Homeಕರ್ನಾಟಕಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

- Advertisement -
- Advertisement -

ಜೂನ್ 4ರಂದು ಬುಧವಾರ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ದುರಂತ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

13 ವಸ್ಸಿನಿಂದ 40 ವರ್ಷದೊಳಗಿನ 11 ಯುವಜನರು ಸಾವನ್ನಪ್ಪಿದ್ದು, ಸುಮಾರು 47 ಜನರು ಗಾಯಗೊಂಡಿರುವ ಘಟನೆಯಿಂದ ರಾಜ್ಯ ಸರ್ಕಾರಕ್ಕೆ ರಾಷ್ಟ್ರಮಟ್ಟದಲ್ಲಿ ಮುಜುಗರ ಉಂಟಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.

ಅವಘಡ ನಡೆದ ದಿನವೇ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಿಎಂ, ನಿರೀಕ್ಷೆಗೂ ಮೀರಿ ಜನರು ಬಂದಿದ್ದರಿಂದ ದುರ್ಘಟನೆ ಆಗಿದೆ. ಸರ್ಕಾರದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಮಾತ್ರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿ ಸುಮಾರು 1 ಲಕ್ಷ ಜನರು ಸೇರಿದ್ದರು. ಆದರೆ, ಯಾವುದೇ ಅವಘಡ ಆಗಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸರ್ಕಾರ ಕಾರ್ಯಕ್ರಮ ಆಯೋಜಿಸಿರಲಿಲ್ಲ. ಅದು ಕ್ರಿಕೆಟ್ ಅಸೋಸಿಯೇಷನ್ ಮತ್ತು ಆರ್‌ಸಿಬಿಯ ಕಾರ್ಯಕ್ರಮ ಎಂದು ಹೇಳಿದ್ದರು.

ಜೊತೆಗೆ, ಮೃತ 11 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುತ್ತೇವೆ. ಅವರಿಗೆ ಬೇಕಾದ ಆಹಾರ ಮತ್ತು ಸಾರಿಗೆ ವ್ಯವಸ್ಥೆ ಮಾಡುತ್ತೇವೆ. ಘಟನೆ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟ್ರೀರಿಯಲ್ ವಿಚಾರಣೆ ಮಾಡಿಸುತ್ತೇವೆ ಎಂದು ಘೋಷಿಸಿದ್ದರು.

ಮ್ಯಾಜಿಸ್ಟ್ರೀರಿಯಲ್ ವಿಚಾರಣೆಗೆ ವಿಚಾರಣಾಧಿಕಾರಿಯಾಗಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ್ ಜಿ ಅವರನ್ನು ನೇಮಕ ಮಾಡಲಾಗಿದೆ.

ಮರುದಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಘಟನೆ ಉಲ್ಲೇಖಿಸಿ ಕಣ್ಣೀರು ಹಾಕಿದ್ದರು. ಸರ್ಕಾರದಿಂದ ಯಾವುದೇ ತಪ್ಪಾಗಿಲ್ಲ. ನಾನು ನಮ್ಮ ಪೊಲೀಸರನ್ನು ದೂರುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಗುರುವಾರ ಸಂಜೆ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಕಾಲ್ತುಳಿತ ದುರಂತದ ಬಗ್ಗೆ ಗಂಭೀರ ಚರ್ಚೆ ನಡೆದು ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಕಾಲ್ತುಳಿತ ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಏಕಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದೆ.

ಆರ್‌ಸಿಬಿ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸಿಎಂ ಸೂಚನೆ ನೀಡಿದ್ದರು. ಅದರಂತೆ ಎಫ್‌ಐಆರ್ ಕೂಡಾ ದಾಖಲಾಗಿತ್ತು.

ಶುಕ್ರವಾರ ಬೆಳಿಗ್ಗೆ ಅಪರಾಧ ವಿಭಾಗ ಮತ್ತು ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಮ್ಯಾನೇಜ್‌ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಹಾಗೂ ಕಿರಣ್ ಮತ್ತು ಸುಮಂತ್‌ ಎಂಬವರನ್ನು ಬಂಧಿಸಿದ್ದಾರೆ.

ದುರಂತಕ್ಕೆ ಹೊಣೆಯಾಗಿಸಿ ಬೆಂಗಳೂರು ನಗರ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತ ಡಾ. ಬಿ. ದಯಾನಂದ, ಬೆಂಗಳೂರು ಪಶ್ಚಿಮ ವಿಭಾಗದ ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಎಚ್ ತೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಸಹಾಯಕ ಪೊಲೀಸ್ ಆಯುಕ್ತ ಸಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎ.ಕೆ ಗಿರೀಶ್ ಅವರನ್ನು ಸರ್ಕಾರ ಅಮಾನತು ಮಾಡಿದೆ.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡು ಬಂದಿದೆ. ಈ ಕಾರಣಕ್ಕೆ ಅಮಾನತುಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಗುರುವಾರ ಕರ್ನಾಟಕ ಹೈಕೋರ್ಟ್ ದುರಂತ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡು ಸರ್ಕಾರದಿಂದ ವರದಿ ಕೇಳಿತ್ತು. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಾಥಮಿಕ ವರದಿ ಸಲ್ಲಿಸಿದ ಬಳಿಕ, 9 ಪ್ರಶ್ನೆಗಳನ್ನು ಮುಂದಿಟ್ಟು ವಸ್ತುಸ್ಥಿತಿಯ ಕುರಿತ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿರುವ ಸ್ನೇಹಮಯಿ ಕೃಷ್ಣ ಅವರು ಕಾಲ್ತುಳಿತ ದುರಂತಕ್ಕೆ ಸಿಎಂ, ಡಿಸಿಎಂ ಅವರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳುವಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದಾರೆ.

ಶುಕ್ರವಾರ ಮಧ್ಯಾಹದ ಬಳಿಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಅವರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ. ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾಯಿಸಲಾಗಿದೆ.

ಮುಖ್ಯಮಂತ್ರಿಯ ಆದೇಶದಂತೆ ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಎಫ್‌ಐರ್‌ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಸಂಸ್ಥೆಯ ಅಧ್ಯಕ್ಷ ರಘುರಾಮ್‌ ಭಟ್‌, ಕಾರ್ಯದರ್ಶಿ ಎ ಶಂಕರ್‌, ಖಜಾಂಚಿ ಇ.ಎಸ್‌ ಜಯರಾಂ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇವರ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಶುಕ್ರವಾರ ಆದೇಶಿಸಿದೆ.

ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥರಾದ ನಿಖಿಲ್ ಸೋಸಲೆ ಬಂಧನ ಪ್ರಶ್ನಿಸಿ ಅವರ ಪತ್ನಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ತನಿಖೆಯನ್ನೇ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಲಾಗಿದೆ. ಕಾನೂನು, ಸಂವಿಧಾನ ಕಡೆಗಣಿಸಿ ಬಂಧನ ಮಾಡಲಾಗಿದೆ. ಈ ಮೂಲಕ ನಿಖಿಲ್ ಸೋಸಲೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಆನ್‌ಲೈನ್ ಮೂಲಕ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಪಾಸ್ ಇದ್ದವರಿಗಷ್ಟೇ ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶವಿತ್ತು. ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಖುದ್ದು ಡಿಸಿಎಂ ಸ್ವಾಗತಿಸಿದ್ದರು. ವಿಧಾನಸೌಧದಲ್ಲಿ ಸರ್ಕಾರ, ಸಿಎಂ, ಡಿಸಿಎಂ ಸನ್ಮಾನಿಸಿದ್ದರು. ನಂತರ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು. ಅವಘಡದ ಮಾಹಿತಿ ತಿಳಿದ ತಕ್ಷಣ ಆರ್‌ಸಿಬಿಯಿಂದ ಕಾರ್ಯಕ್ರಮ ಸ್ಥಗಿತ ಮಾಡಲಾಗಿತ್ತು. ಹೀಗಾಗಿ, ಯಾವುದೇ ಲೋಪವೆಸಗಿಲ್ಲ. ನಿಖಿಲ್ ಸೋಸಲೆ ಬಂಧನಕ್ಕೆ ತಡೆ ನೀಡುವಂತೆ ಪತ್ನಿ ಮಾಳವಿಕಾ ನಾಯ್ಕ್ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ” ಎಂದು ವರದಿಯಾಗಿದೆ.

ಪ್ರತಿಪಕ್ಷಗಳು ಮತ್ತು ಅದರ ನಾಯಕರು ಹೇಳಿದ್ದೇನು?

ಕಾಲ್ತುಳಿತ ದುರಂತವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರ ವಿರುದ್ದ ಹರಿಹಾಯುತ್ತಿದ್ದಾರೆ.

“ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ವಿಜಯೋತ್ಸವ ಆಚರಣೆಗೆ ಮುಂದಾಗಿ ಬಹು ದೊಡ್ಡ ದುರಂತಕ್ಕೆ ಕಾರಣವಾಗಿರುವಾಗ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿರುವುದು ನಾಚಿಕೆಗೇಡಿನ ಸಂಗತಿ” ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಟೀಕಿಸಿದ್ದಾರೆ.

“ಡಿಸಿಎಂ ಸರ್ಕಾರದ ಭಾಗವಲ್ಲವೇ? ಉಪಮುಖ್ಯಮಂತ್ರಿ ಡಿಕೆಶಿ ಅವರೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ನಡೆಯುವ ಬಗ್ಗೆ ಮಾಧ್ಯಮಗಳಿಗೆ ಅಧಿಕೃತ ಹೇಳಿಕೆ ನೀಡಿದ್ದರು. ಅಂದರೆ ಸರ್ಕಾರವೇ ಮುಂದೆ ನಿಂತು ಕಾರ್ಯಕ್ರಮ ಆಯೋಜಿಸಿದ ಹಾಗಾಯಿತು. ಇಷ್ಟರ ಮೇಲೂ ಮುಖ್ಯಮಂತ್ರಿಗಳು ಕಾಲ್ತುಳಿತಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ ಎನ್ನುವ ಹೇಳಿಕೆ ನೀಡಿದ್ದರು. ಅಮಾಯಕರನ್ನು ಸಾವಿನ ದವಡೆಗೆ ತಳ್ಳಿದ ಡಿಸಿಎಂ ಡಿಕೆಶಿ ಅವರ ಮೇಲೆ ಎಫ್‌ಐಆರ್‌ ದಾಖಲಿಸಿ, ಬಂಧಿಸುವ ತಾಕತ್ತು ಸರ್ಕಾರಕ್ಕೆ ಇದೆಯೇ?” ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

“ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪೊಲೀಸರು ಮೊದಲೇ ಅಪಾಯದ ಮುನ್ಸೂಚನೆ ನೀಡಿದ್ದರು, ಪೊಲೀಸರು ಹೊಣೆಯಲ್ಲ ಎಂದು ಹೇಳಿದ್ದರು. ಈಗ ಸಿಎಂ ಸಿದ್ದರಾಮಯ್ಯ ಅವರು ಏಕಾಏಕಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಶೀತಲ ಸಮರ, ಮುಸುಕಿನ ಗುದ್ದಾಟವೇ ಈ ದುರಂತಕ್ಕೂ ಕಾರಣವಾಯ್ತಾ?” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಪ್ರಶ್ನಿಸಿದ್ದಾರೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ಇದಕ್ಕೆ ಸಿಎಂ ಮತ್ತು ಡಿಸಿಎಂ ಅವರನ್ನು ಹೊಣೆ ಮಾಡಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಬಹಿರಂಗ ಆಹ್ವಾನ ನೀಡಿದ್ದರು. ಹೆಚ್ಚು ಜನ ಸೇರಲು ಅವರೂ ಕಾರಣ. ಆದರೆ, ದುರಂತದ ಬಳಿಕ ಅಧಿಕಾರಿಗಳನ್ನು ಹೊಣೆ ಮಾಡಿ ಕೈತೊಳೆದುಕೊಳ್ಳಲು ನೋಡುತ್ತಿದ್ದಾರೆ. ಘಟನೆಯ ಹೊಣೆಯನ್ನು ಸಿಎಂ ಮತ್ತು ಡಿಸಿಎಂ ಕೂಡ ಹೊತ್ತುಕೊಳ್ಳಬೇಕು ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ಕಾಲ್ತುಳಿತ| ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ವಜಾ; ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....