ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.
ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ನಡೆಯುತ್ತಿರುವ ಅಕ್ರಮಗಳು, ಕೋಚಿಂಗ್ ಸೆಂಟರ್ಗಳ ಅತಿಯಾದ ಬೆಳವಣಿಗೆ ಮತ್ತು ವಿದ್ಯಾರ್ಥಿಗಳ ಜೀವಹಾನಿಯನ್ನು ಈ ನಿರ್ಣಯದಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಬಿಜೆಪಿಯ ಏಕೈಕ ಶಾಸಕರಾದ ಎಂ. ಭೋಜರಾಜನ್ ಅವರು ಈ ನಿರ್ಣಯವನ್ನು ತೀವ್ರವಾಗಿ ವಿರೋಧಿಸಿದರಲ್ಲದೆ, ಸದನದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಸಭಾತ್ಯಾಗ (ವಾಕ್ಔಟ್) ಮಾಡಿದರು.
ತಮಿಳುನಾಡು ವಿಧಾನಸಭೆಯು ಈ ಹಿಂದೆಯೂ ಸಹ ನೀಟ್ ಪರೀಕ್ಷೆಯಿಂದ ವಿನಾಯಿತಿ ಕೋರಿ ನಿರ್ಣಯಗಳನ್ನು ಅಂಗೀಕರಿಸಿತ್ತು.
ಈ ಹಿಂದೆ, 2021ರಲ್ಲಿ ಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗ, ರಾಜ್ಯಕ್ಕೆ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಕೋರಿ ‘ತಮಿಳುನಾಡು ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶ ಮಸೂದೆ’ಯನ್ನು (ಎಲ್.ಎ. ಮಸೂದೆ ಸಂಖ್ಯೆ 43, 2021) ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಈ ಮಸೂದೆಯನ್ನು ರಾಷ್ಟ್ರಪತಿಗಳ ಪರಿಶೀಲನೆಗಾಗಿ ಕಾಯ್ದಿರಿಸಲಾಗಿತ್ತು ಮತ್ತು ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆಯನ್ನು ತಡೆಹಿಡಿಯಲಾಗಿದೆ.
ನಿರ್ಣಯವನ್ನು ಮಂಡಿಸಿದ ಆರೋಗ್ಯ, ವೈದ್ಯಕೀಯ ಶಿಕ್ಷಣ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಜಿ. ಅರುಣ್ರಾಜ್ ಅವರು, ಅಗತ್ಯ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯ್ದೆ 2019 (ಕೇಂದ್ರ ಕಾಯ್ದೆ ಸಂಖ್ಯೆ 33, 2019), ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗ ಕಾಯ್ದೆ 2020 (ಕೇಂದ್ರ ಕಾಯ್ದೆ ಸಂಖ್ಯೆ 14, 2020), ಮತ್ತು ಹೋಮಿಯೋಪತಿ ರಾಷ್ಟ್ರೀಯ ಆಯೋಗ ಕಾಯ್ದೆ 2020 (ಕೇಂದ್ರ ಕಾಯ್ದೆ ಸಂಖ್ಯೆ 15, 2020) ಸೇರಿದಂತೆ ಇತರ ಸಂಬಂಧಿತ ಕೇಂದ್ರ ಶಾಸನಗಳಿಗೆ ತಿದ್ದುಪಡಿಗಳನ್ನು ಮಾಡುವಂತೆ ಆಗ್ರಹಿಸಿದ್ದಾರೆ.
ಇದು ಹನ್ನೆರಡನೇ ತರಗತಿಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ನಿರ್ಣಯದಲ್ಲಿ ತಿಳಿಸಿದ್ದಾರೆ.
ನೀಟ್ ಪರೀಕ್ಷೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ರಾಜ್ಯಗಳ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ತಮಿಳುನಾಡು ಸರ್ಕಾರವು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.
ತಮಿಳು ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು ಸೇರಿದಂತೆ ಗ್ರಾಮೀಣ ಮತ್ತು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಿಗುವ ಅವಕಾಶಗಳನ್ನು ಈ ಪರೀಕ್ಷೆಯು ಗಂಭೀರವಾಗಿ ಕುಂಠಿತಗೊಳಿಸಿದೆ ಎಂದು ಅದು ಹೇಳಿದೆ.
ನೀಟ್ ಪರೀಕ್ಷೆಯು ಅತಿಯಾದ ಶುಲ್ಕವನ್ನು ವಸೂಲಿ ಮಾಡುವ ಕೋಚಿಂಗ್ ಸೆಂಟರ್ಗಳ ಅತಿಯಾದ ಬೆಳವಣಿಗೆಗೆ ಕಾರಣವಾಗಿದೆ ಮತ್ತು ವಿದ್ಯಾರ್ಥಿಗಳ ಗಮನವನ್ನು ಶಾಲಾ ಪಠ್ಯಕ್ರಮದಿಂದ ನೀಟ್-ಕೇಂದ್ರಿತ ತರಬೇತಿಯತ್ತ ತಿರುಗಿಸಿದೆ ಎಂದಿದೆ.
ಹನ್ನೆರಡು ವರ್ಷಗಳ ಶಾಲಾ ಶಿಕ್ಷಣದ ಬದಲು, ಕೇವಲ ಒಂದೇ ಒಂದು ದಿನದ ಪರೀಕ್ಷೆಯು ಈಗ ವಿದ್ಯಾರ್ಥಿಯ ಉನ್ನತ ಶಿಕ್ಷಣದ ಹಾದಿಯನ್ನು ನಿರ್ಧರಿಸುತ್ತಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.
ನಿರ್ಣಯವು ನೀಟ್ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳನ್ನು ಎತ್ತಿ ತೋರಿಸಿದೆ. ಇದೇ ಅಕ್ರಮಗಳು ನೀಟ್-ಯುಜಿ 2026 ರದ್ದತಿ ಮತ್ತು ನಂತರದ ಮರುಪರೀಕ್ಷೆಗೆ ಕಾರಣವಾಯಿತು ಎಂದು ಹೇಳಿದೆ. ಈ ಬೆಳವಣಿಗೆಗಳು ಲಕ್ಷಾಂತರ ವಿದ್ಯಾರ್ಥಿಗಳಿಗೆ ಹೇಳಲಾಗದ ಮಾನಸಿಕ ಯಾತನೆ ಉಂಟುಮಾಡಿದ್ದು, ಯುವ ವಿದ್ಯಾರ್ಥಿಗಳ ದುರಂತ ಸಾವಿಗೆ ಕಾರಣವಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.
ನೀಟ್ ಪರೀಕ್ಷೆಯು ದೇಶದ ವಿದ್ಯಾರ್ಥಿಗಳ ನಂಬಿಕೆಯನ್ನು ಕಳೆದುಕೊಂಡಿದೆ. ಆದ್ದರಿಂದ ಅದನ್ನು ರದ್ದುಗೊಳಿಸಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.
ಶಿಕ್ಷಣವನ್ನು ರಾಜ್ಯ ಪಟ್ಟಿಗೆ ಸೇರಿಸುವಂತೆ ಒತ್ತಾಯ
ಶಿಕ್ಷಣವನ್ನು ಸಮವರ್ತಿ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸುವುದೇ ನೀಟ್ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಸಚಿವ ಅರುಣ್ರಾಜ್ ಹೇಳಿದ್ದಾರೆ.
“ನೇರ ಪ್ರವೇಶ ಪದ್ಧತಿಯ ಮೂಲಕ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದು, ತರುವಾಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಐದುವರೆ ವರ್ಷಗಳ ಕಾಲ ವೈದ್ಯನಾಗಿ ಸೇವೆ ಸಲ್ಲಿಸಿದ ವೈದ್ಯನಾಗಿ ಈ ಮಸೂದೆಯನ್ನು ಮಂಡಿಸಲು ನಾನು ಹೆಮ್ಮೆಪಡುತ್ತೇನೆ ಮತ್ತು ಸಂತೋಷಪಡುತ್ತೇನೆ” ಎಂದು ಸಚಿವರು ಹೇಳಿದ್ದಾರೆ.
ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕ ಭೋಜರಾಜನ್ ಮಾತನಾಡಿ, “ನೀಟ್ ಪರೀಕ್ಷೆಯು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಪಲ್ಲಡಂನಲ್ಲಿ ತಮಿಳು ಮಾಧ್ಯಮದ 10 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಉಲ್ಲೇಖಿಸಿದ ಅವರು, “ಸರ್ಕಾರವೇ ಏಕೆ ಕೋಚಿಂಗ್ ಸೆಂಟರ್ಗಳನ್ನು ನಡೆಸಬಾರದು? ತಮಿಳುನಾಡಿನ ವಿದ್ಯಾರ್ಥಿಗಳು ಬುದ್ಧಿವಂತರಾಗಿದ್ದಾರೆ. ಅವರಿಗೆ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿಯನ್ನು ನೀಡಬೇಕು” ಎಂದು ಹೇಳಿದ್ದಾರೆ.


