ವಿಶ್ವವಿದ್ಯಾನಿಲಯಗಳಿಗೆ ಉಪಕುಲಪತಿಗಳನ್ನು ನೇಮಿಸುವ ರಾಜ್ಯಪಾಲರ ಅಧಿಕಾರವನ್ನು ರಾಜ್ಯ ಸರ್ಕಾರ ವಹಿಸಿಕೊಳ್ಳಲು ಅನುವು ಮಾಡಿಕೊಡುವ ಮಸೂದೆಯನ್ನು, ತಮಿಳುನಾಡು ವಿಧಾನಸಭೆ ಸೋಮವಾರ ಅಂಗೀಕರಿಸಿದೆ.
ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಊಟಿಯಲ್ಲಿ ರಾಜ್ಯ ಮತ್ತು ಒಕ್ಕೂಟ ಸರ್ಕಾರ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಎರಡು ದಿನಗಳ ಸಮ್ಮೇಳನವನ್ನು ಆಯೋಜಿಸುತ್ತಿರುವ ದಿನದಂದೆ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯಗಳ ಕಾನೂನುಗಳನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಪರಿಚಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಈ ಕಾನೂನನ್ನು ಜಾರಿಗೊಳಿಸುವ ಅಗತ್ಯವನ್ನು ವಾದಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲದಿದ್ದರೆ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿ, ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್ನೊಂದಿಗೆ ಹೋಲಿಕೆ ಮಾಡಿದ್ದಾರೆ.
ವಿರೋಧ ಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿ ಮಸೂದೆಯನ್ನು ವಿರೋಧಿಸಿವೆ.
ಕಾನೂನಿನ ಕುರಿತು ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್, “ರಾಜ್ಯಪಾಲರು ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿ ಉಪಕುಲಪತಿಗಳನ್ನು ನೇಮಕ ಮಾಡುತ್ತಾರೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಹೊಸ ಪ್ರವೃತ್ತಿ ಹೊರಹೊಮ್ಮಿದೆ, ರಾಜ್ಯಪಾಲರು ಅದನ್ನು ತಮ್ಮ ವಿಶೇಷತೆ ಎಂಬಂತೆ ವರ್ತಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ರಾಜ್ಯಪಾಲರ ಈ ನಡೆಯು, ‘ಚುನಾಯಿತ ಸರ್ಕಾರದ ಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ’ ಮತ್ತು ‘ಇದು ಜನರ ಆಡಳಿತದ ತತ್ವಕ್ಕೆ ವಿರುದ್ಧವಾಗಿದೆ’ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ವ್ಯವಸ್ಥೆಯು ವಿಶ್ವವಿದ್ಯಾನಿಲಯಗಳ ಆಡಳಿತದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಒಕ್ಕೂಟ ಸರ್ಕಾರ ಮತ್ತು ರಾಜ್ಯಗಳ ಸಂಬಂಧಗಳ ಕುರಿತು ಮಾಜಿ ಮುಖ್ಯ ನ್ಯಾಯಮೂರ್ತಿ ಮದನ್ ಮೋಹನ್ ಪುಂಚಿ ನೇತೃತ್ವದ ಆಯೋಗದ ವರದಿಯನ್ನು ಸೂಚಿಸಿದ ಸ್ಟಾಲಿನ್, “2010 ರ ಈ ವರದಿಯು ರಾಜ್ಯಪಾಲರನ್ನು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ತೆಗೆದುಹಾಕಲು ಶಿಫಾರಸು ಮಾಡಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ
“ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯವಾದ ಗುಜರಾತ್ನಲ್ಲಿಯೂ ಸಹ, ರಾಜ್ಯ ಸರ್ಕಾರ ರಚಿಸಿದ ‘ಶೋಧನಾ ಸಮಿತಿ’ ಶಿಫಾರಸು ಮಾಡಿದ ಮೂರು ಅಭ್ಯರ್ಥಿಗಳಲ್ಲಿ ಒಬ್ಬರನ್ನು ಉಪಕುಲಪತಿಯಾಗಿ ಆಯ್ಕೆ ಮಾಡುತ್ತದೆ” ಎಂದು ಸ್ಟಾಲಿನ್ ಹೇಳಿದ್ದಾರೆ.
ಕಳೆದ ಕೆಲವು ವರ್ಷಗಳಲ್ಲಿ, ತಮಿಳುನಾಡು ರಾಜ್ಯಪಾಲರು ವಿಶ್ವವಿದ್ಯಾನಿಲಯದ ಉಪಕುಲಪತಿಗಳ ಹುದ್ದೆಗಳಿಗೆ ಶೋಧನಾ ಸಮಿತಿಯ ಶಿಫಾರಸುಗಳನ್ನು ತಿರಸ್ಕರಿಸಿದ ಹಲವಾರು ನಿದರ್ಶನಗಳಿವೆ.
ಉಪಕುಲಪತಿ ನೇಮಕದಲ್ಲಿ ರಾಜ್ಯಕ್ಕೆ ಹೆಚ್ಚಿನ ಸ್ವಾಯತ್ತತೆ ನೀಡುವಂತೆ ಡಿಎಂಕೆ ಸರ್ಕಾರದ ಒತ್ತಾಯಕ್ಕೆ ಅನುಗುಣವಾಗಿರುವ ಮಸೂದೆಯು ಕಾನೂನಾಗಲು ರಾಜ್ಯಪಾಲರು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಬೇಕಾಗಿದೆ.
ಇದನ್ನೂ ಓದಿ: ತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ ಬಂಧನ
ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ಗೆ ರಾಜ್ಯಕ್ಕೆ ವಿನಾಯಿತಿ ನೀಡುವ ಮಸೂದೆ ಸೇರಿದಂತೆ ವಿಧಾನಸಭೆಯಲ್ಲಿ ಅಂಗೀಕರಿಸಿದ ಕನಿಷ್ಠ 10 ಮಸೂದೆಗಳು ರಾಜಭವನದಲ್ಲಿ ಬಾಕಿ ಉಳಿದಿವೆ.
“ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ವಿಳಂಬ ಮಾಡುತ್ತಿರುವುದನ್ನು ಸದನಕ್ಕೆ ಮಾಡುತ್ತಿರುವ ಅವಮಾನ” ಎಂದು ಹೇಳಿರುವ ಡಿಎಂಕೆ ಸರ್ಕಾರವು, ಇತ್ತೀಚೆಗೆ ರಾಜ್ಯಪಾಲರ ಚಹಾ ಆಹ್ವಾನವನ್ನು ಬಹಿಷ್ಕರಿಸಿತ್ತು.