Homeಮುಖಪುಟಹಿಂಗಿದ್ದ ನಮ್ಮ ರಾಮಣ್ಣ; ಬೆಸಗರಹಳ್ಳಿ ರಾಮಣ್ಣ ವೃತ್ತಾಂತ ಸರಣಿ ಪ್ರಾರಂಭ: ಭಾಗ-1

ಹಿಂಗಿದ್ದ ನಮ್ಮ ರಾಮಣ್ಣ; ಬೆಸಗರಹಳ್ಳಿ ರಾಮಣ್ಣ ವೃತ್ತಾಂತ ಸರಣಿ ಪ್ರಾರಂಭ: ಭಾಗ-1

- Advertisement -
- Advertisement -

ಪ್ರತಿ ವರ್ಷ ಜೂನ್ ತಿಂಗಳಿನಲ್ಲಿ ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಗೆಳೆಯರು ಆ ವರ್ಷದ ಅತ್ಯುತ್ತಮ ಕಥಾ ಸಂಕಲನಕ್ಕೆ ರಾಮಣ್ಣನ ಹೆಸರಿನಲ್ಲಿ ಪ್ರಶಸ್ತಿ ಕೊಡುತ್ತ ಬರುತ್ತಿದ್ದಾರೆ. ಇದೊಂದು ಅರ್ಥಪೂರ್ಣ ಸಮಾರಂಭ. ರಾಮಣ್ಣ ಕಥೆಗಾರರಾಗಿದ್ದಾಗ, ತನ್ನ ಸುತ್ತಮುತ್ತಲಿನವರಲ್ಲಿ ಕತೆ ಹೆಣಿಯುವ ಶಕ್ತಿ ಗುರುತಿಸಿ ಬರೆಸಿದ್ದರು ಮತ್ತು ಒಳ್ಳೆಯ ಕಥೆಗಳಿಗಾಗಿ ಆಶಿಸಿದ್ದರು. ಅಂತಹ ಕಥೆಗಾರನ ಸ್ಮರಣೆಯಲ್ಲಿ ಕನ್ನಡದಲ್ಲಿ ಬರುತ್ತಿರುವ ಉತ್ತಮ ಕಥಾ ಸಂಕಲನವನ್ನು ಹುಡುಕಿ ಬಹುಮಾನ ಕೊಡುವುದು, ಕನ್ನಡ ಕಥಾಲೋಕವನ್ನ ಶ್ರೀಮಂತಗೊಳಿಸುವ ಕ್ರಮಗಳಲ್ಲಿ ಒಂದು ಮತ್ತು ರಾಮಣ್ಣನಿಗೆ ಸಲ್ಲಿಸುವ ನಿಜವಾದ ಗೌರವ ಕೂಡ. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಾದ್ಯ ಸಂಗೀತ ಮತ್ತು ಹಾಡುಗಾರಿಕೆಯೂ ವಿಶೇಷವಾದದ್ದೇ.

ಆ ಸಮಾರಂಭದಲ್ಲಿ ಭಾಗವಹಿಸುವುದು ನಮಗೊಂದು ಸಂಭ್ರಮದ ಸಂಗತಿ. ಏಕೆಂದರೆ ಅಲ್ಲಿ ನಮ್ಮ ಹಳೆಯ ಗೆಳೆಯರೆಲ್ಲಾ ನೆರೆಯುತ್ತಾರೆ ಹೊಸ ಗೆಳೆಯರ ಪರಿಚಯವಾಗುತ್ತದೆ. ಮಂಡ್ಯದ ಹಿರಿಯರು ಮತ್ತು ಕಿರಿಯರು ಬಂದು ಅಸೀನರಾಗುತ್ತಾರೆ. ರಾಮಣ್ಣನ ಗೆಳೆಯರು, ಬಂಧುಬಾಂಧವರು, ಬೆಂಗಳೂರು-ಮಂಡ್ಯ-ಮೈಸೂರಿನ ಕಡೆಯವರೆಲ್ಲಾ ನೋಡಲು ಸಿಗುತ್ತಾರೆ. ರಾಮಣ್ಣನ ನೆನಪಿನ ಸಮಾರಂಭವೇ ಸರ್ವಜನಾಂಗದ ಶಾಂತಿಯ ತೋಟದಂತಿರುತ್ತದೆ. ಅಲ್ಲಿ ಎಲ್ಲ ವಯೋಮಾನದ ಗಿಡಮರ ಸಸಿಗಳು ಕಾಣುತ್ತವೆ. ಕೆಲವು ಗಿಡಗಳಿಗೆ ಹಳದಿ ರೋಗ ಬಂದಿದ್ದರೆ, ಕೆಲವುದರಲ್ಲಿ ಹಸಿರು ಮುಕ್ಕಳಿಸುತ್ತವೆ. ಮೋಟು ಮರ, ಗಾಳಿಗೆ ಮಿಂಡ ಎನ್ನುವ ಮರ, ಎತ್ತರದ ಹೂವಿನ, ಹಣ್ಣಿನ, ಹಣ್ಣು ಬಿಡದ, ಎಲೆ ಉದುರಿಸಿಕೊಂಡ, ಎಲೆಯಿಂದ ಕಂಗೊಳಿಸುವ ಮರಗಳು, ನೆಟ್ಟಾಗಿನಿಂದ ಹಾಗೇ ಇರುವ ಗಿಡಗಳು – ಹೀಗೆ ಎಲ್ಲವಕ್ಕೂ ಒಂದು ರೀತಿ ಜೀವಕಳೆ ಬರುತ್ತಿದ್ದುದು ರಾಮಣ್ಣನ ನೆನಪಿನಿಂದ. ರಾಮಣ್ಣ ಎಲ್ಲರಿಗೂ ಸಲ್ಲುವ ವ್ಯಕ್ತಿಯಾಗಿದ್ದರು. ಏಕೆಂದರೆ ಅವರು ವೈದ್ಯರಾಗಿದ್ದರು ಮತ್ತು ಈ ಸಮಾಜದ ಮನಸ್ಸನ್ನು ಬದಲಿಸುವ ಕತೆಗಾರರಾಗಿದ್ದರು.

ಸಮಾರಂಭ ಮುಗಿದನಂತರವೂ ರಾತ್ರಿ ಮಂಡ್ಯದಲ್ಲಿ ರಾಮಣ್ಣನ ಕಥೆಗಳು ಮುಂದುವರಿಯುತ್ತಿದ್ದವು. ಹಾಗೆ ನೋಡಿದರೆ ರಾಮಣ್ಣ ನಮ್ಮ ಮೈಮೇಲೆ ಬರುತ್ತಿದ್ದದ್ದು ರಾತ್ರಿ ವೇಳೆಯಲ್ಲಿಯೇ. ಹಾಗಾಗಿ ನಾವೆಲ್ಲೇ ಇರಲಿ, ರಾಮಣ್ಣನ ಸಭೆ ಎಂದರೆ ಮಂಡ್ಯದ ದಾರಿ ಹಿಡಿಯುತ್ತಿದ್ದೆವು. ರಾಮಣ್ಣನ ನೆನಪೇ ನಮಗೆ ಮಾತಿನ ಸ್ಫೂರ್ತಿ ನೀಡುತ್ತಿತ್ತು.

ರಾಮಣ್ಣ ನಾನು ಬಾಲ್ಯದಲ್ಲಿ ನೋಡಿದ ಮೊದಲ ಕತೆಗಾರ. ಅವರು ಹರದನಹಳ್ಳಿಗೆ ವರ್ಗವಾಗಿ ಬಂದಾಗ ಕಾಣಲು ಹೋಗಿದ್ದೆ. ಆ ದಿನ ಅವರಿರಲಿಲ್ಲ. ಕುಗ್ರಾಮದಂತಹ ಊರಿಗೆ ವೈದ್ಯರಾಗಿ ಬಂದಿದ್ದ ರಾಮಣ್ಣನ ಬಗ್ಗೆ ಅಂದು ನಮಗನಿಸಿದ್ದೇನೆಂದರೆ, ರಾಮಣ್ಣ ತುಂಬ ಪ್ರಭಾವವಿದ್ದ ವ್ಯಕ್ತಿಯೆಂದು. ನಮ್ಮ ಜಿಲ್ಲೆಯ ಬಹುದೊಡ್ಡ ರಾಜಕಾರಣಿಗಳೆಂದು ಗೌರವ ಸಂಪಾದಿಸಿದ್ದ ಶಂಕರೇಗೌಡರ ಕಡೆಯವರಾಗಿದ್ದರಿಂದ, ಅವರ ಪ್ರಭಾವದಿಂದ ಯಾವುದಾದರೂ ಒಳ್ಳೆಯ ಊರಿಗೆ ವರ್ಗಾ ಮಾಡಿಸಿಕೊಳ್ಳಬಹುದಿತ್ತು. ಹಾಗೆ ಮಾಡದೆ ನಾಗಮಂಗಲ, ಹರದನಹಳ್ಳಿ, ಬೆಳ್ಳೂರು ಈ ಭಾಗದಲ್ಲೇ ಅವರು ಸೇವೆ ಸಲ್ಲಿಸಿದ್ದು ನಮಗೆ ಹೆಮ್ಮೆಯ ಸಂಗತಿ. ಬಹುತೇಕ ಗ್ರಾಮಾಂತರ ಪ್ರದೇಶದಲ್ಲೇ ತಮ್ಮ ವೃತ್ತಿ ಮಾಡಿ ಮಕ್ಕಳು ದೊಡ್ಡವರಾದ ನಂತರ ಮಂಡ್ಯಕ್ಕೆ ಹೋದರು.

1969ರಂದು ನಮ್ಮ ಹೈಸ್ಕೂಲಿನಲ್ಲಿ ಕಾಣಿಸಿಕೊಂಡು ಮರೆಯಾದ ರಾಮಣ್ಣನ ಕಥೆ ಓದಬೇಕಾದರೆ, ಎರಡು ವರ್ಷವಾಯ್ತು. ನಾನು ಮೈಸೂರು ಬನುಮಯ್ಯನವರ ಕಾಲೇಜಿನಲ್ಲಿ ಓದುವಾಗ ಅಕಸ್ಮಾತ್ ಒಂದು ಪತ್ರಿಕೆ ಸಿಕ್ಕಿತು. ಅದರಲ್ಲಿ ರಾಮಣ್ಣ ಬರೆದ ಕಥೆ ಪ್ರಕಟವಾಗಿತ್ತು. ’ಜ್ವಾಲೆಯ ನಡುವೆ’ ಎಂಬ ಆ ಕಥೆಯನ್ನು ಎರಡು ಮೂರು ಬಾರಿ ಓದಿದ ಫಲವಾಗಿ ಅದರ ಕೆಲವು ಸಾಲುಗಳು ನನ್ನ ಮನಸ್ಸಿನಲ್ಲಿ ಉಳಿದದ್ದಲ್ಲದೇ, ಕಥೆಯ ರಚನೆಯ ಬಗ್ಗೆ ನನ್ನಲ್ಲಿ ಒಂದು ಬೀಜಾಂಕುರವೂ ಆಗಿತ್ತು. ರೈಲು ಬೋಗಿಯಲ್ಲಿ ವಯೋವೃದ್ಧ ವ್ಯಕ್ತಿ, ಆತನ ವಿಧವೆ ಮಗಳು, ಆಕೆಯ ಮಗು ಕುಳಿತಿದ್ದಾರೆ. ಜೊತೆಗೆ ಅಜ್ಜಿಯೊಂದು ಮುದುಡಿ ಕುಳಿತಿದೆ. ಅಜ್ಜಿಯ ಮಗನೂ ಇದ್ದಾನೆ. ಆತ ನೋಡಲು ಅನಾಗರಿಕನಂತಿದ್ದಾನೆ. ಸೂಟುಬೂಟುದಾರಿಯೊಬ್ಬ ನಿರೂಪಕನ ಜೊತೆಯಿದ್ದಾನೆ. ಎಲ್ಲ ಪ್ರಯಾಣಿಕರ ಬದುಕಿನ ಗೋಳುಗಳು ನಿಧಾನವಾಗಿ ಬಿಚ್ಚಿಕೊಳ್ಳುತ್ತವೆ. ಕೆಲವೇ ಕ್ಷಣಗಳ ಹಿಂದೆ ಗುರುತು ಪರಿಚಯವಿಲ್ಲದಂತಿದ್ದವರು ಈಗ ತಮ್ಮ ಬದುಕಿನ ಬವಣೆ ಹರಡಿಕೊಂಡು ಅಳೆದು ಸುರಿದು ಒಂದಾಗುತ್ತಾರೆ. ಅಲ್ಯಾರ ಕತೆಯೂ ಸುಖಕರವಾಗಿಲ್ಲ. ಇದನ್ನ ಗಾಢವಾಗಿ ಚಿಂತಿಸಿದ ನಿರೂಪಕ ರೈಲ್ವೆ ಕಿಟಕಿಯ ಮೂಲಕ ಕಾಣುತ್ತಿದ್ದ ಬಯಲ ಕಡೆ ನೋಡತೊಡಗುತ್ತಾನೆ. ಈ ಕಥೆ ಓದಿ ಅರ್ಧಶತಮಾನವಾಗುತ್ತ ಬಂದರೂ ಕತೆಯೊಳಗಿನ ಅಜ್ಜಿ ಮಾತನಾಡುತ್ತಿದ್ದವರನ್ನು ಗದರಿಸುವುದು; ಅಜ್ಜಿ ಕೈಲಿ ಬೈಸಿಕೊಂಡ ಅವಳ ಮಗ ಮತ್ತು ವಿಧವೆ ಮತ್ತಾಕೆಯ ಮಗು ಇವರಿನ್ನೂ ನನ್ನ ನೆನಪಲ್ಲಿದ್ದಾರೆ. ಇದು ರಾಮಣ್ಣನ ಕಥಾ ನಿರೂಪಣೆಯ ಶೈಲಿ. ಎಂದೋ ಓದಿದ ಅವರ ಕಥೆಗಳ ಪಾತ್ರವೆಲ್ಲಾ ನೆನಪಲ್ಲಿ ಉಳಿದಿವೆ. ನಂತರ ರಾಮಣ್ಣನ ಕಥೆಗಳನ್ನು ಹುಡುಕಿ ಓದಬೇಕೆನಿಸಿತು. ಮುಗ್ಧ ಬರಹಗಾರರಿಗೆ ಅಂದು ನವ್ಯದವರು ಉಂಟು ಮಾಡಿದ್ದ ಕೀಳರಿಮೆ ಬದಲಿಗೆ ರಾಮಣ್ಣ ನಮ್ಮೆಲ್ಲರಲ್ಲಿ ಆತ್ಮವಿಶ್ವಾಸ ತುಂಬಿದ್ದರು. ನವ್ಯಕ್ಕೆ ಪ್ರತಿಯಾಗಿ ಬಂಡಾಯ ರೂಪುಗೊಂಡಾಗ ಅದರ ರೂವಾರಿಯೇ ರಾಮಣ್ಣನಾಗಿದ್ದರು. ಹಾಗಿದ್ದರೂ ರಾಮಣ್ಣ ಯಾವ ಪಂಥವನ್ನೂ ಟೀಕಿಸದೆ ಭೂಮಿನಿಷ್ಠನಾದ ರೈತ ಉತ್ತು ಬೆಳೆತೆಗೆದಂತೆ ನಮಗೆಲ್ಲಾ ಕಥಾರೊಟ್ಟಿಗಳನ್ನ ಒದಗಿಸಿದರು. ಕಥೆ ಬರೆವ ಹೊಸ ಪೀಳಿಗೆಯವರನ್ನು ಪ್ರೇರೇಪಿಸಿದ್ದರು. ನಮ್ಮ ನೆಲದ ಆಡುಮಾತನ್ನು ನಮ್ಮ ಬರಹಗಳಲ್ಲಿ ಮುಲಾಜಿಲ್ಲದೆ ಬಳಸುವುದನ್ನು ತೋರಿಸಿಕೊಟ್ಟರು.

ರಾಮಣ್ಣ ಒಮ್ಮೆ ನಾಗಮಂಗಲದ ಮುಸಾಫಿರ್‌ಖಾನ್ ಹಿಂಭಾಗದಲ್ಲಿದ್ದ ಆರೋಗ್ಯ ಇಲಾಖೆಯ ಕೊಠಡಿಯೊಳಗೆ ಕೂತಿದ್ದರು. ಅಲ್ಲಿಗೆ ನುಗ್ಗಿದ ನಾನು “ರಾಮಯ್ಯನೋರಿದ್ದಾರ” ಅಂದೆ. “ನಾನು ಡಾ.ಬೆಸಗರಹಳ್ಳಿ ರಾಮಣ್ಣ” ಅಂದರು. “ಕಬ್ಬಾಳು ರಾಮಯ್ಯ ಸಾರ್” ಅಂದೆ. “ಹೊರಗಡೆ ಎಲ್ಲೊ ಇರಬೇಕು ನೋಡಪ್ಪ” ಅಂದವರು ಕೂಡಲೇ, “ಕೆಲಸ ಗಿಲಸ ಕೊಡುಸ್ತಿನಿ ಅಂದಿದ್ನಾ” ಅಂದ್ರು. ರಾಮಣ್ಣ ಹಾಗೆ ಕೇಳಲು ಕಾರಣ ಕಬ್ಬಾಳು ರಾಮಯ್ಯ ಅಂದು ಪ್ರಭಾವಿ ವ್ಯಕ್ತಿಯಾಗಿದ್ದರು. ಸರಕಾರಿ ಜನಗಳ ವರ್ಗಾವಣೆಯಲ್ಲದೆ ನಿರುದ್ಯೋಗಿಗಳಿಗೆ ಕೆಲಸವನ್ನು ಕೊಡಿಸುತ್ತಿದ್ದರು. ಇದನ್ನ ಗ್ರಹಿಸಿದ್ದ ರಾಮಣ್ಣ ನನಗೆ ಆ ಪ್ರಶ್ನೆ ಕೇಳಿದ್ದರು. ನಾನದನ್ನು ನಿರಾಕರಿಸಿ “ನೀವು ಕದಬಳ್ಳಿ ಹೈಸ್ಕೂಲಿಗೆ ಬಂದಿದ್ರಿ ಸಾ. ನಿಮ್ಮದೊಂದು ಕಥೆ ಓದಿದ್ದಿನಿ” ಅಂದೆ. ರಾಮಣ್ಣನಿಗೆ ಈ ಬೆಂಗಾಡಲ್ಲಿ ತನ್ನ ಕಥೆ ಓದಿರೊ ಹುಡುಗ ಸಿಕ್ಕಿದ್ದರಿಂದ ಕುತೂಹಲ ಆಯ್ತು. ಆನಂತರ ತನ್ನ ಇಲಾಖೇಲಿ ಸಮಸ್ಯೆಯಾಗಿರೊ ರಾಮಯ್ಯನ ಬಗ್ಗೆ ವಸಿಹು॒ಷಾರಾಗಿರುವಂತೆ ಹೇಳಿಕಳುಹಿಸಿದರು. ರಾಮಣ್ಣನ ಮಾತನ್ನು ನಾನು ಗಂಭೀರವಾಗಿ ಪರಿಗಣಿಸಿದ್ದರೆ ಕೂಲಿನಾಲಿ ಮಾಡುತ್ತ ಶಿವರಾಮೇಗೌಡನ ಹಿಂಬಾಲಕನಾಗಿ ಊರಿಗೆ ಸಮಸ್ಯೆಯಾಗಿ ಬದುಕಬಹುದಿತ್ತು. ಆ ವಾರವೇ ರಾಮಯ್ಯ ಕಬ್ಬನ್ ಪಾರ್ಕ್‌ನಲ್ಲಿರುವ ಗ್ರಂಥಾಲಯಕ್ಕೆ ಕರೆದುಕೊಂಡು ಹೋಗಿ ಸೇರಿಸಿ ರಾಮಣ್ಣನಂತಹ ಹಲವಾರು ಜನ ಕಥೆಗಾರರನ್ನ ಓದುವಂತೆ ಮಾಡಿದರು.

ರಾಮಣ್ಣ ಕಥೆ ಬಿಟ್ಟು ಏನನ್ನು ಬರೆಯಲು ಹೋಗಲಿಲ್ಲ. ಏನನ್ನಾದರು ಹೇಳಲು ಅವರು ಕಥಾ ಮಾರ್ಗವನ್ನೇ ಆರಿಸಿಕೊಳ್ಳುತ್ತಿದ್ದರು. ಅವರ ’ಸುಗ್ಗಿ’ ಕತೆ ಪ್ರಜಾವಾಣಿ ಕಥಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಲಂಕೇಶರ ಕತೆ ಎರಡನೇ ಸ್ಥಾನಕ್ಕೆ ಸರಿದಾಗ ರಾಮಣ್ಣ ದಿಗ್ವಿಜಯ ಸಾಧಿಸಿದಂತೆ ಠೇಂಕಾರ ಮಾಡಿದ್ದರು. ಅಲ್ಲಿಂದ ಮುಂದೆ ಅವರ ಕಥೆಗಳು ನಿರಂತರವಾಗಿ ಬಡವರ ಹೊಟ್ಟೆಯಲ್ಲಿ ಮಕ್ಕಳುಟ್ಟಿದಂತೆ ಹುಟ್ಟುತ್ತ ಬೆಳೆಯುತ್ತ ಹೆಸರುವಾಸಿಯಾದವು. ಅವೆಲ್ಲ ನಮಗೆ ಇಷ್ಟವಾದವು.

ಲಂಕೇಶ್‌ಗೆ ಅರವತ್ತು ವರ್ಷ ತುಂಬಿದ್ದಕ್ಕೆ ಮೈಸೂರಿನಲ್ಲಿ ಕೆ. ರಾಮದಾಸರು ಲಂಕೇಶರ ಸಾಹಿತ್ಯ ಗೋಷ್ಠಿ ಏರ್ಪಡಿಸಿದ್ದರು. ಲಂಕೇಶ ಸಾಹಿತ್ಯ ಚರ್ಚೆಯೊಳಕ್ಕೆ ಸಮಕಾಲೀನರಾದ ತೇಜಸ್ವಿ ಅನಂತಮೂರ್ತಿ ಸೇರಿದಂತೆ ಈ ಮೂರು ಜನ ಮಹತ್ವದ ಲೇಖಕರ ಸಾಹಿತ್ಯ ಕುರಿತ ಚರ್ಚೆ ಒಂದು ಐತಿಹಾಸಿಕ ಘಟನೆಯಾಗಿತ್ತು. ಆ ಸಮಯದಲ್ಲಿ. ಕೆಲವರ ಭಾಗಕ್ಕೆ ದುಷ್ಟ ಚತುಷ್ಟರಂತಿದ್ದ ಚಂಪಾರನ್ನು ಕೂಡ ಲಂಕೇಶ್ ತೇಜಸ್ವಿಗೆ ಅನಂತಮೂರ್ತಿ ಜೊತೆಗೆ ಸೇರಿಸಬೇಕಾಗಿತ್ತು ಎಂಬುದು ಹಲವರ ತರ್ಕವಾಗಿತ್ತು. ಆದರೆ ಎಲ್ಲೂ ನಿಲ್ಲದ ಅಶಾಂತ ಮನಸ್ಸಿನ ಚಂಪಾ ಎಲ್ಲರಿಂದ ದೂರವಾಗಿ ಲಂಕೇಶರ ಕಡುವೈರಿಯಾಗಿದ್ದರು. ಆದ್ದರಿಂದ ಅವರನ್ನು ಈ ಮೂವರೊಟ್ಟಿಗೆ ಸೇರಿಸಲಾಗದೆ, ಲಂಕೇಶರ ಅರವತ್ತನೇ ವರ್ಷದ ಸಾಹಿತ್ಯಗೋಷ್ಠಿ ಮೈಸೂರಿನಲ್ಲಿ ಜರುಗಿತ್ತು. ಅಲ್ಲಿಗೆ ಬಂದ ರಾಮಣ್ಣ ಸಾಹಿತ್ಯದ ವಿದ್ಯಾರ್ಥಿಯಂತೆ ಭಾಗವಹಿಸಿದರು. ಎಲ್ಲಾ ಗೋಷ್ಠಿಗಳಲ್ಲಿ ಕುಳಿತುಕೊಂಡು ಕೂತುಹಲದಿಂದ ಕೇಳಿಸಿಕೊಂಡಿದ್ದನ್ನು ನೋಡಿದೆ. ಅಷ್ಟು ಹೊತ್ತಿಗಾಗಲೇ ನನ್ನ ಕಟ್ಟೆ ಪುರಾಣ ಕಾಲಂ ಶುರುವಾಗಿತ್ತು. ನನ್ನನ್ನ ನೋಡಿದ ಕೂಡಲೇ ಕಣ್ಣಲ್ಲೇ ಮೆಚ್ಚುಗೆ ಸೂಚಿಸಿ, ದೂರ ನಿಂತವನನ್ನು ’ಇದ್ಯಾಕ್ ಬಾ’ ಅಂತ ಹತ್ತಿರ ಕೂರಿಸಿಕೊಂಡು ಭುಜದ ಮೇಲೆ ಕೈಹಾಕಿ, ಅಕ್ಕಪಕ್ಕದವರಿಗೆ ಪರಿಚಯ ಮಾಡಿಕೊಟ್ಟರು. ಆನಂತರ ದುರುಗುಟ್ಟಿ ನೋಡಿ “ಸುಮ್ಮನೆ ಯಳಿ ನೀನು. ಏನು ಸಿಕ್ಕಿದ್ರ ಬುಡಬ್ಯಾಡ. ತಗದು ಮುಟ್ಟುಸ್ತಾಯಿರು.. ವಳ್ಳೆ ಅವುಕಾಸ ಇದು” ಅಂದ್ರು. ರಾಮಣ್ಣನ ಈ ಮಾತನ್ನ ನೆನೆಸಿಕೊಂಡಾಗಲೆಲ್ಲ ನನ್ನ ಮನಸ್ಸು ಆರ್ದ್ರ-ಗೊಳುತ್ತದೆ. ರಾಮಣ್ಣನ ಇಂತಹ ಮೆಚ್ಚುಗೆಯ ಮಾತು ಆ ಕಾಲಂಅನ್ನು ಇಪ್ಪತ್ತು ವರ್ಷ ಎಳೆಯುವಂತೆ ಮಾಡಿತು.

ಕುವೆಂಪುರವರಿಗೆ ತೊಂಬತ್ತು ವರ್ಷ ತುಂಬಿದಾಗ ಕವಿಶೈಲದಲ್ಲಿ ಕುವೆಂಪು ಸಾಹಿತ್ಯ ಸಮಾರಂಭಗಳು ನಡೆದವು. ನಾಡಿನ ಕುವೆಂಪು ಅಭಿಮಾನಿಗಳೆಲ್ಲಾ ಬಂದಿದ್ದರು. ಅಲ್ಲಿಗೆ ರಾಮಣ್ಣ ಬರದೇ ಇರಲು ಸಾಧ್ಯವೇ! ಅದೊಂದು ಐತಿಹಾಸಿಕ ಸಮಾರಂಭ. ಜಿ.ಎಸ್. ಶಿವರುದ್ರಪ್ಪನವರಿಂದ ಹಿಡಿದು ಮೂರನೇ ತಲೆಮಾರಿನ ಕಾಳೆಗೌಡ ನಾಗವಾರರ ಮಗ ನಿಶಾಂತ್‌ವರೆಗೆ ಎಲ್ಲಾ ಸೇರಿದ್ದರು. ಹಿಂದಿನ ದಿನ ವರಾಹ ಮಾಂಸ ನೊರೆಗಳ್ಳನ್ನು ಕಂಠಪೂರ್ತಿ ಸೇವಿಸಿದ್ದ ನಮಗೆ ಮರುದಿನವೂ ತೆಳುವಾದ ಮಂಪರಿತ್ತು.

ಕವಿಶೈಲದ ಮನೆ ಎದುರಿಗೆ ತೋಟದಲ್ಲಿ ಕಾಳೇಗೌಡ ನಾಗವಾರರ ಅಧ್ಯಕ್ಷತೆಯಲ್ಲಿ ಸೇರಿದ ನಾವೆಲ್ಲಾ ನಮಗೆ ಗೊತ್ತಿರುವ ಹಾಸ್ಯ ಪ್ರಸಂಗಗಳನ್ನ ಹೇಳತೊಡಗಿದೆವು. ಆದರೆ ರಾಮಣ್ಣನ ಮುಂದೆ ನಾವು ಏನೇನು ಅಲ್ಲ ಅನ್ನಿಸಿತು. ನನಗ ಆಗ ಅನ್ನಿಸಿದ್ದೆಂದರೆ, ರಾಮಣ್ಣನ ಇಷ್ಟೊಂದು ಪ್ರಖರವಾದ ಹಾಸ್ಯ ಭಾಷೆ ಅವರ ಬರವಣಿಗೆಯಲ್ಲೇಕೆ ನುಗ್ಗಿಬರಲಿಲ್ಲವೆಂದು. ರಾಮಣ್ಣ ಮೈಮರೆತಂತೆ ಮಾತನಾಡುತ್ತಿದ್ದರು. ಆಗ ಅವರು ಹೇಳಿದ್ದು, “ಅವನು ಸಣ್ಣ ಹುಡುಗನಂತೆ ಮಾವಿನಕಾಯಿಗೆ ಕಲ್ಲು ಬೀರಿ ಕೆಡವಿದ್ದಾನೆ. ಸಾಬಿಯೊಬ್ಬ ಓಡಿಬಂದು ಇನ್ನೇನು ಹೊಡೆಯಬೇಕು, ಅಷ್ಟರಲ್ಲಿ ಇನ್ನೊಬ್ಬ ಸಾಬಿ ’ಛೋಡ್ರೆ ಹರೆ ಛೋಡ್ರೆ. ವೂ ಯಲ್ಲೇಗೌಡರ ಬೇಟ ಎಂದು ಅಬ್ಬರಿಸಿದನಂತೆ. ಹೊಡೆಯಲು ಬಂದ ಸಾಬಿ ಗರಹೊಡೆದಂತೆ ನಿಂತನಂತೆ. ಹತ್ತಿರ ಬಂದ ಸಾಬಿ ಯಲ್ಲೇಗೌಡನ ಹುಡುಗನಿಗೆ ಹೊಡೆದ್ರೆ ನಮ್ದು ಮಾವಿನಕಾಯಿ ಮರದಲ್ಲಿ ಒಂದು ಉಳಿಯದಿಲ್ಲ ಗೊತ್ತೆ’ ಎಂದು ಹೇಳಿ ರಾಮಣ್ಣನಿಗೆ, ’ಕೇಳಿದ್ರೆ ಕೊಡದಿಲ್ಲಾ, ಹಾಂ ಇಲ್ಲ ಅಂತಿವ, ಹಾಂ ಕಲ್ಲಲ್ಲಿ ವಡದ್ರೆ ಎಷ್ಟು ಬೀಳ್ತವೆ ಗೊತ್ತ. ಅಂಗೆ ಮಾಡಬಾರ್ದು, ಈಸ್ಕಬೇಕು, ಈಗ ಕಿತ್ತಿರದು ತಿನ್ಕಂಡಿ ಹೋಗು’ ಅಂದನಂತೆ”. ಇಂತಹ ಹಲವು ಪ್ರಸಂಗ ಹೇಳಿದ ರಾಮಣ್ಣನನ್ನ ಕಡೆ ಬಾರಿ ನೋಡಿದ್ದು ಕವಿಶೈಲದಲ್ಲಿ. ಕವಿ ಸಮಾಧಿ ಸನ್ನಿದಿಯಲ್ಲಿ. ಅದರೇನು ರಾಮಣ್ಣ ಹೊಡೆದ ಪಟ್ಟಾಂಗ ಮೊನ್ನೆಮೊನ್ನೆ ನಡೆದಂತಿದೆ.

ರಾಮಣ್ಣನ ಪ್ರತಿಷ್ಠಾನ ಮಾಡುವ ಕಾರ್ಯಕ್ರಮದಿಂದ ನಮಗಿವೆಲ್ಲಾ ನೆನಪಾಗುತ್ತವೆ. ಈ ಪೈಕಿ 2018ರ ಜೂನ್‌ನಲ್ಲಿ ನಡೆದ ಕಾರ್ಯಕ್ರಮ ವಿಶೇಷವಾಗಿತ್ತು. ಆ ದಿನ ಲಂಕೇಶ್ ಪತ್ರಿಕೆಯಲ್ಲಿದ್ದ ಗೆಳೆಯರೆಲ್ಲಾ ಸೇರಿ ಖುಷಿಯಿಂದ ಹೊರಟೆವು. ನಾನು ಮರುದಿನ ಹೊರಡಬೇಕಾದರೆ, ಸಿಟಿ ಕ್ಲಬ್ಬಿನಲ್ಲಿ ಉಳಿದಿದ್ದ ಕಮಲಾಕ್ಷಣ್ಣ ಊರಿಗೊಯ್ತಿನಿ ಬತ್ತಿಯಾ ಅಂದರು. ಶಿವಮೊಗ್ಗದ ಕತೆ ಹೊರಟಿದ್ದ ನಾನು, ಊರಿಗೆ ಹೋಗಿ ಅಲ್ಲಿಂದ ಶಿವಮೊಗ್ಗ ತಲುಪುವ ಆಲೋಚನೆ ಮಾಡಿ, ಕಮಲಾಕ್ಷಣ್ಣನ ಕಾರು ಹತ್ತಿದೆ. ಡಾ. ಎಚ್ ಟಿ ಕಮಲಾಕ್ಷ ರಾಮಣ್ಣ ಮೈಸೂರಿನಲ್ಲಿ ಎಂಬಿಬಿಎಸ್ ಓದುವಾಗ ರೂಂಮೇಟು ಮತ್ತು ಆತ್ಮೀಯ ಗೆಳೆಯ. ಕಡೆವರೆಗೂ ರಾಮಣ್ಣನ ಜೊತೆಯಿದ್ದವರು. ರಾಮಣ್ಣ ವೈದ್ಯರಾಗಿ ಗ್ರಾಮಾಂತರ ಪ್ರದೇಶಕ್ಕೆ ಬಂದರೆ, ಕಮಲಾಕ್ಷ ಬೆಂಗಳೂರಿನ ಕಾರ್ಪೋರೇಷನ್‌ನಲ್ಲಿ ಅರೋಗ್ಯಾಧಿಕಾರಿಯಾಗಿದ್ದರು.

ಮಾಜಿ ಮಂತ್ರಿ ಎಚ್ ಟಿ ಕೃಷ್ಣಪ್ಪನವರ ಸಹೋದರ ಕಮಲಾಕ್ಷಣ್ಣ ಐದು ದಶಕಗಳ ರಾಜಕಾರಣವನ್ನು ಹತ್ತಿರದಿಂದ ಬಲ್ಲವರು. ಆ ಕಾಲದ ರಾಮಣ್ಣನ ಒಡನಾಟ ಹೇಳುತ್ತಾ ಹೋದಂತೆ ನಮ್ಮ ಊರು ತಲುಪಿದ್ದೇ ತಿಳಿಯಲಿಲ್ಲ. ಕಮಲಾಕ್ಷಣ್ಣ ಹೇಳಿದ್ದನ್ನು ದಾಖಲಿಸಿಕೊಳ್ಳಬೇಕೆನಿಸಿತು. ಆದ್ದರಿಂದ ಅವನು ಹೇಳಿದ್ದನ್ನು ಬರೆದುಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದೆ. ಈಗಾಗಲೇ ಪ್ರಕಟವಾಗಿರುವ ’ಕಾಡುಗಿಣಿ’ ಎಂಬ ರಾಮಣ್ಣನ ನೆನಪಿನ ಸಂಪುಟದಲ್ಲಿ ರಾಮಣ್ಣನ ಮಾತು ಅಷ್ಟಾಗಿ ದಾಖಲಾಗಿಲ್ಲ. ನಮ್ಮ ನಡುವಿನ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆಯವರು ಹೇಳಿದಂತೆ, ನಮ್ಮ ಹಿರಿಯರು ನಡೆದಾಡಿದ ನೆಲ ಇದೆ; ಅವರು ಉಸಿರಾಡಿದ ಗಾಳಿಯು ಇದೆ; ಹಾಗೆಯೇ ಅವರಾಡಿದ ಮಾತುಗಳೂ ಇವೆ. ಇನ್ನ ಅವರ ಮನಸ್ಸಂತೂ ಅವರ ಬರವಣಿಗೆಯಲ್ಲಿ ದಾಖಲಾಗಿದೆ. ಇಲ್ಲಿ ರಾಮಣ್ಣನ ಮಾತನ್ನ ಕೇಳಿಸಿಕೊಂಡವರಿಂದ ಕೇಳಿಸಿಕೊಂಡು ದಾಖಲು ಮಾಡುವ ಸಾಹಸ ಮಾಡಿದ್ದೇನೆ.

ಬಿ. ಚಂದ್ರೇಗೌಡ

ನಿರೂಪಣೆ: ಬಿ ಚಂದ್ರೇಗೌಡ


ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...