ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಬದಲಿಗೆ ಕಾಂಗ್ರೆಸ್ಗೆ ಬೆಂಬಲ ನೀಡಲು ನಿರ್ಧರಿಸಿರುವುದಾಗಿ ವೈಎಸ್ಆರ್ ತೆಲಂಗಾಣ ಪಕ್ಷದ (ವೈಎಸ್ಆರ್ಟಿಪಿ) ಮುಖ್ಯಸ್ಥೆ ವೈಎಸ್ ಶರ್ಮಿಳಾ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ವೈಎಸ್ಆರ್ಟಿಪಿ ಮುಖ್ಯಸ್ಥೆ ವೈ.ಎಸ್.ಶರ್ಮಿಳಾ ಅವರು, ”ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ವೈಎಸ್ಆರ್ಟಿಪಿ ಸ್ಪರ್ಧಿಸುವುದಿಲ್ಲ. ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿದ್ದು, ಕಾಂಗ್ರೆಸ್ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.
”ಕೆ. ಚಂದ್ರಶೇಖರ್ ರಾವ್ ಅವರ ನೇತೃತ್ವದ ಬಿಆರ್ಎಸ್ ಸರ್ಕಾರದ ಭ್ರಷ್ಟ ಮತ್ತು ಜನವಿರೋಧಿ ಆಡಳಿತವನ್ನು ಅಂತ್ಯಗೊಳಿಸಲು ತಮ್ಮ ಪಕ್ಷವು “ತ್ಯಾಗ” ಮಾಡಲು ನಿರ್ಧರಿಸಿದೆ” ಎಂದು ಅವರು ಹೇಳಿದರು.
”ಹಲವು ಸಮೀಕ್ಷೆಗಳು ಮತ್ತು ಗ್ರೌಂಡ್ ರಿಪೋರ್ಟ್ಗಳ ಪ್ರಕಾರ, ವಿಧಾನಸಭೆ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡುವುದರಿಂದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ನ ಮತಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಭಾವಿಸಲಾಗಿದೆ. ಆದ್ದರಿಂದ, ವೈಎಸ್ಆರ್ ತೆಲಂಗಾಣ ಪಕ್ಷವು ತೆಲಂಗಾಣ ವಿಧಾನಸಭೆಯಲ್ಲಿ ಸ್ಪರ್ಧಿಸದಿರಲು ತ್ಯಾಗ ಮಾಡಲು ನಿರ್ಧರಿಸಿದೆ ಎಂದು ಅವರು ಹೇಳಿದರು.
ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಕೆಲವು ವರ್ಷಗಳ ಹಿಂದಷ್ಟೇ ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪಿಸಿದ್ದರು. ಜತೆಗೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದರು.
ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್), ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ. 119 ಸ್ಥಾನಗಳ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: BJP ಲೀಡರ್ ಲೆಸ್, JDS ಪೀಪಲ್ ಲೆಸ್ ಪಾರ್ಟಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ