Homeಅಂಕಣಗಳುಸ್ತ್ರೀಮತಿ- 2: ಲಾಕ್ - ಅನ್ ಲಾಕ್ ಗಳ ನಡುವೆ ಕಳೆದುಹೋದ ಕೀಲಿ

ಸ್ತ್ರೀಮತಿ- 2: ಲಾಕ್ – ಅನ್ ಲಾಕ್ ಗಳ ನಡುವೆ ಕಳೆದುಹೋದ ಕೀಲಿ

- Advertisement -
- Advertisement -

ನನಗೆ ಸಣ್ಣವಯಸ್ಸಿನಿಂದಲೂ ಏನಾದರೂ ಪೆಟ್ಟಾದಾಗ, ನೋವಾದಾಗ ಅಮ್ಮ ಹೇಳುತ್ತಿದ್ದರು, (ಬಹುಶಃ ಅವರಿಗೆ ಅವರಮ್ಮ ಹೇಳುತ್ತಿದ್ದಿರಬಹುದು)  ಮುಂದೆ ನೀನು ಹೆರಿಗೆಯಂತಹ ನೋವನ್ನೇ ಸಹಿಸಿಕೊಳ್ಳಬೇಕಾಗುತ್ತದೆ ಈಗ ಇಷ್ಟು ಸಣ್ಣ ನೋವಿಗೆ ಅಳುತ್ತಾ ಕೂತರೆ ಹೇಗೆ ಎಂದು, ನಂತರ ಹೆರಿಗೆಯಾದ ಮೇಲೆ ಏನಾದರೂ ನೋವಾದಾಗ ಅಂತಹ ದೊಡ್ಡ ನೋವನ್ನೇ ತಿಂದ ಮೇಲೆ ಇಷ್ಟು ಸಣ್ಣಪುಟ್ಟದಕ್ಕೆಲ್ಲಾ ಅಧೀರಳಾಗುವುದೇ ಎನ್ನುತ್ತಿದ್ದರು.  ಹೆಣ್ಣಿನ ಈ ‘ಸಹಿಸಿಕೊಳ್ಳುವ ಪರಂಪರೆ’ಗೆ ಬಹಳಷ್ಟು ಉಲ್ಲೇಖಗಳನ್ನು ನೀಡಬಹುದು.

ಇತ್ತೀಚಿಗೆ ಬಿಡುಗಡೆಯಾದ ‘ಬುಲ್‍ಬುಲ್‍’ ಎಂಬ ಹಿಂದಿ ಸಿನಿಮಾದಲ್ಲಿ  ಸಹಿಸಿಕೊಳ್ಳುವುದನ್ನು ಕಲಿಸುವ ಒಂದು ದೃಶ್ಯವಿದೆ. ಆ ಮನೆಗೆ ಸೊಸೆಯಾಗಿ ಮೊದಲು ಬಂದವಳು ತನ್ನ ನಂತರ ಬಂದವಳಿಗೆ ಹೇಳುವ ಮಾತುಗಳಿವು. ತಾನು ಮದುವೆಯಾಗಿ ಬಂದಾಗ ತನಗೆ ಹೇಳಲಾದ ಮಾತುಗಳನ್ನೇ ಈಗ ಬಂದವಳಿಗೆ ಹೇಳುತ್ತಿರುತ್ತಾಳೆ. –“ಇಷ್ಟು ದೊಡ್ಡಮನೆತನದ ಸೊಸೆಯಾಗಿ ಬಂದಿದ್ದೀಯ, ಹೀಗೆಲ್ಲ ಅಳುತ್ತಾರೆಯೇ. ಅವನು ಸ್ವಲ್ಪ ಹುಚ್ಚ ಆದರೆ ಮದುವೆಯಾದ ಮೇಲೆ ಸರಿಹೋಗುತ್ತಾನೆ, ಎಷ್ಟೇ ಆದರೂ ನಿನ್ನ ಗಂಡನಲ್ಲವೇ, ಹೊರಗೆಲ್ಲೂ ಈ ವಿಚಾರಗಳನ್ನು ಮಾತನಾಡಬೇಡ ಸುಮ್ಮನಿರು; ಅವನು ಸ್ವಲ್ಪ ಹುಚ್ಚುಹುಚ್ಚಾಗಿ ಆಡುತ್ತಾನೆ ನಿಜ, ಆದರೆ ನಿನಗೆ ಎಷ್ಟೆಲ್ಲಾ ಒಡವೆ, ವಸ್ತ್ರ, ಆಸ್ತಿ ಸಿಗುತ್ತಿದೆ, ಹೀಗಾಗಿ ಸ್ವಲ್ಪ ಸಹಿಸಿಕೋ; ಅವನು ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸದಿದ್ದರೂ ಅವನ ಸೋದರ ನೋಡಿಕೊಳ್ಳುತ್ತಾನೆ. ದೊಡ್ಡಮನೆಗಳಲ್ಲಿ ದೊಡ್ಡದೊಡ್ಡ ಗುಟ್ಟುಗಳಿರುತ್ತವೆ ಮೌನವಾಗಿದ್ದುಬಿಡು.” ಭಾಮೈದ ತನ್ನ ನಾದಿನಿಯ ಮೇಲೆ ಅತ್ಯಾಚಾರ ಮಾಡಿದ ಸಂದರ್ಭದಲ್ಲಿ ಅವನ ಹೆಂಡತಿ  ಅತ್ಯಾಚಾರಕ್ಕೊಳಗಾದವಳಿಗೆ ಹೇಳುವ ಮಾತುಗಳಿವು.

ಸಹಿಸಿಕೊಳ್ಳುವುದೇ ತನ್ನ ಹೆಚ್ಚುಗಾರಿಕೆ ಎಂಬ ಭಾವನೆ ಹೆಣ್ಣಿನಲ್ಲಿಯೂ ಇರುವಾಗ (ಮಾತೃದೇವತೆ, ಗೃಹಲಕ್ಷ್ಮಿ , ಸೌಭಾಗ್ಯದೇವತೆ-ಮುಂತಾಗಿ ಆರೋಪಿಸಲಾದ ವೈಭವೀಕೃತ ಪದವಿಗಳನ್ನು –ಹೆಣ್ಣಿನ ಮನಸ್ಸಿನಲ್ಲಿ ಕೂಡಾ ಭಂಜಿಸುವುದು ಅಷ್ಟು ಸುಲಭವೇನಲ್ಲ)  ಅವಳು ಹಿಂಸೆಯನ್ನಾಗಲಿ, ಕ್ರೌರ್ಯವನ್ನಾಗಲಿ ಒಂದು ಅಪರಾಧವನ್ನಾಗಿ ಪರಿಗಣಿಸುವುದಿಲ್ಲ, ಅವಳಿಗೆ ಅದನ್ನು ವಿರೋಧಿಸಬೇಕು ಎನಿಸುವುದಿಲ್ಲ ಅಥವಾ ದೂರು ನೀಡಬೇಕು ಎಂಬ ಭಾವ ಮೂಡುವುದಿಲ್ಲ. ಹೊಡೆಯುವುದು ಪತಿಧರ್ಮ ಸಹಿಸಿಕೊಳ್ಳುವುದು ಸತಿಧರ್ಮ ಎಂಬಷ್ಟು ಸಹಜ ವಿದ್ಯಮಾನವಾಗಿಬಿಟ್ಟಿದೆ. ಹೆಣ್ಣಿನ ದೇಹರಚೆನೆಯೇ ಕಾರಣವಾಗಿ ಪ್ರಕೃತಿ ಹೆಣ್ಣಿಗೆ ಸಹಿಷ್ಣುತೆಯನ್ನು ಕೊಟ್ಟಿರುವುದು ತನ್ನ ಗರ್ಭದಲ್ಲಿ ಮತ್ತೊಂದು ಜೀವವನ್ನು ಹೊರಲು, ಆದರೆ ಬೇರೆ ಜೀವಿಗಳು ಕೊಡುವ ಕ್ರೌರ್ಯವನ್ನು ಸಹಿಸಲು ಅಲ್ಲ, ಪೊರೆಯುವ ಗುಣ ಇರುವುದು ಈ ಸೃಷ್ಟಿಕ್ರಿಯೆಯ ಭಾಗವಾಗಿಯೇ ಹೊರತು ಬೇಜವಾಬ್ದಾರಿ, ಸೋಮಾರಿ ಗಂಡಂದಿರನ್ನು ಮಕ್ಕಳನ್ನು ಸಾಕಲೆಂದಲ್ಲ. ಈ ಸಹಿಸಿಕೊಳ್ಳುವ ಪರಂಪರೆಯ ವಾರಸುದಾರಿಕೆಯ ಹೊರೆ ಇನ್ನೆಷ್ಟು ಕಾಲ?

ಕೋವಿಡ್‍-19 ಅನ್ನು ನಿಯಂತ್ರಿಸಲಾಗದ ಸಂದರ್ಭದಲ್ಲಿ ಅದರಿಂದಾಗಿ ಎದುರಿಸುತ್ತಿರುವ ಇತರ ಸಮಸ್ಯೆಗಳನ್ನು ಹಿನ್ನೆಲೆಗೆ ಸರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇಂತಹ ಸನ್ನಿವೇಶದಲ್ಲಿ ಅವನ್ನು ಗಂಭೀರವಾಗಿ ಪರಿಗಣಿಸಿರುವ ವಿಶ್ವಸಂಸ್ಥೆಯು ಲಿಂಗಾಧಾರಿತ ಹಿಂಸೆಯನ್ನು `ಶ್ಯಾಡೋ ಪ್ಯಾಂಡೆಮಿಕ್’ (Shadow Pandemic) ಎಂದು ಗುರುತಿಸಿದೆ. ಲೈಂಗಿಕ ಹಿಂಸೆಯನ್ನು ದೌರ್ಜನ್ಯವನ್ನು ನಿಗ್ರಹಿಸುವುದು ಕೋವಿಡ್‍-19ನ ಕ್ರಿಯಾ ಯೋಜನೆಯ ಭಾಗವಾಗಿರಬೇಕು ಎಂದು ವಿಶ್ವಸಂಸ್ಥೆ ತನ್ನ ಸದಸ್ಯ ರಾಷ್ಟ್ರಗಳಿಗೆ ಹೇಳಿದೆ.

ಲಾಕ್‌ಡೌನಿನ ಪರಿಣಾಮಗಳನ್ನು ಹೆಣ್ಣು, ಗಂಡುಗಳಿಬ್ಬರೂ ಎದುರಿಸುತ್ತಿದ್ದರೂ, ಅವುಗಳ ಸ್ವರೂಪ ಮತ್ತು ತೀವ್ರತೆಯಲ್ಲಿ ಅಂತರವಿದೆ. ಲಾಕ್‍ಡೌನ್‍ ಸಮಯದಲ್ಲಿ ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸಾಚಾರ ಹೆಚ್ಚಾಗಿದೆ, ಉದ್ಯೋಗಸ್ಥ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಭಿನ್ನ ಸ್ವರೂಪ ಪಡೆದುಕೊಂಡಿದೆ, ಗೃಹಿಣಿಯರು ಅನುಭವಿಸುತ್ತಿರುವ ಹಿಂಸೆಗಳನ್ನು ಹೇಳಿಕೊಳ್ಳಲಾರದೆ ಮಾನಸಿಕ ಅಸ್ವಸ್ಥತೆ ಹೆಚ್ಚಾಗಿದೆ.

‘ಸ್ಟೇ ಹೋಂ ಸ್ಟೇ ಸೇಫ್- ಮನೆಯಲ್ಲಿಯೇ ಇರಿ ಸುರಕ್ಷಿತವಾಗಿರಿ’ ಎಂಬ ಘೋಷವಾಕ್ಯ ಮಹಿಳೆಯರ ಪಾಲಿಗೆ ಅಕ್ಷರಶಃ ಹುಸಿಯಾಗಿದೆ. ಯುನೆಸ್ಕೋ,ಯುನಿಸೆಫ್ ಮತ್ತು ವಿಶ್ವಸಂಸ್ಥೆಯ ಸಹಕಾರದೊಂದಿಗೆ ನಂದಿತಾ ದಾಸ್ ಅವರ ರಚನೆ ಮತ್ತು ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕಿರುಚಿತ್ರ ‘ಲಿಸನ್‍ ಟು ಹರ್’ ಏಕಕಾಲಕ್ಕೆ ಮೇಲ್ವರ್ಗದ ಸುಶಿಕ್ಷಿತ ಉದ್ಯೋಗಸ್ಥ ಮಹಿಳೆ ಮತ್ತು ಕೆಳವರ್ಗದ ಅಸಹಾಯಕ ಮಹಿಳೆ ಮನೆಯೊಳಗೇ ಅನುಭವಿಸುವಂತಹ ತಣ್ಣನೆಯ ಕ್ರೌರ್ಯವನ್ನು ಸೂಕ್ಷ್ಮವಾಗಿ ಬಿಚ್ಚಿಡುತ್ತದೆ.

ವರ್ಕ್‍ ಫ್ರಮ್‍ ಹೋಮ್‍ ಮಾಡುತ್ತಿರುವ ಮಹಿಳೆಯರಿಗೆ ಆನ್ಲೈನ್‍ ಮೀಟಿಂಗ್‍, ಚಾಟಿಂಗ್‍ಗಳಲ್ಲಿಯೇ ಶುರುವಾದ ಕಿರುಕುಳಗಳು, ಉದ್ಯೋಗಸ್ಥ ಮಹಿಳೆಯರು ಎದುರಿಸುವ ಲೈಂಗಿಕ ದೌರ್ಜನ್ಯಕ್ಕೆ ಹೊಸ ವ್ಯಾಖ್ಯಾನವನ್ನೇ ದಯಪಾಲಿಸಿವೆ.

ಹರಿಯಾಣದ ಪಂಚ್‍ಕುಲಾ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಕೋವಿಡ್‍-19 ಐಸೋಲೇಶನ್ ವಾರ್ಡಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಮೇಲೆ ಅಲ್ಲಿನ ವೈದ್ಯ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ರೆಸ್ಟ್ ರೂಮಿನಲ್ಲಿ ತಾನು ವಿಶ್ರಮಿಸುತ್ತಿದ್ದಾಗ ವೈದ್ಯ ಈ ಕೃತ್ಯ ಎಸಗಿರುವುದಾಗಿ ನರ್ಸ್ ದೂರು ನೀಡಿದ್ದಾಳೆ.

ಕರ್ಣಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಂದೆಯಂದಿರೇ ತಮ್ಮ ಮಕ್ಕಳ ಮೇಲೆಯೇ ಅತ್ಯಾಚಾರ ಮಾಡಿರುವ ವರದಿಗಳು ಬಂದಿವೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಉಪಮೆಯನ್ನಿಲ್ಲಿ ಬಳಸುವುದಿಲ್ಲ. ಬೇಲಿ-ಹೊಲ, ರಕ್ಷಣೆ-ರಕ್ಷಕ ಮುಂತಾದವುಗಳಿಗಿಂತ ಮನುಷ್ಯನ ಸಂವೇದನೆ, ಯುಕ್ತಾಯುಕ್ತ ವಿವೇಚನೆಗಳ ಚಿಂತನೆ  ಅವಳೂ ತನ್ನಂತೆಯೇ ಮನುಷ್ಯಜೀವಿ ಎಂದು ಭಾವಿಸಲು ಏಕೆ ಸಾಧ್ಯವಾಗುವುದಿಲ್ಲ.

ಹೊಡೆದುಬಡಿದು ಮಾಡಿದರೆ ಮಾತ್ರ ಅದು ಹಿಂಸೆ, ಕ್ರೌರ್ಯ ಎನಿಸಿಕೊಳ್ಳುವುದಿಲ್ಲ. ಮಾನಸಿಕ ಕಿರಿಕಿರಿಯುಂಟು ಮಾಡುವುದು, ಅವಳ ವ್ಯಕ್ತಿತ್ವಕ್ಕೆ ಘನತೆಗೆ ಕುಂದು ಉಂಟುಮಾಡುವಂತಹ ಎಲ್ಲ ಕೃತ್ಯಗಳೂ ದೌರ್ಜನ್ಯವೇ. ಮಾಧ್ಯಮಗಳಲ್ಲಿ ಸುದ್ದಿಯಾಗದಂತಹ ವಿದ್ಯಮಾನಗಳೆಲ್ಲಾ ಗಂಭೀರವಲ್ಲ ಎಂದು ಪರಿಗಣಿಸಲಾಗುವುದಿಲ್ಲ. ಭೀಕರವಾದ ಪ್ರಕರಣಗಳು ಪ್ರತಿನಿತ್ಯ ಮನೆಯೊಳಗೆ ನಡೆಯುತ್ತಿದ್ದರೂ ಅವು ಎಲ್ಲೂ ದಾಖಲಾಗುವುದಿಲ್ಲ. ಮಾನಸಿಕ ಆರೋಗ್ಯ ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಾಗಿದೆ. ಆದರೆ ಎಷ್ಟರಮಟ್ಟಿಗೆ ಸಹಾಯವಾಣಿ ನಂಬರ್‌ಗಳು, ಎನ್‌ಜಿಓಗಳು, ಗೆಳೆಯರು ಪೂರ್ಣಪ್ರಮಾಣದ ಮನೋಚಿಕಿತ್ಸೆ ಕೊಡುವುದಕ್ಕೆ ಸಾಧ್ಯ. ಅದಕ್ಕಿಂತ ಹೆಚ್ಚಾಗಿ ಖಿನ್ನತೆಗೆ ಒಳಗಾದವರು ಇತರರೊಂದಿಗಿನ ಸಂವಾದವನ್ನು ಬಹಳ ಹಿಂದೆಯೇ ನಿಲ್ಲಿಸಬಿಟ್ಟಿರುತ್ತಾರೆ, ಅಂತಹವರನ್ನು ಮಾತಿಗೆಳೆಯುವುದು ಅಷ್ಟು ಸುಲಭವಲ್ಲ.

ಕೋವಿಡ್‌ಗೆ ಔಷಧ ಕಂಡುಹಿಡಿಯುವವರೆಗೆ ಮತ್ತೆ ಮತ್ತೆ ಬೇರೆ ಬೇರೆ ಸ್ವರೂಪದಲ್ಲಿ ಲಾಕ್‌ಡೌನ್ ಬರುವುದಿದೆ (ಸೆಲ್ಫ್ ಲಾಕ್‌ಡೌನ್, ಹೋಂ ಕ್ವಾರೈನ್‌ಟೇನ್, ಹೋಂ ಐಸೋಲೇಶನ್). ಲಾಕ್‌ಡೌನಿನ ಕರಾಳತೆ ಮಾಧ್ಯಮದವರು ಬಿಂಬಿಸುತ್ತಿರುವುದಕ್ಕಿಂತ ಭೀಕರವಾಗಿದೆ. ಒಂದೊಂದು ವರ್ಗದ ಮಹಿಳೆಯರು ವಿಭಿನ್ನವಾದ ಸವಾಲುಗಳನ್ನೆದುರಿಸುತ್ತಿದ್ದಾರೆ. ಕೊರೋನಾದ ದುಷ್ಪರಿಣಾಮ ಎಲ್ಲ ವರ್ಗದ ಹೆಣ್ಣುಮಕ್ಕಳ ಬದುಕನ್ನೂ ಅಲುಗಾಡಿಸಿದೆ. ಮನೆಕೆಲಸ, ಗಾರ್ಮೆಂಟ್ಸ್‌ನವರಿಂದ ಹಿಡಿದು.  ಆದರೆ ಬಹಳಷ್ಟು ಮಹಿಳೆಯರು ಅನುಭವಿಸುತ್ತಿರುವ ಸಂಕಟಗಳು ಈ ಅಂಕಿಸಂಖ್ಯೆಗೆ ನಿಲುಕದಂತಹವು ಏಕೆಂದರೆ ಅವು ನಾಲ್ಕು ಗೋಡೆಗಳಾಚೆಗೆ ಬರುವುದೇ ಇಲ್ಲ. `ಮೌನಂ ಸಮ್ಮತಿ ಲಕ್ಷಣಂ’ ಎಂಬ ತಪ್ಪು ಅಭಿಪ್ರಾಯವಿನ್ನೂ ಪ್ರಚಲಿತವಾಗಿದೆ. ಮಹಿಳೆ ಅದನ್ನು ಹೇಳಿಕೊಂಡರೆ, ವಿರೋಧಿಸಿದರೆ ಸಂಘರ್ಷವನ್ನು ಎದುರಿಸಬೇಕಾಗುತ್ತದೆ ಅಥವಾ ಇನ್ನೂ ಅಪಾಯ ಹೆಚ್ಚಾಗುತ್ತದೆ ಎಂದು ಸುಮ್ಮನಿರಬಹುದು. ಇನ್ನು ಉದ್ಯೋಗಸ್ಥ ಮಹಿಳೆಯರೂ ಇಷ್ಟು ದಿನ ಮನೆಯೊಳಗೂ ಮಾಡಿ ಕಛೇರಿಯಲ್ಲೂ ಮಾಡುತ್ತಿದ್ದವರು, ಈಗ ಮನೆಯಲ್ಲಿಯೇ ವರ್ಕ್‍ ಫ್ರಮ್‍ ಹೋಮ್‍ ಮತ್ತು ಮನೆಯ ಕೆಲಸ ಕೂಡ, ಇಂತಹ ವಿಚಾರಗಳೆಲ್ಲ ಗಂಡನಿಗೆ ಗೊತ್ತಾದರೆ ಮನಸ್ತಾಪವಾಗುವ ಆತಂಕ. ಇದರೊಂದಿಗೆ ಸಂಬಳದಲ್ಲಿ ಕಡಿತ, ಉದ್ಯೋಗ ಕಳೆದುಕೊಳ್ಳುವ ಭಯ. ಹೀಗಾಗಿ ಎಷ್ಟೋ ಪ್ರಕರಣಗಳು ದಾಖಲಾಗುವುದೇ ಇಲ್ಲ.

ಹೆಚ್ಚುತ್ತಿರುವ ಕೌಟುಂಬಿಕ ದೌರ್ಜನ್ಯದ ಮೂಲವನ್ನು ಕೆದಕಿದರೆ ಸಿಗುವುದು ಮತ್ತೊಂದು ತೆರನಾದ ‘ಲೈಫ್‍ಟೈಮ್‍ ಲಾಕ್‍’ ಆಗಿರುವ ವೆಡ್‍ಲಾಕ್ ಅಂದರೆ ವೈವಾಹಿಕ ಬಂಧನ.

ಲಾಕ್‍ಡೌನಿನ ಹೊಸ ವರ್ಷನ್‍ಗಳಿಗೆ ನಿಯಮಗಳನ್ನು ಪರಿಷ್ಕರಣೆ ಮಾಡುವಂತೆಯೇ, ಕಾಲಕಾಲಕ್ಕೆ ವಿವಾಹಬಂಧನದಲ್ಲಿಯೂ ಮಾರ್ಪಾಡು ಮಾಡಿಕೊಳ್ಳುವುದು ಅತ್ಯಗತ್ಯ. ವಿವಾಹ ಎಂಬ ವ್ಯವಸ್ಥೆಯನ್ನು ಹೊಸದಾಗಿ ನಿರ್ವಚಿಸಿಕೊಳ್ಳದೇ ಕೌಟುಂಬಿಕ ದೌರ್ಜನ್ಯಕ್ಕೆ ಅಂತ್ಯ ಹಾಡಲು ಸಾಧ್ಯವಿಲ್ಲ.

ಸಂಬಂಧಗಳನ್ನು ಸರಿಪಡಿಸಿಕೊಳ್ಳಲು ಇರುವ ರಿಫ್ರೆಶ್/ರೀಬೂಟ್ ಬಟನ್ ಎಂದರೆ ಮುಕ್ತವಾದ ಮಾತುಕತೆ. ಆದರೆ ನಗರ ಪ್ರದೇಶಗಳಲ್ಲಿ, ಮೇಲ್ವರ್ಗದ ಅಥವಾ ಮೇಲ್ಮಧ್ಯಮ ವರ್ಗದ ಕೆಲವು ಕುಟುಂಬಗಳಲ್ಲಿ ಮಾತ್ರ ಚರ್ಚೆಗೆ ಅವಕಾಶವಿರುತ್ತದೆ. ಇನ್ನುಳಿದ ಸಂಬಂಧಗಳು ಸಾಂಪ್ರದಾಯಿಕ ನೆಲೆಗೇ ಕಟ್ಟುಬಿದ್ದಿರುತ್ತವೆ.

“ಗೃಹಿಣಿ ಗೃಹಮುಚ್ಯತೇ – ಗೃಹಿಣಿಯು ಗೃಹ ಎನ್ನಿಸಿಕೊಳ್ಳುತ್ತಾಳೆ” ಎಂಬ ಮಾತು ಕೇಳಿರುತ್ತೀರಿ. ಮನೆ ಅಂದ ತಕ್ಷಣ ಅದು ಅಮ್ಮ ಅಥವಾ ಹೆಂಡತಿಯ ಜವಾಬ್ದಾರಿಯಾಗಿಬಿಡುತ್ತದಲ್ಲ ಏಕೆ? ಗಂಡಸರು ಇದನ್ನು ಮಾಡಬಾರದು ಹೆಂಗಸರು ಅದನ್ನೇ ಮಾಡಬೇಕು ಎಂಬ ಇನ್ಸ್‍ಟ್ರಕ್ಷನ್‍ ಮ್ಯಾನುಯಲ್, ಗೈಡ್‍ಲೈನ್ಸ್‍, ಯಥೇಚ್ಛವಾಗಿವೆ. ಗಂಡುಹುಡುಗರಿಗೆ ತಟ್ಟೆಯಲ್ಲಿ ಕೈತೊಳೆದುಕೊಂಡು ಏಳು, ನೀನೇಕೆ ಎಂಜಲು ತಟ್ಟೆ ಎತ್ತುವೆ ಎಂದೇ ಹೇಳುತ್ತಾರೆ, ನೀನ್ಯಾಕೆ ಪೊರಕೆ ಮುಟ್ಟುತ್ತೀಯ ಬಿಡು ಎನ್ನುವವರನ್ನೂ ನೋಡಿರುತ್ತೇವೆ.

ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ ಎಂಬ ಹೇಳಿಕೆಯನ್ನು ಸರಿಯೆನ್ನುವಿರೋ ತಪ್ಪೆನ್ನುವಿರೋ. ಏಕೆಂದರೆ ಸೂರ್ಯ ಎಲ್ಲಿಯೂ ಹುಟ್ಟುವುದಿಲ್ಲ, ಮುಳುಗುವುದೂ ಇಲ್ಲ ಇದ್ದಲ್ಲಿಯೇ ಇರುತ್ತಾನೆ. ತಿರುಗುತ್ತಿರುವುದು ಭೂಮಿ. ಹೀಗೆಯೇ ಗಂಡು ಹೆಣ್ಣಿನ ಬಗ್ಗೆ ನಮ್ಮ ಪ್ರಜ್ಞೆಯ ಆಳದಲ್ಲಿ ನಮ್ಮ ಸಂಸ್ಕೃತಿ, ನಮ್ಮ ಸಮಾಜ ನೆಟ್ಟಿರುವ ತಪ್ಪು ಗ್ರಹಿಕೆಗಳನ್ನು ಬೇರುಸಹಿತ ಕಿತ್ತೆಸೆಯಬೇಕು.

ಗಂಡಸರು ಇರುವುದೇ ಹಾಗೇ ನ್ಯಾಯಾಧೀಶರಾಗಲೀ ವೈದ್ಯರಾಗಲೀ ಅದರ ಬಗ್ಗೆ ಆಶ್ಚರ್ಯಪಡಬೇಕಾಗಿಲ್ಲ ಎಂದೊಬ್ಬರು ಹೇಳುತ್ತಿದ್ದರು. ಕ್ರೌರ್ಯ, ಹಿಂಸೆ, ದೌರ್ಜನ್ಯ ಸರ್ವೇಸಾಮಾನ್ಯ ಎಂದೇಕೆ ಪರಿಗಣಿತವಾಗಬೇಕು, ಅದೇಕೆ ಅಬ್‍ನಾರ್ಮಲ್‍ ಎನಿಸಬಾರದು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು ನ್ಯೂನಾರ್ಮಲ್ ಆದ ಹಾಗೆ ಹೆಣ್ಣನ್ನು ಅವಳ ಆತ್ಮಗೌರವಕ್ಕೆ ಕುಂದುಂಟಾಗದಂತೆ, ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗದಂತೆ  ಸಹಜೀವಿಯಂತೆ ನಡೆಸಿಕೊಳ್ಳುವುದೂ ನ್ಯೂನಾರ್ಮಲ್ ಆಗಬಾರದೇಕೆ.

ಸಣ್ಣವಯಸ್ಸಿನಿಂದಲೇ ಹೆಣ್ಣನ್ನು ಕುಟುಂಬವನ್ನು ಪೊರೆಯುವ ಜವಾಬ್ದಾರಿ ಹೊರುವಂತೆ ಬಗ್ಗಿಸಿ ಬೆಳೆಸಲಾಗುತ್ತದೆ, ಆದರೆ ಗಂಡನ್ನು ಕೇವಲ ಆರ್ಥಿಕ ಬೆಂಬಲ ನೀಡುತ್ತಾ ಆಳುವ ಅಧಿಕಾರ ಚಲಾಯಿಸುವ ಪುರುಷತ್ವದ ಮಾದರಿಯಲ್ಲಿ ಬೆಳೆಸಲಾಗುತ್ತದೆ. ದಬ್ಬಾಳಿಕೆ ನಡೆಸುವುದಕ್ಕಿಂತ ಗೆಳೆಯನಂತಹ, ಸಹಜೀವಿಯಂತಹ ಗಂಡಿನ ಮಾದರಿ ನಮ್ಮ ಸಮಾಜದೊಳಗೆ ಬರಬೇಕಿದೆ. ಅದಕ್ಕೆ ಸ್ವೀಕೃತಿಯ ಮುದ್ರೆಯನ್ನೊತ್ತಬೇಕಾಗಿರುವವರೂ ನಾವೇ!

ಲೇಖಕಿ ಬೆಟ್ಟಿ ಫ್ರೀಡನ್‍ ಹೇಳುತ್ತಾಳೆ “ಮೆನ್‍ ಆರ್ ನಾಟ್‍ ದಿ ಎನಿಮಿ ಬಟ್ ಫೆಲ್ಲೋ ವಿಕ್ಟಿಮ್ಸ್” (ಪುರುಷರು ಶತ್ರುಗಳಲ್ಲ, ಆದರೆ ನಮ್ಮಂತೆಯೇ ಬಲಿಪಶುಗಳು). ಇಲ್ಲಿ ಮುಖಾಮುಖಿಯಾಗಬೇಕಿರುವುದು ಪರಸ್ಪರ ಗಂಡುಹೆಣ್ಣಲ್ಲ ಬದಲಿಗೆ ಎದುರಾಗಬೇಕಿರುವುದು ಎದುರಿಸಬೇಕಾಗಿರುವುದು ಎಕ್ಸ್ಪೈರಿ ಡೇಟ್‍ ಆಗಿಹೋಗಿರುವ ಮೌಲ್ಯವ್ಯವಸ್ಥೆಯನ್ನು. ಹೀಗಾಗಿ ಗಂಡು ಹೆಣ್ಣು ಇಬ್ಬರೂ ಸೇರಿಯೇ ಕಂಡುಕೊಳ್ಳಬೇಕಾದ ಕಟ್ಟಿಕೊಳ್ಳಬೇಕಾದ ಬಿಡುಗಡೆಯ ದಾರಿಯಿದು.

– ಡಾ. ಕಾವ್ಯಶ್ರೀ ಎಚ್, ಲೇಖಕಿ- ಉಪನ್ಯಾಸಕಿ. (ಚಿಂತಕಿ ಚಿಮಮಾಂಡ ಅಡಿಚಿ ಅವರ ಫೆಮಿನಿಸ್ಟ್ ಮ್ಯಾನಿಫೆಸ್ಟೋ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...