Homeಮುಖಪುಟ'ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

- Advertisement -
- Advertisement -

‘ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್’ ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ.

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಏಕಸದಸ್ಯ ಪೀಠ ಗುರುವಾರ (ಫೆ.26) ಚಿತ್ರದ ಬಿಡುಗಡೆಗೆ 15 ದಿನಗಳ ಮಧ್ಯಂತರ ತಡೆಯನ್ನು ನೀಡಿತ್ತು. ಇದನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕ ವಿಪುಲ್ ಶಾ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆ ಕೋರಿದ್ದರು.

ಶುಕ್ರವಾರ (ಫೆ.27) ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ಪಿ.ವಿ. ಬಾಲಕೃಷ್ಣನ್ ಅವರ ವಿಭಾಗೀಯ ಪೀಠ, ತಡೆಯಾಜ್ಞೆ ತೆರವುಗೊಳಿಸಿ ಚಿತ್ರದ ಬಿಡುಗಡೆ ಅವಕಾಶ ನೀಡಿದೆ.

“ಏಕಸದಸ್ಯ ಪೀಠದ ನ್ಯಾಯಾಧೀಶರು ಚಿತ್ರವನ್ನು ವೀಕ್ಷಿಸದೆಯೇ ಅದು ಬೀರಬಹುದಾದ ಪರಿಣಾಮಗಳ ಬಗ್ಗೆ ಹೇಗೆ ತೀರ್ಮಾನ ತೆಗೆದುಕೊಂಡರು? ಎಂದು ಮೇಲ್ಮನವಿ ವಿಚಾರಣೆಯ ವೇಳೆ ವಿಭಾಗೀಯ ಪೀಠ ಪ್ರಶ್ನಿಸಿದೆ. ಚಿತ್ರವನ್ನು ನೇರವಾಗಿ ನೋಡದೆ ಇಂತಹ ದೊಡ್ಡ ತೀರ್ಪು ನೀಡುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿದೆ. ಚಿತ್ರದ ವಿರುದ್ದ ಸಲ್ಲಿಕೆಯಾದ ಅರ್ಜಿಗಳು ವೈಯಕ್ತಿಕವೇ ಅಥವಾ ಸಾರ್ವಜನಿಕ ಹಿತಾಸಕ್ತಿಯದ್ದೇ (ಪಿಐಎಲ್)..ಅದನ್ನು ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು ಸರಿಯೇ? ಅಥವಾ ಹೈಕೋರ್ಟ್‌ನ ರೋಸ್ಟರ್ ನಿಯಮಗಳ ಪ್ರಕಾರ ವಿಭಾಗೀಯ ಪೀಠದ ಮುಂದೆ ಇಡಬೇಕಿತ್ತೇ?” ಎಂದು ಕೇಳಿದೆ.

ಚಿತ್ರದ ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ನೀರಜ್ ಕಿಶನ್ ಕೌಲ್, ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣಪತ್ರ ಪಡೆದಿರುವ ಚಿತ್ರವನ್ನು ತಡೆಯುವುದು ಸರಿಯಲ್ಲ ಎಂದಿದ್ದಾರೆ.

ಲೈವ್ ಲಾ ವರದಿಯ ಪ್ರಕಾರ, ಒಮ್ಮೆ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕ ಮೇಲೆ, ಅತ್ಯಂತ ಅಪರೂಪದ ಅಥವಾ ಅಸಾಧಾರಣ ಸಂದರ್ಭಗಳನ್ನು ಹೊರತುಪಡಿಸಿ ಅದರ ಬಿಡುಗಡೆಗೆ ಅಡ್ಡಿಪಡಿಸಬಾರದು ಎಂಬ ನಿಯಮವನ್ನು ನ್ಯಾಯಾಲಯಗಳು ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿವೆ ಎಂದು ಅವರು ವಾದಿಸಿದ್ದಾರೆ.

ಚಿತ್ರದ ಟೀಸರ್ ಬಿಡುಗಡೆಯಾಗಿ ಎರಡು ವಾರಗಳಿಗಿಂತ ಹೆಚ್ಚು ಸಮಯ ಕಳೆದ ನಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ವಿಳಂಬವನ್ನು ಸ್ವತಃ ಏಕಸದಸ್ಯ ಪೀಠವೇ ‘ಕೊನೆಯ ಕ್ಷಣದ’ ಧಾವಂತ ಎಂದು ಕರೆದಿದೆ. ಟೀಸರ್ ಬಿಡುಗಡೆಯಾದ ಈ 16 ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆಯ ಧಕ್ಕೆ ಅಥವಾ ಅಹಿತಕರ ಘಟನೆಗಳು ವರದಿಯಾಗಿಲ್ಲ. ಇಷ್ಟು ದಿನಗಳ ಕಾಲ ಯಾವುದೇ ಸಮಸ್ಯೆ ಇಲ್ಲದಿರುವಾಗ, ಈಗ ಏಕಾಏಕಿ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತಹ ತುರ್ತು ಪರಿಸ್ಥಿತಿ ಏನಿದೆ? ಎಂದು ನಿರ್ಮಾಪಕರ ಪರ ವಕೀಲ ಕೌಲ್ ಪ್ರಶ್ನಿಸಿದ್ದಾರೆ.

ಚಿತ್ರವು ಸಮಾಜದ ಕೋಮು ಸೌಹಾರ್ದತೆಯನ್ನು ಕದಡುವ ಸಾಧ್ಯತೆಯಿದೆ ಎಂದು ಏಕಸದಸ್ಯ ಪೀಠ ನೀಡಿದ ತೀರ್ಪು, ಚಿತ್ರವನ್ನು ವೀಕ್ಷಿಸದೆಯೇ ಕೈಗೊಂಡ ನಿರ್ಧಾರವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಿಭಾಗೀಯ ಪೀಠ, ಇಂತಹ ಗಂಭೀರವಾದ ತೀರ್ಮಾನಗಳನ್ನು ಅಥವಾ ಆರೋಪಗಳನ್ನು ಮಾಡುವ ಮೊದಲು ಸಾಮಾನ್ಯವಾಗಿ ಚಿತ್ರದ ವಿಷಯವನ್ನು ನೇರವಾಗಿ ಪರಿಶೀಲಿಸುವುದು ಅಗತ್ಯವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಚಿತ್ರದ ವಿರುದ್ದ ಸಲ್ಲಿಕೆಯಾದ ಅರ್ಜಿಗಳನ್ನು ಏಕಸದಸ್ಯ ಪೀಠ ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ಪ್ರಶ್ನೆ ಎತ್ತಿದ ನಿರ್ಮಾಪಕರ ಪರ ವಕೀಲರು, ಅರ್ಜಿಯು ಮೂಲಭೂತವಾಗಿ ಪಿಐಎಲ್‌ ರೂಪದಲ್ಲಿದೆ ಎಂದು ವಾದಿಸಿದ್ದಾರೆ. ಹೈಕೋರ್ಟ್‌ನ ರೋಸ್ಟರ್ ನಿಯಮಗಳ ಪ್ರಕಾರ, ಇಂತಹ ಸಾರ್ವಜನಿಕ ವಿಷಯದ ಅರ್ಜಿಗಳನ್ನು ಏಕ ಸದಸ್ಯ ಪೀಠದ ನ್ಯಾಯಾಧೀಶರು ವಿಚಾರಣೆ ನಡೆಸುವಂತಿಲ್ಲ; ಇವುಗಳನ್ನು ಇಬ್ಬರು ನ್ಯಾಯಾಧೀಶರಿರುವ ವಿಭಾಗೀಯ ಪೀಠವೇ ವಿಚಾರಣೆ ನಡೆಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಚಿತ್ರ ಬಿಡುಗಡೆಗೆ ಕೊನೆಯ ಕ್ಷಣದಲ್ಲಿ ನೀಡುವ ತಡೆಯಾಜ್ಞೆಗಳು ಚಿತ್ರರಂಗಕ್ಕೆ ಭಾರೀ ಆರ್ಥಿಕ ನಷ್ಟವನ್ನು ಉಂಟುಮಾಡುತ್ತವೆ. ಇದು ಕೇವಲ ಹಣದ ನಷ್ಟವಲ್ಲದೆ, ಆರ್ಥಿಕ ಹಾನಿಯ ಮೂಲಕ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತಾಗುತ್ತದೆ. ಚಿತ್ರವು ವಿಶ್ವಾದ್ಯಂತ ಸುಮಾರು 1,500 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈ ತಡೆಯಾಜ್ಞೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರದ ಪ್ರದರ್ಶನ ಸ್ಥಗಿತಗೊಂಡಿದೆ ಎಂದು ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ.

ಈ ವಾದಗಳಿಗೆ ಉತ್ತರಿಸಿದ ಮೂಲ ಅರ್ಜಿದಾರರ ಪರ ವಕೀಲರಾದ ಮೈತ್ರೇಯಿ ಹೆಗ್ಡೆ ಅವರು, ಈ ಪ್ರಕರಣವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ ಎಂದು ಪ್ರತಿಪಾದಿಸಿದ್ದಾರೆ. ತಾವು ವೈಯಕ್ತಿಕವಾಗಿ ಈ ಅರ್ಜಿಯನ್ನು ಸಲ್ಲಿಸಿರುವುದಾಗಿ ತಿಳಿಸಿದ ಅವರು, ಚಿತ್ರದಲ್ಲಿ ಕೇರಳವನ್ನು ಚಿತ್ರಿಸಿರುವ ರೀತಿ ಸಂವಿಧಾನದ 21ನೇ ವಿಧಿಯಡಿ ತನಗೆ ಇರುವ ಗೌರವದ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ವಾದಿಸಿದ್ದಾರೆ.

ಒಬ್ಬ ವ್ಯಕ್ತಿಯ ಗುರುತು ಅವನ ಹುಟ್ಟಿದ ಸ್ಥಳವನ್ನೂ ಒಳಗೊಂಡಿರುತ್ತದೆ. ಕೇರಳವನ್ನು ತಪ್ಪು ರೀತಿಯಲ್ಲಿ (ಉದಾಹರಣೆಗೆ ಮತಾಂತರದ ಕೇಂದ್ರವೆಂಬಂತೆ) ಚಿತ್ರಿಸುವುದು ಆ ರಾಜ್ಯದ ಜನರಿಗೆ ಮಾಡಿದ ಅವಮಾನವಾಗಿದೆ. ಏಕಸದಸ್ಯ ಪೀಠವು ಚಿತ್ರವನ್ನು ವೀಕ್ಷಿಸಲು ಸಿದ್ಧವಿತ್ತಾದರೂ, ನಿರ್ಮಾಪಕರು ಅದನ್ನು ಪ್ರದರ್ಶಿಸಲು ನಿರಾಕರಿಸಿದ್ದರು. ಒಂದು ವೇಳೆ ಚಿತ್ರವನ್ನು ನ್ಯಾಯಾಲಯಕ್ಕೆ ತೋರಿಸಿದ್ದರೆ ತೀರ್ಪು ಬೇರೆಯೇ ಇರುತ್ತಿತ್ತು ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ಗುರುತು ಅಥವಾ ಅಸ್ಮಿತೆಯು ಅವರು ಹುಟ್ಟಿದ ಸ್ಥಳವನ್ನೂ ಒಳಗೊಂಡಿರುತ್ತದೆ. ಆದ್ದರಿಂದ, ಕೇರಳವನ್ನು ಬಲವಂತದ ಅಥವಾ ಪ್ರೇಮದ ಹೆಸರಿನ ಮತಾಂತರಗಳ ಕೇಂದ್ರ ಎಂಬಂತೆ ಚಿತ್ರಿಸುವುದು ಆ ರಾಜ್ಯದ ಜನರಿಗೆ ಮಾಡಿದ ಅವಮಾನವಾಗಿದೆ. ತಾನು ಇಡೀ ಕೇರಳದ ಜನರ ಪರವಾಗಿ ಪ್ರತಿನಿಧಿಯಾಗಿ ಇಲ್ಲಿಗೆ ಬಂದಿಲ್ಲ, ಬದಲಿಗೆ ಒಬ್ಬ ವ್ಯಕ್ತಿಯಾಗಿ ರಾಜ್ಯಕ್ಕೆ ಆಗುತ್ತಿರುವ ಅವಹೇಳನದಿಂದ ತಮಗೆ ಉಂಟಾಗಿರುವ ವೈಯಕ್ತಿಕ ನೋವು ಮತ್ತು ಅಸಮಾಧಾನವನ್ನು ನ್ಯಾಯಾಲಯದ ಮುಂದೆ ಮಂಡಿಸುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಚಲನಚಿತ್ರ ಕಾಯ್ದೆಗೆ ತಿದ್ದುಪಡಿ ತಂದ ನಂತರ, ಮೇಲ್ಮನವಿ ಸಲ್ಲಿಸುವ ಅಥವಾ ಮರುಪರಿಶೀಲಿಸುವ ಅಧಿಕಾರಗಳ ಬಗ್ಗೆ ಅಸ್ಪಷ್ಟತೆ ಇರುವುದನ್ನು ಒಪ್ಪಿಕೊಂಡ ಮೈತ್ರೇಯಿ ಹೆಗ್ಡೆ, ಇಂತಹ ಅಸ್ಪಷ್ಟತೆಯ ನಡುವೆಯೂ, ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟಾದಾಗ ಹೈಕೋರ್ಟ್ ತನ್ನ ಅಸಾಧಾರಣ ಅಧಿಕಾರ ವ್ಯಾಪ್ತಿಯನ್ನು (ವಿಧಿ 226) ಬಳಸಬಹುದು ಎಂದು ವಾದಿಸಿದ್ದಾರೆ. ಅನ್ಯಾಯ ನಡೆದಾಗ ನ್ಯಾಯಾಲಯವು ಕೇವಲ ತಾಂತ್ರಿಕ ಕಾರಣಗಳಿಗಾಗಿ ಸುಮ್ಮನಿರಬಾರದು, ಬದಲಿಗೆ ಸಂವಿಧಾನವು ನೀಡಿರುವ ವಿಶೇಷ ಅಧಿಕಾರದ ಅಡಿಯಲ್ಲಿ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು ಎಂದಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಕೆಲ ಹೊತ್ತು ಆದೇಶವನ್ನು ಕಾಯ್ದಿರಿಸಿತ್ತು. ಬಳಿಕ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...