ಆರ್ಥಿಕ ದುರ್ಬಲ ವರ್ಗಗಳಿಗೆ (EWS) 10% ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಪರವಾಗಿನ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠವು ಇಡಬ್ಲ್ಯುಎಸ್ ಮೀಸಲಾತಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮೇ 9ರಂದು ಆರಂಭಿಸಲಿದೆ.
ಆರ್ಥಿಕ ದುರ್ಬಲ ವರ್ಗಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ 10 ಮೀಸಲಾತಿ ನೀಡಲು ಕೇಂದ್ರ ಸರ್ಕಾರವು ಸಂವಿಧಾನದ 103ನೇ ವಿಧಿಯ ತಿದ್ದುಪಡಿ ಮಾಡಿತ್ತು. ಈ ಇಡಬ್ಲ್ಯುಎಸ್ ಮೀಸಲಾತಿ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿತ್ತು.
ಕಳೆದ ವರ್ಷ ನವೆಂಬರ್ 7ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ಯು ಯು ಲಲಿತ್, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಎಸ್ ರವೀಂದ್ರ ಭಟ್, ಬೇಲಾ ಎಂ ತ್ರಿವೇದಿ ಮತ್ತು ಜೆ ಬಿ ಪರ್ದಿವಾಲಾ ಅವರ ಐವರು ಸದಸ್ಯರ ಪೀಠ ಆರ್ಥಿಕ ದುರ್ಬಲ ವರ್ಗಗಳಿಗೆ ಮೀಸಲಾತಿ ಸಂಬಂಧ ವಿಚಾರಣೆ ನಡೆಸಿತ್ತು. ಸಂವಿಧಾನದ ಈ ತಿದ್ದುಪಡಿಯನ್ನು 3:2ರ ಬಹುಮತದ ಮೂಲಕ ಮಾನ್ಯ ಮಾಡಿತು. ಈ ತಿದ್ದುಪಡಿಯು ಯಾವುದೇ ಕಾನೂನು ಉಲ್ಲಂಘಿಸಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು. ಮೂವರು ನ್ಯಾಯಮೂರ್ತಿಗಳು ಮೀಸಲಾತಿಯನ್ನು ಎತ್ತಿಹಿಡಿದರು. ಆದರೆ ನ್ಯಾ.ರವೀಂದ್ರ ಭಟ್ ಅವರು ಮೀಸಲಾತಿ ವಿರುದ್ಧ ತೀರ್ಪು ನೀಡಿದ್ದರು.
ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಮರುಪರಿಶೀಲಿಸುವಂತೆ ಡಿಎಂಕೆ ಸೇರಿ ಇತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಮತ್ತು ತನ್ನ ತೀರ್ಪನ್ನು ಮರು ಪರಿಶೀಲಿಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ಇದನ್ನೂ ಓದಿ: ಹತಾಶೆಯ ಬಿಜೆಪಿ ಮುಖಂಡರ ಬೆದರಿಕೆಯ ಭಾಷೆ!