ಅದಾನಿ ಕಂಪನಿ ವಿರುದ್ಧ ವರದಿ ಪ್ರಕಟಿಸಿರುವ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆ ಕುರಿತ ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದ್ದು, ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಎಂ.ಎಲ್ ಶರ್ಮಾ ಎಂಬ ವಕೀಲರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಫೆ.10ರ ಶುಕ್ರವಾರ ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪಾರ್ದಿವಾಲಾ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಲಿದೆ.
ಅಮಾಯಕ ಹೂಡಿಕೆದಾರರನ್ನು ದುರುಪಯೋಗಪಡಿಸಿಕೊಂಡ ಮತ್ತು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ನ ಷೇರು ಮೌಲ್ಯದ “ಕೃತಕ ಕುಸಿತ” ಕ್ಕೆ ಕಾರಣವಾದ ಅಮೆರಿಕದ ಸಂಸ್ಥೆ ಹಿಂಡೆನ್ಬರ್ಗ್ ರಿಸರ್ಚ್ನ ಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಅವರ ಸಹಚರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಅದಾನಿ ಗ್ರೂಪ್ ವಿರುದ್ಧ ಶಾರ್ಟ್ ಸೆಲ್ಲರ್ ಹಿಂಡೆನ್ಬರ್ಗ್ ರಿಸರ್ಚ್ ‘ಪಿತೂರಿ’ ನಡೆಸಿದೆ. ಆ ವರದಿಯು ದೇಶದ ವ್ಯಕ್ತಿತ್ವಕ್ಕೆ ಕಳಂಕ ತಂದಿದೆ. ಇದು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದೆ. SEBI ಗೆ ದಾಖಲೆಗಳನ್ನು ಒದಗಿಸಲು ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಇದೇ ಸಂದರ್ಭದಲ್ಲಿ ವಕೀಲರಾದ ವಿಶಾಲ್ ತಿವಾರಿ ಎಂಬುವವರು ತಮ್ಮ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ದೊಡ್ಡ ಕಾರ್ಪೊರೇಟ್ಗಳಿಗೆ ನೀಡಿದ 500 ಕೋಟಿ ರೂ.ಗಿಂತ ಹೆಚ್ಚಿನ ಸಾಲಗಳ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ತುರ್ತು ವಿಚಾರಣೆ ನಡೆಸಬೇಕೆಂದು ಅವರು ಮನವಿ ಮಾಡಿದ್ದಾರೆ. ಅದಕ್ಕೆ ಪೀಠ ಒಪ್ಪಿಗೆ ನೀಡಿದ್ದು, ಎರಡು ಅರ್ಜಿಗಳನ್ನು ಫೆ.10 ರಂದು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.
ಇದನ್ನೂ ಓದಿ: Explainer: ಗೌತಮ್ ಅದಾನಿ ಯಾರು? ದಿಢೀರ್ ಅತಿ ದೊಡ್ಡ ಶ್ರೀಮಂತನಾಗಿದ್ದು ಹೇಗೆ?