ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಶನಿವಾರ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.
ಕೃಷಿ ಹಾಗೂ ತೋಟಗಾರಿಕಾ ಕ್ಷೇತ್ರಗಳನ್ನು ಸಮಗ್ರವಾಗಿ ಬಲಪಡಿಸಲು ರಾಜ್ಯ ಸರ್ಕರ ಪೂರಕ ಯೋಜನೆಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು. CFTRI ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇದನ್ನೂ ಓದಿ: ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್.ಡಿ.ಕೆ
ಬೇಗ ಹಾಳಾಗುವ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು, ಪ್ರಧಾನ ಮಂತ್ರಿಯವರು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ ಎಂದು ಹೇಳಿದರು.
ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ತೋಟಗಾರಿಕಾ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕವು ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ತೋಟಗಾರಿಕಾ ಕ್ಷೇತ್ರದ ಸಾಧನೆಯಿಂದ ಭಾರತದ ತೋಟಗಾರಿಕಾ ರಾಜ್ಯ ಎಂದು ಹೆಗ್ಗಳಿಕೆ ಗಳಿಸಿದೆ. ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಇದನ್ನೂ ಓದಿ: ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR
ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನವಾಗಿದೆ. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು. ರೈತರು ಇದರ ಸದುಪಯೋಗ ಪಡೆದು ಮಾದರಿ ರೈತರಾಗಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು.
ತೋಟಗಾರಿಕಾ ಸಚಿವ ಶ್ರೀ ನಾರಾಯಣಗೌಡ, ಬಾಗಲಕೋಟೆ ಶಾಸಕ ಡಾ.ವೀರಣ್ಣ ಚರಂತಿ ಮಠ, ತೋಟಗಾರಿಕಾ ವಿವಿಯ ಕುಲಪತಿ ಡಾ. ಇಂದ್ರೇಶ್ ಉಪಸ್ಥಿತರಿದ್ದರು.
ಮೂರು ದಿನ ನಡೆಯಲಿರುವ ಈ ತೋಟಗಾರಿಕಾ ಮೇಳ, ರೈತರು, ತೋಟಗಾರಿಕಾ ಬೆಳೆಗಾರರು, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಹಲವು ಅವಕಾಶಗಳನ್ನು ಕಲ್ಪಿಸಿಕೊಡಲಿದೆ.
ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ