ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ ಆಯ್ಕೆಯಾದ ಮುಖ್ಯಮಂತ್ರಿಯೊಬ್ಬರ ಅಧಿಕೃತ ಚಟುವಟಿಕೆಗಳನ್ನು ನಿಯಂತ್ರಿಸಲು ನ್ಯಾಯಾಂಗ ಮುಂದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, “ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಕೋರ್ಟ್ ಅನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಬಾರದು” ಎಂದು ತರಾಟೆಗೆ ತೆಗೆದುಕೊಂಡಿತಲ್ಲದೆ, ನ್ಯಾಯಾಲಯದ ಆಚೆಗಿನ ರಾಜಕೀಯ ಆಖಾಡದಲ್ಲಿಯೇ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವಂತೆ ವಿರೋಧ ಪಕ್ಷವಾದ ಡಿಎಂಕೆ ಗೆ ಸಲಹೆ ನೀಡಿದೆ.
ಕರೂರ್ ದುರಂತದಲ್ಲಿ ಮೃತಪಟ್ಟ 41 ಜನರ ಕುಟುಂಬಗಳನ್ನು ಖುದ್ದಾಗಿ ಭೇಟಿ ಮಾಡಿ, ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡುವುದಾಗಿ ಮುಖ್ಯಮಂತ್ರಿ ವಿಜಯ್ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಈ ಅರ್ಜಿಯನ್ನು ಸಲ್ಲಿಸಿತ್ತು.
ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ
ಡಿಎಂಕೆ ಅರ್ಜಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಪೀಠವು, ಮುಖ್ಯಮಂತ್ರಿಯವರ ಅಧಿಕೃತ ಕರ್ತವ್ಯ ಮತ್ತು ಪ್ರವಾಸಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಎಂದು ಹೇಳಿದೆ. ಅಲ್ಲದೆ, ನ್ಯಾಯಾಲಯವನ್ನು ರಾಜಕೀಯ ಜಟಾಪಟಿಯ ತಾಣವಾಗಿ ಪರಿವರ್ತಿಸಬೇಡಿ ಎಂದು ಡಿಎಂಕೆ ಪರ ವಕೀಲರಿಗೆ ಕಿವಿಮಾತು ಹೇಳಿದೆ. ದುರಂತಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕರು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದ್ದರೆ, ಅದಕ್ಕೆ ರಾಜಕೀಯವಾಗಿಯೇ ತಿರುಗೇಟು ನೀಡಲು ಡಿಎಂಕೆ ಮುಕ್ತವಾಗಿದೆ. ಅದನ್ನು ಬಿಟ್ಟು ನ್ಯಾಯಾಂಗದ ಹಸ್ತಕ್ಷೇಪ ಕೋರುವುದು ಸರಿಯಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ವರ್ಷ ಟಿವಿಕೆ ಪಕ್ಷದ ಬೃಹತ್ ರ್ಯಾಲಿ ವೇಳೆ ನಡೆದ ಭೀಕರ ಅಪಘಾತದಲ್ಲಿ 41 ಜನರು ಜೀವ ಕಳೆದುಕೊಂಡಿದ್ದರು. ಈ ದುರಂತದ ತನಿಖೆ ಪ್ರಸ್ತುತ ನಡೆಯುತ್ತಿದ್ದು, ಈಗ ಮುಖ್ಯಮಂತ್ರಿ ವಿಜಯ್ ಅವರು ಅಲ್ಲಿಗೆ ಭೇಟಿ ನೀಡಿದರೆ ತನಿಖೆಯ ಹಾದಿ ತಪ್ಪಬಹುದು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದು ಎಂದು ಡಿಎಂಕೆ ತನ್ನ ಅರ್ಜಿಯಲ್ಲಿ ವಾದಿಸಿತ್ತು. ಹೀಗಾಗಿ ಮುಖ್ಯಮಂತ್ರಿಯವರು ಕರೂರ್ಗೆ ಭೇಟಿ ನೀಡಿ ಪರಿಹಾರ ವಿತರಿಸುವ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಕೋರಿತ್ತು. ಆದರೆ, ಇಂತಹ ವಿಷಯಗಳಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವ ಅಗತ್ಯವೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ನ್ಯಾಯಾಲಯದಿಂದ ಹಸಿರು ನಿಶಾನೆ ಸಿಕ್ಕಿರುವುದರಿಂದ ಮುಖ್ಯಮಂತ್ರಿ ವಿಜಯ್ ಅವರು ನಿಗದಿಯಂತೆ ಕರೂರ್ಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ, ದುರಂತದಲ್ಲಿ ಮಡಿದವರ ಪ್ರತಿ ಕುಟುಂಬಕ್ಕೆ ತಲಾ ₹10 ಲಕ್ಷ ರೂಪಾಯಿ ಪರಿಹಾರ ಧನ ವಿತರಿಸಲಾಗುವುದು. ಇದರೊಂದಿಗೆ ಸಂತ್ರಸ್ತ ಕುಟುಂಬದ ಒಬ್ಬರಿಗೆ ಅರ್ಹತೆಗೆ ತಕ್ಕಂತೆ ಸರ್ಕಾರಿ ಉದ್ಯೋಗ ನೀಡುವ ಮಹತ್ವದ ಪರಿಹಾರ ಯೋಜನೆಗೂ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ.


