Homeಮುಖಪುಟಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ 'ಜೈ ಭೀಮ್'...

ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಎಲ್ಲರಿಗೂ ಸಮಾನ ನ್ಯಾಯಕ್ಕೆ ನಿಲ್ಲಬೇಕಿದ್ದ ಪ್ರಭುತ್ವದ ಸಂಸ್ಥೆಗಳು ಶಿಥಿಲಗೊಂಡಾದ ಅದಕ್ಕೆ ಮುಖ್ಯವಾಗಿ ಕಾರಣವಾಗಿರುವ ಶೋಷಕ ಸಮುದಾಯದ ವ್ಯಕ್ತಿಗಳ ಹಾದಿ ಯಾವುದಾಗಿರಬೇಕು ಎಂದು ಎಚ್ಚರಿಸುವ ಸಿನಿಮಾ ಜೈ ಭೀಮ್

- Advertisement -
- Advertisement -

1871 ರಲ್ಲಿ ಬ್ರಿಟಿಷರು ಜಾರಿಗೆ ತಂದ ಕ್ರಿಮಿನಲ್ ಟ್ರೈಬ್ಸ್ ಆಕ್ಟ್‌‍ಗೆ (ಸಿಟಿಎ- ಅಪರಾಧಿ ಬುಡಕಟ್ಟು ಕಾಯ್ದೆಗೆ) 2021ಕ್ಕೆ 150 ವರ್ಷ ತುಂಬುತ್ತದೆ. ಮುಖ್ಯವಾಗಿ 1857ರ ದಂಗೆಯನ್ನು ಹತ್ತಿಕ್ಕಲು, ಯಾವುದೇ ಗಂಭೀರ ಅಧ್ಯಯನ ಇಲ್ಲದೆ, ಬ್ರಿಟಿಷ್ ಅಧಿಕಾರಿ ಜನರಲ್ ವಿಲಿಯಮ್ ಹೆನ್ರಿ ಸ್ಲೀಮನ್ ಸೇರಿದಂತೆ ಅಂದಿನ ಹಲವು ಅಧಿಕಾರಿಗಳು ನೂರಾರು ಅಲೆಮಾರಿ ಸಮುದಾಯಗಳನನ್ನು ಸಿಟಿಎ ಅಡಿ ತಂದು, ಅವರನ್ನು ಅಪರಾಧಿಗಳು ಎಂದು ಹಣೆಪಟ್ಟಿ ಕಟ್ಟಿ, ಅವರನ್ನು ಬಂಧಿಸುವುದರಿಂದ ಹಿಡಿದು, ‘ಸುಧಾರಣಾ’ ಶಿಬಿರಗಳಲ್ಲಿ ಕೂಡಿ ಹಾಕಿ ಕಿರುಕುಳ, ಹಿಂಸೆಗೆ ಗುರಿಯಾಗುವಂತೆ ಮಾಡಿದ್ದು ಇತಿಹಾಸವಷ್ಟೇ ಅಲ್ಲ! ಸ್ವತಂತ್ರಾ ನಂತರವು ಆ ಸಮುದಾಯಗಳ ಬಗ್ಗೆ ಅದೇ ಮನಸ್ಥಿತಿ ಬೇರೆಬೇರೆ ರೂಪಗಳಲ್ಲಿ ಉಳಿದುಕೊಳ್ಳುವುದಕ್ಕೆ ಕಾರಣವಾಯಿತು. 1952ರಲ್ಲಿ ಈ ಸಿಟಿಎಗೆ ಇತಿಶ್ರೀ ಹಾಡಲಾಯಿತಾದರೂ, ಅದರ ಬದಲು ಹ್ಯಾಬಿಚುವಲ್ ಆಫೆಂಡರ್ ಆಕ್ಟ್‍ಅನ್ನು (ರೂಢಿಗತ ಅಪರಾಧಿಗಳ ಕಾಯಿದೆ) ತಂದು, ಈ ಅಲೆಮಾರಿ ಸಮುದಾಯಗಳ ವ್ಯಕ್ತಿಗಳನ್ನು ಗುರಿಯಾಗಿಸಲಾಯಿತು. ಇದು ಇಂದಿಗೂ ಕೂಡ ಮುಂದುವರೆದಿರುವುದು ದುರಂತವಷ್ಟೇ!

ಕೆಲವೇ ಕೆಲವು ವರ್ಷಗಳ ಹಿಂದೆ ಇಂತಹ “ರೂಡಿಗತ ಅಪರಾಧಿ”ಗಳನ್ನು ಯಾವ ರೀತಿ ನಿಯಂತ್ರಿಸಬೇಕು ಎನ್ನುವ ಬಗ್ಗೆ ಹಲವು ರಾಜ್ಯಗಳಲ್ಲಿ ಪೊಲೀಸ್ ತರಬೇತಿ ಇತ್ತು ಎನ್ನುವುದು ದಾಖಲಾಗಿದೆ. ಕಪೋಲಕಲ್ಪಿತ ಆಧಾರದಡಿಯಲ್ಲಿ ಅಲೆಮಾರಿ ಸಮುದಾಯದ ಲಕ್ಷಾಂತರ ಜನ ಕಳಂಕ ಹೊತ್ತು ಬದುಕುತ್ತಿರುವುದಲ್ಲದೆ, ತಾವು ಮಾಡಿರದ ಅಪರಾಧವನ್ನು ಹೊರಿಸಿಕೊಳ್ಳುವ ಹಿಂಸೆಗೆ ಭ್ರಷ್ಟ ಪೊಲೀಸ್ ವ್ಯವಸ್ಥೆಯಿಂದ ಗುರಿಯಾಗಿದ್ದಾರೆ. ಈ ಕಥೆಗಳು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಅಥವಾ ಕಥಾಜಗತ್ತಿನಲ್ಲಿ ಮೂಡಿಬಂದದ್ದು ಅಪರೂಪ. ಸೆಡಿಶನ್ ರೀತಿಯಲ್ಲಿಯೇ ಇಂಥಹ ದೌರ್ಜನ್ಯದ ವಸಾಹತುಶಾಹಿಯ ಪಳೆಯುಳಿಕೆ ಕಾನೂನುಗಳು ಭಾರತೀಯ ಸಮಾಜದಲ್ಲಿ ಒಪ್ಪಿಗೆ ಪಡೆದು ಮುಂದುವರೆದಿವೆ.

ಹೆಚ್ಚಾಗಿ ತಮಿಳುನಾಡಿನಲ್ಲಿ ಇರುವ (ಕರ್ನಾಟಕ, ಕೇರಳ, ಪುದುಚೆರಿಯಲ್ಲೂ ಇದ್ದಾರೆ) ಇರುಳರು ಕೂಡ ಒಂದು ಅಂತಹ ಅರೆ ಅಲೆಮಾರಿ ಸಮುದಾಯ. ರಾಜಾಕಣ್ಣು (ಕೆ ಮಣಿಗಂಡನ್) ಮತ್ತು ಸೆಂಗಿಣಿ (ಲಿಜೋಮೋಲ್ ಜೋಸ್) ತಾವು ಅಕ್ಷರಸ್ಥರಾಗಿಲ್ಲದೆ ಇದ್ದರೂ, ವಯಸ್ಕರ ಶಿಕ್ಷಣದಲ್ಲಿ ಕಲಿಯುತ್ತಿರುವ, ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿರುವ, ಗುಡಿಸಲಿನ ಬದಲು ಇಟ್ಟಿಗೆ ಗೋಡೆಯ ಮನೆ ಕಟ್ಟಿಕೊಳ್ಳಲು ಕನಸು ಕಾಣುತ್ತಿರುವ ಪುಟ್ಟ ಕುಟುಂಬ. ಹೊಲ ಗದ್ದೆಗಳಲ್ಲಿ, ಮಿಲ್ ಗಳಲ್ಲಿ, ಇಟ್ಟಿಗೆ ಬೇಯಿಸುವಲ್ಲಿ ಕೂಲಿ ಕೆಲಸ ಮಾಡುವ, ಹಾವು ಹಿಡಿಯುವ, ಹಾವು ಕಚ್ಚಿದವರಿಗೆ ಪಾರಂಪರಿಕ ಚಿಕಿತ್ಸೆ ನೀಡುವ, ಗದ್ದೆಗಳ ಬದುಗಳಲ್ಲಿ ಇಲಿ ಹಿಡಿದು ತಿನ್ನುವ ಇರುಳ ಸಮುದಾಯ ಸಿಟಿಎ ಕಾಯ್ದೆ ತೊಲಗಿ ಅರ್ಧ ದಶಕ ಕಳೆದಿದ್ದರೂ, ವ್ಯವಸ್ಥಿತ ನೆಲೆ ಇಲ್ಲದೆ, ರೇಶನ್ ಕಾರ್ಡ್ ಸೇರಿದಂತೆ ಯಾವುದೇ ಗುರುತಿನ ಚೀಟಿ ಇಲ್ಲದೆ, ಪರಿಶಿಷ್ಟ ವರ್ಗದ ಪ್ರಮಾಣಪತ್ರ ಪಡೆಯಲು ಸೋತಿರುವ ಸಮುದಾಯ. ಈ ಸಮುದಾಯವನ್ನು ಶೋಷಿಸುವ ಕಥೆ ಆಯ್ದುಕೊಂಡಿರುವ ‘ಜೈಭೀಮ್’ ಸಿನಿಮಾದ ಆರಂಭಿಕ ದೃಶ್ಯವೇ ಪ್ರೇಕ್ಷಕನನ್ನು ತನ್ನೊಳಗೆ ಎಳೆದುಕೊಳ್ಳುತ್ತದೆ.

ತಮ್ಮ ಜೈಲುವಾಸ ಮುಗಿಸಿ ಬಿಡುಗಡೆಯಾಗುತ್ತಿರುವ ವ್ಯಕ್ತಿಗಳ ಜಾತಿ ಕೇಳುತ್ತಾ ಹೋಗುವ ಪೊಲೀಸ್ ಅಧಿಕಾರಿ, ಮೇಲ್ಜಾತಿ ಜನರನ್ನೆಲ್ಲಾ ಕಳುಹಿಸಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಬುಡಕಟ್ಟುಗಳಿಗೆ ಸೇರಿದ ವ್ಯಕ್ತಿಗಳನ್ನು ಪ್ರತ್ಯೇಕವಾಗಿ ನಿಲ್ಲಿಸುತ್ತಾನೆ. ಅವರನ್ನೆಲ್ಲಾ ಇಲ್ಲಿಯವರೆಗೂ ಬಗೆಹರಿಯದ ಪ್ರಕರಣಗಳಲ್ಲಿ ಫಿಟ್ ಮಾಡಲು ಮತ್ತೆ ಎಳೆದುಕೊಂಡು ಹೋಗಲಾಗುತ್ತದೆ. ಅಪರಾಧೀಕರಣಗೊಂಡಿರುವ, ಕೊಳೆತು ನಾರುವ ವ್ಯವಸ್ಥೆಯ ಕಥೆಯನ್ನು ಹೇಳುವೆ ಎಂದು ನಿರ್ದೇಶಕ ಟಿ ಜ್ಞಾನವೇಲು ಬೋಲ್ಡ್ ಆಗಿ ಆರಂಭದಲ್ಲಿಯೇ ಘೋಷಿಸಿಕೊಳ್ಳುತ್ತಾರೆ.

ಇರುಳ ಸಮುದಾಯದ ಬದುಕನ್ನು, ಜೀವನ ದೃಷ್ಟಿಯನ್ನು ಕಟ್ಟಿಕೊಡುವ ದೃಶ್ಯಗಳಿಂದ ಸಿನಿಮಾ ಮುಂದುವರೆಯುತ್ತದೆ. ‘ಸಾವುಕಾರ’ನೊಬ್ಬನ ಮನೆಯಲ್ಲಿ ನಾಗರಹಾವನ್ನು ಹಿಡಿಯುವ ರಾಜಾಕಣ್ಣುವಿಗೆ ಅದನ್ನು ಸಾಯಿಸುವಂತೆ ಹೇಳಿದಾಗ, ಅದನ್ನು ನಿರಾಕರಿಸಿ ಅದನ್ನು ರಕ್ಷಿಸಿ ಕಾಡಿಗೆ ಬಿಡುತ್ತಾನೆ. ಮನುಷ್ಯರಿಂದ ದೂರವಿರುವಂತೆ ಹಾವಿಗೆ ತಿಳಿಹೇಳುತ್ತಾನೆ. ‘ಮುಖ್ಯವಾಹಿನಿ’ ಎಂದು ಹೇಳಿಕೊಳ್ಳುವ ಸಮುದಾಯ ಯಾವೆಲ್ಲಾ ಸ್ಥರಗಳಲ್ಲಿ ಭ್ರಷ್ಟಗೊಂಡಿದೆ, ಸ್ವಾರ್ಥಿಯಾಗಿದೆ ಎಂಬುದನ್ನು ಈ ಸಣ್ಣಪುಟ್ಟ ದೃಶ್ಯಗಳೇ ನಿರೂಪಿಸುತ್ತಾ ಮುಂದುವರೆಯುತ್ತವೆ. ಅಲೆಮಾರಿ ಸಮುದಾಯದ ಅಲೆಮಾರಿತನವನ್ನೇ ಅಪರಾಧೀಕರಣಗೊಳಿಸಲು ಪ್ರಭುತ್ವ ಪ್ರಯತ್ನಿಸಿದ್ದನ್ನು ಮೆಟ್ಟಿ ಈಗ ಆ ಸಮುದಾಯ ನೆಲೆ ನಿಲ್ಲಲು ಪ್ರಯತ್ನಿಸುವಾಗ ಅದಕ್ಕೆ ಅಡ್ಡಗಾಲು ಹಾಕುತ್ತಿರುವುದು ಕೂಡ ಅದೇ ಪ್ರಭುತ್ವವೇ. ಅದಕ್ಕೆ ಶ್ರೇಣೀಕೃತ ಸಮಾಜ ಕೂಡ ಕೈಜೋಡಿಸಿದೆ. ತಮ್ಮ ಹೊಲಗದ್ದೆಗಳಲ್ಲಿ ಮತ್ತು ಇತರ ವ್ಯವಹಾರಗಳಲ್ಲಿ ಕೂಲಿಗಾಗಿ ದುಡಿಯುವ ಈ ದುಡಿವ ವರ್ಗದ ಸ್ವಾವಲಂಬನೆಗೆ ಅಡ್ಡಗಾಲು ಹಾಕಲು ಆರ್ಥಿಕ ಕಾರಣವೂ ಅಲ್ಲಿ ಸೇರಿದೆ.

ಹೀಗೆ, ಸ್ವಾವಲಂಬನೆಗೆ ಹವಣಿಸುತ್ತಿರುವ ರಾಜಾಕಣ್ಣುನನ್ನು ಪೊಲೀಸರು ಕಳ್ಳತನದ ಕೇಸಿನಲ್ಲಿ ಸಿಕ್ಕಿಸುತ್ತಾರೆ. ನ್ಯಾಯಯುತವಾಗಿ ಬದುಕಗೊಡಬಿಡದ ಆಡಳಿತ ವ್ಯವಸ್ಥೆಯ ದೌರ್ಜನ್ಯದ ದೃಶ್ಯಗಳು, ಪೊಲೀಸರು ನೀಡುವ ಚಿತ್ರಹಿಂಸೆಯ ದೃಶ್ಯಗಳು ವೆಟ್ರಿಮಾರನ್ ನಿರ್ದೇಶನದ ‘ವಿಸಾರಣೈ’ ಸಿನಿಮಾವನ್ನು ನೆನಪಿಸುತ್ತವೆ. ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕನ್ನು ನೀಡುವ, ಎಲ್ಲರಿಗೂ ಸಮಾನ ನ್ಯಾಯದ ಹಕ್ಕನ್ನು ನೀಡುವ ಸಂವಿಧಾನದ ಆಶಯವನ್ನು ಮಣ್ಣುಗೂಡಿಸಿ ಹೆಮ್ಮರವಾಗಿ ಬೆಳೆದ ಆಡಳಿತ ವ್ಯವಸ್ಥೆಯ ಕ್ರೌರ್ಯವನ್ನು ಪ್ರೇಕ್ಷಕರಿಗೆ ದಾಟಿಸಲು ನಿರ್ದೇಶಕ ಪ್ರತ್ನಿಸಿದ್ದಾರೆ. ಎಸ್ ಐ ಗುರುಮೂರ್ತಿ ನೀಡುವ ಚಿತ್ರಹಿಂಸೆಯನ್ನು ತಾಳಲಾರದೆ, ರಾಜಾಕಣ್ಣುವಿನ ಜೊತೆಗೆ ಬಂಧಿತನಾಗಿರುವ ಸಂಬಂಧಿ, ನಾವು ತಪ್ಪು ಮಾಡದೆ ಇದ್ದರೂ ಒಪ್ಪಿಕೊಳ್ಳೋಣ ಎಂದಾಗ, “ಗಾಯಗಳು ವಾಸಿಯಾಗುತ್ತವೆ, ಆದರೆ ಕಳ್ಳ ಎಂಬ ಹಣೆಪಟ್ಟಿ ಉಳಿದುಕೊಂಡುಬಿಡುತ್ತದೆ” ಎಂದು ರಾಜಾಕಣ್ಣು ಹೇಳುವ ಮಾತುಗಳು ಪ್ರಭುತ್ವದ ಜೊತೆಗೆ ಬೆಸೆದುಹೋಗಿರುವ ಮುಖ್ಯವಾಹಿನಿ ಸಮಾಜದ ಮುಖಕ್ಕೆ ಬಾರಿಸಿದಂತೆ ಭಾಸವಾಗುತ್ತದೆ. ಆದರೆ ಪ್ರಭುತ್ವದ ಹಿಂಸೆಗೆ ತಡೆಯಿದೆಯೇ?

ಮುಂದಿನ ಘಟ್ಟದಲ್ಲಿ, ಚಂದ್ರು ಎಂಬ ವಕೀಲ ಸೆಂಗಿಣಿಯ ಮೂಲಕ ತನ್ನ ಗಂಡನನ್ನು ಹಾಜರುಪಡಿಸುವಂತೆ ಹಾಕುವ ಹೇಬಿಯಸ್ ಕಾರ್ಪಸ್ ಪ್ರಕರಣದ ವಿಚಾರಣೆಯಿಂದ ಸಿನಿಮಾ ಮುಂದುವರೆಯುತ್ತದೆ. ತಮಿಳುನಾಡಿನ ಖ್ಯಾತ ನಟ ಸೂರ್ಯ ತನ್ನ ಸೆಲೆಬ್ರಿಟಿ ಸ್ಟೇಟಸ್ ನಿಂದ ಹೊರಬಂದು ಇಂಥಹ ಒಂದು ಪಾತ್ರವನ್ನು ನಿರ್ವಹಿಸಿದ್ದಾರೆ. ಅಲ್ಲದೆ ಚಂದ್ರು ಎಂಬ ನಿಜ ಜೀವನದ ಹೋರಾಟಗಾರ ವಕೀಲನ ಕಥೆಯೂ ಇದಾಗಿರುವುದರಿಂದ, ಈ ಪಾತ್ರ ಕಟ್ಟುವಲ್ಲಿ ಏಕತಾನತೆ ಎದ್ದು ಕಾಣುತ್ತದೆ. ಮೊದಲಿನಿಂದಲೂ ಶೋಷಿತರ ಪರವಾಗಿ ಕೆಲಸ ಮಾಡುವ ವಕೀಲನಾಗಿ ಕಟ್ಟಿರುವ ಪಾತ್ರದ ಒಟ್ಟಾರೆ ಹರವಿನಲ್ಲಿ ಸಿನಿಮಾದುದ್ದಕ್ಕೂ ಯಾವುದೇ ಬದಲಾವಣೆ ಮೂಡುವುದಿಲ್ಲ. ಆ ನಿಟ್ಟಿನಲ್ಲಿ ಭಾರತೀಯ ಸಿನಿಮಾಗಳ ಸಿದ್ಧಸೂತ್ರದ ಪಾತ್ರದಂತೆ ಇದು ಕೂಡ ಒಂದಾಗಿ ಉಳಿದುಕೊಳ್ಳುತ್ತದೆ. ಆದರೆ ಆ ಪಾತ್ರದ ಮೂಲಕ ಕಟ್ಟಿಕೊಡುವ ಆಶಯ ಪ್ರೇಕ್ಷಕನ ಮನಸ್ಸಿನಲ್ಲಿ ಉಳಿದುಕೊಳ್ಳುತ್ತದೆ.

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ, ಪ್ರಜಾಪ್ರಭುತ್ವವನ್ನು ಎಲ್ಲರ ಒಳಿತಿಗಾಗಿ ಕಟ್ಟಿಕೊಂಡಿದ್ದರೂ, ಹಳೆಯ ಶೋಷಣೆಯ ವ್ಯವಸ್ಥೆ ಆಧುನಿಕ ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿಯೂ ಉಳಿದುಹೋಗಿರುವುದರಿಂದ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ತುಳಿಯಬೇಕಿರುವ ಹಾದಿಯಂತೆ ಚಂದ್ರು ಪಾತ್ರ ನಿಲ್ಲುತ್ತದೆ. ಅಂಬೇಡ್ಕರ್ ಅವರು ಸಮಾಜದಲ್ಲಿ ಪ್ರಜಾಪ್ರಭುತ್ವ ಸಾಧಿಸದೆ ಹೋದರೆ ರಾಜಕೀಯ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದು ಕೂಡ ಕಷ್ಟ ಎಂದು ಊಹಿಸಿದ್ದರು. ಇದಕ್ಕೆ ಅವರು ಭ್ರಾತೃತ್ವದ ಮಹತ್ವವನ್ನು ಒತ್ತಿ ಹೇಳಿದ್ದರು. ಈ ಭ್ರಾತೃತ್ವವನ್ನು ಮೈಗೂಡಿಸಿಕೊಳ್ಳಲು ಭಾರತೀಯ ಸಮಾಜ ಸೋತಿದ್ದೆಲ್ಲಿ? ಇದನ್ನು ಇನ್ನಾದರೂ ಸರಿಪಡಿಸಿಕೊಳ್ಳಬಹುದೇ? ನಿಜ ಜೀವನದ ಚಂದ್ರು ಮತ್ತು ಸಿನಿಮಾದ ಚಂದ್ರು ಪಾತ್ರ ಆ ನಿಟ್ಟಿನಲ್ಲಿ ಒಂದು ಸಣ್ಣ ಹೆಜ್ಜೆಯಂತೆ ಭಾಸವಾಗುತ್ತದೆ. ಪ್ರಭುತ್ವದ ಸಂಸ್ಥೆಗಳು ವಿಪರೀತವಾಗಿ ಬೆಳೆದಿರುವುದನ್ನು ಸರಿಪಡಿಸುವ ಕರ್ತವ್ಯ ಯಾರದ್ದು ಎಂಬುದನ್ನು ನೆನಪಿಸುತ್ತವೆ. ಅದೇ ಸಮಯದಲ್ಲಿ ತನ್ನ ಪ್ರಿವಿಲೆಜ್ ಅನ್ನು ಅರ್ಥ ಮಾಡಿಕೊಂಡು ಅದು ‘ದಾನ-ದಾಕ್ಷಿಣ್ಯ’ವಾಗದಂತೆ ಎಚ್ಚರಿಕೆ ವಹಿಸುವುದೂ ಮುಖ್ಯವಾಗುತ್ತದೆ. ‘ನಿನ್ನ ಫೀಸ್ ಕೊಡಲು ನನ್ನ ಬಳಿ ಹಣವಿಲ್ಲ’ ಎಂದು ಸೆಂಗಿಣಿ ವಕೀಲ ಚಂದ್ರುವಿಗೆ ಹೇಳಿದಾಗ, ‘ಹಾವು ಕಚ್ಚಿಸಿಕೊಂಡು ನಿನ್ನ ಬಳಿ ಚಿಕಿತ್ಸೆಗೆ ಬಂದಾಗ ಹೇಗೆ ನೀನು ಹಣ ಕೇಳುವುದಿಲ್ಲವೋ ಅದೇ ರೀತಿ ನನ್ನದು’ ಎಂದು ತನ್ನ ಹೆಚ್ಚುಗಾರಿಕೆಯೇನಿಲ್ಲ ಎಂಬುದನ್ನು ತನಗೇ ತಾನೇ ಧೃಢಪಡಿಸಿಕೊಳ್ಳುವ ದೃಶ್ಯ ಬಂದುಹೋಗುತ್ತದೆ. ಆಗ ಸೆಂಗಿಣಿ, ತನಗೆ ದೌರ್ಜನ್ಯ ಎಸಗಿದ ಪೊಲೀಸ್ ಗೆ ಹಾವು ಕಚ್ಚಿದರೂ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಹೇಳುವ ಮಾತುಗಳು ಮನಸ್ಸಿನಲ್ಲಿ ಉಳಿದುಕೊಳ್ಳುತ್ತವೆ!

ಪೊಲೀಸ್ ಟಾರ್ಚರ್ ಬಗ್ಗೆ ವಿಚಾರಣೆ ನಡೆಸಲು ಕೋರ್ಟ್ ಒಂದು ಸಮಿತಿ ಮಾಡಿದಾಗ ಅದನ್ನು ಮುನ್ನಡೆಸಲು ಬರುವ ಐಜಿ ಪೆರುಮಾಳ್ ಸ್ವಾಮಿ (ಪ್ರಕಾಶ್ ರೈ) ಪಾತ್ರದಲ್ಲಿ ಆಗುವ ಚಲನೆಯನ್ನು ತೋರಿಸುವ ಸಿನಿಮಾ ಆಶಯ ಸದುದ್ದೇಶದ್ದಾಗಿದ್ದರೂ, ಆ ದೃಶ್ಯಗಳು ಬಹಳ ಆತುರದಲ್ಲಿ ಮೂಡಿಹೋಗುವ ಪರಿಣಾಮ, ಅದು ಸರಿಯಾಗಿ ಪ್ರೇಕ್ಷಕನಲ್ಲಿ ದಾಖಲಾಗುತ್ತದೆಯೇ ಎಂಬ ಸಂದೇಹ ಉಳಿಯುತ್ತದೆ. ಯಾವುದೇ ಒಂದು ಪ್ರಕರಣದಲ್ಲಿ ಕಾನೂನಿನಾಚೆಗೆ ಆರೋಪಿಯೊಬ್ಬನ ಬೆರಳು ಮುರಿದ ಉದಾಹರಣೆ ಹೇಳಿ, ಪೊಲೀಸರು ಕೆಲವೊಮ್ಮೆ ‘ಸರ್ವಾಧಿಕಾರಿ’ಗಳಾಗಿದ್ದರೆ ಮಾತ್ರ ನ್ಯಾಯ ಸಾಧ್ಯ ಎಂಬ ನಂಬಿಕೆಯುಳ್ಳ ಪೊಲೀಸ್ ಅಧಿಕಾರಿ, ತನ್ನ ಮೇಲಧಿಕಾರಿಗಳ ಆಜ್ಞೆಯನ್ನೂ ಧಿಕ್ಕರಿಸಿ, ತನ್ನದೇ ಇಲಾಖೆಯ ದೌರ್ಜನ್ಯವನ್ನು ಕೋರ್ಟ್ ಮುಂದೆ ಬಯಲು ಮಾಡುತ್ತಾನೆ. ಈ ಬದಲಾವಣೆಯನ್ನು ಹಿಡಿದಿಡುವ ಈ ಭಾಗವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಟ್ಟಿಕೊಡುವ ಅಗತ್ಯವಿತ್ತು ಎನ್ನಿಸದೆ ಇರದು.

ಎಲ್ಲರಿಗೂ ಸಮಾನ ನ್ಯಾಯಕ್ಕೆ ನಿಲ್ಲಬೇಕಿದ್ದ ಪ್ರಭುತ್ವದ ಸಂಸ್ಥೆಗಳು ಶಿಥಿಲಗೊಂಡಾದ ಅದಕ್ಕೆ ಮುಖ್ಯವಾಗಿ ಕಾರಣವಾಗಿರುವ ಶೋಷಕ ಸಮುದಾಯದ ವ್ಯಕ್ತಿಗಳ ಹಾದಿ ಯಾವುದಾಗಿರಬೇಕು ಎಂದು ಪ್ರಶ್ನಿಸಿಕೊಂಡು ಅದನ್ನು ಅನ್ವೇಷಿಸುವಂತೆ ಮುಂದುವರೆದಿರುವ ‘ಜೈ ಭೀಮ್’ ಸಿನಿಮಾ, ಡಾ. ಬಿ ಆರ್ ಅಂಬೇಡ್ಕರ್ ಅವರ ಕನಸನ್ನು ಸಾಕಾರಗೊಳಿಸಲು ನಿರಾಕರಿಸಿ ನಿರ್ಮಿಸಿಕೊಂಡಿರುವ ತೊಡರುಗಳನ್ನು ಹೆಚ್ಚು ನೆನಪಿಸುತ್ತದೆ. ಇಂತಹ ಕ್ರೂರ ಪ್ರಭುತ್ವದಿಂದ ವಿಮೋಚನೆಗೊಳ್ಳಲು ಪ್ರಿವೆಲೆಜ್ ಹೊಂದಿರುವ ವ್ಯಕ್ತಿಗಳ ಕರ್ತವ್ಯವನ್ನು ಕೂಡ ನೆನಪಿಸುತ್ತದೆ. ಈ ನಿಟ್ಟಿನಲ್ಲಿ ಈ ಕಾಲಕ್ಕೆ ಸ್ಪಂದಿಸಿರುವ ಪ್ರಮುಖ ಚಲನಚಿತ್ರವಾಗಿ ‘ಜೈ ಭೀಮ್’ ಕಾಣಿಸಿಕೊಳ್ಳುತ್ತದೆ.

  • ಗುರುಪ್ರಸಾದ್ ಡಿ ಎನ್

(ಸಂಪಾದಕರು, ನ್ಯಾಯಪಥ ವಾರಪತ್ರಿಕೆ)


ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸ್ವಾತಂತ್ರ್ಯ ಬಂದು 70 ವರ್ಷ ಕಳೆದು ಕೊಳೆತು ನಾರುತ್ತಿರುವ ಸಮಾಜ ಎಂದು ಹೆಡ್ಡಿಂಗ್ ನೀಡುತ್ತಾರೆ ಅಂದರೆ ಈ ಲೇಖಕ ಇಂಥ ಫ್ಯೂಡಲಿಜಮ್ ನಿಂದ ಸಾಗುತ್ತಿದ್ದಾನೆ ಎಂದು ತಿಳಿಯುತ್ತೆ…75 ವರ್ಷವಳಲ್ಲಿ ಲೂಟಿ ವಂಚನೆ ಗರಿಬಿ ಹಟವೋ 20 ಅಂಶ ಕಾರ್ಯಕ್ರಮ, ಪಂಚ್ ವಾರ್ಷಿಕ ಯೋಜನೆ ಎನ್ನುವ ಬಿಳಿ ಆನೆ ಇದರಲ್ಲೇ ಕಾಲ ಕಳೆದ ಆಪ್ಪರ್ ಕ್ಯಾಸ್ಟ್ ಬ್ರಾಹ್ಮಣ ಪಂಡಿತ್ ನೆಹರು ವಂಶ ದೇಶವನ್ನು ಅರಾಜಕತೆ ಕೋಮು ವೈಷಮ್ಯ ಇದೆ ಮಾಡಿದೆ..ಈಗ 2014 ರಿಂದ ಸ್ವಲ್ಪ ಬದಲಾವಣೆ ಗಾಳಿ ಆರಂಭ ಆಗಿದ್ದು ಇದು ಒಬ್ಬ ಹಿಂದುಳಿದ ಸಮಾಜದ ನಾಯಕ ನಿಂದ ಎನ್ನುವುದು ಸತ್ಯ…ಇದೆ ರೀತಿ ಬ್ರಾಹ್ಮಣ ಶಾಹಿ ಪಂಡಿತ್ ನೆಹರು ವಂಶ ಅಳಿದು ಮೂಲೆ ಸೇರಲಿ..

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...