Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ;...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

- Advertisement -
- Advertisement -

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್ ಮೊರೆ ಹೋಗುವಂತೆ ಅರ್ಜಿದಾರರಿಗೆ ಸೋಮವಾರ (ಫೆ.16) ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಸಂವಿಧಾನದ 32ನೇ ವಿಧಿಯನ್ನು ಬಳಸಲು ಹಿಂಜರಿಕೆ ವ್ಯಕ್ತಪಡಿಸಿತು. ಅರ್ಜಿದಾರರು ಮೊದಲು ಸಂಬಂಧಪಟ್ಟ ಹೈಕೋರ್ಟ್‌ಗಳನ್ನು ಸಂಪರ್ಕಿಸಬೇಕು ಎಂದು ಪೀಠವು ತಿಳಿಸಿತು.

ಹೈಕೋರ್ಟ್‌ಗಳ ಅಧಿಕಾರವನ್ನು ಕಡೆಗಣಿಸಿ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬರುವ “ಶಾರ್ಟ್‌ಕಟ್” ಪ್ರವೃತ್ತಿಯನ್ನು ನ್ಯಾಯಪೀಠವು ಟೀಕಿಸಿತು. ಚುನಾವಣೆಗಳು ಸಮೀಪಿಸಿದಾಗ ರಾಜಕೀಯ ಹೋರಾಟಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ನಡೆಸುವ “ಗೊಂದಲಕಾರಿ ಪ್ರವೃತ್ತಿ” ಹೆಚ್ಚುತ್ತಿದೆ ಎಂದು ಸಿಜೆಐ ಸೂರ್ಯ ಕಾಂತ್ ಬೇಸರ ವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಪರಿಣಾಮಕಾರಿಯಾಗಿ ನಿರ್ಣಯಿಸಲು ಹೈಕೋರ್ಟ್‌ಗೆ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಅರ್ಜಿದಾರರ ಮನವಿಯನ್ನು ಆದ್ಯತೆಯ ಮೇಲೆ ಆಲಿಸುವಂತೆ ಗುವಾಹಟಿ ಹೈಕೋರ್ಟ್‌ಗೆ ವಿನಂತಿಸಿತು. ರಾಜಕೀಯ ಪಕ್ಷಗಳು ಪರಸ್ಪರ ಗೌರವ ಮತ್ತು ಸಾಂವಿಧಾನಿಕ ನೈತಿಕತೆಯ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯವು ಕರೆ ನೀಡಿತು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು, ಈ ಪ್ರಕರಣವು ಕೇವಲ ಅಪರಾಧ ಎಸಗಿರುವುದಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಪದವಿಯ ಪ್ರಮಾಣ ವಚನವನ್ನು ಉಲ್ಲಂಘಿಸಿರುವ ಗಂಭೀರ ವಿಷಯವಾಗಿದೆ ಎಂದು ಪ್ರತಿಪಾದಿಸಿದರು.

ಇದು ಸಂವಿಧಾನದ 32ನೇ ವಿಧಿಯನ್ನು ಬಳಸಲು ಅತ್ಯಂತ ಯೋಗ್ಯವಾದ ಪ್ರಕರಣವಾಗಿದೆ. ದೇಶದ ಸಾಂವಿಧಾನಿಕ ಮತ್ತು ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾದಾಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಸಿಂಘ್ವಿ ವಾದಿಸಿದರು.

ಅರ್ಜಿದಾರರು ಅಸ್ಸಾಂ ಮುಖ್ಯಮಂತ್ರಿಯ ವಿರುದ್ಧವೇ ವಿಶೇಷ ತನಿಖಾ ತಂಡ (ಎಸ್ಐಟಿ) ಮೂಲಕ ತನಿಖೆ ನಡೆಸಬೇಕೆಂದು ಕೋರುತ್ತಿದ್ದಾರೆ. ರಾಜ್ಯದ ಆಡಳಿತ ಮುಖ್ಯಸ್ಥರ ವಿರುದ್ಧ ತನಿಖೆ ನಡೆಯಬೇಕಿರುವುದರಿಂದ, ಹೈಕೋರ್ಟ್‌ನಲ್ಲಿ ಸೂಕ್ತ ಪರಿಹಾರ ಸಿಗದೇ ಇರಬಹುದು ಎಂಬ ಆತಂಕವನ್ನು ಸಿಂಘ್ವಿ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಕೇವಲ ಅಸ್ಸಾಂನಲ್ಲಿ ಮಾತ್ರವಲ್ಲದೆ, ಜಾರ್ಖಂಡ್ ಮತ್ತು ಛತ್ತೀಸ್‌ಗಢದಲ್ಲೂ ಇಂತಹ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಆದ್ದರಿಂದ ಇದು ಕೇವಲ ಒಂದು ರಾಜ್ಯಕ್ಕೆ ಸೀಮಿತವಾದ ವಿಷಯವಲ್ಲ, ಇಡೀ ದೇಶಕ್ಕೆ ಸಂಬಂಧಿಸಿದೆ ನ್ಯಾಯಪೀಠದ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಪೀಠವು, ಹೈಕೋರ್ಟ್‌ಗಳ ಮೇಲೆ ನಂಬಿಕೆ ಇಡಬೇಕು ಮತ್ತು ಅವುಗಳನ್ನು ಕಡೆಗಣಿಸಬಾರದು ಎಂದು ಸೂಚಿಸಿತು. ಹೈಕೋರ್ಟ್‌ಗಳು ಕೂಡ ಎಸ್‌ಐಟಿ ತನಿಖೆಗೆ ಆದೇಶಿಸುವ ಅಧಿಕಾರ ಹೊಂದಿವೆ ಎಂದು ಸಿಜೆಐ ಸೂರ್ಯ ಕಾಂತ್ ಸ್ಪಷ್ಟಪಡಿಸಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೊಬ್ಬರು ವಕೀಲ ನಿಝಾಮ್ ಪಾಷಾ, ಹೈಕೋರ್ಟ್ ಅಸ್ಸಾಂನ ಹೊರಗಿನ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿಯನ್ನು ರಚಿಸಬೇಕಾಗಬಹುದು ಎಂದು ವಾದಿಸಿದರು. ಹೈಕೋರ್ಟ್ ಕೂಡ ಅಂತಹ ಆದೇಶವನ್ನು ನೀಡಬಹುದು ಎಂದು ಸಿಜೆಐ ಹೇಳಿದರು ಮತ್ತು ಹೈಕೋರ್ಟ್ ನ್ಯಾಯಾಧೀಶರಾಗಿ ತಾನು ಅಂತಹ ನಿರ್ದೇಶನವನ್ನು ನೀಡಿರುವುದಾಗಿ ನೆನಪಿಸಿಕೊಂಡರು.

ನಾಲ್ವರು ಅಸ್ಸಾಮಿ ವ್ಯಕ್ತಿಗಳ ಪರವಾಗಿ ವಾದಿಸಿದ ವಕೀಲ ನಿಝಾಮ್ ಪಾಷಾ, ತಾನು ಈಗಾಗಲೇ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಈ ವಿಷಯದಲ್ಲಿ ಸ್ವಯಂಪ್ರೇರಿತ ಹಸ್ತಕ್ಷೇಪ ಮಾಡುವಂತೆ ಕೋರಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಕೇವಲ ಪತ್ರ ಬರೆಯುವುದು ಮತ್ತು ಅಧಿಕೃತವಾಗಿ ಅರ್ಜಿ ಸಲ್ಲಿಸುವುದು ಇವೆರಡೂ ವಿಭಿನ್ನ ವಿಷಯಗಳು ಎಂದು ತಿಳಿಸಿದರು.

ನ್ಯಾಯಾಲಯವು ಆದೇಶವನ್ನು ನೀಡಿದ ನಂತರ, ಹಿರಿಯ ವಕೀಲ ಸಿಂಘ್ವಿ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಭಾಷಣಗಳಲ್ಲಿ ಸಂಯಮ ಪಾಲಿಸಬೇಕಾದ ಅಗತ್ಯತೆಯ ಕುರಿತು ಕೆಲವು ಸಾಮಾನ್ಯ ಅಭಿಪ್ರಾಯಗಳನ್ನು ಅಥವಾ ಮಾರ್ಗಸೂಚಿಗಳನ್ನು ನೀಡುವಂತೆ ಪೀಠವನ್ನು ವಿನಂತಿಸಿದರು.

ಇದಕ್ಕೆ ನಿರಾಕರಿಸಿದ ಸಿಜೆಐ, “ನಾವು ಈಗಾಗಲೇ ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಧರಿಸಿರುವುದರಿಂದ, ಈ ಹಂತದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ನಮ್ಮಲ್ಲಿ ಒಂದು ಅಂತರ್ಗತ ವ್ಯವಸ್ಥೆಯಿದೆ. ಸಾಂವಿಧಾನಿಕ ಚೌಕಟ್ಟು ಒದಗಿಸಿರುವ ಆ ವ್ಯವಸ್ಥೆಯನ್ನು ನಾವೆಲ್ಲರೂ ಗೌರವಿಸೋಣ” ಎಂದರು.

ಪ್ರಕರಣವು ಕೆಳ ಹಂತದ ನ್ಯಾಯಾಲಯದ (ಹೈಕೋರ್ಟ್) ವ್ಯಾಪ್ತಿಗೆ ಹೋದಾಗ, ಅದರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂಬ ನ್ಯಾಯಾಂಗದ ಶಿಸ್ತನ್ನು ಸಿಜೆಐ ಎತ್ತಿಹಿಡಿದರು. ಸಂವಿಧಾನವು ರೂಪಿಸಿರುವ ನ್ಯಾಯಾಂಗ ವ್ಯವಸ್ಥೆಯ ಹಂತಗಳನ್ನು ಗೌರವಿಸುವುದು ಮುಖ್ಯ ಎಂದು ಅವರು ಒತ್ತಿ ಹೇಳಿದರು. ಪ್ರಕರಣದ ಗುಣಾವಗುಣಗಳ ಬಗ್ಗೆ ಯಾವುದೇ ಮುನ್ಸೂಚನೆ ನೀಡದೆ, ಹೈಕೋರ್ಟ್ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳಲು ಅವಕಾಶ ನೀಡಲಾಯಿತು.

ಸಿಎಂ ಶರ್ಮಾ ವಿರುದ್ದ ಒಟ್ಟು ಮೂರು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿತ್ತು. ಮೊದಲ ಎರಡು ಅರ್ಜಿಗಳನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) – ಸಿಪಿಐ(ಎಂ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ನಾಯಕಿ ಆನ್ನಿ ರಾಜಾ ಅವರು ಸಲ್ಲಿಸಿದ್ದರು. ಮೂರನೇ ಅರ್ಜಿಯನ್ನು ಅಸ್ಸಾಂನ ನಿವೃತ್ತ ಪ್ರಾಧ್ಯಾಪಕ ಮತ್ತು ಬುದ್ಧಿಜೀವಿ ಡಾ. ಹಿರೇನ್ ಗೊಹೈನ್, ಅಸ್ಸಾಂನ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹರಿಕೃಷ್ಣ ದೇಕಾ, ಹಿರಿಯ ಪತ್ರಕರ್ತ ಪರೇಶ್ ಚಂದ್ರ ಮಲಕರ್ ಮತ್ತು ಹಿರಿಯ ವಕೀಲ ಶಂತನು ಬೋರ್ಠಾಕೂರ್ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...