Homeಕರ್ನಾಟಕಬಸವಣ್ಣರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ'ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟು ಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ. ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿಯೋಜನೆಯಲ್ಲಿಯೂ ಕಾಣಬಹುದು ಎಂದು ಸಿಎಂ ಬರೆದುಕೊಂಡಿದ್ದಾರೆ.

ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ ಎಂದಿದ್ದಾರೆ.

ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದನ್ನೂ ಓದಿ : ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...