 40 ಸಚಿವರನ್ನು ನಿಯೋಜಿಸಿರುವುದು ಚುನಾವಣೆಯ ಮೇಲೂ ಪರಿಣಾಮ ಬೀರುತ್ತಿದೆ ಎಂದು ಯಾದವ್ ಆರೋಪಿಸಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಮಧ್ಯಪ್ರವೇಶಿಸುವಂತೆ ಕೋರಿ ಅವರು ಐಜಿಪಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಘೋಸಿ ವಿಧಾನಸಭಾ ಕ್ಷೇತ್ರದ ಕೋಪಗಂಜ್ನ ಎಸ್ಎಚ್ಒ ಮತ್ತು ಸರ್ಕಲ್ ಆಫೀಸರ್ ಮತದಾರರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಮಾಜವಾದ ಪಕ್ಷದ ನಾಯಕರು ಆರೋಪಿಸಿದ್ದಾರೆ.
ಅಜಂಗಢದ ಹೋಟೆಲ್ಗಳಲ್ಲಿ ಮಂತ್ರಿಗಳು ಮೊಕ್ಕಾಂ ಹೂಡಿದ್ದು, ಚುನಾವಣೆ ಮೇಲೆ ಪರಿಣಾಮ ಬೀರುತ್ತಿದ್ದಾರೆ. ಹಣವೂ ಹಂಚಲಾಗುತ್ತಿದೆ. ಮತದಾನ ಮಾಡದಂತೆ ಮುಸ್ಲಿಮರಿಗೆ ಬೆದರಿಕೆ ಹಾಕಲಾಗುತ್ತಿದೆ. ಉಪಚುನಾವಣೆ ಗೆಲ್ಲಲು ಬಿಜೆಪಿ ವಾಮ ಮಾರ್ಗಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ನಾಯಕ ಮತ್ತು ಒಬಿಸಿ ಮುಖಂಡ ದರಾ ಸಿಂಗ್ ಚೌಹಾನ್ ಅವರ ರಾಜೀನಾಮೆಯಿಂದ ಘೋಸಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಅವರು ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಘೋಸಿ ವಿಧಾನಸಭಾ ಕ್ಷೇತ್ರದಲ್ಲಿ ಸೆ.5ರಂದು ಉಪಚುನಾವಣೆ ನಡೆಯಲಿದ್ದು, 8ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು ಸಮಾಜವಾದಿ ಪಕ್ಷದ ಅಭ್ಯರ್ಥಿಗೆ ತಮ್ಮ ಬೆಂಬಲವನ್ನು ಸೂಚಿಸಿದ್ದು, ಬಿಎಸ್ಪಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ.
ಇದನ್ನು ಓದಿ: ಸನಾತನ ಧರ್ಮದ ಕುರಿತ ಉದಯ್ ನಿಧಿ ಹೇಳಿಕೆ: ಎಲ್ಲಾ ಪಕ್ಷಗಳಿಗೆ ಅಭಿಪ್ರಾಯ ಹೇಳುವ ಸ್ವಾತಂತ್ರ್ಯವಿದೆ; ಕಾಂಗ್ರೆಸ್