ಚೆನ್ನೈನ ಸರ್ಕಾರಿ ಬಸ್ನಲ್ಲಿ ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ನಾಯಿಗಳು ಎಂದು ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಬಿಜೆಪಿ ನಾಯಕಿ ಮತ್ತು ನಟಿ ರಂಜನಾ ನಾಚ್ಚಿಯಾರ್ ಅವರನ್ನು ಬಂಧಿಸಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವಿದ್ಯಾರ್ಥಿಗಳು ಸರ್ಕಾರಿ ಬಸ್ನ ಮೆಟ್ಟಿಲಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು. ನಾಚಿಯಾರ್ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ ವಿದ್ಯಾರ್ಥಿಗಳು ಬಸ್ನಲ್ಲಿ ನೇತಾಡುವುದನ್ನು ನೋಡಿದ್ದು, ಬಸ್ನ್ನು ನಿಲ್ಲಿಸಿ ಕಂಡೆಕ್ಟರ್ ಮತ್ತು ಡ್ರೈವರ್ಗೆ ಮೊದಲು ತರಾಟೆಗೆ ತೆಗೆದುಕೊಂಡಿದ್ದಾರೆ.
ನಂತರ ಬಸ್ನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಳಿ ತೆರೆಳಿ ಬಸ್ನಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ವಿದ್ಯಾರ್ಥಿಗಳಿಗೆ ನಿಂದಿಸಿ ಬಸ್ಸಿನಿಂದ ಕೆಳಗಿಳಿಸುವುದು ಹಲ್ಲೆ ನಡೆಸುವುದು ಕಂಡು ಬಂದಿತ್ತು.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಚಿಯಾರ್ ಮನೆಗೆ ಆಗಮಿಸಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ನಾಚಿಯಾರ್ ಬಂಧನವನ್ನು ಖಂಡಿಸಿ ಬಿಜೆಪಿ ಮುಖಂಡ ಸಿ.ಟಿ.ರವಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಬಸ್ಗಳ ಫುಟ್ಬೋರ್ಡ್ನಲ್ಲಿ ಪ್ರಯಾಣಿಸುವ ಶಾಲಾ ಮಕ್ಕಳ ಜೀವಕ್ಕೆ ಅಪಾಯವನ್ನುಂಟುಮಾಡುವ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರು ಮತ್ತು ಅಧಿಕಾರಿಗಳನ್ನು ಕಂಬಿ ಹಿಂದೆ ಕಳುಹಿಸಬೇಕು ಎಂದು ಹೇಳಿದ್ದಾರೆ. ಇದಲ್ಲದೆ ನಾಚಿಯಾರ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನು ಓದಿ: ಮಧ್ಯಪ್ರದೇಶ: ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ; 39 ನಾಯಕರು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ