Homeಕರ್ನಾಟಕರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಮೇ10ರಂದು ಮತದಾನ, 13ರಂದೇ ಫಲಿತಾಂಶ

ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಮೇ10ರಂದು ಮತದಾನ, 13ರಂದೇ ಫಲಿತಾಂಶ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು (ಮಾ.29) ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಮೇ10ರಂದು ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿಸಂಹಿತೆ ಜಾರಿ ಮಾಡಲಾಗಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ವೇಳಾಪಟ್ಟಿ ಬಿಡುಗಡೆ ವಿಚಾರವಾಗಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಇಂದು (ಬುಧವಾರ) ಸುದ್ದಿಗೋಷ್ಠಿ ನಡೆಸಿದರು. “ದಿವ್ಯಾಂಗ ಹಾಗೂ 80 ವರ್ಷ ಮೇಲ್ಪಟ್ಟ ಮತದಾರರು ಮನೆಯಲ್ಲೇ ಕುಳಿತು ಮತದಾನ ಮಾಡಬಹುದು. ದೇಶದಲ್ಲಿ ಇದೇ ಮೊದಲ ಬಾರಿಗೆ ಈ ಪ್ರಯತ್ನ ಮಾಡಲಾಗುತ್ತಿದೆ” ಎಂದು ಅವರು ತಿಳಿಸಿದರು.

ರಾಜ್ಯ ವಿಧಾನಸಭಾ ಚುನಾವಣೆಯ ಅಧಿಸೂಚನೆ ಏಪ್ರಿಲ್ 13ರಂದು ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್ 20, ನಾಮಪತ್ರ ಪರಿಶೀಲನೆ ಏ.21ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕ ಏ.24ರಂದು ನಿಗದಿ ಮಾಡಲಾಗಿದೆ.

ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42,561 ಪುರುಷರು, 2,59,26,319 ಮಹಿಳೆಯರು, 4,699 ಟ್ರಾನ್ಸ್‌ಜೆಂಡರ್‌ಗಳು ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9,17,241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

58,282 ಒಟ್ಟು ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದೆ. ಒಂದೊಂದು ಮತಗಟ್ಟೆಗೆ 883 ಮಂದಿ ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ನಗರಪ್ರದೇಶದಲ್ಲಿ 24,063, ಗ್ರಾಮೀಣ ಭಾಗದಲ್ಲಿ 34,219 ಹಾಗೂ 1320 ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇನ್ನು ಯುವಕರಿಗಾಗಿ 224 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಆಡಳಿತರೂಢ ಬಿಜೆಪಿ ಹಾಗೂ ಪ್ರಬಲ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷದ ನಡುವೆ ನೇರಾನೇರ ಹಣಾಹಣಿ ನಡೆಯಲಿದೆ. ಕೆಲವು ಕ್ಷೇತ್ರಗಳಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಹಾಗೂ ಇನ್ನಿತರ ಪಕ್ಷಗಳು ಪೈಪೋಟಿ ನೀಡಲಿವೆ.

ಕಳೆದ 2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬಂದಿತ್ತು. ಈ ಬಾರಿ ರಾಜ್ಯದಲ್ಲಿ ಆಡಳಿತ ವಿರೋಧಿ ಇರುವುದು ಕಂಡುಬಂದಿದೆ. ಒಂದು ಕಡೆ ಒಳ ಮೀಸಲಾತಿ ವಿಚಾರಕ್ಕೆ ಕೆಲವು ಸಮುದಾಯಗಳು ಆಡಳಿತ ಪಕ್ಷದ ವಿರುದ್ಧ ರಾಜ್ಯಾದ್ಯಾಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಒಪಿಎಸ್ ನೌಕರರ ಅಸಮಾಧಾನದಿಂದ ಸರ್ಕಾರಿ ನೌಕರರ ಮತಗಳು ಕೈತಪ್ಪುವ ಸಾಧ್ಯತೆ ಹೆಚ್ಚಾಗಿವೆ. ಮತ್ತೊಂದೆಡೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ನಿರಂತರವಾಗಿ 40% ಕಮೀಷನ್ ಆರೋಪ ಮಾಡುತ್ತಿವೆ. ಇವೆಲ್ಲ ಕಾರಣಗಳಿಗಾಗಿ ಈ ಭಾರಿಯ ಚುನಾವಣೆ ಕುತೂಹಲ ಕೆರಳಿಸಿದೆ.

37 ವರ್ಷಗಳಲ್ಲಿ ಯಾವುದೇ ಸರ್ಕಾರ ಮರು ಆಯ್ಕೆಯಾಗಿಲ್ಲ

ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಆಡಳಿತರೂಢ ಪಕ್ಷದ ಸರ್ಕಾರವು ಮರು ಆಯ್ಕೆಯಾಗಿಲ್ಲ ಎಂಬುದು ಗಮನಾರ್ಹ ಸಂಗತಿ. ಹೀಗಾಗಿ ಈಗ ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಗೆಲುವು ಸಾಧಿಸಿ, ಅಧಿಕಾರಕ್ಕೆ ಮರಳುವುದೇ? ಅಥವಾ ಕರ್ನಾಟಕ ಜನತೆ ಸರ್ಕಾರ ಬದಲಿಸುವ ಪರಂಪರೆಯನ್ನು ಮುಂದುವರಿಸುತ್ತಾರೆಯೇ? ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

1985ನೇ ಇಸವಿಯೇ ಕೊನೆ, ನಂತರದ ಚುನಾವಣೆಯಲ್ಲಿ ಯಾವುದೇ ಸರ್ಕಾರ ಮರು ಆಯ್ಕೆಯಾಗಿದ್ದಿಲ್ಲ. ರಾಜ್ಯದ ಜನತೆ ಕಳೆದ 37 ವರ್ಷಗಳಿಂದ ವೈವಿಧ್ಯಮಯ ಫಲಿತಾಂಶವನ್ನು ನೀಡುತ್ತಾ ಬಂದಿದ್ದಾರೆ.

ಸತತ ಏಳು ಚುನಾವಣೆಗಳಲ್ಲಿಯೂ ಆಡಳಿತರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡಿವೆ. ಪರಿಣಾಮಕಾರಿಯಾಗಿ ಆಡಳಿತ ನಡೆಸಿದವರೂ ತಿರಸ್ಕರಿಸಲ್ಪಟ್ಟಿದ್ದಾರೆ. 1990ರ ದಶಕದಿಂದಲೂ ಮೂರು ಪ್ರಮುಖ ಪಕ್ಷಗಳು ಕಣದಲ್ಲಿದ್ದು, ಯಾವುದೇ ಪಕ್ಷವು ಸತತ ಬಹುಮತವನ್ನು ಪಡೆಯುವಲ್ಲಿ ವಿಫಲವಾಗುತ್ತಲೇ ಇವೆ.

224 ವಿಧಾನಸಭಾ ಕ್ಷೇತ್ರಗಳು ಕರ್ನಾಟಕ ರಾಜ್ಯದಲ್ಲಿವೆ. 1983ರಲ್ಲಿ ಯಾವುದೇ ಪಕ್ಷ ಬಹುಮತ ಪಡೆದಿರಲಿಲ್ಲ. ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷವು 92 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಅವರು ಸರ್ಕಾರ ರಚಿಸಿದ್ದರು. ಆದರೆ ಬಿಜೆಪಿ ಪಕ್ಷದ ತೊಂದರೆಗಳಿಂದ ಬೇಸತ್ತು ಅವರು ಎರಡೇ ವರ್ಷಕ್ಕೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋದರು.

1985ರ ಅಸೆಂಬ್ಲಿ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷ 139 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಅಧಿಕಾರ ಹಿಡಿದಿತ್ತು. ಅದೇ ಕೊನೆ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದ ಪಕ್ಷವಾಗಿತ್ತು. ಕಾಂಗ್ರೆಸ್‌ ಆ ಚುನಾವಣೆಯಲ್ಲಿ 65 ಸ್ಥಾನಗಳನ್ನು ಪಡೆದಿತ್ತು. 1989ರಲ್ಲಿ ಮತ್ತೆ ಚುನಾವಣೆ ಎದುರಾಗಿ ವೀರೇಂದ್ರ ಪಾಟೀಲ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತು. 178 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಜನತಾ ದಳ 24 ಸ್ಥಾನಗಳಲ್ಲಿ ಗೆದ್ದಿತ್ತು.

ಬದಲಾದ ರಾಜಕೀಯ ಪರಿಸರದಲ್ಲಿ 1994ರಲ್ಲಿ ಎಚ್.ಡಿ.ದೇವೇಗೌಡ ಅವರ ನೇತೃತ್ವದ ಜನತಾ ದಳ 115 ಸ್ಥಾನಗಳನ್ನು ಪಡೆಯಿತು. ಬಿಜೆಪಿ 40 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್‌ ಕೇವಲ 34 ಸ್ಥಾನಗಳಿಗೆ ಕುಸಿಯಿತು. ಜನತಾ ದಳದ ನಾಯಕರಾಗಿದ್ದ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದರು.

1999ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದ ಕಾಂಗ್ರೆಸ್ 132 ಸ್ಥಾನಗಳನ್ನು ಪಡೆಯಿತು. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದರು. ಬಿಜೆಪಿ 44 ಸ್ಥಾನಗಳನ್ನು ಪಡೆದು, ಕಳೆದ ಚುನಾವಣೆಗಿಂತ 4 ಹೆಚ್ಚಿನ ಸ್ಥಾನಗಳನ್ನು ತನ್ನದಾಗಿಸಿಕೊಂಡಿತು. ಜನತಾ ದಳ ಒಡೆದು ಹೋಗಿ ‘ಜನತಾ ದಳ ಸೆಕ್ಯುಲರ್‌’ (ಜೆಡಿಎಸ್‌) ರಚನೆಯಾಗಿತ್ತು. ಈ ಚುನಾವಣೆಯಲ್ಲಿ ಜೆಡಿಎಸ್‌ 10 ಸ್ಥಾನಗಳನ್ನು ಪಡೆದಿತ್ತು.

2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿಲ್ಲ. 65 ಸೀಟ್‌ಗಳನ್ನು ಪಡೆದ ಕಾಂಗ್ರೆಸ್‌ 58 ಸೀಟ್‌ಗಳನ್ನು ಪಡೆದ ಜೆಡಿಎಸ್‌ನೊಂದಿಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿತು. ಜೆಡಿಎಸ್‌ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡು ಬಲವಾಯಿತು. ಧರಂಸಿಂಗ್‌ ಮುಖ್ಯಮಂತ್ರಿಯಾದರು. ಈ ಚುನಾವಣೆಯಲ್ಲಿ ಬಿಜೆಪಿ 79 ಸೀಟ್‌ಗಳನ್ನು ಗೆದ್ದಿತ್ತು.

2006ರಲ್ಲಿ ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯ ಯಡಿಯೂರಪ್ಪನವರೊಂದಿಗೆ 20-20 ತಿಂಗಳ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ನಿಂದ ಹೊರಬಂದು ಸರ್ಕಾರ ರಚಿಸಿದರು. ಆದರೆ 2008ರಲ್ಲಿ ಅಧಿಕಾರ ಬಿಟ್ಟುಕೊಡದ ಕಾರಣ ಸರ್ಕಾರ ಪತನವಾಯಿತು.

2008 ಚುನಾವಣೆಯಲ್ಲಿ ಮತ್ತೆ ಫಲಿತಾಂಶ ಏರುಪೇರಾಯಿತು. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ 110 ಸೀಟ್‌ಗಳನ್ನು ಗೆದ್ದಿತು. ಆಪರೇಷನ್‌ ಕಮಲ ಮಾಡಿದ ಯಡಿಯೂರಪ್ಪನವರು ಮುಖ್ಯಯಾದರು. ಆ ವೇಳೆಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿದ್ದರು.

2013ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ 122 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯಿತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರು. ಜೆಡಿಎಸ್‌ 40 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು. ಬಿಜೆಪಿ 40 ಸ್ಥಾನಗಳಿಗೆ ಕುಸಿಯಿತು. ಆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯವೆದ್ದಿದ್ದ ಬಿ.ಎಸ್.ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು, ಬಿಜೆಪಿಗೆ ಭಾರೀ ಹೊಡೆತ ನೀಡಿತು.

2013ರ ಚುನಾವಣಾ ಫಲಿತಾಂಶದಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತೆ ಯಡಿಯೂರಪ್ಪನವರನ್ನು ಬಿಜೆಪಿಗೆ ಕರೆತಂದರು. 2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತು. ಹೆಚ್ಚು ಸ್ಥಾನ ಗಳಿಸಿದ್ದರಿಂದ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದರು. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದರು.

80 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್, 37 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಜೊತೆಯಲ್ಲಿ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿತು. ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾದರು. ಆದರೆ 2019 ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿತು. ಈ ವೇಳೆಗೆ ನಡೆದ ಆಪರೇಷನ್‌ ಕಮಲದಲ್ಲಿ 17 ಶಾಸಕರು ಸರ್ಕಾರ ಉರುಳಲು ಕಾರಣವಾದರು. ರಾಜಕೀಯ ಚದುರಂಗದಾಟದಲ್ಲಿ ಬಿ.ಎಸ್.ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾದರು. ಯಡಿಯೂರಪ್ಪನವರನ್ನು ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಲಾಯಿತು.

ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲು ರಾಜ್ಯದಲ್ಲಿ ಸಾಧ್ಯವಾಗಿಲ್ಲ. ಇದು ಕರ್ನಾಟಕದ ವೈಶಿಷ್ಟ್ಯತೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಶೇ. 40 ಕಮಿಷನ್ ಆರೋಪ ದೊಡ್ಡಮಟ್ಟದಲ್ಲಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯವು ಒಂದಲ್ಲ ಒಂದು ಕೋಮು ಕೇಂದ್ರಿತ ವಿವಾದಗಳಲ್ಲಿ ಸಿಲುಕಿದೆ. ಅಭಿವೃದ್ಧಿಗಿಂತ ಹಿಂದುತ್ವವನ್ನು ಮುಂದು ಮಾಡಿ ಕೋಮು ನೆಲೆಯಲ್ಲಿ ರಾಜಕೀಯ ಧ್ರುವೀಕರಣಕ್ಕೆ ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಯಾವತ್ತೂ ಆಗದಷ್ಟು ಕೋಮು ಪ್ರಚೋದಿತ ಘಟನೆಗಳು ಇಲ್ಲಿ ಘಟಿಸುತ್ತಿವೆ. ಮತೀಯ ಗೂಂಡಾಗಿರಿ, ಹಿಜಾಬ್ ವಿವಾದ, ಹಲಾಲ್‌ ಕಟ್‌, ಜಟ್ಕಾ ಕಟ್‌, ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳ ಬಳಿ ಅವಕಾಶ ನೀಡಲ್ಲ ಎನ್ನುವುದು- ಇವೆಲ್ಲವೂ ಈ ಚುನಾವಣೆಯಲ್ಲಿ ಯಾವ ಪರಿಣಾಮಗಳನ್ನು ಬೀರುತ್ತವೆ ಎಂಬುದು ಕುತೂಹಲಕರ ಸಂಗತಿಯಾಗಿದೆ.

ಮೂರು ಪಕ್ಷಗಳ ಮತಗಳು ಭೌಗೋಳಿಕವಾಗಿ ಹಂಚಿಹೋಗಿರುವಲ್ಲಿಯೂ ವ್ಯತ್ಯಾಸಗಳಿವೆ. ಕಾಂಗ್ರೆಸ್‌ಗೆ ರಾಜ್ಯಾದ್ಯಂತ ಮತದಾರರು ಗಣನೀಯವಾಗಿ ಇದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತಗಳು ಮುಖ್ಯವಾಗಿ ರಾಜ್ಯದ ಉತ್ತರ ಮತ್ತು ಮಧ್ಯ ಭಾಗದಲ್ಲಿನ ಜಿಲ್ಲೆಗಳಲ್ಲಿ ಕೇಂದ್ರೀಕೃತವಾಗಿವೆ. ಲಿಂಗಾಯತ ಸಮುದಾಯದ ಬೆಂಬಲವನ್ನು ಬಿಜೆಪಿ ಹೆಚ್ಚಿನ ಮಟ್ಟದಲ್ಲಿ ಪಡೆದಿದೆ. ಜನತಾ ದಳ-ಜಾತ್ಯತೀತ (ಜೆಡಿಎಸ್) ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿದೆ. ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಜೊತೆಯಲ್ಲಿ ಕೇಂದ್ರೀಕೃತವಾಗಿದ್ದಾರೆ. ಕಾಂಗ್ರೆಸ್ ಜೊತೆಯಲ್ಲಿ ಪರಿಶಿಷ್ಟ ಜಾತಿಗಳು, ಮುಸ್ಲಿಂ, ಒಬಿಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಗಳು ಗುರುತಿಸಿಕೊಂಡಿವೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವು ಹೆಚ್ಚು ಮತಗಳನ್ನು ಪಡೆದರೂ, ಇತರ ಪಕ್ಷಗಳು ಹೆಚ್ಚು ಸ್ಥಾನಗಳನ್ನು ಗೆಲ್ಲಲೂಬಹುದು. ಉದಾಹರಣೆಗೆ, 2004ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ 7% ಹೆಚ್ಚು ಮತಗಳನ್ನು ಗಳಿಸಿತು, ಆದರೆ ಬಿಜೆಪಿಯು ಕಾಂಗ್ರೆಸ್‌ ಪಕ್ಷಕ್ಕಿಂತ 14 ಹೆಚ್ಚಿನ ಸ್ಥಾನಗಳನ್ನು ಗೆದ್ದಿತ್ತು.

ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಶೇ. 14ರಿಂದ 17, ಒಕ್ಕಲಿಗರ ಸಂಖ್ಯೆ ಶೇ. 11-12, ಬ್ರಾಹ್ಮಣರು ಶೇ.3, ಒಬಿಸಿ ಶೇ. 23%, ಪರಿಶಿಷ್ಟ ಜಾತಿ (ದಲಿತರು) ಶೇ. 15ರಿಂದ 17, ಪರಿಶಿಷ್ಟ ಪಂಗಡ ಶೇ. 5- 7, ಮುಸ್ಲಿಮರ ಜನಸಂಖ್ಯೆ ಶೇ. 11- 16ರಷ್ಟಿದೆ ಎಂದು ಅಂಕಿಅಂಶಗಳು ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...