Homeಅಂಕಣಗಳುಸ್ತ್ರೀಮತಿ- 2: ಲಾಕ್ - ಅನ್ ಲಾಕ್ ಗಳ ನಡುವೆ ಕಳೆದುಹೋದ ಕೀಲಿ

ಸ್ತ್ರೀಮತಿ- 2: ಲಾಕ್ – ಅನ್ ಲಾಕ್ ಗಳ ನಡುವೆ ಕಳೆದುಹೋದ ಕೀಲಿ

- Advertisement -
- Advertisement -

ನನಗೆ ಸಣ್ಣವಯಸ್ಸಿನಿಂದಲೂ ಏನಾದರೂ ಪೆಟ್ಟಾದಾಗ, ನೋವಾದಾಗ ಅಮ್ಮ ಹೇಳುತ್ತಿದ್ದರು, (ಬಹುಶಃ ಅವರಿಗೆ ಅವರಮ್ಮ ಹೇಳುತ್ತಿದ್ದಿರಬಹುದು)  ಮುಂದೆ ನೀನು ಹೆರಿಗೆಯಂತಹ ನೋವನ್ನೇ ಸಹಿಸಿಕೊಳ್ಳಬೇಕಾಗುತ್ತದೆ ಈಗ ಇಷ್ಟು ಸಣ್ಣ ನೋವಿಗೆ ಅಳುತ್ತಾ ಕೂತರೆ ಹೇಗೆ ಎಂದು, ನಂತರ ಹೆರಿಗೆಯಾದ ಮೇಲೆ ಏನಾದರೂ ನೋವಾದಾಗ ಅಂತಹ ದೊಡ್ಡ ನೋವನ್ನೇ ತಿಂದ ಮೇಲೆ ಇಷ್ಟು ಸಣ್ಣಪುಟ್ಟದಕ್ಕೆಲ್ಲಾ ಅಧೀರಳಾಗುವುದೇ ಎನ್ನುತ್ತಿದ್ದರು.  ಹೆಣ್ಣಿನ ಈ ‘ಸಹಿಸಿಕೊಳ್ಳುವ ಪರಂಪರೆ’ಗೆ ಬಹಳಷ್ಟು ಉಲ್ಲೇಖಗಳನ್ನು ನೀಡಬಹುದು.

ಇತ್ತೀಚಿಗೆ ಬಿಡುಗಡೆಯಾದ ‘ಬುಲ್‍ಬುಲ್‍’ ಎಂಬ ಹಿಂದಿ ಸಿನಿಮಾದಲ್ಲಿ  ಸಹಿಸಿಕೊಳ್ಳುವುದನ್ನು ಕಲಿಸುವ ಒಂದು ದೃಶ್ಯವಿದೆ. ಆ ಮನೆಗೆ ಸೊಸೆಯಾಗಿ ಮೊದಲು ಬಂದವಳು ತನ್ನ ನಂತರ ಬಂದವಳಿಗೆ ಹೇಳುವ ಮಾತುಗಳಿವು. ತಾನು ಮದುವೆಯಾಗಿ ಬಂದಾಗ ತನಗೆ ಹೇಳಲಾದ ಮಾತುಗಳನ್ನೇ ಈಗ ಬಂದವಳಿಗೆ ಹೇಳುತ್ತಿರುತ್ತಾಳೆ. –“ಇಷ್ಟು ದೊಡ್ಡಮನೆತನದ ಸೊಸೆಯಾಗಿ ಬಂದಿದ್ದೀಯ, ಹೀಗೆಲ್ಲ ಅಳುತ್ತಾರೆಯೇ. ಅವನು ಸ್ವಲ್ಪ ಹುಚ್ಚ ಆದರೆ ಮದುವೆಯಾದ ಮೇಲೆ ಸರಿಹೋಗುತ್ತಾನೆ, ಎಷ್ಟೇ ಆದರೂ ನಿನ್ನ ಗಂಡನಲ್ಲವೇ, ಹೊರಗೆಲ್ಲೂ ಈ ವಿಚಾರಗಳನ್ನು ಮಾತನಾಡಬೇಡ ಸುಮ್ಮನಿರು; ಅವನು ಸ್ವಲ್ಪ ಹುಚ್ಚುಹುಚ್ಚಾಗಿ ಆಡುತ್ತಾನೆ ನಿಜ, ಆದರೆ ನಿನಗೆ ಎಷ್ಟೆಲ್ಲಾ ಒಡವೆ, ವಸ್ತ್ರ, ಆಸ್ತಿ ಸಿಗುತ್ತಿದೆ, ಹೀಗಾಗಿ ಸ್ವಲ್ಪ ಸಹಿಸಿಕೋ; ಅವನು ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸದಿದ್ದರೂ ಅವನ ಸೋದರ ನೋಡಿಕೊಳ್ಳುತ್ತಾನೆ. ದೊಡ್ಡಮನೆಗಳಲ್ಲಿ ದೊಡ್ಡದೊಡ್ಡ ಗುಟ್ಟುಗಳಿರುತ್ತವೆ ಮೌನವಾಗಿದ್ದುಬಿಡು.” ಭಾಮೈದ ತನ್ನ ನಾದಿನಿಯ ಮೇಲೆ ಅತ್ಯಾಚಾರ ಮಾಡಿದ ಸಂದರ್ಭದಲ್ಲಿ ಅವನ ಹೆಂಡತಿ  ಅತ್ಯಾಚಾರಕ್ಕೊಳಗಾದವಳಿಗೆ ಹೇಳುವ ಮಾತುಗಳಿವು.

ಸಹಿಸಿಕೊಳ್ಳುವುದೇ ತನ್ನ ಹೆಚ್ಚುಗಾರಿಕೆ ಎಂಬ ಭಾವನೆ ಹೆಣ್ಣಿನಲ್ಲಿಯೂ ಇರುವಾಗ (ಮಾತೃದೇವತೆ, ಗೃಹಲಕ್ಷ್ಮಿ , ಸೌಭಾಗ್ಯದೇವತೆ-ಮುಂತಾಗಿ ಆರೋಪಿಸಲಾದ ವೈಭವೀಕೃತ ಪದವಿಗಳನ್ನು –ಹೆಣ್ಣಿನ ಮನಸ್ಸಿನಲ್ಲಿ ಕೂಡಾ ಭಂಜಿಸುವುದು ಅಷ್ಟು ಸುಲಭವೇನಲ್ಲ)  ಅವಳು ಹಿಂಸೆಯನ್ನಾಗಲಿ, ಕ್ರೌರ್ಯವನ್ನಾಗಲಿ ಒಂದು ಅಪರಾಧವನ್ನಾಗಿ ಪರಿಗಣಿಸುವುದಿಲ್ಲ, ಅವಳಿಗೆ ಅದನ್ನು ವಿರೋಧಿಸಬೇಕು ಎನಿಸುವುದಿಲ್ಲ ಅಥವಾ ದೂರು ನೀಡಬೇಕು ಎಂಬ ಭಾವ ಮೂಡುವುದಿಲ್ಲ. ಹೊಡೆಯುವುದು ಪತಿಧರ್ಮ ಸಹಿಸಿಕೊಳ್ಳುವುದು ಸತಿಧರ್ಮ ಎಂಬಷ್ಟು ಸಹಜ ವಿದ್ಯಮಾನವಾಗಿಬಿಟ್ಟಿದೆ. ಹೆಣ್ಣಿನ ದೇಹರಚೆನೆಯೇ ಕಾರಣವಾಗಿ ಪ್ರಕೃತಿ ಹೆಣ್ಣಿಗೆ ಸಹಿಷ್ಣುತೆಯನ್ನು ಕೊಟ್ಟಿರುವುದು ತನ್ನ ಗರ್ಭದಲ್ಲಿ ಮತ್ತೊಂದು ಜೀವವನ್ನು ಹೊರಲು, ಆದರೆ ಬೇರೆ ಜೀವಿಗಳು ಕೊಡುವ ಕ್ರೌರ್ಯವನ್ನು ಸಹಿಸಲು ಅಲ್ಲ, ಪೊರೆಯುವ ಗುಣ ಇರುವುದು ಈ ಸೃಷ್ಟಿಕ್ರಿಯೆಯ ಭಾಗವಾಗಿಯೇ ಹೊರತು ಬೇಜವಾಬ್ದಾರಿ, ಸೋಮಾರಿ ಗಂಡಂದಿರನ್ನು ಮಕ್ಕಳನ್ನು ಸಾಕಲೆಂದಲ್ಲ. ಈ ಸಹಿಸಿಕೊಳ್ಳುವ ಪರಂಪರೆಯ ವಾರಸುದಾರಿಕೆಯ ಹೊರೆ ಇನ್ನೆಷ್ಟು ಕಾಲ?

ಕೋವಿಡ್‍-19 ಅನ್ನು ನಿಯಂತ್ರಿಸಲಾಗದ ಸಂದರ್ಭದಲ್ಲಿ ಅದರಿಂದಾಗಿ ಎದುರಿಸುತ್ತಿರುವ ಇತರ ಸಮಸ್ಯೆಗಳನ್ನು ಹಿನ್ನೆಲೆಗೆ ಸರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇಂತಹ ಸನ್ನಿವೇಶದಲ್ಲಿ ಅವನ್ನು ಗಂಭೀರವಾಗಿ ಪರಿಗಣಿಸಿರುವ ವಿಶ್ವಸಂಸ್ಥೆಯು ಲಿಂಗಾಧಾರಿತ ಹಿಂಸೆಯನ್ನು `ಶ್ಯಾಡೋ ಪ್ಯಾಂಡೆಮಿಕ್’ (Shadow Pandemic) ಎಂದು ಗುರುತಿಸಿದೆ. ಲೈಂಗಿಕ ಹಿಂಸೆಯನ್ನು ದೌರ್ಜನ್ಯವನ್ನು ನಿಗ್ರಹಿಸುವುದು ಕೋವಿಡ್‍-19ನ ಕ್ರಿಯಾ ಯೋಜನೆಯ ಭಾಗವಾಗಿರಬೇಕು ಎಂದು ವಿಶ್ವಸಂಸ್ಥೆ ತನ್ನ ಸದಸ್ಯ ರಾಷ್ಟ್ರಗಳಿಗೆ ಹೇಳಿದೆ.

ಲಾಕ್‌ಡೌನಿನ ಪರಿಣಾಮಗಳನ್ನು ಹೆಣ್ಣು, ಗಂಡುಗಳಿಬ್ಬರೂ ಎದುರಿಸುತ್ತಿದ್ದರೂ, ಅವುಗಳ ಸ್ವರೂಪ ಮತ್ತು ತೀವ್ರತೆಯಲ್ಲಿ ಅಂತರವಿದೆ. ಲಾಕ್‍ಡೌನ್‍ ಸಮಯದಲ್ಲಿ ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸಾಚಾರ ಹೆಚ್ಚಾಗಿದೆ, ಉದ್ಯೋಗಸ್ಥ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಭಿನ್ನ ಸ್ವರೂಪ ಪಡೆದುಕೊಂಡಿದೆ, ಗೃಹಿಣಿಯರು ಅನುಭವಿಸುತ್ತಿರುವ ಹಿಂಸೆಗಳನ್ನು ಹೇಳಿಕೊಳ್ಳಲಾರದೆ ಮಾನಸಿಕ ಅಸ್ವಸ್ಥತೆ ಹೆಚ್ಚಾಗಿದೆ.

‘ಸ್ಟೇ ಹೋಂ ಸ್ಟೇ ಸೇಫ್- ಮನೆಯಲ್ಲಿಯೇ ಇರಿ ಸುರಕ್ಷಿತವಾಗಿರಿ’ ಎಂಬ ಘೋಷವಾಕ್ಯ ಮಹಿಳೆಯರ ಪಾಲಿಗೆ ಅಕ್ಷರಶಃ ಹುಸಿಯಾಗಿದೆ. ಯುನೆಸ್ಕೋ,ಯುನಿಸೆಫ್ ಮತ್ತು ವಿಶ್ವಸಂಸ್ಥೆಯ ಸಹಕಾರದೊಂದಿಗೆ ನಂದಿತಾ ದಾಸ್ ಅವರ ರಚನೆ ಮತ್ತು ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕಿರುಚಿತ್ರ ‘ಲಿಸನ್‍ ಟು ಹರ್’ ಏಕಕಾಲಕ್ಕೆ ಮೇಲ್ವರ್ಗದ ಸುಶಿಕ್ಷಿತ ಉದ್ಯೋಗಸ್ಥ ಮಹಿಳೆ ಮತ್ತು ಕೆಳವರ್ಗದ ಅಸಹಾಯಕ ಮಹಿಳೆ ಮನೆಯೊಳಗೇ ಅನುಭವಿಸುವಂತಹ ತಣ್ಣನೆಯ ಕ್ರೌರ್ಯವನ್ನು ಸೂಕ್ಷ್ಮವಾಗಿ ಬಿಚ್ಚಿಡುತ್ತದೆ.

ವರ್ಕ್‍ ಫ್ರಮ್‍ ಹೋಮ್‍ ಮಾಡುತ್ತಿರುವ ಮಹಿಳೆಯರಿಗೆ ಆನ್ಲೈನ್‍ ಮೀಟಿಂಗ್‍, ಚಾಟಿಂಗ್‍ಗಳಲ್ಲಿಯೇ ಶುರುವಾದ ಕಿರುಕುಳಗಳು, ಉದ್ಯೋಗಸ್ಥ ಮಹಿಳೆಯರು ಎದುರಿಸುವ ಲೈಂಗಿಕ ದೌರ್ಜನ್ಯಕ್ಕೆ ಹೊಸ ವ್ಯಾಖ್ಯಾನವನ್ನೇ ದಯಪಾಲಿಸಿವೆ.

ಹರಿಯಾಣದ ಪಂಚ್‍ಕುಲಾ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಕೋವಿಡ್‍-19 ಐಸೋಲೇಶನ್ ವಾರ್ಡಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಮೇಲೆ ಅಲ್ಲಿನ ವೈದ್ಯ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ರೆಸ್ಟ್ ರೂಮಿನಲ್ಲಿ ತಾನು ವಿಶ್ರಮಿಸುತ್ತಿದ್ದಾಗ ವೈದ್ಯ ಈ ಕೃತ್ಯ ಎಸಗಿರುವುದಾಗಿ ನರ್ಸ್ ದೂರು ನೀಡಿದ್ದಾಳೆ.

ಕರ್ಣಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಂದೆಯಂದಿರೇ ತಮ್ಮ ಮಕ್ಕಳ ಮೇಲೆಯೇ ಅತ್ಯಾಚಾರ ಮಾಡಿರುವ ವರದಿಗಳು ಬಂದಿವೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಉಪಮೆಯನ್ನಿಲ್ಲಿ ಬಳಸುವುದಿಲ್ಲ. ಬೇಲಿ-ಹೊಲ, ರಕ್ಷಣೆ-ರಕ್ಷಕ ಮುಂತಾದವುಗಳಿಗಿಂತ ಮನುಷ್ಯನ ಸಂವೇದನೆ, ಯುಕ್ತಾಯುಕ್ತ ವಿವೇಚನೆಗಳ ಚಿಂತನೆ  ಅವಳೂ ತನ್ನಂತೆಯೇ ಮನುಷ್ಯಜೀವಿ ಎಂದು ಭಾವಿಸಲು ಏಕೆ ಸಾಧ್ಯವಾಗುವುದಿಲ್ಲ.

ಹೊಡೆದುಬಡಿದು ಮಾಡಿದರೆ ಮಾತ್ರ ಅದು ಹಿಂಸೆ, ಕ್ರೌರ್ಯ ಎನಿಸಿಕೊಳ್ಳುವುದಿಲ್ಲ. ಮಾನಸಿಕ ಕಿರಿಕಿರಿಯುಂಟು ಮಾಡುವುದು, ಅವಳ ವ್ಯಕ್ತಿತ್ವಕ್ಕೆ ಘನತೆಗೆ ಕುಂದು ಉಂಟುಮಾಡುವಂತಹ ಎಲ್ಲ ಕೃತ್ಯಗಳೂ ದೌರ್ಜನ್ಯವೇ. ಮಾಧ್ಯಮಗಳಲ್ಲಿ ಸುದ್ದಿಯಾಗದಂತಹ ವಿದ್ಯಮಾನಗಳೆಲ್ಲಾ ಗಂಭೀರವಲ್ಲ ಎಂದು ಪರಿಗಣಿಸಲಾಗುವುದಿಲ್ಲ. ಭೀಕರವಾದ ಪ್ರಕರಣಗಳು ಪ್ರತಿನಿತ್ಯ ಮನೆಯೊಳಗೆ ನಡೆಯುತ್ತಿದ್ದರೂ ಅವು ಎಲ್ಲೂ ದಾಖಲಾಗುವುದಿಲ್ಲ. ಮಾನಸಿಕ ಆರೋಗ್ಯ ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಾಗಿದೆ. ಆದರೆ ಎಷ್ಟರಮಟ್ಟಿಗೆ ಸಹಾಯವಾಣಿ ನಂಬರ್‌ಗಳು, ಎನ್‌ಜಿಓಗಳು, ಗೆಳೆಯರು ಪೂರ್ಣಪ್ರಮಾಣದ ಮನೋಚಿಕಿತ್ಸೆ ಕೊಡುವುದಕ್ಕೆ ಸಾಧ್ಯ. ಅದಕ್ಕಿಂತ ಹೆಚ್ಚಾಗಿ ಖಿನ್ನತೆಗೆ ಒಳಗಾದವರು ಇತರರೊಂದಿಗಿನ ಸಂವಾದವನ್ನು ಬಹಳ ಹಿಂದೆಯೇ ನಿಲ್ಲಿಸಬಿಟ್ಟಿರುತ್ತಾರೆ, ಅಂತಹವರನ್ನು ಮಾತಿಗೆಳೆಯುವುದು ಅಷ್ಟು ಸುಲಭವಲ್ಲ.

ಕೋವಿಡ್‌ಗೆ ಔಷಧ ಕಂಡುಹಿಡಿಯುವವರೆಗೆ ಮತ್ತೆ ಮತ್ತೆ ಬೇರೆ ಬೇರೆ ಸ್ವರೂಪದಲ್ಲಿ ಲಾಕ್‌ಡೌನ್ ಬರುವುದಿದೆ (ಸೆಲ್ಫ್ ಲಾಕ್‌ಡೌನ್, ಹೋಂ ಕ್ವಾರೈನ್‌ಟೇನ್, ಹೋಂ ಐಸೋಲೇಶನ್). ಲಾಕ್‌ಡೌನಿನ ಕರಾಳತೆ ಮಾಧ್ಯಮದವರು ಬಿಂಬಿಸುತ್ತಿರುವುದಕ್ಕಿಂತ ಭೀಕರವಾಗಿದೆ. ಒಂದೊಂದು ವರ್ಗದ ಮಹಿಳೆಯರು ವಿಭಿನ್ನವಾದ ಸವಾಲುಗಳನ್ನೆದುರಿಸುತ್ತಿದ್ದಾರೆ. ಕೊರೋನಾದ ದುಷ್ಪರಿಣಾಮ ಎಲ್ಲ ವರ್ಗದ ಹೆಣ್ಣುಮಕ್ಕಳ ಬದುಕನ್ನೂ ಅಲುಗಾಡಿಸಿದೆ. ಮನೆಕೆಲಸ, ಗಾರ್ಮೆಂಟ್ಸ್‌ನವರಿಂದ ಹಿಡಿದು.  ಆದರೆ ಬಹಳಷ್ಟು ಮಹಿಳೆಯರು ಅನುಭವಿಸುತ್ತಿರುವ ಸಂಕಟಗಳು ಈ ಅಂಕಿಸಂಖ್ಯೆಗೆ ನಿಲುಕದಂತಹವು ಏಕೆಂದರೆ ಅವು ನಾಲ್ಕು ಗೋಡೆಗಳಾಚೆಗೆ ಬರುವುದೇ ಇಲ್ಲ. `ಮೌನಂ ಸಮ್ಮತಿ ಲಕ್ಷಣಂ’ ಎಂಬ ತಪ್ಪು ಅಭಿಪ್ರಾಯವಿನ್ನೂ ಪ್ರಚಲಿತವಾಗಿದೆ. ಮಹಿಳೆ ಅದನ್ನು ಹೇಳಿಕೊಂಡರೆ, ವಿರೋಧಿಸಿದರೆ ಸಂಘರ್ಷವನ್ನು ಎದುರಿಸಬೇಕಾಗುತ್ತದೆ ಅಥವಾ ಇನ್ನೂ ಅಪಾಯ ಹೆಚ್ಚಾಗುತ್ತದೆ ಎಂದು ಸುಮ್ಮನಿರಬಹುದು. ಇನ್ನು ಉದ್ಯೋಗಸ್ಥ ಮಹಿಳೆಯರೂ ಇಷ್ಟು ದಿನ ಮನೆಯೊಳಗೂ ಮಾಡಿ ಕಛೇರಿಯಲ್ಲೂ ಮಾಡುತ್ತಿದ್ದವರು, ಈಗ ಮನೆಯಲ್ಲಿಯೇ ವರ್ಕ್‍ ಫ್ರಮ್‍ ಹೋಮ್‍ ಮತ್ತು ಮನೆಯ ಕೆಲಸ ಕೂಡ, ಇಂತಹ ವಿಚಾರಗಳೆಲ್ಲ ಗಂಡನಿಗೆ ಗೊತ್ತಾದರೆ ಮನಸ್ತಾಪವಾಗುವ ಆತಂಕ. ಇದರೊಂದಿಗೆ ಸಂಬಳದಲ್ಲಿ ಕಡಿತ, ಉದ್ಯೋಗ ಕಳೆದುಕೊಳ್ಳುವ ಭಯ. ಹೀಗಾಗಿ ಎಷ್ಟೋ ಪ್ರಕರಣಗಳು ದಾಖಲಾಗುವುದೇ ಇಲ್ಲ.

ಹೆಚ್ಚುತ್ತಿರುವ ಕೌಟುಂಬಿಕ ದೌರ್ಜನ್ಯದ ಮೂಲವನ್ನು ಕೆದಕಿದರೆ ಸಿಗುವುದು ಮತ್ತೊಂದು ತೆರನಾದ ‘ಲೈಫ್‍ಟೈಮ್‍ ಲಾಕ್‍’ ಆಗಿರುವ ವೆಡ್‍ಲಾಕ್ ಅಂದರೆ ವೈವಾಹಿಕ ಬಂಧನ.

ಲಾಕ್‍ಡೌನಿನ ಹೊಸ ವರ್ಷನ್‍ಗಳಿಗೆ ನಿಯಮಗಳನ್ನು ಪರಿಷ್ಕರಣೆ ಮಾಡುವಂತೆಯೇ, ಕಾಲಕಾಲಕ್ಕೆ ವಿವಾಹಬಂಧನದಲ್ಲಿಯೂ ಮಾರ್ಪಾಡು ಮಾಡಿಕೊಳ್ಳುವುದು ಅತ್ಯಗತ್ಯ. ವಿವಾಹ ಎಂಬ ವ್ಯವಸ್ಥೆಯನ್ನು ಹೊಸದಾಗಿ ನಿರ್ವಚಿಸಿಕೊಳ್ಳದೇ ಕೌಟುಂಬಿಕ ದೌರ್ಜನ್ಯಕ್ಕೆ ಅಂತ್ಯ ಹಾಡಲು ಸಾಧ್ಯವಿಲ್ಲ.

ಸಂಬಂಧಗಳನ್ನು ಸರಿಪಡಿಸಿಕೊಳ್ಳಲು ಇರುವ ರಿಫ್ರೆಶ್/ರೀಬೂಟ್ ಬಟನ್ ಎಂದರೆ ಮುಕ್ತವಾದ ಮಾತುಕತೆ. ಆದರೆ ನಗರ ಪ್ರದೇಶಗಳಲ್ಲಿ, ಮೇಲ್ವರ್ಗದ ಅಥವಾ ಮೇಲ್ಮಧ್ಯಮ ವರ್ಗದ ಕೆಲವು ಕುಟುಂಬಗಳಲ್ಲಿ ಮಾತ್ರ ಚರ್ಚೆಗೆ ಅವಕಾಶವಿರುತ್ತದೆ. ಇನ್ನುಳಿದ ಸಂಬಂಧಗಳು ಸಾಂಪ್ರದಾಯಿಕ ನೆಲೆಗೇ ಕಟ್ಟುಬಿದ್ದಿರುತ್ತವೆ.

“ಗೃಹಿಣಿ ಗೃಹಮುಚ್ಯತೇ – ಗೃಹಿಣಿಯು ಗೃಹ ಎನ್ನಿಸಿಕೊಳ್ಳುತ್ತಾಳೆ” ಎಂಬ ಮಾತು ಕೇಳಿರುತ್ತೀರಿ. ಮನೆ ಅಂದ ತಕ್ಷಣ ಅದು ಅಮ್ಮ ಅಥವಾ ಹೆಂಡತಿಯ ಜವಾಬ್ದಾರಿಯಾಗಿಬಿಡುತ್ತದಲ್ಲ ಏಕೆ? ಗಂಡಸರು ಇದನ್ನು ಮಾಡಬಾರದು ಹೆಂಗಸರು ಅದನ್ನೇ ಮಾಡಬೇಕು ಎಂಬ ಇನ್ಸ್‍ಟ್ರಕ್ಷನ್‍ ಮ್ಯಾನುಯಲ್, ಗೈಡ್‍ಲೈನ್ಸ್‍, ಯಥೇಚ್ಛವಾಗಿವೆ. ಗಂಡುಹುಡುಗರಿಗೆ ತಟ್ಟೆಯಲ್ಲಿ ಕೈತೊಳೆದುಕೊಂಡು ಏಳು, ನೀನೇಕೆ ಎಂಜಲು ತಟ್ಟೆ ಎತ್ತುವೆ ಎಂದೇ ಹೇಳುತ್ತಾರೆ, ನೀನ್ಯಾಕೆ ಪೊರಕೆ ಮುಟ್ಟುತ್ತೀಯ ಬಿಡು ಎನ್ನುವವರನ್ನೂ ನೋಡಿರುತ್ತೇವೆ.

ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ ಎಂಬ ಹೇಳಿಕೆಯನ್ನು ಸರಿಯೆನ್ನುವಿರೋ ತಪ್ಪೆನ್ನುವಿರೋ. ಏಕೆಂದರೆ ಸೂರ್ಯ ಎಲ್ಲಿಯೂ ಹುಟ್ಟುವುದಿಲ್ಲ, ಮುಳುಗುವುದೂ ಇಲ್ಲ ಇದ್ದಲ್ಲಿಯೇ ಇರುತ್ತಾನೆ. ತಿರುಗುತ್ತಿರುವುದು ಭೂಮಿ. ಹೀಗೆಯೇ ಗಂಡು ಹೆಣ್ಣಿನ ಬಗ್ಗೆ ನಮ್ಮ ಪ್ರಜ್ಞೆಯ ಆಳದಲ್ಲಿ ನಮ್ಮ ಸಂಸ್ಕೃತಿ, ನಮ್ಮ ಸಮಾಜ ನೆಟ್ಟಿರುವ ತಪ್ಪು ಗ್ರಹಿಕೆಗಳನ್ನು ಬೇರುಸಹಿತ ಕಿತ್ತೆಸೆಯಬೇಕು.

ಗಂಡಸರು ಇರುವುದೇ ಹಾಗೇ ನ್ಯಾಯಾಧೀಶರಾಗಲೀ ವೈದ್ಯರಾಗಲೀ ಅದರ ಬಗ್ಗೆ ಆಶ್ಚರ್ಯಪಡಬೇಕಾಗಿಲ್ಲ ಎಂದೊಬ್ಬರು ಹೇಳುತ್ತಿದ್ದರು. ಕ್ರೌರ್ಯ, ಹಿಂಸೆ, ದೌರ್ಜನ್ಯ ಸರ್ವೇಸಾಮಾನ್ಯ ಎಂದೇಕೆ ಪರಿಗಣಿತವಾಗಬೇಕು, ಅದೇಕೆ ಅಬ್‍ನಾರ್ಮಲ್‍ ಎನಿಸಬಾರದು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು ನ್ಯೂನಾರ್ಮಲ್ ಆದ ಹಾಗೆ ಹೆಣ್ಣನ್ನು ಅವಳ ಆತ್ಮಗೌರವಕ್ಕೆ ಕುಂದುಂಟಾಗದಂತೆ, ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗದಂತೆ  ಸಹಜೀವಿಯಂತೆ ನಡೆಸಿಕೊಳ್ಳುವುದೂ ನ್ಯೂನಾರ್ಮಲ್ ಆಗಬಾರದೇಕೆ.

ಸಣ್ಣವಯಸ್ಸಿನಿಂದಲೇ ಹೆಣ್ಣನ್ನು ಕುಟುಂಬವನ್ನು ಪೊರೆಯುವ ಜವಾಬ್ದಾರಿ ಹೊರುವಂತೆ ಬಗ್ಗಿಸಿ ಬೆಳೆಸಲಾಗುತ್ತದೆ, ಆದರೆ ಗಂಡನ್ನು ಕೇವಲ ಆರ್ಥಿಕ ಬೆಂಬಲ ನೀಡುತ್ತಾ ಆಳುವ ಅಧಿಕಾರ ಚಲಾಯಿಸುವ ಪುರುಷತ್ವದ ಮಾದರಿಯಲ್ಲಿ ಬೆಳೆಸಲಾಗುತ್ತದೆ. ದಬ್ಬಾಳಿಕೆ ನಡೆಸುವುದಕ್ಕಿಂತ ಗೆಳೆಯನಂತಹ, ಸಹಜೀವಿಯಂತಹ ಗಂಡಿನ ಮಾದರಿ ನಮ್ಮ ಸಮಾಜದೊಳಗೆ ಬರಬೇಕಿದೆ. ಅದಕ್ಕೆ ಸ್ವೀಕೃತಿಯ ಮುದ್ರೆಯನ್ನೊತ್ತಬೇಕಾಗಿರುವವರೂ ನಾವೇ!

ಲೇಖಕಿ ಬೆಟ್ಟಿ ಫ್ರೀಡನ್‍ ಹೇಳುತ್ತಾಳೆ “ಮೆನ್‍ ಆರ್ ನಾಟ್‍ ದಿ ಎನಿಮಿ ಬಟ್ ಫೆಲ್ಲೋ ವಿಕ್ಟಿಮ್ಸ್” (ಪುರುಷರು ಶತ್ರುಗಳಲ್ಲ, ಆದರೆ ನಮ್ಮಂತೆಯೇ ಬಲಿಪಶುಗಳು). ಇಲ್ಲಿ ಮುಖಾಮುಖಿಯಾಗಬೇಕಿರುವುದು ಪರಸ್ಪರ ಗಂಡುಹೆಣ್ಣಲ್ಲ ಬದಲಿಗೆ ಎದುರಾಗಬೇಕಿರುವುದು ಎದುರಿಸಬೇಕಾಗಿರುವುದು ಎಕ್ಸ್ಪೈರಿ ಡೇಟ್‍ ಆಗಿಹೋಗಿರುವ ಮೌಲ್ಯವ್ಯವಸ್ಥೆಯನ್ನು. ಹೀಗಾಗಿ ಗಂಡು ಹೆಣ್ಣು ಇಬ್ಬರೂ ಸೇರಿಯೇ ಕಂಡುಕೊಳ್ಳಬೇಕಾದ ಕಟ್ಟಿಕೊಳ್ಳಬೇಕಾದ ಬಿಡುಗಡೆಯ ದಾರಿಯಿದು.

– ಡಾ. ಕಾವ್ಯಶ್ರೀ ಎಚ್, ಲೇಖಕಿ- ಉಪನ್ಯಾಸಕಿ. (ಚಿಂತಕಿ ಚಿಮಮಾಂಡ ಅಡಿಚಿ ಅವರ ಫೆಮಿನಿಸ್ಟ್ ಮ್ಯಾನಿಫೆಸ್ಟೋ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...