ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ‘ಊರನ್ನು ಹೊಲಗೇರಿ ಮಾಡಬೇಡಿʼ ಎಂದು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನಲಾದ ವೀಡಿಯೋಂದು ವೈರಲ್ ಆಗುತ್ತಿದ್ದು, ಈ ಬಗ್ಗೆ ಖುದ್ದು ಸಚಿವರೇ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಮಂಗಳವಾರ ಧ್ವಜಾರೋಹಣ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ನನ್ನ ಹೇಳಿಕೆಯನ್ನು ತಿರುಚಿದ್ದಾರೆ, ನಾನು ಆ ರೀತಿಯಾಗಿ ಹೇಳಿಲ್ಲ. ಉಪೇಂದ್ರ ಪ್ರಕರಣದ ಬಗ್ಗೆ ನನಗೆ ಏನು ಗೊತ್ತಿಲ್ಲ” ಎಂದು ಹೇಳಿದ್ದಾರೆ.
”ನಾನು ಯಾವುದೇ ಗಾಧೆ ಮಾತನ್ನು ನಾನು ಬಳಸಿಲ್ಲ, ಒಳ್ಳೆಯ ಕೆಲಸ ಮಾಡಿ ಹೊಲಸು ಮಾಡಬೇಡಿ ಹೇಳಿದ್ದೇನೆ ಅಷ್ಟೇ. ಅದನ್ನು ನೀವು, ಅವರು ತಿರುಚಿದ್ದೀರಿ” ಎಂದು ಮಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.
ಏನಿದು ಪ್ರಕರಣ?
ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹಳೆಯ ವೀಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನ ನಡೆಸಿದ್ದಾರೆ. ಈ ಸಂದರ್ಶನದ ವೀಡಿಯೊವನ್ನು ಯೂಟ್ಯೂಬ್ ಚಾನೆಲಲ್ನಲ್ಲಿ ಮೂರು ತಿಂಗಳ ಮೊದಲು ಅಪ್ಲೋಡ್ ಮಾಡಲಾಗಿದೆ.
ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮಲ್ಲಿಕಾರ್ಜುನ್ ಅವರಿಗೆ ದಾವಣಗೆರೆ ನಗರದ ಅಶೋಕ್ ಥಿಯೇಟರ್ ಬಳಿ ನಿರ್ಮಾಣಗೊಂಡಿರುವ ಅಂಡರ್ ಪಾಸ್ ಬಗ್ಗೆ ಅಭಿಪ್ರಾಯ ಕೇಳುತ್ತಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಲವು ಬಾರಿ ನಾನು ಪ್ರಶ್ನೆ ಮಾಡಿದ್ದೆ, ಸಂಬಂಧಪಟ್ಟ ಇಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡಿದ್ದೆ. ”ಊರನ್ನು ಹೊಲೆಗೇರಿ ಮಾಡಬೇಡಿ” ಎಂದು ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ ಎನ್ನಲಾದ ಮಾತು ವಿಡಿಯೋದಲ್ಲಿ ಸೆರೆಯಾಗಿದೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಆರೋಪದಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಚಿವರ ಮೇಲೆ ರಾಜಾಜಿನಗರ ಪೊಲೀಸ್ ಠಾಣೆಗೆ ಎಫ್ ಐಆರ್ ದಾಖಲಿಸುವಂತೆ ದೂರು ಕೊಡಲಾಗಿದೆ. ಸಚಿವರಾದ ಕಾರಣ ಅವರ ಮೇಲೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕಾಗಿದೆ. ಆದ್ದರಿಂದ ಅವರ ವಿರುದ್ಧದ ದೂರನ್ನು ಪಡೆದು ವಿಧಾನಸೌಧ ಠಾಣೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.