ಹರಿಯಾಣದ ನುಹ್ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಉದ್ವಿಗ್ವತೆ ಉಲ್ಭಣಗೊಂಡಿದೆ. ಕಾರಿಗೆ ಬೆಂಕಿ ಹಚ್ಚಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಹಿಂಸಾಚಾರದಲ್ಲಿ ಇಬ್ಬರು ಪೊಲೀಸರು ಸೇರಿ ಐವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಗಲಭೆ ನಿಯಂತ್ರಿಸಲು ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ಆಗಸ್ಟ್ 2ರ ವರೆಗೂ ನುಹ್ ಜಿಲ್ಲೆಯಲ್ಲಿ ಇಂಟರ್ನೆಟ್ ಬಂದ್ ಮಾಡಿದೆ.
ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಈ ಯಾತ್ರೆ ಆಯೋಜಿಸುತ್ತವೆ. ಬಿಜೆಪಿ ಜಿಲ್ಲಾಧ್ಯಕ್ಷ ಗಾರ್ಗಿ ಕಕ್ಕರ್ ಅವರು ಗುರುಗ್ರಾಮದ ಸಿವಿಲ್ ಲೈನ್ಸ್ನಿಂದ ‘ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆ’ಗೆ ಚಾಲನೆ ನೀಡಿದ ನಂತರ ನುಹ್ನ ಖೇಡ್ಲಾ ಮೋಡ್ ಬಳಿ ಪುರುಷರ ಗುಂಪು ಮೆರವಣಿಗೆ ತಡೆದಿದೆ. ಮೆರವಣಿಗೆಯ ಮೇಲೆ ಕಲ್ಲು ತೂರಲಾಯಿತು ಮತ್ತು ಕನಿಷ್ಠ ನಾಲ್ಕು ಕಾರುಗಳಿಗೆ ಬೆಂಕಿ ಹಚ್ಚಲಾಯಿತು” ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಪೊಲೀಸ್ ಮಹಾನಿರ್ದೇಶಕರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸರ್ಕಾರವು ನೆರೆಯ ಜಿಲ್ಲೆಗಳಿಂದ ಹೆಚ್ಚುವರಿ ಪಡೆಗಳನ್ನು ಕಳುಹಿಸಿದೆ. ಪರಿಸ್ಥಿತಿಯನ್ನು ಹತೋಟಿಗೆ ತರುವುದು ನಮ್ಮ ಮೊದಲ ಆದ್ಯತೆಯಾಗಿದೆ. ಶಾಂತಿ ಕಾಪಾಡುವಂತೆ ನಾವು ಎಲ್ಲರಿಗೂ ಮನವಿ ಮಾಡುತ್ತಿದ್ದೇವೆ. ಹೆಲಿಕಾಪ್ಟರ್ ಮೂಲಕ ಪಡೆಗಳನ್ನು ಕಳುಹಿಸಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಬಜರಂಗದಳದ ಕಾರ್ಯಕರ್ತ, ಇಬ್ಬರು ಮುಸ್ಲಿಮರ ಹತ್ಯೆ ಆರೋಪಿ ಮೋನು ಮಾನೇಸರ್ ಮತ್ತವರ ತಂಡವೇ ಕೆಲ ದಿನಗಳ ಹಿಂದೆ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ್ದೆ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ನಂತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಮೆರವಣಿಗೆ ನಡೆಸಿದರು. “ಈ ಪ್ರದೇಶದಲ್ಲಿ ಪರಿಸ್ಥಿತಿ ಸ್ಥಿರವಾಗಿದೆ” ಎಂದು ನುಹ್ ಎಸ್ಎಚ್ಒ ಹುಕಮ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಚುನಾವಣೆ ಗೆಲ್ಲಲು ಬಿಜೆಪಿಯವರು ‘ರಾಮ ಮಂದಿರದ ಮೇಲೆ ದಾಳಿ’ ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ