ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ಒಂದೂವರೆ ತಿಂಗಳಿನಿಂದ ನಡೆಯುತ್ತಿರುವ ಸಿಎಎ, ಎನ್ಆರ್ಸಿ ವಿರುದ್ಧದ ಹೋರಾಟದಲ್ಲಿ ಬೀಡುಬಿಟ್ಟಿರುವ ಸಾವಿರಾರು ಪ್ರತಿಭಟನಾಕಾರರನ್ನು ಅಲ್ಲಿಂದ ಹೊರಕಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಆದರೆ ಅದೇ ಸಂದರ್ಭದಲ್ಲಿ “ಸಾಮಾನ್ಯ ಪ್ರದೇಶದಲ್ಲಿ ಅನಿರ್ದಿಷ್ಟ ಪ್ರತಿಭಟನೆಗಳು ನಡೆಯಲು ಸಾಧ್ಯವಿಲ್ಲ. ಎಲ್ಲರೂ ಎಲ್ಲೆಡೆ ಪ್ರತಿಭಟನೆ ಆರಂಭಿಸಿದರೆ ಏನಾಗಬಹುದು” ಎಂದು ಸುಪ್ರೀಂ ಕೋರ್ಟ್ ಪ್ರತಿಭಟನಾಕಾರರಿಗೆ ಪ್ರಶ್ನಿಸಿದೆ.
ಈ ಕುರಿತು ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ನಿಗಧಿಪಡಿಸಿದೆ.
ಶಹೀನ್ ಬಾಗ್ನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ವಿರುದ್ಧ ಹಲವರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ..
ಪೌರತ್ವ ತಿದ್ದುಪಡಿ ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರುದ್ಧ ಪ್ರತಿಭಟನಾಕಾರರು, ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳು ದಕ್ಷಿಣ ದೆಹಲಿಯ ಶಾಹೀನ್ ಬಾಗ್ನಲ್ಲಿ ಸುಮಾರು ಎರಡು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ.