ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಗುರುವಾರ ತಂಜಾವೂರು ಜಿಲ್ಲೆಯಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡು ನಡುವೆ ಬೆಂಗಳೂರು ಸಮೀಪದ ಮೇಕೆದಾಟು ಪ್ರದೇಶದಲ್ಲಿ ಅಣೆಕಟ್ಟು ನಿರ್ಮಾಣದ ವಿಚಾರದಲ್ಲಿ ಸಮಸ್ಯೆ ಸೃಷ್ಠಿಯಾಗಿದೆ. ತಮಿಳುನಾಡು ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದಿದೆ. ಆದರೆ, ಕರ್ನಾಟಕ ಯೋಜನೆ ನಮ್ಮ ಹಕ್ಕು ಎಂದಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ಗೆ ಅಣೆಕಟ್ಟು ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದರು, ಬಳಿಕ ಸ್ಟಾಲಿನ್ ಸರ್ವಪಕ್ಷ ಸಭೆ ನಡೆಸಿ, ಯೋಜನೆಗೆ ವಿರೋಧ ವ್ಯಕ್ತಪಡಿಸುವ ನಿರ್ಧಾರ ತೆಗೆದುಕೊಂಡಿದ್ದರು.
ಇದನ್ನೂ ಓದಿ: ಮೇಕೆದಾಟು: ಕರ್ನಾಟಕದೊಂದಿಗೆ ಯಾವುದೇ ಮಾತುಕತೆಯಿಲ್ಲ, ಕೇಂದ್ರದ ಭರವಸೆಯಿದೆ ಎಂದ ತಮಿಳುನಾಡು ಸಿಎಂ
ಎತ್ತಿನ ಗಾಡಿಯಲ್ಲಿ ಹಸಿರುಶಾಲು ಧರಿಸಿ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು, ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಉದ್ದೇಶದ ಈ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಅಣ್ಣಾಮಲೈ ಉಪವಾಸ ಸತ್ಯಾಗ್ರಹಕ್ಕೆ ಪ್ರತಿಕ್ರಿಯಿಸಿರುವ ನಟ, ರಾಜಕಾರಣಿ ಕಮಲ್ ಹಾಸನ್ ಇದೊಂದು ದ್ವಿಪಾತ್ರ ಅಭಿನಯ ಎಂದು ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಮೇಕೆದಾಟು ನಮ್ಮ ಹಕ್ಕು. ಯೋಜನೆಗೆ ಅನುಮೋದನೆ ತೆಗೆದುಕೊಳ್ಳಲಾಗುವುದು ಮತ್ತು ಯೋಜನೆಯನ್ನು ಆರಂಭಿಸಲಾಗುತ್ತದೆ. ಯಾರು ಬೇಕಾದರೂ ಪ್ರತಿಭಟಿಸಲಿ” ಎಂದು ಹೇಳಿದ್ದಾರೆ.
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಜಲಾಶಯವನ್ನು ನಿರ್ಮಿಸುವ ಉದ್ದೇಶವಿರುವ ಕರ್ನಾಟಕ ಸರ್ಕಾರದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಅದಕ್ಕೆ ಯಾವುದೇ ಮಹತ್ವವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದರು.
ಮೇಕೆದಾಟು ಯೋಜನೆಯಲ್ಲಿ ಮುಂದುವರಿಯಲು ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರು ತಮಿಳುನಾಡಿಗೆ ಭರವಸೆ ನೀಡಿದ್ದಾರೆ ಎಂದು ಈ ಹಿಂದೆ ಸ್ಟಾಲಿನ್ ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ