ಮೇಕೆದಾಟು ಅಣೆಕಟ್ಟು ಸಮಸ್ಯೆ ಕುರಿತು ಚರ್ಚಿಸಲು ತಕ್ಷಣವೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಪಾಟಳ್ಳಿ ಮಕ್ಕಳ್ ಕಚ್ಚಿ (ಪಿಎಂಕೆ) ಯುವ ಘಟಕದ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಅನ್ಬುಮಣಿ ರಾಮದಾಸ್ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಒತ್ತಾಯಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೊದಲ ಬಜೆಟ್ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ 1,000 ಕೋಟಿ ರೂ. ಹಂಚಿಕೆಯನ್ನು ಘೋಷಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಗೆ ಅನುಮೋದನೆ ಪಡೆಯಲು ಕರ್ನಾಟಕದ ಮುಖ್ಯಮಂತ್ರಿಯವರು ಈಗಾಗಲೇ ನವದೆಹಲಿಗೆ ಪ್ರಯಾಣಿಸುತ್ತಿರುವುದಾಗಿ ರಾಮದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರ ಹೇಳಿಕೆಗಳು ಮೇಕೆದಾಟು ಅಣೆಕಟ್ಟಿನ ಬಗೆಗೆ ಕುರಿತಾಗಿವೆ ಎಂದು ರಾಮದಾಸ್ ಹೇಳಿದ್ದಾರೆ.
ಮೇಕೆದಾಟು ಅಣೆಕಟ್ಟು ವಿವಾದ ಸುಪ್ರೀಂ ಕೋರ್ಟ್ನ ಪರಿಗಣನೆಯಲ್ಲಿರುವಾಗಲೂ ಕರ್ನಾಟಕ ಮುಖ್ಯಮಂತ್ರಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರ ಹೇಳಿಕೆಗಳು ಸ್ವೀಕರಾರ್ಹವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮಿಳುನಾಡು ಸರ್ಕಾರ ಗಮನಹರಿಸಬೇಕು ಎಂದಿರುವ ಮಾಜಿ ಸಚಿವರು ಕರ್ನಾಟಕ ರಾಜ್ಯ ಯರಗೋಳ ಅಣೆಕಟ್ಟನ್ನು ನಿರ್ಮಿಸಿದ ಉದಾಹರಣೆಯನ್ನು ಉಲ್ಲೇಖಿಸಿದ್ದು, ಈ ಅಣೆಕಟ್ಟೆಯಿಂದ ಉತ್ತರ ತಮಿಳುನಾಡಿಗೆ ನೀರು ಸರಬರಾಜಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ.
ಮೇಕೆದಾಟು ಎಂಬಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವ ಕುರಿತು ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದ ಉಂಟಾಗಿದ್ದು, ಪ್ರಸ್ತಾವಿತ ಯೋಜನೆ ಸುಪ್ರೀಂ ಮೆಟ್ಟಿಲೇರಿದೆ. ತಮಿಳುನಾಡು ಜಲಸಂಪನ್ಮೂಲ ಸಚಿವ ಎಸ್ ದುರೈಮುರುಗನ್ ನೇತೃತ್ವದ ಸರ್ವಪಕ್ಷ ನಿಯೋಗ ಉದ್ದೇಶಿತ ಅಣೆಕಟ್ಟು ವಿರೋಧಿಸಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿತ್ತು.
ಬೆಂಗಳೂರಿಗೆ ಹೆಚ್ಚಿನ ಕುಡಿಯುವ ನೀರು ಒದಗಿಸುವ ಗುರಿಯನ್ನು ಹೊಂದಿರುವ ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ರಾಮನಗರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆದಿದೆ.
ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ