Homeಮುಖಪುಟತಮಿಳುನಾಡು ಸರ್ಕಾರ VS ರಾಜ್ಯಪಾಲ: ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

ತಮಿಳುನಾಡು ಸರ್ಕಾರ VS ರಾಜ್ಯಪಾಲ: ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

- Advertisement -
- Advertisement -

ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕಾರಗೊಂಡ 10 ಮಸೂದೆಗಳನ್ನು ರಾಷ್ಟ್ರಪತಿಯವರ ಪರಿಶೀಲನೆಯ ಕಾರಣ ಹೇಳಿ ಸುದೀರ್ಘ ಸಮಯ ತಡೆಹಿಡಿದು ಇರಿಸಿಕೊಂಡಿದ್ದ ರಾಜ್ಯಪಾಲ ಆರ್‌. ಎನ್‌. ರವಿ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ (ಏ.8) ಮಹತ್ವದ ತೀರ್ಪು ನೀಡಿದೆ.

ತೀರ್ಪು ಪ್ರಕಟಿಸುವ ವೇಳೆ, ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಂವಿಧಾನದ 200ನೇ ವಿಧಿಯಡಿ ಹೇಳಲಾದ ರಾಜ್ಯಪಾಲರ ಅಧಿಕಾರ ಮತ್ತು ಜವಾಬ್ದಾರಿಗಳನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು, ರಾಜ್ಯಪಾಲರು ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ದುರ್ಬಲಗೊಳಿಸಬಾರದು ಎಂದಿದೆ. ಮಸೂದೆಗಳಿಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ತಡೆಯಲು ಕೆಲವು ನಿರ್ದೇಶನಗಳನ್ನು ನೀಡಿದೆ. ರಾಜ್ಯಪಾಲರು ತಮಗೆ ಕಳುಹಿಸಲಾದ ಮಸೂದೆಗಳ ಮೇಲೆ ಕ್ರಮ ಕೈಗೊಳ್ಳಲು ನಿರ್ದಿಷ್ಟ ಸಮಯ ನಿಗದಿಪಡಿಸಿದೆ.

ವಿಧಿ 200ರ ಅಡಿಯಲ್ಲಿ ರಾಜ್ಯಪಾಲರ ಪಾತ್ರ

ಭಾರತೀಯ ಸಂವಿಧಾನದ 200ನೇ ವಿಧಿಯು ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳುವಾಗ ರಾಜ್ಯಪಾಲರು ಅನುಸರಿಸಬೇಕಾದ ಕಾರ್ಯವಿಧಾನವನ್ನು ವಿವರಿಸುತ್ತದೆ. ಶಾಸಕಾಂಗ ಅಂಗೀಕರಿಸಿದ ಮಸೂದೆಯನ್ನು ಸಹಿಗಾಗಿ ಕಳುಹಿಸಿದರೆ, ರಾಜ್ಯಪಾಲರ ಮುಂದೆ ಮೂರು ಆಯ್ಕೆಗಳಿರುತ್ತವೆ:    1. ಮಸೂದೆಗೆ ಒಪ್ಪಿಗೆ ನೀಡುವುದು, 2. ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸುವುದು ಮತ್ತು 3. ಮಸೂದೆಯನ್ನು ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸುವುದು.

ರಾಜ್ಯಪಾಲರು ಸಹಿ ಹಾಕದೆ ವಾಪಸ್‌ ಕಳುಹಿಸಿದ ಮಸೂದೆಯನ್ನು, ರಾಜ್ಯಪಾಲರ ಸಲಹೆಗಳ ಆಧಾರದ ಮೇಲೆ ಶಾಸಕಾಂಗ ಮರುಪರಿಶೀಲಿಸಿ, ಮರು-ಅಂಗೀಕಾರ ಮಾಡದ ಹೊರತು ಮಸೂದೆಯು ರದ್ದಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಯಾವುದೇ ಮಸೂದೆಗೆ ಸಹಿ ಹಾಕದೆ ವಾಪಸ್ ಕಳುಹಿಸುವಾಗ ರಾಜ್ಯಪಾಲರು ಸರಿಯಾದ ಕಾರ್ಯವಿಧಾನವನ್ನು ಅನುಸರಿಸಬೇಕು. ಅನಗತ್ಯ ವಿಳಂಬ ಮಾಡಬಾರದು. ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಮಸೂದೆಯನ್ನು ತಡೆಹಿಡಿಯುವುದು ಆಯ್ಕೆಯಲ್ಲ. ವಿಧಿ 200ರ ಅಡಿಯಲ್ಲಿರುವ ಮೂರು ಆಯ್ಕೆಗಳಲ್ಲಿ ಯಾವುದಾದರು ಒಂದನ್ನು ರಾಜ್ಯಪಾಲರು ಅನುಸರಿಸಲೇಬೇಕು ಎಂದಿದೆ.

ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ

ರಾಜ್ಯಪಾಲರು ‘ವೀಟೋ’ ಅಧಿಕಾರ ಹೊಂದಿಲ್ಲ, ಅಂದರೆ ಅವರು ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಸುಮ್ಮನೆ ತಡೆ ಹಿಡಿದು ಇರಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ವಿಧಿ 200 ಮೊದಲ ನಿಬಂಧನೆಯ ‘ಸಾಧ್ಯವಾದಷ್ಟು ಬೇಗ’ ಎಂಬ ಪದವು ರಾಜ್ಯಪಾಲರು ಮಸೂದೆಯ ಕುರಿತು ತುರ್ತು ನಿರ್ಧಾರ ತೆಗೆದುಕೊಳ್ಳಬೇಕು ಎಂಬುವುದನ್ನು ಹೇಳುತ್ತದೆ ಎಂದಿದೆ.

ಮಾನ್ಯವಾದ ಸಾಂವಿಧಾನಿಕ ಕಾರಣಗಳಿಲ್ಲದೆ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುವ ಅಥವಾ ಮಸೂದೆಯನ್ನು ಸುಖಾ ಸುಮ್ಮನೆ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರ ಚಲಾಯಿಸಲು ರಾಜ್ಯಪಾಲರಿಗೆ ಅವಕಾಶ ಇಲ್ಲ. ಒಂದಾ ಮಸೂದೆಗೆ ಸಹಿ ಹಾಕಬೇಕು ಅಥವಾ ಹಿಂದಿರುಗಿಸಬೇಕು, ಇಲ್ಲದಿದ್ದರೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಳುಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಜ್ಯಪಾಲರು ಹಿಂದಿರುಗಿಸಿದ ಮಸೂದೆಯನ್ನು ಶಾಸಕಾಂಗ ಪರಿಶೀಲನೆ ನಡೆಸಿ ಮತ್ತೆ ಕಳುಹಿಸಿದರೆ ರಾಜ್ಯಪಾಲರು ಅದಕ್ಕೆ ಸಹಿ ಹಾಕಬೇಕು, ಮತ್ತೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದಿದೆ.

ಶಾಸಕಾಂಗ ಮರು ಪರಿಶೀಲನೆ ಮಾಡಿ ಕಳುಹಿಸಿದ ಬಳಿಕವೂ 10 ಮಸೂದೆಗಳನ್ನು ರಾಷ್ಟ್ರಪತಿಗಳ ಪರಿಶೀಲನೆಗೆಂದು ತಡೆ ಹಿಡಿದು ಇರಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಇದು ‘ಅಧಿಕಾರದ ದುರ್ಬಳಕೆ’ ಎಂದಿದೆ.

ಆ ಮಸೂದೆಗಳ ಕುರಿತು ರಾಷ್ಟ್ರಪತಿಗಳು ತೆಗೆದುಕೊಂಡ ಯಾವುದೇ ನಂತರದ ಕ್ರಮವು ನಿಲ್ಲುವುದಿಲ್ಲ ಎಂದು ಆದೇಶಿಸಿದೆ. ಶಾಸಕಾಂಗವು ಮಸೂದೆಗಳನ್ನು ಮರುಪರಿಶೀಲಿಸಿದ ದಿನಾಂಕದಂದು ರಾಜ್ಯಪಾಲರು ಈ ಮಸೂದೆಗಳಿಗೆ ಒಪ್ಪಿಗೆ ನೀಡಿದ್ದಾರೆ ಎಂದು ಪರಿಗಣಿಸಲಾಗಿದೆ. ಈ ನಿರ್ಧಾರವನ್ನು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯದ ಅಂತರ್ಗತ ಅಧಿಕಾರವನ್ನು ಬಳಸಿಕೊಂಡು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ರಾಜ್ಯಪಾಲರಿಗೆ ಕಾಲಮಿತಿ

ಸಂವಿಧಾನದ 200ನೇ ವಿಧಿಯಡಿ ರಾಜ್ಯಪಾಲರು ಮಸೂದೆಗಳ ಕುರಿತು ಇಂತಿಷ್ಟೇ ಸಮಯದೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಸ್ಪಷ್ಟವಾಗಿ ಇಲ್ಲ. ಆದರೂ, ‘ಸಾಧ್ಯವಾದಷ್ಟು ಬೇಗ’ ಎಂಬ ಪದವು ತುರ್ತು ನಿರ್ಧಾರ ತೆಗೆದುಕೊಳ್ಳಬೇಕು ಎಂಬುವುದನ್ನು ಸೂಚಿಸುತ್ತದೆ. ಹಾಗಾಗಿ, ಅನಗತ್ಯ ವಿಳಂಬ ಮಾಡಬಾರದು ಎಂದಿರುವ ಸುಪ್ರೀಂ ಕೋರ್ಟ್, ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳುವಲ್ಲಿ ಅನಗತ್ಯ ವಿಳಂಬ ಮಾಡುವುದನ್ನು ತಡೆಯಲು ರಾಜ್ಯಪಾಲರಿಗೆ ಕಾಲಮಿತಿಗಳನ್ನು ನಿಗದಿಪಡಿಸಿದೆ.

ರಾಜ್ಯಪಾಲರು ಮಸೂದೆಯನ್ನು ಹಿಂದಿರುಗಿಸಿದರೆ ಅಥವಾ ರಾಷ್ಟ್ರಪತಿಗಳಿಗೆ ಮಸೂದೆಯನ್ನು ಕಾಯ್ದಿರಿಸಿದರೆ, ರಾಜ್ಯ ಸಚಿವ ಸಂಪುಟದ ಸಲಹೆಯ ಆಧಾರದ ಮೇಲೆ ಗರಿಷ್ಠ ಒಂದು ತಿಂಗಳೊಳಗೆ ಈ ಕುರಿತು ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು.

ರಾಜ್ಯ ಸಚಿವ ಸಂಪುಟದ ಸಲಹೆಗೆ ವಿರುದ್ಧವಾಗಿ ರಾಜ್ಯಪಾಲರು ಮಸೂದೆಯನ್ನು ತಡೆ ಹಿಡಿದರೆ, ಮೂರು ತಿಂಗಳೊಳಗೆ ಮಸೂದೆಯನ್ನು ಸಂದೇಶದೊಂದಿಗೆ ಹಿಂದಿರುಗಿಸಬೇಕು.

ರಾಜ್ಯ ಸಚಿವ ಸಂಪುಟದ ಸಲಹೆಯ ವಿರುದ್ಧ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಮಸೂದೆಯನ್ನು ಕಾಯ್ದಿರಿಸಿದರೆ, ಮೂರು ತಿಂಗಳೊಳಗೆ ಅದಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಮಾಡಬೇಕು.

ಶಾಸಕಾಂಗವು ಮರುಪರಿಶೀಲನೆಯ ನಂತರ ಮಸೂದೆಯನ್ನು ರಾಜ್ಯಪಾಲರಿಗೆ ಮತ್ತೆ ಕಳುಹಿಸಿದರೆ, ಅವರು ಗರಿಷ್ಠ ಒಂದು ತಿಂಗಳೊಳಗೆ ಅದಕ್ಕೆ ಒಪ್ಪಿಗೆ ನೀಡಬೇಕು.

ಈ ಸಮಯ ಮಿತಿಗಳನ್ನು ಪಾಲಿಸಲು ವಿಫಲವಾದರೆ ರಾಜ್ಯಪಾಲರ ನಿಷ್ಕ್ರಿಯತೆಯನ್ನು ನ್ಯಾಯಾಂಗದ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಈ ಮೂಲಕ ಅನಗತ್ಯ ವಿಳಂಬಗಳಿಂದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಅಡ್ಡಿಯಾಗುವುದನ್ನು ತಪ್ಪಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಜ್ಯಪಾಲರ ವಿವೇಚನೆ ಮತ್ತು ನ್ಯಾಯಾಂಗ ಪರಿಶೀಲನೆ

ಸಂವಿಧಾನದಲ್ಲಿ ವಿವರಿಸಿರುವ ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ರಾಜ್ಯಪಾಲರು ಸಾಮಾನ್ಯವಾಗಿ ರಾಜ್ಯ ಸಚಿವ ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ರಾಷ್ಟ್ರಪತಿಗಳ ಪರಿಶೀಲನೆಗೆ ಮಸೂದೆಯನ್ನು ಕಾಯ್ದಿರಿಸುವಂತಹ ಸಂವಿಧಾನದಿಂದ ನಿರ್ದಿಷ್ಟವಾಗಿ ಅಗತ್ಯವಿರುವ ಸಂದರ್ಭಗಳಲ್ಲಿ ಮಾತ್ರ ರಾಜ್ಯಪಾಲರು ವಿವೇಚನೆಯನ್ನು ಚಲಾಯಿಸಬಹುದು. ಈ ವಿಧಾನವು ಔಪಚಾರಿಕ ರಾಜ್ಯದ ಮುಖ್ಯಸ್ಥರಾಗಿ ರಾಜ್ಯಪಾಲರು ಸಚಿವ ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸುತ್ತಾರೆ ಎಂಬ ವಿಶಾಲ ತತ್ವಕ್ಕೆ ಅನುಗುಣವಾಗಿದೆ. ವಿವೇಚನೆಯು ಸ್ಪಷ್ಟವಾಗಿ ಕಡ್ಡಾಯವಾಗಿರುವ ಸ್ಥಳಗಳನ್ನು ಹೊರತುಪಡಿಸಿ ಎಂದು ಸುಪ್ರೀಂ ಕೋರ್ಟ್ ವಿವರಿಸಿದೆ.

ತೀರ್ಪು ಪ್ರಕಟಿಸುವ ವೇಳೆ ಬಿ.ಕೆ ಪವಿತ್ರಾ ಪ್ರಕರಣದಲ್ಲಿ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಮಸೂದೆಗಳನ್ನು ಕಾಯ್ದಿರಿಸುವ ಬಗ್ಗೆ ವಿವೇಚನೆ ಹೊಂದಿರುತ್ತಾರೆ ಎಂದು ಹೇಳಿದ್ದ ಹಿಂದಿನ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ತೀರ್ಪು ಇದಕ್ಕೂ ಮುನ್ನ ನೀಡಿದ ತೀರ್ಪುಗಳಿಗೆ, ವಿಶೇಷವಾಗಿ ಶಂಶೇರ್ ಸಿಂಗ್ ಪ್ರಕರಣದ ತೀರ್ಪಿಗೆ ಹೊಂದಾಣಿಕೆಯಾಗುವುದಿಲ್ಲ. ಶಂಶೇರ್ ಸಿಂಗ್ ಪ್ರಕರಣದ ತೀರ್ಪು ರಾಜ್ಯಪಾಲರ ಅಧಿಕಾರ ರಾಜ್ಯ ಸಚಿವ ಸಂಪುಟದ ಸಲಹೆಯೊಂದಿಗೆ ಹೊಂದಿಕೆಯಾಗಬೇಕು ಎಂದು ಹೇಳಿದೆ.

ನ್ಯಾಯಾಂಗದ ಪರಿಶೀಲನೆಯು ಲಿಖಿತ ಸಂವಿಧಾನದ ಮೂಲಭೂತ ಲಕ್ಷಣವಾಗಿದೆ ಎಂಬ ತತ್ವವನ್ನು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಸಂವಿಧಾನದ 200ನೇ ವಿಧಿಯಡಿ ಹೇಳಲಾದ ನಿಯಮಗಳ ಅನುಸಾರ ರಾಜ್ಯಪಾಲರ ಕಾರ್ಯ ವಿಧಾನಗಳು ಇಲ್ಲದಿದ್ದರೆ, ಅದು ನ್ಯಾಯಾಂಗದ ಪರಿಶೀಲನೆಗೆ ಒಳಪಡುತ್ತದೆ ಎಂದು ಸ್ಪಷ್ಟಪಡಿಸಿದೆ.

ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...