ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿರುವ ಹಲವಾರು ಕನ್ನಡಪರ ಸಂಘಟನೆಗಳು ಅಂದು, ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಾಧಿಕಾರ ಪಕ್ಷ ಈ ಬಗ್ಗೆ ಹೇಳಿಕೆಗಳನ್ನು ನೀಡಿವೆ.
ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 12 ಗಂಟೆಗಳು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ಟ್ಯಾಗ್ ಅಡಿಯಲ್ಲಿ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.
’ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ
ಸೆ. 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್ಗಳ ಮುಂಭಾಗ ಏಕಕಾಲಕ್ಕೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ.
ಟ್ವಿಟರ್, ಫೇಸ್ ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ. ಜೊತೆಗೆ ಬೆಳಿಗ್ಗೆ ಹತ್ತು ಗಂಟೆಯಿಂದ ಕ್ಲಬ್ ಹೌಸ್ನ ಕರ್ನಾಟಕ ರಕ್ಷಣಾ ವೇದಿಕೆ ಗುಂಪಿನಲ್ಲಿ ಸಾವಿರಾರು ಪ್ರತಿಭಟನೆಗಳ ಲೈವ್ ಕಮೆಂಟರಿ ಕೂಡ ಇರುತ್ತದೆ ಎಂದು ಕರವೇ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಇನ್ನು, ಹಿಂದಿ ಪ್ರಚಾರ ದಿವಸ ಆಚರಣೆಯನ್ನು ವಿರೋಧಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ಜನಾಧಿಕಾರ ಪಕ್ಷದ ಹರೀಶ್ ಕುಮಾರ್ ಬಿ ತಿಳಿಸಿದ್ದಾರೆ.
“ಹಿಂದಿ ಹೇರಿಕೆಯನ್ನ ಶುರು ಮಾಡಿದ್ದು ಕಾಂಗ್ರೆಸ್ ಪಕ್ಷ. ಆ ಹೇರಿಕೆಯನ್ನು ಅತ್ಯಂತ ವೇಗವಾಗಿ, ವ್ಯವಸ್ಥಿತವಾಗಿ ನಡೆಸುತ್ತಿರುವುದು ಬಿಜೆಪಿ. ಪರೀಕ್ಷೆಗಳಂತೂ ಕನ್ನಡದಲ್ಲಿಲ್ಲ, ಕೇಂದ್ರ ಸರ್ಕಾರದ ಕೆಲಸಗಳ ಜಾಹೀರಾತುಗಳನ್ನು ಕನ್ನಡ ಪತ್ರಿಕೆಗಳಲ್ಲಿ ಹಿಂದಿಯಲ್ಲಿ ಕೊಡ್ತಾರೆ ಅಂದ್ರೆ ಇದನ್ನ ಹೇರಿಕೆ, ದಬ್ಬಾಳಿಕೆಯೆನ್ನದೆ ಏನೆನ್ನಬೇಕು? ಹಿಂದಿ ಹೇರಿಕೆ ವಿಚಾರದಲ್ಲಿ, ಕನ್ನಡ ನಾಡಿಗೆ ಅನ್ಯಾಯಗಳ ವಿಚಾರಗಳಲ್ಲಿ ಈ ಕಾಂಗ್ರೆಸ್ ಬಿಜೆಪಿ ಇಬ್ಬರೂ ಒಂದೇ” ಎಂದು ಹರೀಶ್ ಕುಮಾರ್ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಹಿಂದಿ ಹೇರಿಕೆ ವಿರೋಧಿಸಿ ಕರಾಳ ದಿನ: ಸೆ.14 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ