ಉತ್ತರ ಪ್ರದೇಶದ ಸಂಭಾಲ್ನ ಶಾಹಿ ಜಾಮಾ ಮಸೀದಿ ಆವರಣದಲ್ಲಿ ಸಮೀಕ್ಷೆಗೆ ಆದೇಶಿಸಿದ ನಂತರ ಉಂಟಾದ ಹಿಂಸಾಚಾರದಲ್ಲಿ ‘ಸರ್ಕಾರಿ ಅಧಿಕಾರಿಗಳ ಪಾತ್ರ’ವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಈ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಡಾ. ಆನಂದ್ ಪ್ರಕಾಶ್ ತಿವಾರಿ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ ನಗರ ಪೊಲೀಸ್ ಆಯುಕ್ತ, ಪೊಲೀಸ್ ಅಧೀಕ್ಷಕ (ಎಸ್ಪಿ), ಜಿಲ್ಲಾಧಿಕಾರಿ (ಡಿಸಿ), ಉಪ ವಿಭಾಗಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ಪಾತ್ರ ಮತ್ತು ಅವರು ಕೈಗೊಂಡ ಕ್ರಮಗಳ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್ಐಟಿ ರಚಿಸಬೇಕು ಎಂದು ಕೋರಲಾಗಿದೆ.
ಘಟನೆಯಲ್ಲಿ ರಾಜ್ಯದ ಅಧಿಕಾರಿಗಳ ಪಾತ್ರ ಮತ್ತು ಲೋಪಗಳನ್ನು ಪರಿಶೀಲಿಸಿ ನಿರ್ದಿಷ್ಟ ಸಮಯದೊಳಗೆ ವರದಿ ಸಲ್ಲಿಸಬೇಕಿದ್ದು, ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರದ ವ್ಯಾಪ್ತಿಯಲ್ಲಿ ಇಲ್ಲದ ಸ್ವತಂತ್ರವಾಗಿರುವ ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.
ಸಂಭಾಲ್ನಲ್ಲಿ ಶಾಹಿ ಜಾಮಾ ಮಸೀದಿಯ ಎರಡನೇ ಸಮೀಕ್ಷೆ ನಡೆಸದಂತೆ ಆಗ್ರಹಿಸಿ ನ. 24ರಂದು ನಡೆದ ಪ್ರತಿಭಟನೆ ಘರ್ಷಣೆಗೆ ತಿರುಗಿ ನಾಲ್ವರು ಮೃತಪಟ್ಟಿದ್ದರು.
ನ್ಯಾಯಾಂಗ ಆಯೋಗ ರಚಿಸಿದ ರಾಜ್ಯಪಾಲರು
ಸಂಭಾಲ್ ಹಿಂಸಾಚಾರದ ಕುರಿತು ತನಿಖೆಗಾಗಿ ಮೂವರು ಸದಸ್ಯರ ನ್ಯಾಯಾಂಗ ಆಯೋಗ ರಚಿಸಿದ್ದಾಗಿ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಘೋಷಿಸಿದ್ದಾರೆ. ನವೆಂಬರ್ 28ರಂದು ಈ ಕುರಿತು ಅಧಿಸೂಚನೆ ಪ್ರಕಟಿಸಲಾಗಿದೆ. ಅಧಿಸೂಚನೆ ಪ್ರಕಟಗೊಂಡ ಎರಡು ತಿಂಗಳ ಒಳಗಾಗಿ ತನಿಖೆ ಪೂರ್ಣಗೊಳಿಸಬೇಕು. ಸರ್ಕಾರದ ಅನುಮೋದನೆಯೊಂದಿಗೆ ತನಿಖಾ ಅವಧಿಯನ್ನು ವಿಸ್ತರಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಅರೋರಾ ನ್ಯಾಯಾಂಗ ಆಯೋಗದ ನೇತೃತ್ವ ವಹಿಸಲಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಮೋಹನ್ ಪ್ರಸಾದ್, ನಿವೃತ್ತ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಜೈನ್ ಆಯೋಗದ ಸದಸ್ಯರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ : ಉತ್ತರಕಾಶಿ ಮಸೀದಿ ವಿವಾದ : ಹಿಂದುತ್ವ ಗುಂಪಿನ ‘ಮಹಾಪಂಚಾಯತ್’ಗೆ ಅನುಮತಿ ನಿರಾಕರಣೆ


