ರಾಜ್ಯದಲ್ಲಿ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಅಸಮಧಾನ ವ್ಯಕ್ತವಾಗುತ್ತಿದೆ. ವಿಜಯಪುರ ಶಾಸಕ ಬಸನಗೌಡ ಪಾಟಿಲ ಯತ್ನಾಳ್, ಸಂಕ್ರಾಂತಿಯ ನಂತರ ಯಡಿಯೂರಪ್ಪ ಅವರ ಅಧಃಪತನ ಆರಂಭವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಮೂರು ಬ್ಲ್ಯಾಕ್ಮೇಲರ್ಗಳನ್ನು ಮಂತ್ರಿಗಳನ್ನಾಗಿ ಮಾಡುತ್ತಿದ್ದಾರೆ. ಸಂಕ್ರಾಂತಿಯ ನಂತರ ಅವರ ಅಧಃಪತನ ಪ್ರಾರಂಭವಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ.
ಇದನ್ನೂ ಓದಿ: ಇಂದು ಸಚಿವ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸುವ ನೂತನ ಸಚಿವರ ಪಟ್ಟಿ ಇಲ್ಲಿದೆ
7-8 ಜನ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ನೂತನ ಸಚಿವರ ಸಂಭಾವ್ಯ ಪಟ್ಟಿ ಹರಿದಾಡುತ್ತಿದ್ದು, ಅದರಲ್ಲಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೆಸರಿಲ್ಲದಿರುವುದು ಕೂಡಾ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, “ಲಾಭಿ ಮಾಡಿದವರು ಸಚಿವರಾಗುತ್ತಿದ್ದಾರೆ” ಎಂದು ರೇಣುಕಾಚರ್ಯ ಕಿಡಿ ಕಾರಿದ್ದಾರೆ.
ಉಮೇಶ್ ಕತ್ತಿ, ಎಸ್. ಅಂಗಾರ, ಸಿ.ಪಿ. ಯೋಗೀಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ಅವರ ಹೆಸರುಗಳನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಸಚಿವ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ಸಲ್ಲಿಸುವಂತೆ ಅಬಕಾರಿ ಸಚಿವ ಎಚ್. ನಾಗೇಶ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ನಡೆದ ಸಂಪುಟ ಸಭೆಯಲ್ಲಿಯೆ ಸೂಚನೆ ನೀಡಿದ್ದು, “ಸಂಜೆಯೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ‘ತಕ್ಷಣವೇ ರಾಜೀನಾಮೆ ಕೊಡಿ, ಇಲ್ಲದಿದ್ದರೆ ವಜಾಗೊಳಿಸಲಾಗುವುದು’ – ಯಡಿಯೂರಪ್ಪ ಎಚ್ಚರಿಕೆ