ಉರೂಸ್ ಪ್ರಯುಕ್ತ ಅಜ್ಮೀರ್ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಜ.5) ತಿರಸ್ಕರಿಸಿದೆ.
ಇದು ನ್ಯಾಯಾಲಯ ನಿರ್ಧರಿಸಬಹುದಾದ ಪ್ರಕರಣವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
“ಚಾದರ್ ಅರ್ಪಣೆ ಈಗಾಗಲೇ ನಡೆದಿರುವುದರಿಂದ ಅರ್ಜಿ ನಿರರ್ಥಕ ಎಂದಿರುವ ನ್ಯಾಯಾಲಯ, ಇದು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡುವ ವಿಷಯವೇ ಅಲ್ಲ. ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.
ಈ ಬಾರಿಯ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ 814ನೇ ಉರೂಸ್ ಕಾರ್ಯಕ್ರಮ 2025ರ ಡಿಸೆಂಬರ್ 22ರಿಂದ 30ರವರೆಗೆ ನಡೆದಿದೆ. ಸಂಪ್ರದಾಯದಂತೆ ಕೇಂದ್ರ ಸರ್ಕಾರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಪರವಾಗಿ, ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಕಿರಣ್ ರಿಜಿಜು ಅಜ್ಮೀರ್ಗೆ ತೆರಳಿ ಚಾದರ್ ಅರ್ಪಿಸಿದ್ದಾರೆ.
ಸುಪ್ರೀಂ ಕೋರ್ಟ್ ತಾನು ಈಗ ನೀಡಿರುವ ಆದೇಶ ಅಜ್ಮೀರ್ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮೊಕದ್ದಮೆ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಸ್ಪಷ್ಟಪಡಿಸಿದೆ.
ಉರೂಸ್ ವೇಳೆ ಅಜ್ಮೀರ್ಗೆ ದರ್ಗಾಗೆ ಕೇಂದ್ರ ಸರ್ಕಾರದ ವತಿಯಿಂದ ಚಾದರ್ ಅರ್ಪಿಸುವ ಪದ್ದತಿ 1947ರಲ್ಲಿ ಪ್ರಾರಂಭವಾಯಿತು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯ ಕಾಂತ್, ಈ ವಿಷಯವು ನ್ಯಾಯಸಮ್ಮತವಲ್ಲದ ಕಾರಣ ಪೀಠವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
ಅಜ್ಮೀರ್ ದರ್ಗಾವನ್ನು ಶಿವನ ದೇಗುಲದ ಮೇಲೆ ನಿರ್ಮಿಸಲಾಗಿದೆ. ಹಾಗಾಗಿ, ಅದನ್ನು ಭಗವಾನ್ ಶ್ರೀ ಸಂಕಟಮೋಚನ್ ಮಹಾದೇವ್ ವಿರಾಜಮಾನ್ ದೇವಸ್ಥಾನ ಎಂದು ಘೋಷಿಸುವಂತೆ ಕೋರಿ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ಅಜ್ಮೀರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಇದೇ ವಿಷ್ಣುಗುಪ್ತಾ ಈ ಹಿಂದೆಯೂ ದರ್ಗಾಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅಜ್ಮೀರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನೂ ನ್ಯಾಯಾಲಯ ವಜಾಗೊಳಿಸಿತ್ತು.
ವಿವಾದ ನ್ಯಾಯಾಲಯದಲ್ಲಿರುವಾಗ ಕೇಂದ್ರ ಸರ್ಕಾರ ಚಾದರ್ ಅರ್ಪಿಸುವುದು ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನ್ಯಾಯಸಮ್ಮತ ವಿಚಾರಣೆಯ ಹಕ್ಕನ್ನು ಹಾಳುಗೆಡವುತ್ತದೆ. ಈ ಬೆಳವಣಿಗೆಗಳಿಂದಾಗಿ ಇಡೀ ಪ್ರಕರಣ ನೆಲೆ ಕಳೆದುಕೊಳ್ಳುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಚಾದರ್ ನೀಡಬಾರದು ಎಂದು ವಿಷ್ಣಗುಪ್ತಾ ಪ್ರತಿಪಾದಿಸಿದ್ದರು.


